Wednesday, 11 September 2019

ಸಾಧಾರಣ ಕಾಲದ ಇಪ್ಪತ್ಮೂರನೇ ವಾರ ಶುಕ್ರವಾರ

ಸಾಧಾರಣ ಕಾಲದ ಇಪ್ಪತ್ಮೂರನೇ ವಾರ ಶುಕ್ರವಾರ

13/ಬಿಳಿ/ಶುಕ್ರ/ಸಂತ ಜಾನ್ ಕ್ರಿಸಾಸ್ಟಮ್ (ಧರ್ಮಾ ಮತ್ತು ಧ.ಪಂ)(ಸ್ಮರಣೆ)
1ನೇ ವಾಚನ - 1ತಿಮೋ 1: 1-2, 12-14
ಕೀರ್ತನೆ - 16: 6-7, 8-9
ಶುಭಸಂದೇಶ - ಲೂಕ 6:39-42

1ನೇ ವಾಚನ - 1ತಿಮೋ 1: 1-2, 12-14
ಕ್ರೈಸ್ತವಿಶ್ವಾಸದಲ್ಲಿ ಸತ್‍ಪುತ್ರನಾದ ತಿಮೊಥೇಯನಿಗೆ - ಪೌಲನು ಬರೆಯುವ ಪತ್ರ. ನಮ್ಮ ಉದ್ಧಾರಕರಾದ ದೇವರ ಮತ್ತು ನಮ್ಮ ನಿರೀಕ್ಷೆಯಾಗಿರುವ ಕ್ರಿಸ್ತಯೇಸುವಿನ ಆಜ್ಞಾನುಸಾರ, ನಾನು ಕ್ರಿಸ್ತಯೇಸುವಿನ ಪ್ರೇಷಿತನಾಗಿದ್ದೇನೆ. ಪಿತನಾದ ದೇವರೂ ನಮ್ಮ ಪ್ರಭುವಾದ ಕ್ರಿಸ್ತಯೇಸುವೂ ನಿನಗೆ ಕೃಪೆಯನ್ನೂ ಕರುಣೆಯನ್ನೂ ಶಾಂತಿಯನ್ನೂ ಅನುಗ್ರಹಿಸಲಿ!  ಶುಭಸಂದೇಶದ ಸೇವೆಯನ್ನು ಕೈಗೊಳ್ಳಲು ಯೋಗ್ಯನೆಂದು ಎಣಿಸಿ ನನಗೆ ಬೇಕಾದ ಶಕ್ತಿಸಾಮಥ್ರ್ಯವನ್ನು ದಯಪಾಲಿಸಿದ ನಮ್ಮ ಪ್ರಭು ಯೇಸುಕ್ರಿಸ್ತರಿಗೆ ನಾನು ಕೃತಜ್ಞತೆಯನ್ನು ಸಲ್ಲಿಸುತ್ತೇನೆ. ಹಿಂದೆ ನಾನು ಅವರನ್ನು ದೂಷಿಸಿದೆ, ಹಿಂಸಿಸಿದೆ, ಅವಮಾನಪಡಿಸಿದೆ. ಆದರೆ ದೇವರು ದಯಾಮಯಿ; ಆಗ ನಾನು ತಿಳಿಯದೆ ಅವಿಶ್ವಾಸಿಯಾಗಿ ಹಾಗೆ ಮಾಡಿದ್ದರಿಂದ ದೇವರು ನನಗೆ ಕರುಣೆತೋರಿದರು. ಕ್ರಿಸ್ತ ಯೇಸುವಿನ ಅನ್ಯೋನ್ಯತೆಯಿಂದ ಲಭಿಸುವ ಪ್ರೀತಿ ವಿಶ್ವಾಸದಲ್ಲಿ ಭಾಗಿಯಾಗುವಂತೆ ಅವರು ನನ್ನ ಮೇಲೆ ತಮ್ಮ ಕೃಪಾವರಗಳನ್ನು ಹೇರಳವಾಗಿ ಸುರಿಸಿದರು.

ಕೀರ್ತನೆ - 16: 1-2,5, 6-7, 8-9, 11
1 : ನೀಡು ದೇವಾ ರಕ್ಷಣೆಯನು / ನಾ ನಿನಗೆ ಶರಣಾಗತನು //
2 : “ನೀನೇ ನನ್ನೊಡೆಯ”ನೆಂದು ನಾ ನುಡಿದೆ / ನಿನ್ನ ಹೊರತು ನನಗಿಲ್ಲ ಒಳಿತು” ಎಂದೆ /
3 : ಸಂತರು ನಾಡಿಗೆ ತಿಲಕವು / ಅವರಲ್ಲಿದೆ ಎನಗೆ ಒಲವು //
4 : ಅನ್ಯದೇವರನ್ನು ಬಯಸುವವರನ್ನು ಕಾದಿದೆ ಕಠಿಣ ಕಷ್ಟ / ಅವರಂತೆ ರಕ್ತಪಾನತರ್ಪಣೆ ಮಾಡಲೆನಗಿಲ್ಲ ಇಷ್ಟ / ಆ ದೇವರುಗಳ ನಾಮೋಚ್ಚಾರಣೆ ನನ್ನ ತುಟಿಗೆ ಅನಿಷ್ಟ //
5 : ನನ್ನ ಸ್ವತ್ತೂ ಸ್ವಾಸ್ತ್ಯವೂ ನೀನೇ / ನಿನ್ನ ಕೈಯಲ್ಲಿದೆ ಪ್ರಭು, ನನ್ನ ವಿಮೆ //
6 : ನನ್ನ ಪಾಲಿಗೆ ಬಂದುದು ರಮಣೀಯವಾದುದು / ನನಗದೆ ಪರಮಾನಂದ ದಾಯಕವಾದುದು //
7 : ಪ್ರಭುವಿಗೆನ್ನ ಧನ್ಯವಾದ - ಆತನೇ ನನಗೆ ಮಾರ್ಗದರ್ಶಕ / ಅಂಧಕಾರದೊಳೂ ನನ್ನ ಮನಸ್ಸಾಕ್ಷಿಯೆ ನನಗೆ ಬೋಧಕ //
8 : ಇರಿಸಿಕೊಳ್ಳುವೆ ಪ್ರಭುವನು ಸತತ ನನ್ನೆದುರಿಗೆ / ಆತನಿರಲು ಬಲಕ್ಕೆ ನನಗೆಲ್ಲಿಯದು ಹೆದರಿಕೆ? //
9 : ಇದು ಕಾರಣ ಹರ್ಷದಿಂದಿದೆ ಎನ್ನಯ ಹೃದಯ / ಆನಂದಗೊಂಡಿದೆ ಮನ, ಸುರಕ್ಷಿತವಿದೆ ಕಾಯ //
10 : ಏಕೆನೆ ದೂಡುವುದಿಲ್ಲ ನೀನು ಎನ್ನನು ಅಧೋಲೋಕಕೆ / ಬಿಟ್ಟುಕೊಡುವುದಿಲ್ಲ ನಿನ್ನ ಈ ಭಕ್ತನನು ಪಾತಾಳಕೆ //
11 : ತೋರ್ಪಡಿಸುವೆ ಎನಗೆ ಅಮರ ಜೀವಮಾರ್ಗವನು / ನಿನ್ನ ಸನ್ನಿಧಿ ಕೊಡುವುದು ಪರಮಾನಂದವನು / ನಿನ್ನ ಬಲಗೈ ನೀಡುವುದು ನಿತ್ಯ ಭಾಗ್ಯವನು //

ಶುಭಸಂದೇಶ - ಲೂಕ 6:39-42
ಯೇಸುಸ್ವಾಮಿ ಅವರಿಗೆ ಈ ಸಾಮತಿಯನ್ನೂ ಹೇಳಿದರು: “ಕುರುಡನು ಕುರುಡನಿಗೆ ದಾರಿ ತೋರಿಸಲಾದೀತೆ? ಇಬ್ಬರೂ ಹಳ್ಳದಲ್ಲಿ ಬೀಳುವುದಿಲ್ಲವೆ? ಗುರುವಿಗಿಂತ ಶಿಷ್ಯನು ಶ್ರೇಷ್ಠನಲ್ಲ; ಆದರೂ ಪೂರ್ಣ ಶಿಕ್ಷಣ ಪಡೆದ ಪ್ರತಿಯೊಬ್ಬನೂ ಗುರುವಿನಂತೆ ಆಗುವನು. “ನಿನ್ನ ಕಣ್ಣಿನಲ್ಲಿರುವ ದಿಮ್ಮಿಯನ್ನು ನೋಡದೆ, ಸೋದರನ ಕಣ್ಣಿನಲ್ಲಿರುವ ಅಣುವನ್ನು ಗಮನಿಸುವುದೇಕೆ? ನಿನ್ನ ಕಣ್ಣಿನಲ್ಲಿರುವ ದಿಮ್ಮಿಯನ್ನೇ ಕಾಣಲಾರದ ನೀನು, ‘ತಮ್ಮಾ ತಾಳು, ನಿನ್ನ ಕಣ್ಣಿನಲ್ಲಿರುವ ಅಣುವನ್ನು ತೆಗೆದು ಬಿಡುತ್ತೇನೆ,’ ಎಂದು ಸೋದರನಿಗೆ ಹೇಗೆ ಹೇಳಬಲ್ಲೆ? ಎಲೈ ಕಪಟಿಯೇ, ಮೊದಲು ನಿನ್ನ ಕಣ್ಣಿನಲ್ಲಿರುವ ದಿಮ್ಮಿಯನ್ನು ತೆಗೆದು ಹಾಕು, ಅನಂತರ ನಿನ್ನ ಸೋದರನ ಕಣ್ಣಿನಲ್ಲಿರುವ ಅಣುವನ್ನು ತೆಗೆದು ಹಾಕಲು ನಿನಗೆ ಕಣ್ಣು ನಿಚ್ಚಳವಾಗಿ ಕಾಣಿಸುವುದು.

ಚಿಂತನೆ

ಸಂತ ಜಾನ್ ಕ್ರಿಸಾಸ್ಟಮ್
(ಧರ್ಮಾಧ್ಯಕ್ಷ ಮತ್ತು ಧರ್ಮಸಭೆಯ ಪಂಡಿತ)

ನಾವು ಒಳ್ಳೆಯವರಾದರೇ ಮಾತ್ರ ಇತರಿಗೆ ಮಾರ್ಗದರ್ಶನ ನೀಡಲು ಸಾಧ್ಯ ಇಲ್ಲವಾದರೆ ನಮ್ಮ ಕೆಟ್ಟ ನುಡಿ-ನಡತೆ, ಕ್ರಿಯೆಗಳೆಲ್ಲವು ಇತರರನ್ನು ದುರ್ಮಾರ್ಗದಲ್ಲಿ ನಡೆಯಲು ಪ್ರೇರೆಪಿಸುತ್ತವೆ. ಕುರುಡನು ಇನ್ನೊಬ್ಬ ಕುರುಡನಿಗೆ ದಾರಿ ತೋರಿಸಲಾದೀತೆ? ಹಾಗೆಯೇ ಕಪಟಿಗಳು ದುರ್ಮಾಗಿಗಳು, ಪಾಪಿಗಳು ಇತರರನ್ನು ಪುಣ್ಯಮಾರ್ಗದಲ್ಲಿ ನಡೆಸಲು ಸಾಧ್ಯವೇ ಖಂಡಿತವಾಗಿಯೂ ಇಲ್ಲ. ಯಾವುದೇ ವ್ಯಕ್ತಿಗೆ ತನ್ನೊಳಗೆ ನೈತಿಕತೆ ಇದ್ದರೆ ಮಾತ್ರ ಮತ್ತೊಬ್ಬರ ಬಗ್ಗೆ ಮಾತನಾಡಲು, ಉಪದೇಶಿಸಲು ಸಾಧ್ಯ. ಪ್ರಭುವಿನ ಈ ವಾಕ್ಯ ಎಷ್ಟೊಂದು ಅರ್ಥಗರ್ಭಿತ. ನಾವು ಅನೇಕ ಬಾರಿ ಪಾಪಕ್ಕೆ ಸಿಲುಕಿ ಆಧ್ಯಾತ್ಮಿಕ ಅಂಧತ್ವದಲ್ಲಿ ನರಳುತ್ತೇವೆ. ಮೊದಲು ನಮ್ಮ ಆತ್ಮೀಕ ಕಣ್ಣುಗಳನ್ನು ತೆರೆದು ಪರಿಶುದ್ಧ ಜೀವನ ನಡೆಸುವಂತೆ ಕರೆಯನ್ನಿಯುತ್ತಾರೆ.

No comments:

Post a Comment