Friday, 6 September 2019

ಸಾಧಾರಣ ಕಾಲದ ಇಪ್ಪತ್ಮೂರನೇ ವಾರ ಬುಧವಾರ

ಸಾಧಾರಣ ಕಾಲದ ಇಪ್ಪತ್ಮೂರನೇ ವಾರ ಬುಧವಾರ 

11/ಹಸಿರು/ಬುಧ
1ನೇ ವಾಚನ - ಕೊಲೊ 3: 1-11
ಕೀರ್ತನೆ - 145: 2-3, 1೦-13
ಶುಭಸಂದೇಶ - ಲೂಕ 6:2೦-26

1ನೇ ವಾಚನ - ಕೊಲೊ 3: 1-11
ನೀವು ಯೇಸುಕ್ರಿಸ್ತರೊಂದಿಗೆ ಪುನರುತ್ಥಾನ ಹೊಂದಿರುವುದಾದರೆ ಸ್ವರ್ಗೀಯ ವಿಷಯಗಳ ಕಡೆಗೆ ಗಮನಕೊಡಿ. ಕ್ರಿಸ್ತಯೇಸು ಸ್ವರ್ಗದಲ್ಲಿ ದೇವರ ಬಲಗಡೆಯಲ್ಲಿ ಆಸೀನರಾಗಿದ್ದಾರೆ. ನೀವು ಕ್ರಿಸ್ತಯೇಸುವಿನೊಂದಿಗೆ ಮರಣ ಹೊಂದಿರುವುದರಿಂದ ಅವರೊಂದಿಗೆ ನಿಮ್ಮ ಜೀವ ದೇವರಲ್ಲಿ ಮರೆಯಾಗಿದೆ. ನಿಮ್ಮ ಮನಸ್ಸು ಪ್ರಾಪಂಚಿಕ ವಿಷಯಗಳ ಮೇಲೆ ಅಲ್ಲ, ಸ್ವರ್ಗೀಯ ವಿಷಯಗಳ ಮೇಲೆ ಕೇಂದ್ರೀಕೃತವಾಗಿರಲಿ. ಕ್ರಿಸ್ತಯೇಸುವೇ ನಿಮ್ಮ ನೈಜ ಜೀವವಾಗಿದ್ದಾರೆ. ಅವರು ಪುನರಾಗಮಿಸುವಾಗ ನೀವೂ ಸಹ ಅವರ ಮಹಿಮೆಯಲ್ಲಿ ಪಾಲುಗಾರರಾಗಿ ಅವರೊಂದಿಗೆ ಪ್ರತ್ಯಕ್ಷರಾಗುವಿರಿ. ನಿಮ್ಮಲ್ಲಿರುವ ಪ್ರಾಪಂಚಿಕ ಆಶೆ ಆಕಾಂಕ್ಷೆಗಳನ್ನು ತ್ಯಜಿಸಿರಿ. ಹಾದರ, ಅನೈತಿಕತೆ, ಕಾಮಾಭಿಲಾಷೆ, ದುರಾಲೋಚನೆ, ವಿಗ್ರಹಾರಾಧನೆಗೆ ಸಮವಾಗಿರುವ ಲೋಭ - ಇವುಗಳನ್ನು ದಮನಮಾಡಿರಿ. ಇಂಥವುಗಳಿಗೆ ಈಡಾಗುವ ದುಷ್ಕರ್ಮಿಗಳು ದೇವರ ಕೋಪಾಗ್ನಿಗೆ ಗುರಿಯಾಗುತ್ತಾರೆ. ಒಮ್ಮೆ ಇವೆಲ್ಲ ನಿಮ್ಮ ಜೀವನದ ರೀತಿನೀತಿಗಳಾಗಿದ್ದು ಇವುಗಳಲ್ಲೇ ಮಗ್ನರಾಗಿದ್ದಿರಿ. ಈಗಲಾದರೋ ಕೋಪ, ರೋಷ, ಮತ್ಸರ - ಇವುಗಳನ್ನು ತ್ಯಜಿಸಿರಿ; ದೂಷಣೆ ಮತ್ತು ಹೊಲಸು ಮಾತುಗಳು ನಿಮ್ಮ ಬಾಯಿಂದ ಬರಕೂಡದು. ಒಬ್ಬರಿಗೊಬ್ಬರು ಸುಳ್ಳುಹೇಳಬೇಡಿ. ಏಕೆಂದರೆ, ನಿಮ್ಮಲ್ಲಿದ್ದ ಹಳೆಯ ಸ್ವಭಾವವನ್ನೂ ಅದಕ್ಕೆ ಸಂಬಂಧಿಸಿದ ದುರಭ್ಯಾಸಗಳನ್ನೂ ತೊರೆದು ಬಿಟ್ಟಿದ್ದೀರಿ. ಮಾತ್ರವಲ್ಲ, ನೂತನ ಸ್ವಭಾವವನ್ನು ಧರಿಸಿಕೊಂಡಿದ್ದೀರಿ. ನೀವು ಸೃಷ್ಟಿಕರ್ತನನ್ನು ಸಂಪೂರ್ಣವಾಗಿ ಅರಿತುಕೊಳ್ಳಬೇಕು ಎಂಬ ಉದ್ದೇಶದಿಂದ ಈ ಸ್ವಭಾವವನ್ನು ಅನುದಿನವೂ ನವೀಕರಿಸಲಾಗುತ್ತಿದೆ. ಇಂಥ ಹೊಸ ಜೀವನದಲ್ಲಿ ಯೆಹೂದ್ಯ-ಗ್ರೀಕ, ಸುನ್ನತಿ ಹೊಂದಿದವ-ಸುನ್ನತಿ ಇಲ್ಲದವ, ನಾಗರಿಕ-ಅನಾಗರಿಕ, ಯಜಮಾನ-ಗುಲಾಮ ಎಂಬ ಭಿನ್ನಭೇದಗಳಿಲ್ಲ. ಕ್ರಿಸ್ತಯೇಸುವೇ ಸಮಸ್ತದಲ್ಲಿ ಸಮಸ್ತವೂ ಆಗಿದ್ದಾರೆ.

ಕೀರ್ತನೆ - 145: 2-3, 1೦-13
2 : ಹೊಗಳುವೆನು ನಾ ದಿನದಿನವೂ ನಿನ್ನನು / ಭಜಿಸುವೆನೆಂದೆಂದಿಗೂ ನಿನ್ನ ಹೆಸರನು
3 : ಪ್ರಭು ಮಹಾತ್ಮನು, ಸ್ತುತ್ಯರ್ಹನು / ಆತನ ಮಹಿಮೆ ಅಗಮ್ಯವಾದದು
10 : ಪ್ರಭು, ನಿನ್ನನು ಸ್ತುತಿಪುದು ಸೃಷ್ಟಿಯೆಲ್ಲವು / ಕೊಂಡಾಡುವುದು ನಿನ್ನನು ಭಕ್ತ ಸಮೂಹವು
11 : ಪ್ರಸಿದ್ಧಪಡಿಸುವರು ನಿನ್ನ ರಾಜ್ಯದ ಮಹತ್ವವನು / ವರ್ಣಿಸುವರವರು ನಿನ್ನ ಶಕ್ತಿ ಸಾಮಥ್ರ್ಯವನು
12 : ಅರಿವರಿಂತು ಜನರು ನಿನ್ನ ಶೂರ ಕಾರ್ಯಗಳನು / ಗ್ರಹಿಸುವರು ನಿನ್ನ ರಾಜ್ಯದ ಮಹಿಮೆ ಪ್ರಭಾವವನು
13 : ಶಾಶ್ವತವಾದುದು ನಿನ್ನ ರಾಜ್ಯವು / ಇರುವುದೆಂದಿಗು ನಿನ್ನ ಆಳ್ವಿಕೆಯು

ಶುಭಸಂದೇಶ - ಲೂಕ 6:2೦-26
ಯೇಸುಸ್ವಾಮಿ ತಮ್ಮ ಶಿಷ್ಯರ ಕಡೆಗೆ ದೃಷ್ಟಿಸಿ ನೋಡಿ ಹೀಗೆಂದು ಬೋಧಿಸಿದರು: “ದೀನದಲಿತರೇ, ನೀವು ಭಾಗ್ಯವಂತರು! ದೇವರ ಸಾಮ್ರಾಜ್ಯ ನಿಮ್ಮದು. ಈಗ ಹಸಿದಿರುವವರೇ, ನೀವು ಭಾಗ್ಯವಂತರು! ನಿಮಗೆ ಸಂತೃಪ್ತಿಯಾಗುವುದು. ಈಗ ಅತ್ತು ಗೋಳಾಡುವವರೇ, ನೀವು ಭಾಗ್ಯವಂತರು! ನೀವು ನಕ್ಕುನಲಿದಾಡುವಿರಿ! ನರಪುತ್ರನ ಶಿಷ್ಯರು ನೀವಾದುದರಿಂದ ನಿಮ್ಮನ್ನು ದ್ವೇಷಿಸಿ, ಬಹಿಷ್ಕರಿಸಿ, ಧಿಕ್ಕರಿಸಿ, ನಿಮ್ಮ ಹೆಸರೆತ್ತುವುದು ಕೂಡ ಕೇಡೆಂದು ತಿರಸ್ಕರಿಸುವಾಗ ನೀವು ಭಾಗ್ಯವಂತರು! ಈ ಜನರ ಪೂರ್ವಜರು ಪ್ರವಾದಿಗಳನ್ನು ಹೀಗೆಯೇ ತೆಗಳಿದ್ದರು. ಇದೆಲ್ಲಾ ಸಂಭವಿಸುವಾಗ ಹಿಗ್ಗಿ ನಲಿದಾಡಿರಿ. ಏಕೆಂದರೆ, ಸ್ವರ್ಗದಲ್ಲಿ ನಿಮಗೆ ಲಭಿಸುವ ಪ್ರತಿಫಲವು ಮಹತ್ತರವಾದುದು. “ಆದರೆ ಧನಿಕರೇ, ನಿಮಗೆ ಧಿಕ್ಕಾರ! ನೀವು ಸುಖಜೀವನವನ್ನು ಅನುಭವಿಸಿ ಆಗಿದೆ. ಈಗ ತಿಂದು ತೃಪ್ತಿಯಾಗಿರುವವರೇ, ನಿಮಗೆ ಧಿಕ್ಕಾರ! ನೀವು ಹಸಿದು ಬಳಲುವಿರಿ. ಈಗ ನಕ್ಕುನಲಿದಾಡುವವರೇ, ನಿಮಗೆ ಧಿಕ್ಕಾರ! ನೀವು ದುಃಖಿಸಿ ಗೋಳಾಡುವಿರಿ ಜನರೆಲ್ಲರಿಂದ ಹೊಗಳಿಸಿಕೊಳ್ಳುವಾಗ ನಿಮಗೆ ಧಿಕ್ಕಾರ ! ಕಪಟ ಪ್ರವಾದಿಗಳೂ ಈ ಜನರ ಪೂರ್ವಜರಿಂದ ಹೀಗೆಯೇ ಹೊಗಳಿಸಿಕೊಂಡಿದ್ದರು.

ಚಿಂತನೆ
ಲೋಕದ ದೃಷ್ಟಿಯಲ್ಲಿ ಶ್ರೀಮಂತರು ಭಾಗ್ಯವಂತರು. ಆದರೆ ಯೇಸು ಪ್ರಭು ದೀನದಲಿತರೇ ನೀವು ಭಾಗ್ಯವಂತರು. ದೇವರ ಸಾಮ್ರಾಜ್ಯ ಅವರದು ಎಂದು ಹೇಳುತ್ತಾರೆ. ಇಷ್ಟೇ ಅಲ್ಲ ಸಮಾಜದಿಂದ ಯಾರೆಲ್ಲ ಬಹಿಷ್ಕೃತರಾಗಿದ್ದಾರೋ ಅವರನ್ನು ಯೇಸು ಕೊಂಡಾಡುತ್ತಾರೆ. ಜನರು ದ್ವೇಷಿಸಿ, ಬಹಿಷ್ಕರಿಸಿ, ದಿಕ್ಕರಿಸಿ, ಹೆಸರೆತ್ತುವುದು ಕೇಡೆಂದು ತಿರಸ್ಕರಿಸಲ್ಪಟ್ಟಾಗ `ಸಂತೋಷದಿಂದಿರಿ’ ಸ್ವರ್ಗದಲ್ಲಿ ಪ್ರತಿಫಲವು ಸಿಗುವುದು ಎನ್ನುತ್ತಾರೆ. ನಾವೆಲ್ಲರೂ ಮಹೋನ್ನತ ದೇವರ ಮಕ್ಕಳು ಆದುದರಿಂದ ನಮ್ಮ ತಂದೆಯಾದ ದೇವರಂತೆ ನಾವು ಕೂಡ ದಯಾವಂತರಾಗಿ ಇರಬೇಕು. ಒಳ್ಳೆಯವರಾಗಿ ಬೆಳೆಯಬೇಕು. ದೇವರ ಒಳ್ಳೆಯತನ ನಮ್ಮಲ್ಲಿ ಪ್ರತಿಬಿಂಬವಾದಾಗ ಮಾತ್ರ ನಮ್ಮ ಕ್ರೈಸ್ತೀಯ ಜೀವನಕ್ಕೆ ಒಂದು ಅರ್ಥ ಬರುತ್ತದೆ. 

No comments:

Post a Comment