ಹಸಿರು/ ಮಂಗಳ/ ಸಾಧಾರಣ ಕಾಲದ ಹನ್ನೋಂದನೇ ವಾರ
1ನೇ ವಾಚನ - 2 ಕೊರಿಂಥ 8: 1-9
ಕೀರ್ತನೆ - 146: 2, 5-9
ಶುಭಸಂದೇಶ -ಮತ್ತಾಯ 5: 43-48
1ನೇ ವಾಚನ - 2 ಕೊರಿಂಥ 8: 1-9
1 : ಸಹೋದರರೇ, ಮಕೆದೋನಿಯ ಸಭೆಗಳಿಗೆ ದೇವರು ದಯಪಾಲಿಸಿದ ಕೃಪಾತಿಶಯಗಳನ್ನು ನಾನು ನಿಮಗೆ ತಿಳಿಸಬಯಸುತ್ತೇನೆ.2 : ಈ ಸಭೆಗಳವರು ಕಷ್ಟಸಂಕಟಗಳ ಕುಲುಮೆಯಲ್ಲಿ ಬೆಂದಿದ್ದರೂ ಹರ್ಷಭರಿತರಾಗಿದ್ದಾರೆ. ಕಡುಬಡತನದಲ್ಲಿ ನರಳುತ್ತಿದ್ದರೂ ಅಪಾರ ಔದಾರ್ಯದಿಂದ ನಡೆದುಕೊಳ್ಳುತ್ತಿದ್ದಾರೆ.
3 : ತಮ್ಮ ಶಕ್ತಿಗನುಸಾರವಾಗಿ ಮಾತ್ರವಲ್ಲ, ಕೆಲವೊಮ್ಮೆ ಶಕ್ತಿವಿೂರಿಯೂ ನೀಡಿದ್ದಾರೆಂದು ನಾನು ಖಂಡಿತವಾಗಿ ಹೇಳುತ್ತೇನೆ.
4 : ದೇವಜನರಿಗೆ ನೆರವಾಗುವ ಸೌಭಾಗ್ಯದಲ್ಲಿ ತಾವೂ ಭಾಗಿಗಳಾಗಬೇಕೆಂದು, ಸ್ವಂತ ಇಷ್ಟದಿಂದ ನಮ್ಮನ್ನು ಅವರು ಬಹುವಾಗಿ ಬೇಡಿಕೊಂಡರು.
5 : ಇದನ್ನು, ನಾವು ನಿರೀಕ್ಷಿಸಲೇ ಇಲ್ಲ! ಮೊಟ್ಟಮೊದಲು ಅವರು ತಮ್ಮನ್ನೇ ಪ್ರಭುವಿಗೆ ಸಮರ್ಪಿಸಿದರು. ಅನಂತರ ದೈವಚಿತ್ತಕ್ಕೆ ಅನುಗುಣವಾಗಿ ನಮಗೂ ತಮ್ಮನ್ನು ಒಪ್ಪಿಸಿಕೊಟ್ಟರು.
6 : ಇಂಥ ಪ್ರೀತಿಮಯ ಸೇವಾಕಾರ್ಯವನ್ನು ನಿಮ್ಮಲ್ಲಿ ಪ್ರಾರಂಭಿಸಿದ ತೀತನು ಅದನ್ನು ಮುಂದುವರಿಸಿ, ಪೂರ್ಣಗೊಳಿಸಬೇಕೆಂದು ನಾವು ಆತನನ್ನು ಕೇಳಿಕೊಂಡಿದ್ದೇವೆ.
7 : ವಿಶ್ವಾಸ, ವಾಕ್ಚಾತುರ್ಯ, ಜ್ಞಾನ, ಶ್ರದ್ಧೆ, ನಮ್ಮ ಬಗ್ಗೆ ನಿಮಗಿರುವ ಪ್ರೀತಿ - ಈ ಎಲ್ಲಾ ವಿಷಯಗಳಲ್ಲೂ ನೀವು ಸಮೃದ್ಧರಾಗಿದ್ದೀರಿ. ಹಾಗೆಯೇ ಈ ಸೇವಾಕಾರ್ಯದಲ್ಲೂ ಸಮೃದ್ಧರಾಗಿರಿ.
8 : ಇದನ್ನು ನಾನು ಆಜ್ಞಾರೂಪವಾಗಿ ಹೇಳುತ್ತಿಲ್ಲ. ಬೇರೆಯವರಿಗೆ ಈ ಸೇವಾಕಾರ್ಯದಲ್ಲಿ ಇರುವ ಶ್ರದ್ಧೆಯನ್ನು ಆದರ್ಶವಾಗಿ ಹಿಡಿದು ನಿಮ್ಮ ಪ್ರೀತಿ ಎಷ್ಟು ಯಥಾರ್ಥವಾದುದೆಂದು ಕಂಡುಕೊಳ್ಳುವುದಕ್ಕಾಗಿ ಇದನ್ನು ಹೇಳುತ್ತಿದ್ದೇನೆ.
9 : ಪ್ರಭು ಯೇಸುಕ್ರಿಸ್ತರ ಕೃಪಾಶಕ್ತಿಯನ್ನು ನೀವು ಬಲ್ಲಿರಿ. ಅವರು ತಮ್ಮ ಬಡತನದಿಂದ ನಿಮ್ಮನ್ನು ಶ್ರೀಮಂತವಾಗಿಸಲೆಂದು, ತಾವು ಶ್ರೀಮಂತರಾಗಿದ್ದರೂ ನಿಮಗೋಸ್ಕರ ಬಡವರಾದರು.
ಕೀರ್ತನೆ - 146: 2, 5-9
ನನ್ನ ಮನವೇ ವಂದಿಸು ಪ್ರಭುವನು
2 : ಪ್ರಾಣವಿರುವವರೆಗೆ ಸ್ತುತಿಸುವೆನು ಪ್ರಭುವನು / ಬಾಳೆಲ್ಲ ಹಾಡಿ ಭಜಿಪೆನು ನನ್ನ ದೇವರನು
5 : ಇಸ್ರಯೇಲ ಕುಲದೇವರು ಯಾರಿಗೆ ಉದ್ಧಾರಕನೋ, ಅವನೇ ಧನ್ಯನು / ಪ್ರಭುವನು ತನ್ನ ದೇವರೆಂದು ಯಾರು ನಂಬಿಹನೋ, ಅವನೇ ಧನ್ಯನು
6 : ಭೂಮ್ಯಾಕಾಶ, ಸಾಗರ, ಚರಾಚರಗಳನು ನಿರ್ಮಿಸಿದವ ಆತನೆ / ಕೊಟ್ಟ ವಾಗ್ದಾನಗಳನು ತಪ್ಪದೆ ನೆರವೇರಿಸುವವ ಆತನೆ
7 : ದೊರಕಿಸುವನು ನ್ಯಾಯ ದಲಿತರಿಗೆ / ಒದಗಿಸುವನು ಆಹಾರ ಹಸಿದವರಿಗೆ / ನೀಡುವನು ಬಿಡುಗಡೆ ಬಂಧಿತರಿಗೆ
8 : ಕಣ್ಣನ್ನೀಯುವನು ಪ್ರಭು ಕುರುಡರಿಗೆ / ಉದ್ಧಾರಕನಾ ಪ್ರಭು ಕುಗ್ಗಿದವರಿಗೆ / ಆತನ ಒಲವಿರುವುದು ಸಾಧು ಸಜ್ಜನರಿಗೆ
9 : ರಕ್ಷಿಸುವನು ಪ್ರಭು ಪರದೇಶಿಗಳನು / ಆದರಿಸುವನು ಅನಾಥರನು, ವಿಧವೆಯರನು / ನಿರ್ಮೂಲ ಮಾಡುವನು ದುರ್ಜನರ ಮಾರ್ಗವನು
ಶುಭಸಂದೇಶ -ಮತ್ತಾಯ 5: 43-48
43 : "ಮಿತ್ರರನ್ನು ಪ್ರೀತಿಸು, ಶತ್ರುವನ್ನು ದ್ವೇಷಿಸು" ಎಂದು ಹೇಳಿರುವುದು ನಿಮಗೆ ತಿಳಿದೇ ಇದೆ.
44 : ನಾನು ಹೇಳುವುದನ್ನು ಗಮನಿಸಿರಿ: ನಿಮ್ಮ ಶತ್ರುಗಳನ್ನು ಪ್ರೀತಿಸಿರಿ; ನಿಮ್ಮನ್ನು ಪೀಡಿಸುವವರಿಗಾಗಿ ಪ್ರಾರ್ಥಿಸಿರಿ.
45 : ಇದರಿಂದ ಸ್ವರ್ಗದಲ್ಲಿರುವ ನಿಮ್ಮ ತಂದೆಗೆ ನೀವು ಮಕ್ಕಳಾಗುವಿರಿ. ಅವರು ಸಜ್ಜನರ ಮೇಲೂ ದುರ್ಜನರ ಮೇಲೂ ತಮ್ಮ ಸೂರ್ಯನು ಉದಯಿಸುವಂತೆ ಮಾಡುತ್ತಾರೆ; ನೀತಿವಂತರ ಮೇಲೂ ಅನೀತಿವಂತರ ಮೇಲೂ ಮಳೆಗರೆಯುತ್ತಾರೆ.
46 : ನಿಮ್ಮನ್ನು ಪ್ರೀತಿಸುವವರನ್ನು ಮಾತ್ರ ನೀವು ಪ್ರೀತಿಸಿದರೆ ಅದರಿಂದೇನು ಫಲ? ಸುಂಕ ವಸೂಲಿ ಮಾಡುವವರೂ ಹಾಗೆ ಮಾಡುವುದಿಲ್ಲವೇ?
47 : ನಿಮ್ಮ ಮಿತ್ರರನ್ನು ಮಾತ್ರ ನೀವು ಗೌರವಿಸಿದರೆ ಅದರಲ್ಲೇನು ವಿಶೇಷ? ಅನ್ಯಜನರೂ ಹಾಗೆ ಮಾಡುತ್ತಾರಲ್ಲವೇ?
48 : ಆದುದರಿಂದ ಸ್ವರ್ಗದಲ್ಲಿರುವ ನಿಮ್ಮ ತಂದೆ ಪರಿಪೂರ್ಣರಾಗಿರುವಂತೆ ನೀವೂ ಪರಿಪೂರ್ಣರಾಗಿರಿ."
ಚಿಂತನೆ
'ನಿಮ್ಮ ಶತ್ರುಗಳನ್ನು ಪ್ರೀತಿಸಿ, ಪೀಡಿಸುವವರಿಗಾಗಿ ಪ್ರಾರ್ಥನೆ ಮಾಡಿರಿ' ಎಂಬ ಕ್ರಿಸ್ತನ ಮಾತುಗಳ ಅರ್ಥ ಹಾಗೂ ಪಾಲನೆಯೇ ವಿಶ್ವಶಾಂತಿಗೆ ಮಾದರಿ. 'ಹಲ್ಲಿಗೆ ಹಲ್ಲು' ಎಂಬ ನ್ಯಾಯವೇ ಪೈಶಾಚಿಕವಾದದ್ದು. ಧರ್ಮ ಜೀವ ಉಳಿಸುತ್ತದೆ ಮತ್ತು ಬೆಳೆಸುತ್ತದೆ. ಕಾನೂನು ಜೀವವನ್ನು ನಿಯಂತ್ರಿಸುತ್ತದೆ ಮತ್ತು ಶಿಕ್ಷಿಸುತ್ತದೆ. ಯಾವುದೇ ತಪ್ಪಿಗೆ ಶಿಕ್ಷೆಯಾಗಬೇಕು ನಿಜ, ಆದರೆ ಅಮಾನುಷವಾಗಿ ಅಲ್ಲ ಮಾನವೀಯತೆಯ ನೆಲೆಗಟ್ಟಿನಲ್ಲಿ ಶಿಕ್ಷೆಯಾಗಲಿ. ಪ್ರಭು ಇದನ್ನೆ ಮನದಟ್ಟು ಮಾಡಲು ಪ್ರಯತ್ನಿಸುತ್ತಾರೆ
No comments:
Post a Comment