ಹಸಿರು / ಶನಿ / ಸಾಧಾರಣಕಾಲದ ಹತ್ತನೇ
ವಾರ
1ನೇ ವಾಚನ - 2 ಕೊರಿಂಥ
5: 14 -21
ಕೀರ್ತನೆ - 1೦3: 1-2, 3-4, 8-1೦,12-13
ಶುಭಸಂದೇಶ - ಮತ್ತಾಯ 5: 33-37
1ನೇ ವಾಚನ - 2 ಕೊರಿಂಥ 5: 14 -21
14 : ಯೇಸುಕ್ರಿಸ್ತರ ಪ್ರೀತಿಯ ಪಾಲನೆಗೆ ನಾವು ಒಳಗಾಗಿದ್ದೇವೆ. ಎಲ್ಲಾ ಮಾನವರಿಗೋಸ್ಕರ ಒಬ್ಬನು ಮರಣಹೊಂದಿದನು. ಆದ್ದರಿಂದ ನಾವೆಲ್ಲರೂ ಆ ಮರಣದಲ್ಲಿ ಪಾಲುಗಾರರು.
15 : ಸರ್ವರಿಗೂ ಯೇಸು ಪ್ರಾಣತ್ಯಾಗಮಾಡಿದರು. ಪರಿಣಾಮವಾಗಿ, ಇನ್ನು ಮುಂದೆ ಜೀವಿಸುವವರು ತಮಗಾಗಿ ಜೀವಿಸದೆ, ಸತ್ತು ಪುನರುತ್ಥಾನರಾದ ಯೇಸುವಿಗಾಗಿ ಜೀವಿಸಬೇಕು.
16 : ಇನ್ನು ಮುಂದೆ ನಾವು ಯಾರನ್ನೂ ಕೇವಲ ಮಾನವ ದೃಷ್ಟಿಯಿಂದ ಪರಿಗಣಿಸುವುದಿಲ್ಲ. ಒಂದು ಕಾಲದಲ್ಲಿ, ಕ್ರಿಸ್ತಯೇಸುವನ್ನು ನಾವು ಹಾಗೆ ಪರಿಗಣಿಸಿದ್ದುಂಟು. ಆದರೆ ಇನ್ನು ಮುಂದೆ ಹಾಗೆ ಮಾಡುವುದಿಲ್ಲ.
17 : ಯಾರಾದರೂ ಯೇಸುಕ್ರಿಸ್ತರೊಡನೆ ಒಂದಾದರೆ ಅವನು ನೂತನ ಸೃಷ್ಟಿಯಾಗುತ್ತಾನೆ. ಹಳೆಯದೆಲ್ಲಾ ಅಳಿದು ಹೋಗುತ್ತದೆ. ಹೊಸದಿದೋ, ಜನ್ಮ ತಳೆದಿದೆ.
18 : ಇದೆಲ್ಲಾ ಆಗುವುದು ದೇವರಿಂದ. ದೇವರು ಕ್ರಿಸ್ತಯೇಸುವಿನ ಮುಖಾಂತರ ನಮ್ಮನ್ನು ತಮ್ಮೊಡನೆ ಸಂಧಾನ ಪಡಿಸಿಕೊಂಡಿದ್ದಾರೆ. ಇದಲ್ಲದೆ, ಇತರರನ್ನು ಸಂಧಾನಕ್ಕೆ ತರುವ ಕಾರ್ಯವನ್ನು ನಮಗೆ ವಹಿಸಿದ್ದಾರೆ.
19 : ಹೌದು, ದೇವರು ಮಾನವರ ಅಪರಾಧಗಳನ್ನು ಲೆಕ್ಕಿಸದೆ, ಕ್ರಿಸ್ತ ಯೇಸುವಿನಲ್ಲಿ ಇಡೀ ಜಗತ್ತನ್ನೇ ತಮ್ಮೊಡನೆ ಸಂಧಾನಗೊಳಿಸುತ್ತಿದ್ದಾರೆ. ಈ ಸಂಧಾನದ ಸಂದೇಶವನ್ನು ಸಾರುವ ಸೌಭಾಗ್ಯವನ್ನು ಅವರೇ ನಮಗೆ ಕೊಟ್ಟಿದ್ದಾರೆ.
20 : ಆದ್ದರಿಂದಲೇ ನಾವು ಕ್ರಿಸ್ತಯೇಸುವಿನ ರಾಯಭಾರಿಗಳು. ದೇವರೇ ನಮ್ಮ ಮುಖಾಂತರ ಕರೆನೀಡುತ್ತಿದ್ದಾರೆ. ಅವರೊಡನೆ ಸಂಧಾನಮಾಡಿಕೊಳ್ಳಿರೆಂದು ಕ್ರಿಸ್ತಯೇಸುವಿನ ಹೆಸರಿನಲ್ಲಿ ನಾವು ನಿಮ್ಮನ್ನು ವಿನಂತಿಸುತ್ತೇವೆ.
21 : ಪಾಪವನ್ನೇ ಅರಿಯದ ಕ್ರಿಸ್ತಯೇಸುವನ್ನು ದೇವರು ನಮಗೋಸ್ಕರ ಪಾಪಸ್ವರೂಪಿಯನ್ನಾಗಿಸಿದರು. ಕ್ರಿಸ್ತಯೇಸುವಿನಲ್ಲಿ ನಾವು ದೇವರೊಡನೆ ಸತ್ಸಂಬಂಧವನ್ನು ಪಡೆಯಲೆಂದೇ ಹೀಗೆ ಮಾಡಿದರು.
ಕೀರ್ತನೆ - 1೦3: 1-2, 3-4, 8-1೦,12-13
ಭಜಿಸು ನನ್ನ ಮನವೇ, ಭಜಿಸು ಪ್ರಭುವನು
1 : ಭಜಿಸು ನನ್ನ ಮನವೇ, ಭಜಿಸು ಪ್ರಭುವನು / ನನ್ನ ಅಂತರಂಗವೇ, ಭಜಿಸು ಆತನನು / ನೆನೆ ಆತನ ಪರಮಪಾವನ ನಾಮವನು //
2 : ಭಜಿಸು ನನ್ನ ಮನವೇ, ಭಜಿಸು ಪ್ರಭುವನು / ಮರೆಯದಿರು ಆತನ ಉಪಕಾರಗಳೊಂದನು //
3 : ಮನ್ನಿಸುವನಾತ ನನ್ನ ದೋಷಗಳನು / ವಾಸಿಮಾಡುವನು ನನ್ನ ರೋಗಗಳನು //
4 : ಉಳಿಸುವನು ಪಾತಾಳದ ಕೂಪದಿಂದ ನನ್ನನು / ಮುಡಿಸುವನೆನಗೆ ದಯದಾಕ್ಷಿಣ್ಯದ ಮುಕುಟವನು //
9 : ಆತನು ಸದಾ ತಪ್ಪು ಹುಡುಕುವವನಲ್ಲ / ನಿತ್ಯಕು ಕೋಪ ಇಟ್ಟುಕೊಳ್ಳುವವನಲ್ಲ //
10 : ನಮ್ಮ ಪಾಪಗಳಿಗೆ ತಕ್ಕಂತೆ ಆತ ವರ್ತಿಸಲಿಲ್ಲ / ನಮ್ಮ ಅಪರಾಧಗಳಿಗೆ ತಕ್ಕಹಾಗೆ ದಂಡಿಸಲಿಲ್ಲ //
11 : ಆಕಾಶಮಂಡಲವು ಭೂಮಿಯಿಂದೆಷ್ಟೋ ಉನ್ನತ / ದೈವಭಯವುಳ್ಳವರಿಗೆ ಆತನ ಕೃಪೆ ಅಷ್ಟೇ ಸನ್ನುತ //
12 : ಪಡುವಣದಿಂದ ಮೂಡಣವೆಷ್ಟೋ ದೂರ / ದೂಡಿದನಾತ ನಮ್ಮ ಪಾಪಗಳನು ಅಷ್ಟು ದೂರ // 13 ತಂದೆ ಕರುಣೆ ತೋರಿಸುವಂತೆ ಮಕ್ಕಳಿಗೆ /
ಶುಭಸಂದೇಶ - ಮತ್ತಾಯ 5: 33-37
33 : " ‘ಸುಳ್ಳಾಣೆಯಿಡಬೇಡ; ದೇವರಿಗೆ ಆಣೆಯಿಟ್ಟು ವಾಗ್ದಾನಮಾಡಿದಂತೆ ನಡೆದುಕೊಳ್ಳಲೇ ಬೇಕು’ ಎಂದು ಪೂರ್ವಿಕರಿಗೆ ಹೇಳಿದ್ದು ನಿಮಗೆ ತಿಳಿದೇ ಇದೆ.
34 : ಈಗ ನಾನು ಹೇಳುವುದನ್ನು ಕೇಳಿ: ನೀವು ಆಣೆಯಿಡಲೇಬೇಡಿ. ಆಕಾಶದ ಮೇಲೆ ಆಣೆಯಿಡಬೇಡಿ, ಅದು ದೇವರ ಸಿಂಹಾಸನ;
35 : ಭೂಮಿಯ ಮೇಲೆ ಆಣೆಯಿಡಬೇಡಿ, ಅದು ದೇವರ ಪಾದಪೀಠ; ಜೆರುಸಲೇಮಿನ ಮೇಲೆ ಆಣೆಯಿಡಬೇಡಿ, ಅದು ರಾಜಾಧಿರಾಜನ ಪಟ್ಟಣ;
36 : ನಿಮ್ಮ ತಲೆಯ ಮೇಲೂ ಆಣೆಯಿಡಬೇಡಿ; ಹಾಗೆ ಆಣೆಯನ್ನಿಟ್ಟು ಅದರ ಒಂದು ಕೂದಲನ್ನಾದರೂ ಬೆಳ್ಳಗೆ ಅಥವಾ ಕಪ್ಪಗೆ ಮಾಡಲು ನಿಮ್ಮಿಂದಾಗದು.
37 : ಹೌದಾದರೆ ಹೌದೆನ್ನಿ, ಅಲ್ಲವಾದರೆ ಅಲವೆನ್ನಿ; ಇದಕ್ಕಿಂತ ಮಿಗಿಲಾದುದು ಪಿಶಾಚಿಯಿಂದ ಪ್ರೇರಿತವಾದುದು."
ಚಿಂತನೆ
ಧಾರ್ಮಿಕ ವಿಷಯಗಳಲ್ಲಿ ಪ್ರಭುದ್ಧತೆ ಬಹಳ ಪ್ರಮುಖವಾದುದು. ಪೊಳ್ಳು ಮಾತುಗಳು, ಆಶ್ವಾಸನೆಗಳು ಫಲ ನೀಡುವುದಿಲ್ಲ. ಅವುಗಳು ನಮ್ಮ ವ್ಯಕ್ತಿತ್ವವನ್ನು ಮುಸುಕುಗೊಳಿಸುತ್ತವೆ. ಆ ಕಾರಣದಿಂದಲೇ ಹೌದಾದರೆ ಹೌದೆನ್ನಿ, ಅಲ್ಲವಾದರೆ ಅಲ್ಲವೆನ್ನಿ.
ನಮ್ಮ ಮಾತು ನಮ್ಮ ಧಾರ್ಮಿಕ ಅನುಭವದ ಆಳವನ್ನು ತಿಳಿಸುವಂತಿರಬೇಕು. ಇಲ್ಲದಿದ್ದಲ್ಲಿ ಅದು ಫಲವೀಯದ ಮರದಂತೆ, ಸವಿಯಿಲ್ಲದ ಜೇನಿನಂತೆ, ರುಚಿಸದ
ಊಟದಂತೆ. ಆದ್ದರಿಂದ ಕ್ರಿಸ್ತನ ಅನುಯಾಯಿಗಳು ನಿರಂತರವಾಗಿ ಕ್ರಿಸ್ತನನ್ನು ಅನುಕರಿಸಬೇಕು. ಅವರ ಬೋಧನೆಗಳನ್ನು ಜೀವನದಲ್ಲಿ ಅಳವಡಿಸಿಕೊಂಡಾಗ ಜೀವನ ಪಾವನವಾಗುತ್ತದೆ, ಬಾಳು ಸಾರ್ಥಕವಾಗುತ್ತದೆ.
No comments:
Post a Comment