Thursday, 31 October 2019

ಸಾಧಾರಣ ಕಾಲದ ಮೂವತ್ತೆರಡನೇ ಭಾನುವಾರ

1೦/ಹಸಿರು/ಭಾನು
1ನೇ ವಾಚನ- 2ಮಕ್ಕ 7:1-2,9-14
ಕೀರ್ತನೆ - 17: 1, 5-6,8,15
2ನೇ ವಾಚನ 2ಥೆಸ 2: 16-3: 5
ಶುಭಸಂದೇಶ - ಲೂಕ 2೦:27-38


1ನೇ ವಾಚನ- 2ಮಕ್ಕ 7:1-2,9-14
ಆ ಕಾಲದಲ್ಲಿ ಏಳುಮಂದಿ ಸಹೋದರರನ್ನು ಅವರ ತಾಯಿಯೊಂದಿಗೆ, ಅರಸನ ಅಪ್ಪಣೆಯ ಮೇರೆಗೆ ದಸ್ತಗಿರಿ ಮಾಡಲಾಯಿತು. ನಿಷೇಧಿಸಲಾಗಿದ್ದ ಹಂದಿಯ ಮಾಂಸವನ್ನು ತಿನ್ನಬೇಕೆಂದು ಅವರನ್ನು ಬಲವಂತ ಪಡಿಸಲಾಗಿತ್ತು. ಚಾಟಿಯಿಂದಲೂ ಬಾರುಗಳಿಂದಲೂ ಹೊಡೆದು ಅವರನ್ನು ಬಾಧಿಸಿದರು. ಅವರಲ್ಲೊಬ್ಬನು ಇತರರ ಪರವಾಗಿ ಮಾತನಾಡುತ್ತಾ, “ನಮ್ಮಿಂದ ನೀವು ಏನನ್ನು ತಿಳಿದುಕೊಳ್ಳಬಯಸುತ್ತೀರಿ? ನಮ್ಮ ಪೂರ್ವಜರ ಧರ್ಮವಿಧಿಗಳನ್ನು ಉಲ್ಲಂಘಿಸುವುದಕ್ಕೆ ಬದಲು, ನಾವು ಸಾಯುವುದಕ್ಕೆ ಸಿದ್ದ” ಎಂದನು. ಅವನು ಕೊನೆಯುಸಿರು ಎಳೆಯುತ್ತಿರುವಾಗ ಅರಸನನ್ನು ನೋಡಿ, “ಹೇ ಕಟುಕನೇ, ಇಲ್ಲಿರುವಾಗ ನಮ್ಮ ಜೀವವನ್ನು ತೆಗೆದು ಬಿಡುತ್ತೀಯಾ ಸರಿ; ಆದರೆ ವಿಶ್ವದ ಒಡೆಯರಾದ ದೇವರು, ನಮ್ಮನ್ನು ಅಮರ ಹಾಗೂ ಪುನಶ್ಚೇತನಗೊಳಿಸುವ ಜೀವಕ್ಕೆ ಎಬ್ಬಿಸುತ್ತಾರೆ; ಕಾರಣ, ನಾವು ಅವರ ಆಜ್ಞಾಪಾಲನೆಗಾಗಿ ಪ್ರಾಣಬಿಟ್ಟಿದ್ದೇವೆ,” ಎಂದನು. ಅವನ ತರುವಾಯ ಅವರು ವಿನೋದಕ್ಕಾಗಿ ಮೂರನೆಯವನನ್ನು ಹಿಡಿದುಕೊಂಡರು. ನಾಲಗೆ ಚಾಚಬೇಕೆಂದು ಹೇಳಿದಾಗ ಅವನು ತಕ್ಷಣವೇ ನಾಲಗೆಯನ್ನು ಚಾಚಿದನು; ಧೈರ್ಯದಿಂದ ತನ್ನ ಕೈಗಳನ್ನೂ ಮುಂದಕ್ಕೆ ಒಡ್ಡುತ್ತಾ, “ನಾನು ಇವುಗಳನ್ನು ಪರಲೋಕದಿಂದ ಪಡೆದೆನು. ಅವರ ನಿಯಮಕ್ಕಾಗಿ ಇವುಗಳನ್ನು ತೊರೆಯುತ್ತೇನೆ. ಆದರೆ ಪುನಃ ನಾನು ಅವುಗಳನ್ನು ಪಡೆಯುವೆನು, ಇದು ನನ್ನ ದೃಢನಂಬಿಕೆ!” ಎಂದನು. ತತ್ಪರಿಣಾಮವಾಗಿ, ರಾಜನೂ ಅವನೊಂದಿಗಿದ್ದ ಇತರರೂ ಈ ಯುವಕನ ಧೈರ್ಯವನ್ನು ನೋಡಿ ನಿಬ್ಬೆರಗಾದರು; ಅವನು ತನ್ನ ಉಪದ್ರವಗಳನ್ನು ಕಿಂಚಿತ್ತು ಲೆಕ್ಕಿಸಲಿಲ್ಲ. ಅವನು ಸತ್ತಮೇಲೆ, ನಾಲ್ಕನೆಯವನನ್ನು ಸಹ ಅದೇ ಪ್ರಕಾರ ಹಿಂಸಿಸಿ ಉಪದ್ರವಪಡಿಸಿದರು. ಅವನು ಪ್ರಾಣಬಿಡುವಾಗ, “ಮತ್ರ್ಯಮಾನವರ ಕೈಗಳಿಂದ ಸಾವನ್ನು ಅನುಭವಿಸಿ, ದೇವರಿಂದ ಮರಳಿ ಎಬ್ಬಿಸಲ್ಪಡುವೆನೆಂಬ ದೇವದತ್ತ ನಿರೀಕ್ಷೆಯನ್ನು ಎದುರುನೋಡುವುದು ಶ್ರೇಯಸ್ಕರ; ನೀವಾದರೋ ಜೀವಕ್ಕೆ ಪುನಃ ಉತ್ಥಾನವಾಗುವಂತಿಲ್ಲ,” ಎಂದನು.

ಕೀರ್ತನೆ - 17: 1, 5-6,8,15
1 : ಲಕ್ಷ್ಯವಿಡು, ಓ ಪ್ರಭು, ಎನ್ನ ನ್ಯಾಯವಾದ ಮೊರೆಗೆ / ಕಿವಿಗೊಡು, ನಿಷ್ಕಪಟ ಬಾಯಿಂದ ಬಂದ ಪ್ರಾರ್ಥನೆಗೆ //  
5 : ನಿನ್ನ ಮಾರ್ಗದಿಂದ ಕಾಲು ಜಾರಲು ಬಿಡದೆ / ನಿನ್ನ ಪಥದಲಿ ದಿಟ್ಟ ಹೆಜ್ಜೆಯಿಟ್ಟು ನಡೆದೆ // 
6 : ಸದುತ್ತರ ಪಾಲಿಪೆಯೆಂದು ನಂಬಿ ಬೇಡುವೆನಯ್ಯಾ / ಮೊರೆಯಿಡುವೆ ದೇವಾ, ಕಿವಿಗೊಟ್ಟು ಆಲಿಸಯ್ಯಾ // 
8 : ಮುತ್ತಿಗೆ ಹಾಕಿರುವ ಹೀನ ಶತ್ರುಗಳಿಂದ / ಸುತ್ತುವರೆದಿರುವ ಪ್ರಾಣ ವೈರಿಗಳಿಂದ / 
15 : ಸತ್ಯಸಂಧನಾದ ನಾನೊ ಸೇರುವೆ ನಿನ್ನ ಸಾನ್ನಿಧ್ಯವನು / ಎಚ್ಚೆತ್ತು ನಿನ್ನ ಮುಖದರ್ಶನದಿಂದ ತೃಪ್ತನಾಗುವೆನು //

2ನೇ ವಾಚನ 2ಥೆಸ 2: 16-3: 5
ನಮ್ಮನ್ನು ಪ್ರೀತಿಸಿ ನಿತ್ಯಾದರಣೆಯನ್ನೂ ಉತ್ತಮ ನಿರೀಕ್ಷೆಯನ್ನೂ ಅನುಗ್ರಹವಾಗಿ ಕೊಟ್ಟಿರುವ ನಮ್ಮ ಪ್ರಭುವಾದ ಯೇಸುಕ್ರಿಸ್ತರು ಹಾಗೂ ಪಿತನಾದ ದೇವರು ನಿಮ್ಮ ಹೃನ್ಮನಗಳನ್ನು ಉತ್ತೇಜನಗೊಳಿಸಲಿ. ಸಕಲ ಸತ್ಕಾರ್ಯಗಳಲ್ಲೂ ಸನ್ನುಡಿಯಲ್ಲೂ ನಿಮ್ಮನ್ನು ದೃಢಪಡಿಸಲಿ. ಕೊನೆಯದಾಗಿ ಸಹೋದರರೇ, ನಮಗಾಗಿಯೂ ಪ್ರಾರ್ಥನೆಮಾಡಿ; ಪ್ರಭುವಿನ ಸಂದೇಶ ನಿಮ್ಮಲ್ಲಿ ಹಬ್ಬಿಹರಡಿದಂತೆ ಎಲ್ಲೆಲ್ಲಿಯೂ ಪಸರಿಸಿ ಪ್ರಖ್ಯಾತವಾಗಲಿ. ದುಷ್ಟರ ಹಾಗೂ ಕೆಡುಕರ ಬಲೆಗೆ ನಾವು ಬೀಳದಂತೆ ಪ್ರಾರ್ಥಿಸಿರಿ. ಏಕೆಂದರೆ, ವಿಶ್ವಾಸವೆಂಬುದು ಎಲ್ಲರಲ್ಲಿಯೂ ಇರುವುದಿಲ್ಲ. ಪ್ರಭು ವಿಶ್ವಾಸಕ್ಕೆ ಪಾತ್ರರು. ಅವರು ನಿಮ್ಮನ್ನು ಸದೃಢರನ್ನಾಗಿ ಮಾಡಿ ಕೇಡಿನಿಂದ ನಿಮ್ಮನ್ನು ಕಾಪಾಡುವರು. ನಾವು ನಿಮಗಿತ್ತ ಆಜ್ಞೆಗಳನ್ನು ಪಾಲಿಸಿಕೊಂಡು ಬರುತ್ತಿದ್ದೀರಿ; ಇನ್ನು ಮುಂದೆಯೂ ಪಾಲಿಸುತ್ತೀರಿ ಎಂದು ನಿಮ್ಮ ವಿಷಯವಾಗಿ ಪ್ರಭುವಿನಲ್ಲಿ ನಮಗೆ ಭರವಸೆಯಿದೆ. ದೇವರ ಪ್ರೀತಿಯನ್ನೂ ಕ್ರಿಸ್ತಯೇಸುವಿನ ಸಹನೆಯನ್ನೂ ನೀವು ಕಲಿತುಕೊಳ್ಳುವಂತೆ, ಪ್ರಭುವೇ ನಿಮ್ಮ ಅಂತರಂಗವನ್ನು ಬೆಳಗಿಸಲಿ.

ಶುಭಸಂದೇಶ - ಲೂಕ 2೦:27-38
ಅನಂತರ ಸತ್ತಮೇಲೆ ಪುನರುತ್ಥಾನ ಇಲ್ಲ ಎಂದು ವಾದಿಸುತ್ತಿದ್ದ ಸದ್ದುಕಾಯರಲ್ಲಿ ಕೆಲವರು ಯೇಸುಸ್ವಾಮಿಯ ಬಳಿಗೆ ಬಂದು ಈ ಪ್ರಶ್ನೆಹಾಕಿದರು: “ಬೋಧಕರೇ, ‘ಒಬ್ಬನು ಮಕ್ಕಳಿಲ್ಲದೆ ಸತ್ತರೆ, ಅವನ ಹೆಂಡತಿಯನ್ನು ಅವನ ತಮ್ಮನು ಮದುವೆ ಮಡಿಕೊಂಡು ಅಣ್ಣನಿಗೆ ಸಂತಾನ ಪಡೆಯಬೇಕು,’ ಎಂದು ಮೋಶೆ ನಮಗಾಗಿ ಬರೆದಿಟ್ಟಿದ್ದಾನಲ್ಲವೆ? ಒಮ್ಮೆ ಏಳುಮಂದಿ ಅಣ್ಣತಮ್ಮಂದಿರಿದ್ದರು. ಅವರಲ್ಲಿ ಮೊದಲನೆಯವನಿಗೆ ಮದುವೆಯಾಯಿತು; ಆದರೆ ಅವನು ಮಕ್ಕಳಿಲ್ಲದೆ ಮೃತನಾದ. ಅವನ ಹೆಂಡತಿಯನ್ನು ಎರಡನೆಯವನು, ಅನಂತರ ಮೂರನೆಯವನು, ತದನಂತರ ಮಿಕ್ಕವರು, ಹೀಗೆ ಏಳು ಮಂದಿಯೂ ಒಬ್ಬರಾದ ಮೇಲೆ ಒಬ್ಬರು ಮದುವೆಯಾಗಿ ಸಂತಾನ ಇಲ್ಲದೆಯೇ ನಿಧನರಾದರು. ಕಟ್ಟಕಡೆಗೆ ಆ ಮಹಿಳೆಯೂ ಮರಣ ಹೊಂದಿದಳು. ಹೀಗಿರುವಲ್ಲಿ ಪುನರುತ್ಥಾನದ ದಿನ ಸತ್ತವರೆಲ್ಲರೂ ಜೀವದಿಂದ ಎದ್ದುಬರುವಾಗ, ಆಕೆ ಯಾರ ಪತ್ನಿಯಾಗುವಳು? ಏಳು ಮಂದಿ ಸಹೋದರರೂ ಆಕೆಯನ್ನು ವಿವಾಹ ಆಗಿದ್ದರಲ್ಲವೆ?” ಎಂದರು. ಅದಕ್ಕೆ ಯೇಸು, “ಈ ಲೋಕದ ಜೀವನದಲ್ಲಿ ಜನರು ಮದುವೆ ಮಾಡಿಕೊಳ್ಳುತ್ತಾರೆ, ಮದುವೆ ಮಾಡಿಕೊಡುತ್ತಾರೆ. ಆದರೆ ಸತ್ತವರು ಪುನರುತ್ಥಾನ ಹೊಂದಿ ಮರುಲೋಕ ಜೀವನಕ್ಕೆ ಯೋಗ್ಯರಾದಾಗ ಮದುವೆ ಮಾಡಿಕೊಳ್ಳುವುದೂ ಇಲ್ಲ, ಮದುವೆ ಮಾಡಿಕೊಡುವುದೂ ಇಲ್ಲ. ಅವರು ಅಲ್ಲಿ ದೇವದೂತರಿಗೆ ಸಮಾನರಾಗಿರುವರು; ಅವರು ಎಂದಿಗೂ ಸಾಯುವಂತಿಲ್ಲ; ಪುನರುತ್ಥಾನದ ಫಲ ಆಗಿರುವ ಅವರು ದೇವರ ಮಕ್ಕಳಾಗಿರುವರು. ಸತ್ತವರು ಪುನರುತ್ಥಾನ ಹೊಂದುವುದನ್ನು ಮೋಶೆಯ ಗ್ರಂಥದಲ್ಲಿ, ಅಂದರೆ ‘ಉರಿಯುವ ಪೊದೆ’ಯ ಪ್ರಸ್ತಾಪವಿರುವ ಭಾಗದಲ್ಲಿ ಸ್ಪಷ್ಟಪಡಿಸಲಾಗಿದೆ. ಅಲ್ಲಿ ಸರ್ವೇಶ್ವರನನ್ನು, ‘ಅಬ್ರಹಾಮನ ದೇವರು, ಇಸಾಕನ ದೇವರು, ಯಕೋಬನ ದೇವರು ಆಗಿದ್ದಾರೆ’ ಎಂದು ಹೇಳಲಾಗಿದೆ. “ಹೀಗಿರುವಲ್ಲಿ ದೇವರು ಜೀವಂತರ ದೇವರೇ ಹೊರತು ಮೃತರ ದೇವರಲ್ಲ; ಅವರ ದೃಷ್ಟಿಯಲ್ಲಿ ಸರ್ವರೂ ಜೀವಂತರು,” ಎಂದರು.
ಚಿಂತನೆ
ಯೇಸು ಕ್ರಿಸ್ತರ ಕಾಲದಲ್ಲಿ ಚಾದೋಕನ ಯಾಜಕ ಗೋತ್ರದವರೆಂದು ಹೇಳಿಕೊಳ್ಳುತ್ತಿದ್ದ `ಸದ್ದುಕಾಯರು' ಎಂಬ ಗುಂಪು ಇತ್ತು. ಜೆರುಸಲೇಮಿನ ಯಾಜಕರಲ್ಲಿ ಅನೇಕರು ಈ ಗುಂಪಿನಲ್ಲಿದ್ದರು. ಗ್ರೀಕ್ ತತ್ವಗಳಿಂದ ಹಾಗೂ ಸಂಸ್ಕೃತಿಯಿಂದ ಇವರು ಪ್ರಭಾವಿತರಾಗಿದ್ದರು. ಪರಿಸಾಯರಷ್ಟು ಧಾರ್ಮಿಕ ನಿಷ್ಠೆ ಇವರಲ್ಲಿರಲಿಲ್ಲ. ಇವರು ಬೈಬಲಿನ ಮೊದಲ ೫ ಗ್ರಂಥಗಳನ್ನು ಮಾತ್ರ ನಂಬುತ್ತಿದ್ದರು. ಅವರ ಪ್ರಕಾರ ಈ ೫ ಗ್ರಂಥಗಳಲ್ಲಿ ಪುನರುತ್ಥಾನದ ಉಲ್ಲೇಖವಿಲ್ಲವಾದ್ದರಿಂದ ಪುನರುತ್ಥಾನದಲ್ಲಿ ವಿಶ್ವಾಸವಿರಲಿಲ್ಲ. ಅಂತೆಯೇ ದೇವದೂತರ, ಆತ್ಮಗಳ ಮೇಲೆಯು ಅವರಿಗೆ ನಂಬಿಕೆ ಇರಲಿಲ್ಲ. ಆದರೆ ಫರಿಸಾಯರು ಪುನರುತ್ಥಾನದಲ್ಲಿ ನಂಬಿಕೆಯಿಟ್ಟಿದ್ದರು. 
ಧ. ಕಾಂಡ ೨೫:೫-೧೦ರ ಪ್ರಕಾರ ವಿಧವೆಯಾದ ಅಣ್ಣನ ಹೆಂಡತಿಯನ್ನು ಮದುವೆ ಮಾಡಿಕೊಂಡು, ಅಣ್ಣನ ಸಂತಾನವು ನಶಿಸಿಹೋಗದಂತೆ ಅಥವಾ ಕೊನೆಯಾಗದಂತೆ ನೋಡಿಕೊಳ್ಳುವುದು ತಮ್ಮನ ಹೊಣೆಗಾರಿಕೆಯಾಗಿದೆ. ಆದರೆ ಸದ್ದುಕಾಯರು ಯೇಸುವನ್ನು ಪರೀಕ್ಷಿಸುವ ಸಲುವಾಗಿ ಒಂದು ಕಾಲ್ಪನಿಕ ಕಥೆ ಹೇಳುವುದರ ಮೂಲಕ ತಮ್ಮ ಮೂರ್ಖತನವನ್ನು ಪ್ರದರ್ಶಿಸುತ್ತಾರೆ. ಅವರ ಪ್ರಶ್ನೆಗೆ ಯೇಸುವು ವಿ. ಕಾಂಡ ೩:೬, ೧೫-೧೬ ಉಲ್ಲೇಖಿಸುತ್ತಾ ಅಬ್ರಹಾಮ, ಇಸಾಕ, ಯಕೋಬರು ದೇವರ ಸನ್ನಿಧಿಯಲ್ಲಿ ಜೀವಂತವಾಗಿದ್ದಾರೆ ಎಂದು ಸದ್ದುಕಾಯರಿಗೆ ತಿಳಿಸುವುದರ ಮೂಲಕ ಪುನರುತ್ಥಾನವಿದೆ ಎಂಬುದನ್ನು ಸ್ಪಷ್ಟ ಪಡಿಸುತ್ತಾರೆ.

ಸಾಧಾರಣ ಕಾಲದ ಮೂವತ್ತೊಂದನೇ ವಾರ ಸೋಮವಾರ

4/ಬಿಳಿ/ಸೋಮ/ಸಂತ ಚಾರ್ಲ್ಸ್ ಬೊರೊಮಿಯೊ(ಧರ್ಮಾ) (ಸ್ಮರಣೆ)
1ನೇ ವಾಚನ - ರೋಮ 11:29-36
ಕೀರ್ತನೆ - 69: 29-3೦, 32-33, 35-36
ಶುಭಸಂದೇಶ - ಲೂಕ 14: 12-14


1ನೇ ವಾಚನ - ರೋಮ 11:29-36
ದೇವರು ತಾವೇ ನೀಡುವ ವರಗಳನ್ನಾಗಲಿ, ಕೊಡುವ ಕರೆಯನ್ನಾಗಲಿ ಹಿಂತೆಗೆದುಕೊಳ್ಳುವವರಲ್ಲ. ಇಸ್ರಯೇಲರಲ್ಲದ ನೀವು ಹಿಂದೊಮ್ಮೆ ದೇವರಿಗೆ ಅವಿಧೇಯರಾಗಿದ್ದಿರಿ. ಆದರೆ ಈಗ ಇಸ್ರಯೇಲರ ಅವಿಧೇಯತೆಯ ನಿಮಿತ್ತ ದೇವರ ದಯೆಯನ್ನು ಹೊಂದಿದ್ದೀರಿ. ಅದೇ ಪ್ರಕಾರ ಅವರು ಈಗ ಅವಿಧೇಯರಾಗಿದ್ದರೂ ನೀವು ಹೊಂದಿದ ಕರುಣೆಯ ನಿಮಿತ್ತ ಅವರೂ ಕರುಣೆಯನ್ನು ಹೊಂದುವರು. ಏಕೆಂದರೆ, ಸರ್ವರೂ ತಮ್ಮ ಕರುಣೆಯನ್ನು ಸವಿಯುವಂತೆ ದೇವರು ಎಲ್ಲರನ್ನು ಅವಿಧೇಯತೆ ಎಂಬ ಬಂಧನಕ್ಕೆ ಒಳಪಡಿಸಿದ್ದಾರೆ. ದೇವರ ಸಿರಿಸಂಪತ್ತು, ಜ್ಞಾನವಿಜ್ಞಾನ ಎಷ್ಟು ಅಗಾಧ! ಪರಿಶೋಧನೆಗೂ ನಿಲುಕದ ಅವರ ನಿರ್ಣಯ ಎಷ್ಟು ಅಗಮ್ಯ! ಅವರ ನಿಯೋಜನೆಗಳು ಗ್ರಹಿಕೆಗೂ ಎಷ್ಟು ಅಸಾಧ್ಯ! “ಪ್ರಭುವಿನ ಮನಸ್ಸನು ಅರಿತವರಾರು? ಅವರಿಗೆ ಉಪದೇಶಿಸುವವರಾರು? ಮೊದಲೇ ಅವರ ಬಳಿ ಕೊಟ್ಟಿಟ್ಟವರಾರು? ಹೀಗೆ ಅವರಿಂದ ಪ್ರತಿಫಲ ಪಡೆದವರಾರು? ಸಮಸ್ತವೂ ಉಂಟಾಗುವುದು ಅವರಿಂದಲೇ; ಮುಂದುವರಿಯುವುದೂ ಅವರ ಮುಖಾಂತರವೇ; ಇರುವುದೂ ಅವರಿಗೋಸ್ಕರವೇ. ಆ ಪ್ರಭುವಿಗೆ ಯುಗಯುಗಾಂತರಕ್ಕೂ ಸ್ತುತಿಸ್ತೋತ್ರ ಸಲ್ಲಲಿ. ಆಮೆನ್.

ಕೀರ್ತನೆ - 69: 29-3೦, 32-33, 35-36
29 : ದೇವಾ, ನಾ ನೊಂದುಬೆಂದಿಹೆನಯ್ಯಾ / ಉದ್ಧರಿಸಿ ನನ್ನನು ಕಾಪಾಡಯ್ಯಾ //
30 : ದೇವಾ, ನಾ ನೊಂದುಬೆಂದಿಹೆನಯ್ಯಾ / ಉದ್ಧರಿಸಿ ನನ್ನನು ಕಾಪಾಡಯ್ಯಾ //
31 : ಸ್ವಾಮಿ ದೇವನಿಗಿದುವೇ ಸುಪ್ರೀತ / ಕೊಂಬುಗೊರಸುಳ್ಳ ಗೂಳಿಬಲಿಗಿಂತ //
32 : ಇದನರಿತು ದೀನದಲಿತರು ಆನಂದಗೊಳ್ಳಲಿ / ದೇವನನು ಅರಸುವವರು ಪುನಶ್ಚೇತನಗೊಳ್ಳಲಿ //
33 : ಬಡಬಗ್ಗರ ಮೊರೆಗೆ ಪ್ರಭು ಕಿವಿಗೊಡದಿರನು / ಸೆರೆಯಲ್ಲಿಹ ತನ್ನವರನು ತಿರಸ್ಕರಿಸನು //
34 : ಭೂಮ್ಯಾಕಾಶಗಳು ಆತನನು ಕೊಂಡಾಡಲಿ / ಸಾಗರಗಳು, ಜಲಚರಗಳು ಆತನನು ಭಜಿಸಲಿ //
35 : ರಕ್ಷಿಸುವನು ದೇವನು ಆ ಸಿಯೋನ್ ಪಟ್ಟಣವನು / ಕಟ್ಟಿಸುವನು ಯೆಹೂದ ನಾಡಿನ ನಗರಗಳನು / ಸ್ವಂತವಾಗಿರಿಸಿಕೊಂಬರು ಆತನ ಪ್ರಜೆ ಅದನು //
36 : ಅವರ ವಂಶಜರೇ ಬಾಧ್ಯಸ್ಥರಾಗುವರದಕೆ / ದೇವರನಾಮ ಪ್ರಿಯರೇ ನಿವಾಸಿಗಳು ಅದಕೆ //

ಶುಭಸಂದೇಶ - ಲೂಕ 14: 12-14
ಅನಂತರ ತಮ್ಮನ್ನು ಊಟಕ್ಕೆ ಆಮಂತ್ರಿಸಿದವನನ್ನು ನೋಡಿ ಯೇಸುಸ್ವಾಮಿ, “ನೀನು ಊಟ ಅಥವಾ ಔತಣವನ್ನು ಏರ್ಪಡಿಸುವಾಗ ನಿನ್ನ ಸ್ನೇಹಿತರನ್ನಾಗಲಿ, ಸೋದರರನ್ನಾಗಲಿ, ಬಂಧು ಬಳಗದವರನ್ನಾಗಲಿ, ಧನಿಕರಾದ ನೆರೆಯವರನ್ನಾಗಲಿ ಕರೆಯಬೇಡ. ಏಕೆಂದರೆ, ಅವರು ನಿನ್ನನ್ನು ಪ್ರತಿಯಾಗಿ ಕರೆದು ಮುಯ್ಯಿ ತೀರಿಸಿಬಿಡಬಹುದು. ಆದ್ದರಿಂದ ಔತಣವನ್ನು ಏರ್ಪಡಿಸುವಾಗ ದರಿದ್ರರು, ಅಂಗವಿಕಲರು, ಕುಂಟರು, ಕುರುಡರು ಇಂಥವರನ್ನು ಕರೆ; ಆಗ ನೀನು ಧನ್ಯನಾಗುವೆ. ಏಕೆಂದರೆ, ಅವರು ನಿನಗೆ ಪ್ರತಿಯಾಗಿ ಏನು ಮಾಡಲೂ ಇಲ್ಲದವರು. ಸತ್ಪುರುಷರು ಪುನರುತ್ಥಾನ ಹೊಂದುವಾಗ ದೇವರೇ ನಿನಗೆ ಸಲ್ಲಬೇಕಾದುದನ್ನು ಸಲ್ಲಿಸುವರು,” ಎಂದರು.
ಚಿಂತನೆ
ನಮ್ಮ ಮನೆಗಳಲ್ಲಿ ನಡೆಯುವ ಸಮಾರಂಭಗಳಿಗೆ ನಾವು ಆಮಂತ್ರಿಸುವುದು ನೆಂಟರನ್ನು, ಬಂದುಗಳನ್ನು, ಸ್ನೇಹಿತರನ್ನು. ಇವರ್‍ಯಾರು ಅವರಿಗೆ ತಿನ್ನಲು ಊಟದ ಕೊರತೆಯಿದೆ ಎಂದು ಬರುವುದಿಲ್ಲ. ಕೆಲವರು ತಮ್ಮ ಪ್ರೀತಿ, ಸ್ನೇಹದ ನಿಮಿತ್ತ ಬಂದುಗಳನ್ನು ಆಹ್ವಾನಿಸಿದರೆ, ಅನೇಕರು ತಮ್ಮ ಪ್ರತಿಷ್ಠೆಗಾಗಿ, ದೊಡ್ಡಸ್ಥನವನ್ನು ಪ್ರದರ್ಶಿಸಲು ಕರೆಯುವುದುಂಟು. ಯೇಸು ಹೇಳುವ ಹಾಗೆ ದರಿದ್ರರು, ಅಂಗವಿಕಲರು, ಕುಂಟರು, ಕುರುಡರನ್ನು ಊಟಕ್ಕೆ ಕರೆಯುವವರು ಬೆರಳೆಣಿಕೆಯಷ್ಟು ಮಾತ್ರ. ನಮ್ಮ ಸಭೆ ಸಮಾರಂಭಗಳ ನೈಜ ಉದ್ದೇಶವೇನೆಂಬುದನ್ನು ಮನಗಾಣಬೇಕಿದೆ. 

ಯೇಸು ಇಂದಿನ ಸಾಮತಿಯ ಮೂಲಕ ಶ್ರೀಮಂತರಿಗೆ ಬಡವರ ಮೇಲಿದ್ದ ತಾತ್ಸಾರವನ್ನು ಖಂಡಿಸುತ್ತಿದ್ದಾರೆ. ಯೇಸುವಿನ ಕಾಲದ ಶ್ರೀಮಂತರು ಬಡವರನ್ನು ತುಚ್ಛವಾಗಿ ಕಾಣುತ್ತಿದ್ದರು. ಯೇಸುವಿನ ಹಿಂಬಾಲಕರಲ್ಲಿ, ಪ್ರೇಷಿತರಲ್ಲಿ ಅನೇಕರು ಬಡವರಾಗಿದ್ದರು, ಬಡವರೊಂದಿಗೆ ಉತ್ತಮ ಒಡನಾಟವಿತ್ತು. ಇಂದು ನಮ್ಮ ಸ್ನೇಹಿತರು ಯಾರು? ಯಾರೊಂದಿಗೆ ನಮ್ಮ ಒಡನಾಟ? ಶ್ರೀಮಂತರೊಂದಿಗೋ ಅಥವಾ ಬಡವರೊಂದಿಗೋ?

Wednesday, 30 October 2019

ಸಾಧಾರಣ ಕಾಲದ ಮೂವತ್ತೊಂದನೇ ಭಾನುವಾರ

3/ಹಸಿರು/ಭಾನು 
1ನೇ ವಾಚನ - ಸುಜ್ಞಾನ 11:22-12: 2
ಕೀರ್ತನೆ - 145: 1-2, 8-11, 13-15
2ನೇ ವಾಚನ - 2ಥೆಸ 1: 11-2: 2 
ಶುಭಸಂದೇಶ - ಲೂಕ 19: 1-1೦


1ನೇ ವಾಚನ - ಸುಜ್ಞಾನ 11:22-12: 2
ನಿಮ್ಮ ದೃಷ್ಟಿಯಲಿ ಇಡೀ ವಿಶ್ವವು ತಕ್ಕಡಿಯಲ್ಲಿನ ಒಂದು ಅಣುವಿನಂತೆ ಮುಂಜಾನೆ ನೆಲಕ್ಕೆ ಬೀಳುವ ಮಂಜಿನ ಒಂದು ಹನಿಯಂತೆ. ಏನು ಮಾಡಲೂ ನಿಮಗೆ ಶಕ್ತಿಯಿದೆ, ಆದರೂ ಎಲ್ಲರಿಗೂ ಕರುಣೆ ತೋರುತ್ತೀರಿ. ಜನರು ನಿಮಗೆ ಅಭಿಮುಖರಾಗಲೆಂದೆ, ಅವರ ಪಾಪಗಳನು ಕಂಡರೂ ಕಾಣದಂತಿದ್ದೀರಿ. ಪ್ರೀತಿಸುತ್ತೀರಿ ಸೃಷ್ಟಿಯನೆಲ್ಲಾ ನೀವುಂಟು ಮಾಡಿದ್ದನು ಹೇಸುವುದಿಲ್ಲ ಹೇಸುತ್ತಿದ್ದರೆ ಉಂಟುಮಾಡುತ್ತಿರಲಿಲ್ಲ. ನಿಮ್ಮ ಚಿತ್ತ ಇದ್ದಹೊರತು, ಯಾವುದು ಬಾಳೀತು? ನಿಮ್ಮ ಕರೆ ಇಲ್ಲದಿದ್ದರೆ, ಉದ್ದುದು ಹೇಗೆ ಉಳಿದೀತು? ಹೇ ಸರ್ವೇಶ್ವರಾ, ಜೀವಾತ್ಮಗಳ ಪ್ರಿಯನೇ, ಎಲ್ಲವೂ ನಿಮ್ಮವಾದುದರಿಂದ, ಎಲ್ಲಕ್ಕೂ ಇದೆ ನಿಮ್ಮ ರಕ್ಷಣೆ.  ಅಮರವಾದ ನಿಮ್ಮ ಚೈತನ್ಯವು ಇರುವುದು ಪ್ರತಿಯೊಂದರಲ್ಲೂ. ಎಂದೇ ಸನ್ಮಾರ್ಗದಿಂದ ತಪ್ಪಿಹೋದವರನು ಸ್ವಲ್ಪಸ್ವಲ್ಪವಾಗಿ ತಿದ್ದುತ್ತೀರಿ ಮಾಡಿದ ಅಪರಾಧಗಳನು ನೆನಪಿಗೆ ತಂದುಕೊಟ್ಟು ಎಚ್ಚರಿಸುತ್ತೀರಿ. ಸರ್ವೇಶ್ವರಾ, ದುಷ್ಟತನ ಬಿಟ್ಟು ನಿಮ್ಮನ್ನವರು ನಂಬಲೆಂದೇ ಹೀಗೆ ಮಾಡುತ್ತೀರಿ. 

ಕೀರ್ತನೆ - 145: 1-2, 8-11, 13-15
1 : ದೇವಾ, ನನ್ನೊಡೆಯಾ, ಮಾಡುವೆ ನಿನ್ನ ಗುಣಗಾನ / ಯುಗಯುಗಾಂತರಕ್ಕೂ ನಿನ್ನ ನಾಮಕ್ಕೆ ನಮನ
2 : ಹೊಗಳುವೆನು ನಾ ದಿನದಿನವೂ ನಿನ್ನನು / ಭಜಿಸುವೆನೆಂದೆಂದಿಗೂ ನಿನ್ನ ಹೆಸರನು
8 : ಪ್ರಭು ದಯಾನಿಧಿ, ಕೃಪಾಸಾಗರನು / ಸಹನಶೀಲನು, ಪ್ರೀತಿಪೂರ್ಣನು
9 : ಪ್ರಭುವಿನ ಕರುಣೆ ಎಲ್ಲರ ಮೇಲೆ / ಆತನ ಕೃಪೆಯು ಸೃಷ್ಟಿಯ ಮೇಲೆ
10 : ಪ್ರಭು, ನಿನ್ನನು ಸ್ತುತಿಪುದು ಸೃಷ್ಟಿಯೆಲ್ಲವು / ಕೊಂಡಾಡುವುದು ನಿನ್ನನು ಭಕ್ತ ಸಮೂಹವು
11 : ಪ್ರಸಿದ್ಧಪಡಿಸುವರು ನಿನ್ನ ರಾಜ್ಯದ ಮಹತ್ವವನು / ವರ್ಣಿಸುವರವರು ನಿನ್ನ ಶಕ್ತಿ ಸಾಮಥ್ರ್ಯವನು
13 : ಶಾಶ್ವತವಾದುದು ನಿನ್ನ ರಾಜ್ಯವು / ಇರುವುದೆಂದಿಗು ನಿನ್ನ ಆಳ್ವಿಕೆಯು
14 : ನುಡಿಯಲಿ ಪ್ರಭು ಸದಾ ಪ್ರಾಮಾಣಿಕನು / ನಡೆಯಲಿ ಆತನು ಸದಾ ಪ್ರೀತಿಮಯನು
15 : ಎತ್ತುವನಾತ ಬಿದ್ದವರನೆಲ್ಲ / ಉದ್ಧರಿಪನು ಕುಗ್ಗಿದವರನೆಲ್ಲ

2ನೇ ವಾಚನ - 2ಥೆಸ 1: 11-2: 2 
ಇದಕ್ಕಾಗಿ ನಿಮಗೋಸ್ಕರ ನಾವು ಸದಾ ಪ್ರಾರ್ಥಿಸುತ್ತೇವೆ. ದೇವರೇ ನೀಡಿರುವ ಕರೆಗೆ ನೀವು ಯೋಗ್ಯರಾಗಿ ಬಾಳುವಂತಾಗಲಿ; ದೇವರ ಮಹಿಮಾಶಕ್ತಿಯಿಂದ ನಿಮ್ಮ ಶುಭಾಕಾಂಕ್ಷೆಗಳು ಮತ್ತು ವಿಶ್ವಾಸಪ್ರೇರಿತ ಕಾರ್ಯಗಳು ಪೂರ್ಣವಾಗಲಿ. ಹೀಗೆ ನಿಮ್ಮ ಮುಖಾಂತರ ಪ್ರಭು ಯೇಸುವಿನ ನಾಮಕ್ಕೂ ಮತ್ತು ಅವರಲ್ಲಿ ನಿಮಗೂ ಮಹಿಮೆಯುಂಟಾಗಲಿ. ನಮ್ಮ ದೇವರ ಹಾಗೂ ಪ್ರಭು ಯೇಸುಕ್ರಿಸ್ತರ ಅನುಗ್ರಹದಿಂದ ಇದು ನೆರವೇರಲಿ. ಸಹೋದರರೇ, ನಮ್ಮ ಪ್ರಭು ಯೇಸುಕ್ರಿಸ್ತರ ಪುನರಾಗಮನವನ್ನು ಮತ್ತು ನಾವು ಅವರ ಸನ್ನಿಧಿಯಲ್ಲಿ ಒಂದಾಗಿ ಸೇರುವ ವಿಷಯವನ್ನು ಕುರಿತು ನಿಮ್ಮಲ್ಲಿ ನಾವು ವಿನಂತಿಸುವುದೇನೆಂದರೆ; ಪ್ರಭುವಿನ ದಿನವು ಬಂದೇಬಿಟ್ಟಿತೆಂದು ಪ್ರವಾದನೆಯಿಂದಾಗಲಿ, ಪ್ರವಚನದಿಂದಾಗಲಿ ಅಥವಾ ನಮ್ಮ ಪತ್ರದಿಂದಾಗಲಿ ತಿಳಿದು ಬಂದಿದೆಯೆಂದು ಯಾರಾದರೂ ಹೇಳಿದರೆ, ಒಮ್ಮೆಗೇ ನೀವು ತಬ್ಬಿಬ್ಬಾಗಿ, ತಳಮಳಗೊಳ್ಳದಿರಿ.

ಶುಭಸಂದೇಶ - ಲೂಕ 19: 1-1೦
ಯೇಸುಸ್ವಾಮಿ ಜೆರಿಕೊ ಪಟ್ಟಣವನ್ನು ಪ್ರವೇಶೀಸಿ ಅದರ ಬೀದಿಗಳಲ್ಲಿ ಹಾದು ಹೋಗುತ್ತಿದ್ದರು. ಅಲ್ಲಿ ಜಕ್ಕಾಯ ಎಂಬವನಿದ್ದನು. ಅವನು ಸುಂಕವಸೂಲಿಯವರ ಮುಖಂಡ ಹಾಗೂ ಧನಾಢ್ಯ. ಯೇಸು ಯಾರೆಂದು ನೋಡಬೇಕೆಂಬ ಅಪೇಕ್ಷೆ ಅವನದು. ಆದರೆ ಅವನು ಗಿಡ್ಡ ವ್ಯಕ್ತಿ. ಜನಜಂಗುಳಿಯ ಮಧ್ಯೆ ಯೇಸುವನ್ನು ನೋಡಲು ಪ್ರಯತ್ನಿಸಿದರೂ ಅವನಿಂದಾಗಲಿಲ್ಲ.
ಆದಕಾರಣ ಮುಂದಕ್ಕೆ ಓಡಿಹೋಗಿ ಯೇಸು ಬರುತ್ತಿದ್ದ ಆ ಮಾರ್ಗದಲ್ಲಿ ಒಂದು ಆಲದ ಮರವನ್ನು ಕಂಡು ಅದನ್ನು ಹತ್ತಿದನು. ಯೇಸು ಆ ಸ್ಥಳಕ್ಕೆ ಬಂದು, ತಲೆಯೆತ್ತಿ ನೋಡಿ, “ಜಕ್ಕಾಯಾ, ಒಡನೆ ಇಳಿದು ಬಾ; ಈ ದಿನ ನಿನ್ನ ಮನೆಯಲ್ಲಿ ನಾನು ತಂಗಬೇಕು,” ಎಂದರು. ಜಕ್ಕಾಯನು ತಕ್ಷಣವೇ ಇಳಿದು ಬಂದು ಯೇಸುವನ್ನು ಸಂತೋಷದಿಂದ ಸ್ವಾಗತಿಸಿದನು. ಇದನ್ನು ನೋಡಿದವರೆಲ್ಲರು, “ಯೇಸು ಪಾಪಿಷ್ಠನ ಮನೆಗೆ ಅತಿಥಿಯಾಗಿ ಹೋಗುತ್ತಾನಲ್ಲಾ?” ಎಂದು ಗೊಣಗುಟ್ಟಿದರು. ಜಕ್ಕಾಯನು ನೆರೆದಿದ್ದ ಜನರ ಮುಂದೆ ಎದ್ದುನಿಂತು ಯೇಸುವಿಗೆ, “ಪ್ರಭುವೇ, ನನ್ನ ಆಸ್ತಿಪಾಸ್ತಿಯಲ್ಲಿ ಅರ್ಧಭಾಗವನ್ನು ಬಡಬಗ್ಗರಿಗೆ ಕೊಟ್ಟುಬಿಡುತ್ತೇನೆ. ಯಾರಿಗಾದರೂ ಮೋಸಮಾಡಿ ಅವರಿಂದೇನಾದರೂ ನಾನು ಕಸಿದುಕೊಂಡಿದ್ದರೆ ಅದಕ್ಕೆ ನಾಲ್ಕರಷ್ಟು ಹಿಂದಕ್ಕೆ ಕೊಡುತ್ತೇನೆ,” ಎಂದನು. ಆಗ ಯೇಸು, “ಇಂದು ಈ ಮನೆ ಉದ್ಧಾರವಾಯಿತು. ಇವನು ಕೂಡ ಅಬ್ರಹಾಮನ ವಂಶಕ್ಕೆ ಸೇರಿದವನಲ್ಲವೆ? ನರಪುತ್ರನು ಬಂದಿರುವುದು ಪತಿತರನ್ನು ಅರಸಿ ಉದ್ಧರಿಸುವುದಕ್ಕೆ,” ಎಂದು ಹೇಳಿದರು.
ಚಿಂತನೆ
ದೈವೀಕ ಗುಣಗಳಲ್ಲಿ ಅತ್ಯಂತ ಆಪ್ತವಾದ, ಮನುಷ್ಯ ತೀರಾ ಬಯಸುವ ಗುಣವೆಂದರೆ ದೇವರು ಕರುಣಾಮಯಿ ಎಂಬುದು. ದೇವರಿಂದ ಹರಿಯುವ ಕರುಣೆ ಮಾನವ ಬದುಕನ್ನು ರಕ್ಷಿಸುತ್ತದೆ, ಸಂತೃಪ್ತಿ ನೀಡುತ್ತದೆ. ಅವನ ಎಲ್ಲಾ ಬಲಹೀನತೆಗಳ ನಡುವೆಯೂ ದೇವರ ಕರುಣೆ ಅವನನ್ನು ರಕ್ಷಿಸುತ್ತದೆ. ಯೇಸು ತಮ್ಮ ಬೋಧನೆಯ ಪ್ರತಿಮಾತಿನಲ್ಲೂ ದೇವರ ಕರುಣೆ, ಪ್ರೀತಿ, ಕ್ಷಮೆಯನ್ನು ಪ್ರಕಟಿಸುತ್ತಾರೆ. 

`ಜಕ್ಕಾಯ' ಎಂದರೆ `ನಿರ್ಮಲ ಹೃದಯ' ಅಥವಾ `ನಿಷ್ಟಾವಂತ' ಎಂದು ಅರ್ಥ. ಜಕ್ಕಾಯನು ಸುಂಕ ವಸೂಲಿಗಾರರ ಮೇಲ್ವಿಚಾರಕನಾಗಿದ್ದ. ಯೇಸುವಿನ ಕಾಲದಲ್ಲಿ ಇಸ್ರಯೇಲರು ರೋಮನರ ಆಳ್ವಿಕೆಯಲ್ಲಿದ್ದರು. ಸುಂಕವಸೂಲಿಗಾರರು ನಿಗದಿಪಡಿಸಿಗಿಂತ ಹೆಚ್ಚಾಗಿ ಸುಂಕ ವಸೂಲಿಮಾಡುತ್ತಿದ್ದರು. ಇಸ್ರಯೇಲರು ರೋಮನ್ನರ ಸುಂಕಪದ್ಧತಿಯನ್ನು ಖಂಡಿಸಿದ್ದರು. ಹಾಗಾಗಿ ಸುಂಕದವರನ್ನು ಪಾಪಿಗಳೆಂದು ಪರಿಗಣಿಸಿದ್ದರು. ಜಕ್ಕಾಯನು ಅನ್ಯಾಯದಿಂದ ಗಳಿಸಿದ ಹಣದಿಂದ ಶ್ರೀಮಂತನಾಗಿದ್ದ. ಅವನಲ್ಲಿ ಎಷ್ಟೇ ಹಣ, ಸಂಪತ್ತಿದ್ದರೂ ಅವನ ಮನದಲ್ಲಿ ಏನೋ ಕೊರತೆಯಿತ್ತು, ಅತೃಪ್ತಿಯಿತ್ತು. ಯೇಸುವಿನ ಬಗ್ಗೆ ಅರಿತಿದ್ದ ಜಕ್ಕಾಯ ಯೇಸುವನ್ನು ಕಾಣಲು ಹಂಬಲಿಸಿದ. ಅತಿಥಿಯಾಗಿ ಬಂದ ಕ್ರಿಸ್ತನನ್ನು ಸ್ವೀಕರಿಸಿದ, ಮನಪರಿವರ್ತನೆಯಾದ ಯೇಸು ಆತನ ಜೀವನವನ್ನು ಪ್ರವೇಶಿಸಿದ ನಂತರ ಹೊಸ ಮನುಷ್ಯನಾದ. ಜಕ್ಕಾಯನ ಮನೆಗೆ ಪ್ರವೇಶಿಸಿದ ಕ್ರಿಸ್ತ ನಮ್ಮ ಮನ, ಮನೆಗಳನ್ನು ಪ್ರವೇಶಿಸಲಿ.

ಸಾಧಾರಣ ಕಾಲದ ಮೂವತ್ತನೇ ವಾರ ಶನಿವಾರ

2/ನೇರಳೆ/ಶನಿ/ಮೃತರಾದ ಸಕಲ ಭಕ್ತಾದಿಗಳ(ಸ್ಮರಣೆ)
1ನೇ ವಾಚನ - ಸುಜ್ಞಾನ 3:1-9
ಕೀರ್ತನೆ - 23:1-6
2ನೇ ವಾಚನ - ರೋಮ 6:3-9
ಶುಭಸಂದೇಶ - 6:37-40


1ನೇ ವಾಚನ - ಸುಜ್ಞಾನ 3:1-9
ಸಜ್ಜನರ ಆತ್ಮಗಳಿರುವುವು ದೇವರ ಕೈಯೊಳು ಅವರನ್ನು ಮುಟ್ಟದು ಮಹಾಯಾತನೆ ಯಾವುದು. ಮಂದಮತಿಯ ಕಣ್ಣಿಗೆ ಸತ್ತವರಂತೆ ಅವರು ಕಾಣಿಸಿಕೊಂಡರು ಅವರು ಗತಿಸಿ ಹೋದುದು ಅವನಿಂದ ತೊಲಗಿದ ಕೇಡಂತಿತ್ತು. ಸಜ್ಜನರಿಗಾದ ಸಾವು ಮಹಾ ವಿಪತ್ತು ಎಂದವನಿಗೆ ತೋರಿತು ಅವರಾದರೋ ಶಾಂತಿಸಮಾಧಾನದಿಂದ ನೆಮ್ಮದಿಯಾಗಿರುವರು. ಮಾನವನ ದೃಷ್ಟಿಯಲ್ಲಿ ಅವರು ಕಂಡುಬಂದರು ಶಿಕ್ಷಿಸಲ್ಪಟ್ಟವರಂತೆ ಅವರಲ್ಲಾದರೋ ತುಂಬಿತ್ತು ಅಮರತ್ವದ ನಂಬಿಕೆ ನಿರೀಕ್ಷೆ. ಅವರು ಅನುಭವಿಸಿದ ಶಿಕ್ಷೆ ಅಲ್ಪ, ಹೊಂದುವ ಸೌಭಾಗ್ಯ ಅಪಾರ ಶೋಧಿಸಿದ ತರುವಾಯ ದೇವರಿಗೆ ಅವರು ಕಂಡುಬಂದರು ಯೋಗ್ಯಾರ್ಹ. ಶೋಧಿಸಿದರವರನು ಪುಟಕ್ಕಿಟ್ಟ ಚಿನ್ನದಂತೆ ಅಂಗೀಕೃತರಾದರು ಪೂರ್ಣ ದಹನಬಲಿಯಂತೆ. ಪ್ರಕಾಶಿಸುವರು ದೇವರನು ಸಂದರ್ಶಿಸುವ ಕಾಲದಲಿ ಹೊಳೆಯುವರು ಒಣಹುಲ್ಲಿನೊಳಗಿನ ಕಿಡಿಗಳೋಪಾದಿ. ನ್ಯಾಯತೀರಿಸುವರವರು ಜನಾಂಗಗಳಿಗೆ ದೊರೆತನ ಮಾಡುವರವರು ಜನಗಳ ಮೇಲೆ ದೇವರ ಪ್ರಜೆಗಳಾಗಿರುವರು ಸದಾಕಾಲಕೆ. ಸತ್ಯವನು ಅರಿವರು ದೇವರಲಿ ಭರವಸೆಯಿಡುವವರು ಅವರೊಂದಿಗೆ ಪ್ರೀತಿಯಿಂದ ಬಾಳುವರು ನಂಬಿಗಸ್ತರು. ದೇವರಿಂದ ಆಯ್ಕೆಯಾದವರಿಗಿರುವುದು ಕೃಪಾನುಗ್ರಹವು ದೇವರೇ ಕಾಪಾಡುವರು ಸಜ್ಜನರನು. 

ಕೀರ್ತನೆ - 23:1-6
1 : ಪ್ರಭು ಕುರಿಗಾಹಿಯಾಗಿರಲು ನನಗೆ / ಕುಂದುಕೊರತೆಗಳೆಲ್ಲಿಯವು ಎನಗೆ? //
2 : ಹಸಿರುಗಾವಲುಗಳಲೆನ್ನ ತಂಗಿಸುವನು / ತಿಳಿಕೊಳಗಳ ಬಳಿಗೆನ್ನ ಕರೆದೊಯ್ಯುವನು //
3 : ಪುನಶ್ಚೇತನಗೊಳಿಸುವನು ನನ್ನ ಪ್ರಾಣವನಾತ | ಸನ್ಮಾರ್ಗದಲಿ ನಡೆಸುವನು ತನ್ನ ನಾಮನಿಮಿತ್ತ ||
4 : ಕಾರ್ಗತ್ತಲ ಕಣಿವೆಯಲಿ ನಾ ನಡೆವಾಗಲು, ಅಂಜೆನು ಕೇಡಿಗೆ | ನಿನ್ನ ಕುರಿಗೋಲು, ಊರುಗೋಲು, ಧೈರ್ಯವನು ತರುವುದೆನಗೆ | ಕಾಣೆನೆಂದಿಗೂ ನಾ ದಿಗಿಲನು, ನೀನಿರಲು ನನ್ನೊಂದಿಗೆ ||
5 : ಸಜ್ಜುಗೊಳಿಸುವೆ ನೀ ಶತ್ರುಗಳ ಕಣ್ಮುಂದೆಯೆ ನನಗೌತಣವನು | ಹಚ್ಚುವೆ ತಲೆಗೆ ತೈಲವನು, ತುಂಬಿತುಳುಕಿಸುವೆ ಪಾನಪಾತ್ರೆಯನು ||
6 : ಶುಭಶಾಂತಿಯಿಂದ ನಾ ಬಾಳುವೆ ಜೀವಮಾನವೆಲ್ಲ / ದೇವಮಂದಿರದಲಿ ನಾ ವಾಸಿಸುವೆ ಚಿರಕಾಲವೆಲ್ಲ //

2ನೇ ವಾಚನ - ರೋಮ 6:3-9
ಕ್ರಿಸ್ತಯೇಸುವಿನವರಾಗಲು ದೀಕ್ಷಾಸ್ನಾನ ಹೊಂದಿರುವ ನಾವು, ಅವರ ಮರಣದಲ್ಲಿ ಪಾಲುಗಾರರಾಗಲು ದೀಕ್ಷಾಸ್ನಾನ ಪಡೆದೆವು ಎಂಬುದು ನಿಮಗೆ ತಿಳಿಯದೆ? ಹೀಗಿರಲಾಗಿ, ದೀಕ್ಷಾಸ್ನಾನ ಮಾಡಿಸಿಕೊಂಡಾಗ ಅವರ ಮರಣದಲ್ಲಿ ಪಾಲುಗಾರರಾದ ನಮಗೆ ಅವರೊಡನೆ ಸಮಾಧಿಯೂ ಆಯಿತು. ಆದುದರಿಂದ ತಂದೆಯ ಮಹಿಮಾಶಕ್ತಿಯಿಂದ ಕ್ರಿಸ್ತಯೇಸು ಮರಣದಿಂದ ಪುನರುತ್ಥಾನ ಹೊಂದಿದಂತೆಯೇ ನಾವು ಸಹ ಹೊಸ ಜೀವವನ್ನು ಹೊಂದಿ ಬಾಳುತ್ತೇವೆ. ಅವರು ಮರಣ ಹೊಂದಿದಂತೆ ನಾವೂ ಅವರೊಂದಿಗೆ ಐಕ್ಯವಾಗಿ ಮರಣವನ್ನು ಹೊಂದುತ್ತೇವೆ. ಅಂತೆಯೇ, ಅವರು ಪುನರುತ್ಥಾನ ಆದಂತೆ ನಾವೂ ಅವರೊಡನೆ ಐಕ್ಯವಾಗಿ ಪುನರುತ್ಥಾನ ಹೊಂದುತ್ತೇವೆ. ನಮಗೆ ತಿಳಿದಿರುವಂತೆ ಪಾಪಾಧೀನವಾದ ನಮ್ಮ ಸ್ವಭಾವವು ನಾಶವಾಗುವಂತೆಯೂ ಇನ್ನು ಮುಂದೆ ನಾವು ಪಾಪಕ್ಕೆ ದಾಸರಾಗಿರದಂತೆಯೂ ಯೇಸುಕ್ರಿಸ್ತರೊಡನೆ ನಮ್ಮ ಹಳೆಯ ಸ್ವಭಾವವನ್ನು ಶಿಲುಬೆಗೆ ಜಡಿಯಲಾಗಿದೆ. ಹೀಗೆ ಸತ್ತವನು ಪಾಪಬಂಧದಿಂದ ಬಿಡುಗಡೆ ಹೊಂದಿದವನು. ಕ್ರಿಸ್ತ ಯೇಸುವಿನೊಂದಿಗೆ ನಾವು ಮರಣ ಹೊಂದಿದ್ದರೆ ಅವರೊಡನೆ ನಾವೂ ಜೀವಿಸುತ್ತೇವೆ; ಇದೇ ನಮ್ಮ ವಿಶ್ವಾಸ. ಯೇಸುಕ್ರಿಸ್ತರನ್ನು ಮರಣದಿಂದ ಎಬ್ಬಿಸಲಾಯಿತು ಎಂಬುದನ್ನು ನಾವು ಬಲ್ಲೆವು. ಆದ್ದರಿಂದ ಅವರು ಇನ್ನು ಎಂದಿಗೂ ಸಾಯುವುದಿಲ್ಲ; ಸಾವಿಗೆ ಅವರ ಮೇಲೆ ಯಾವ ಅಧಿಕಾರವೂ ಇಲ್ಲ.

ಶುಭಸಂದೇಶ -ಯೊವಾನ್ನ 6:37-40
ಪಿತನು ನನಗೆಂದು ಕೊಟ್ಟಿರುವ ಪ್ರತಿಯೊಬ್ಬನೂ ನನ್ನಲ್ಲಿಗೆ ಬರುತ್ತಾನೆ. ನನ್ನಲ್ಲಿಗೆ ಬರುವವನನ್ನು ನಾನೆಂದಿಗೂ ತಳ್ಳಿಬಿಡುವುದಿಲ್ಲ. ನಾನು ಸ್ವರ್ಗದಿಂದ ಇಳಿದು ಬಂದುದು ನನ್ನ ಇಚ್ಛೆಯಂತೆ ನಡೆಯುವುದಕ್ಕಲ್ಲ, ನನ್ನನ್ನು ಕಳುಹಿಸಿದಾತನ ಚಿತ್ತದಂತೆ ನಡೆಯುವುದಕ್ಕೆ. ಅವರ ಚಿತ್ತವೇನೆಂದರೆ: ಅವರು ನನಗೆ ಕೊಟ್ಟವರಲ್ಲಿ ಒಬ್ಬನನ್ನೂ ಕಳೆದುಕೊಳ್ಳದೆ ಅಂತಿಮ ದಿನದಂದು ಅವರೆಲ್ಲರನ್ನೂ ನಾನು ಜೀವಕ್ಕೆ ಎಬ್ಬಿಸಬೇಕು. ಪುತ್ರನನ್ನು ಕಂಡು ಆತನಲ್ಲಿ ವಿಶ್ವಾಸ ಇಡುವ ಪ್ರತಿಯೊಬ್ಬನೂ ನಿತ್ಯಜೀವವನ್ನು ಪಡೆಯಬೇಕೆಂಬುದೇ ನನ್ನ ಪಿತನ ಸಂಕಲ್ಪ. ಅಂಥವನನ್ನು ಅಂತಿಮ ದಿನದಂದು ನಾನು ಜೀವಕ್ಕೆ ಎಬ್ಬಿಸುತ್ತೇನೆ,” ಎಂದು ನುಡಿದರು.
ಚಿಂತನೆ
ಮರಣ ಬದುಕಿಗಿಂತ ವಿಸ್ಮಯ, ಆ ವಿಸ್ಮಯವನ್ನು ಹಂಚಿಕೊಳ್ಳುವುದು ಸ್ವಲ್ಪ ಕಷ್ಟ, ಮರಣದ ಬಗ್ಗೆ ಮಾತಾಡಲು ಅನೇಕರು ಹಿಂಜರಿಯುತ್ತಾರೆ. ಕೆಲವರಿಗೆ ಅದು ಅಪಶಕುನ, ಮತ್ತೆ ಕೆಲವರಿಗೆ ಅದು ಬಂದಾಗ ನೋಡಿಕೊಳ್ಳೋಣ ಎಂಬ ಉಪೇಕ್ಷೆ. ಸಾವಿನ ಬಗೆಗಿನ ಚರ್ಚೆಯನ್ನು ಮುಂದೂಡಿದಾಕ್ಷಣ ಸಾವು ಮುಂದೂಡಲ್ಪಡುವುದಿಲ್ಲ. ಹುಟ್ಟು ಉಚಿತ, ಸಾವು ಖಚಿತ. ಬಹುಶಃ ಎಲ್ಲಾ ಧರ್ಮಗಳೂ ಸಾವಿನ ನಂತರದ ಒಂದು ಬದುಕಿನಲ್ಲಿ ನಂಬಿಕೆ ಇಟ್ಟಿದೆ. ಹಿಂದೂ ಧರ್ಮ ಪುನರ್ಜನ್ಮದಲ್ಲಿ ನಂಬಿಕೆಯಿಟ್ಟರೆ, ಕ್ರೈಸ್ತ ಧರ್ಮ ನಿತ್ಯಜೀವನದಲ್ಲಿ ಪುನರುತ್ಥಾನದಲ್ಲಿ ನಂಬಿಕೆ ತಳೆದಿದೆ. ಕ್ರಿಸ್ತ ಸಾವಿನ ನಂತರ ಪುನರುತ್ಥಾನರಾದರು ಎಂಬ ನಂಬಿಕೆಯೇ ಇದರ ತಳಹದಿ. ಹಾಗಾಗಿ ನಮಗೂ ಪುನರುತ್ಥಾನವಿದೆ ಆದಾಮನಿಂದ ಪಡೆದ ಭೌತಿಕ ದೇಹ ನಶಿಸಿ, ಕ್ರಿಸ್ತನಿಂದ ಪಡೆದ ಆಧ್ಯಾತ್ಮಿಕ ದೇಹವನ್ನು ನಾವು ಪಡೆಯುತ್ತೇವೆ (೧ ಕೊರಿಂಥ ೧೫). ಜನನ ಮರಣ ಮತ್ತು ನಡುವೆ ಇರುವುದೇ ಜೀವನ. ಈ ಜೀವನದ ಮೇಲೆ ಮುಂದಿನ ಬದುಕು ಅವಲಂಬಿತವಾಗಿದೆ. ನಾವು ಸತ್ತರೆ ತಿರುಗಿ ಬರುವುದಿಲ್ಲ ಎಂಬುದು ಖಚಿತವಾದ್ದರಿಂದ ಮೌಲ್ಯಧಾರಿತ ಬದುಕನ್ನು ಜೀವಿಸುತ್ತ, ನಮ್ಮ ಕರ್ತವ್ಯವನ್ನು ನಿಷ್ಠೆಯಿಂದ ನೆರೆವೇರಿಸೋಣ.

ಸಾಧಾರಣ ಕಾಲದ ಮೂವತ್ತೊಂದನೇ ವಾರ ಶನಿವಾರ

ಲ್ಯಾಟರನ್ ಮಹಾದೇವಾಲಯದ ಅಭಿಷೇಕೊತ್ಸವ
ಮೊದಲನೇ ವಾಚನ ಯೆಜೆಕಿಯೇಲ  47:1-2,8-9,12
ಕೀರ್ತನೆ:  84: 3-6, 10
ಶುಭಸಂದೇಶ : ಯೊವಾನ್ನ 2:13-22
ಮೊದಲನೇ ವಾಚನ ಯೆಜೆಕಿಯೇಲ  47:1-2,8-9,12
1 : ಆಮೇಲೆ ಆ ಪುರುಷ ನನ್ನನ್ನು ದೇವಸ್ಥಾನದ ಬಾಗಿಲಿಗೆ ಪುನಃ ಕರೆದು ತಂದನು: ಇಗೋ, ದೇವಸ್ಥಾನದ ಹೊಸ್ತಿಲ ಕೆಳಗಿನಿಂದ ನೀರು ಹೊರಟು ಪೂರ್ವದಕಡೆಗೆ ಹರಿಯುತ್ತಿತ್ತು. (ದೇವಸ್ಥಾನ ಪೂರ್ವಾಭಿಮುಖವಾಗಿತ್ತು). ಆ ನೀರು ದೇವಸ್ಥಾನದ ಬಲಗಡೆ ಕೆಳಗಿನಿಂದ ಹೊರಟು ಬಲಿಪೀಠದ ದಕ್ಷಿಣದಲ್ಲಿ ಹರಿಯುತ್ತಿತ್ತು.
2 : ಆಗ ಅವನು ನನ್ನನ್ನು ಉತ್ತರ ಹೆಬ್ಬಾಗಿಲಿನಿಂದ ದೇವಾಲಯದ ಹೊರಗಿನ ಮಾರ್ಗವಾಗಿ ಸುತ್ತಿಸಿಕೊಂಡು ಪೂರ್ವದ ಹೆಬ್ಬಾಗಿಲಿಗೆ ಕರೆದುತಂದನು. ಅಲ್ಲಿ ನೋಡಲು ಅದರ ಬಲಗಡೆ ಮೆಲ್ಲಮೆಲ್ಲನೆ ಹರಿಯುವ ನೀರು ಕಾಣಿಸಿತು.
8 : ಆಗ ಅವನು ನನಗೆ ಹೀಗೆ ಹೇಳಿದನು: “ಈ ಪ್ರವಾಹ ಪೂರ್ವಪ್ರಾಂತ್ಯಕ್ಕೆ ಹೊರಟು ಅರಬಾ ಎಂಬ ಕಣಿವೆಗೆ ಇಳಿದು ಲವಣ ಸಮುದ್ರದ ಕಡೆಗೆ ಹರಿಯುವುದು; ದೇವಸ್ಥಾನದಿಂದ ಹೊರಟ ಪ್ರವಾಹವು ಲವಣಸಮುದ್ರಕ್ಕೆ ಸೇರಲು ಅದರ ನೀರು ಸಿಹಿಯಾಗುವುದು.
9 : ಈ ತೊರೆ ಎಲ್ಲೆಲ್ಲಿ ಹರಿಯುತ್ತದೋ ಅಲ್ಲಲ್ಲಿ ಗುಂಪು ಗುಂಪಾಗಿ ಚಲಿಸುವ ಸಕಲವಿಧ ಜಲ ಜಂತುಗಳು ಬದುಕಿ ಬಾಳುವುವು; ವಿೂನುಗಳು ತಂಡೋಪ ತಂಡವಾಗಿರುವುವು. ಈ ನೀರು ಸಮುದ್ರಕ್ಕೆ ಬೀಳಲು ಆ ನೀರೂ ಸಿಹಿಯಾಗುವುದು; ಈ ತೊರೆ ಎಲ್ಲೆಲ್ಲಿ ಹರಿದರೂ ಅಲ್ಲಲ್ಲಿ ಜೀವವುಂಟಾಗುವುದು.
12 : ತೊರೆಯ ಎರಡು ದಡಗಳಲ್ಲಿಯೂ ಸಕಲ ಫಲವೃಕ್ಷಗಳು ಬೆಳೆಯುವುವು. ಅವುಗಳ ಎಲೆ ಬಾಡದು, ಹಣ್ಣು ತೀರದು. ತೊರೆಯ ನೀರು ಪವಿತ್ರಾಲಯದೊಳಗಿಂದ ಹೊರಟುಬರುವ ಕಾರಣ ಅವು ತಿಂಗಳು ತಿಂಗಳಲ್ಲಿಯೂ ಹೊಸ ಹೊಸ ಫಲವನ್ನು ಕೊಡುತ್ತಲಿರುವುವು; ಅವುಗಳ ಹಣ್ಣು ಆಹಾರಕ್ಕೂ, ಸೊಪ್ಪು ಔಷಧಕ್ಕೂ ಅನುಕೂಲಿಸುವುವು.”

ಕೀರ್ತನೆ:  84: 3-6, 10

3 : ಸ್ವಾಮಿ ದೇವ, ಎನ್ನರಸ, ಸ್ವರ್ಗಸೇನಾಧೀ ಶ್ವರ / ದೊರಕಿದೆ ಗುಬ್ಬಿಗೆ ಗೂಡು ನಿನ್ನ ವೇದಿಕೆಯ ಹತ್ತಿರ / ಪಾರಿವಾಳಕ್ಕು ಅಲ್ಲೇ ಇದೆ ಮರಿಯಿಡಲು ಆಗರ //
4 : ನಿನ್ನ ಮಂದಿರದಲಿ ವಾಸಿಸುವವರು ಧನ್ಯರು / ನಿರಂತರವು ನಿನ್ನ ಗುಣಗಾನ ಮಾಡುವರವರು //
5 : ನಿನ್ನಿಂದ ಶಕ್ತಿಪಡೆಯುವವರು ಧನ್ಯರು / ಸಿಯೋನ್ ಶಿಖರಕ್ಕವರು ಪ್ರಿಯ ಯಾತ್ರಿಕರು //
6 : ದಾಟುವಾಗ ಬಾಕಾ ಕಣಿವೆಯನು / ಚಿಲುಮೆಗಳನಾಗಿ ಮಾಡುವರದನು // ಮುಂಗಾರು ಮಳೆಯು ಸುರಿಯಲು / ತುಂಬಿ ತುಳುಕುವುದಾ ಸರಸಿಗಳು //
10 : ದುರುಳರ ಬಿಡಾರದಲಿ ನಾ ವಾಸಮಾಡುವುದರ ಬದಲು / ನಿನ್ನಾಲಯದ ದ್ವಾರಪಾಲಕನಾಗಿರುವುದೆ ಮೇಲು //
11 : ದೇವನೆಮಗೆ ಬೆಳಕು ಕೊಡುವ ಸೂರ್ಯನು / ಕಾದಿಟ್ಟು ರಕ್ಷಿಸುವ ಗುರಾಣಿಯು / ಸನ್ಮಾರ್ಗಿಗೆ ಈವನು ಸಕಲ ವರಗಳನು //
12 : ಪ್ರಭುವೇ, ಸ್ವರ್ಗಸೇನಾಧೀಶ್ವರನೇ / ನಿನ್ನಲಿ ನಂಬಿಕೆ ಇಡುವವನೇ ಧನ್ಯನು /

ಶುಭಸಂದೇಶ : ಯೊವಾನ್ನ 2:13-22
13 : ಯೆಹೂದ್ಯರ ಪಾಸ್ಕ ಹಬ್ಬವು ಹತ್ತಿರವಾಗಿದ್ದುದರಿಂದ ಯೇಸುಸ್ವಾಮಿ ಜೆರುಸಲೇಮಿಗೆ ತೆರಳಿದರು.
14 : ಅಲ್ಲಿಯ ಮಹಾದೇವಾಲಯದಲ್ಲಿ ದನ, ಕುರಿ ಮತ್ತು ಪಾರಿವಾಳಗಳನ್ನು ಮಾರುವವರು ಮತ್ತು ನಾಣ್ಯವಿನಿಮಯ ಮಾಡುವವರು ವ್ಯಾಪಾರಕ್ಕೆ ಕುಳಿತಿದ್ದರು.
15 : ಅದನ್ನು ಕಂಡ ಯೇಸು, ಹಗ್ಗವನ್ನು ಚಾವಟಿಯಂತೆ ಹೆಣೆದು ಅದರಿಂದ ಅವರನ್ನೆಲ್ಲಾ ದೇವಾಲಯದಿಂದ ಹೊರಗಟ್ಟಿದರು. ದನಕುರಿಗಳನ್ನು ಓಡಿಸಿದರು. ನಾಣ್ಯವಿನಿಮಯ ಮಾಡುವವರ ಮೇಜುಗಳನ್ನು ಕೆಡವಿ, ಚಿಲ್ಲರೆ ಹಣವನ್ನು ಚೆಲ್ಲಿದರು.
16 : ಪಾರಿವಾಳಗಳನ್ನು ಮಾರುತ್ತಿದ್ದವರಿಗೆ, “ಇವನ್ನು ಇಲ್ಲಿಂದ ತೆಗೆದುಕೊಂಡು ಹೊರಡಿ. ನನ್ನ ಪಿತನ ಆಲಯವನ್ನು ಸಂತೆಯನ್ನಾಗಿ ಮಾಡಬೇಡಿ,” ಎಂದು ಹೇಳಿದರು.
17 : ‘ನಿನ್ನ ಆಲಯದ ಮೇಲಿನ ಅಭಿಮಾನವು ನನ್ನನ್ನು ಬೆಂಕಿಯಂತೆ ದಹಿಸುತ್ತದೆ,’ ಎಂದು ಪವಿತ್ರಗ್ರಂಥದಲ್ಲೇ ಬರೆದಿರುವ ವಾಕ್ಯವು ಶಿಷ್ಯರಿಗೆ ಆಗ ನೆನಪಾಯಿತು.
18 : ಯೆಹೂದ್ಯರು, “ಇಷ್ಟೆಲ್ಲಾ ಮಾಡಲು ನಿನಗೆ ಅಧಿಕಾರವಿದೆ ಎಂದು ರುಜುವಾತು ಪಡಿಸುವುದಕ್ಕೆ ಯಾವ ಪವಾಡವನ್ನು ಮಾಡಿ ತೋರಿಸಬಲ್ಲೆ?” ಎಂದು ಯೇಸುವನ್ನು ಪ್ರಶ್ನಿಸಿದರು.
19 : ಅದಕ್ಕೆ ಯೇಸು, “ಈ ದೇವಾಲಯವನ್ನು ಕೆಡವಿಬಿಡಿ, ಮೂರು ದಿನದಲ್ಲಿ ಅದನ್ನು ಪುನಃ ಎಬ್ಬಿಸುವೆನು,” ಎಂದು ಉತ್ತರಕೊಟ್ಟರು.
20 : ಚಕಿತರಾದ ಯೆಹೂದ್ಯರು, “ಈ ದೇವಾಲಯವನ್ನು ಕಟ್ಟಲು ನಲವತ್ತಾರು ವರ್ಷಗಳು ಹಿಡಿದಿವೆ. ನೀನು ಮೂರು ದಿನಗಳಲ್ಲೇ ಅದನ್ನು ಎಬ್ಬಿಸಬಲ್ಲೆಯಾ?” ಎಂದು ಕೇಳಿದರು.
21 : ಯೇಸು ಹೇಳಿದ್ದು ತಮ್ಮ ದೇಹವೆಂಬ ದೇಗುಲವನ್ನು ಕುರಿತು.
22 : ಅವರು ಸತ್ತು ಪುನರುತ್ಥಾನ ಹೊಂದಿದ ಬಳಿಕ ಶಿಷ್ಯರು ಅವರ ಈ ಮಾತುಗಳನ್ನು ಸ್ಮರಿಸಿಕೊಂಡರು. ಪವಿತ್ರಗ್ರಂಥದಲ್ಲೂ ಯೇಸುವಿನ ಮಾತಿನಲ್ಲೂ ಅವರಿಗೆ ಆಗ ವಿಶ್ವಾಸ ಹುಟ್ಟಿತು.

ಚಿಂತನೆ
ಲ್ಯಾಟರನ್ ಮಹಾದೇವಾಲಯದ ಅಭಿಷೇಕೊತ್ಸವ
ಲ್ಯಾಟರನ್ ದೇವಾಲಯವು ಕ್ರೈಸ್ತ ಇತಿಹಾಸದಲ್ಲೇ ಅತೀ ಪ್ರಾಚೀನ ದೇವಾಲಯ ಹಾಗೂ ಎಲ್ಲಾ ದೇವಾಲಯಗಳಿಗೂ ತಾಯಿ ದೇವಾಲಯವಿದ್ದಂತೆ. ಸಂತ ಪೇತ್ರರ ಬಸಿಲಿಕಾದ ಲ್ಯಾಟರನ್ ಮಹಾದೇವಾಲಯವು ಕ್ರೈಸ್ತರ ಆಡಳಿತ ಕೇಂದ್ರವಾಗಿತ್ತು. ಕ್ರಿ. ಶ. ೩೨೪, ನವೆಂಬರ್ ೯ ರಂದು ಜಗದ್ಗುರು ಸಿಲ್ವೇಸ್ಟರ್‌ರವರು ಈ ದೇವಾಲಯವನ್ನು ಪ್ರತಿಸ್ಥಾಪಿಸುತ್ತಾರೆ. ಪ್ರತೀ ಧರ್ಮಾಧ್ಯಕ್ಷರಿಗೆ ಪ್ರಧಾನ ದೇವಾಲಯವಿರುವಂತೆ ಜಗದ್ಗುರುಗಳ ಪ್ರಧಾನ ದೇವಾಲಯವೇ ಈ ಲ್ಯಾಟರನ್ ಮಹಾದೇವಾಲಯ. ಅರಸ ಕಾನ್‌ಸ್ಟಾಂಟನ್ ಲ್ಯಾಟರಾನಿ ಅರಮನೆಯನ್ನು ಜಗದ್ಗುರುಗಳಿಗೆ ಕೊಡುಗೆಯಾಗಿ ನೀಡುತ್ತಾನೆ. ಈ ದೇವಾಲಯವನ್ನು ಸ್ನಾನಿಕ ಯೊವಾನರಿಗೆ ಹಾಗೂ ಶುಭಸಂದೇಶಕಾರ ಯೋವಾನ್ನನಿಗೆ ಅರ್ಪಿಸಲಾಗಿದೆ. ಹಾಗಾಗಿ ಈ ದೇವಾಲಯವನ್ನು ಸಂತ, ಯೊವಾನ್ನರ / ಜಾನರ ಲ್ಯಾಟರನ್ ದೇವಾಲಯವೆನ್ನುತ್ತಾರೆ.

ಸಾಧಾರಣ ಕಾಲದ ಮೂವತ್ತೊಂದನೇ ವಾರ ಶುಕ್ರವಾರ

8/ಹಸಿರು/ಶುಕ್ರ
1ನೇ ವಾಚನ - ರೋಮ 15:  14-21
ಕೀರ್ತನೆ - 98: 1-4
ಶುಭಸಂದೇಶ - ಲೂಕ 16: 1-8


1ನೇ ವಾಚನ - ರೋಮ 15: 14-21
ಸಹೋದರರೇ, ನೀವು ಗುಣಸಂಪನ್ನರೂ ಜ್ಞಾನಸಂಪನ್ನರೂ ಒಬ್ಬರಿಗೊಬ್ಬರು ಬುದ್ಧಿ ಹೇಳಿಕೊಳ್ಳಲು ಸಮರ್ಥರೂ ಆಗಿದ್ದೀರಿ ಎಂದು ನಾನು ಚೆನ್ನಾಗಿ ಬಲ್ಲೆ. ಆದರೂ ಕೆಲವು ವಿಷಯಗಳತ್ತ ನಿಮ್ಮ ಗಮನ ಸೆಳೆಯುವ ಉದ್ದೇಶದಿಂದ ಅಲ್ಲಲ್ಲಿ ಹೆಚ್ಚಿನ ಧೈರ್ಯವಹಿಸಿ ಬರೆದಿದ್ದೇನೆ. ದೇವರು ನನಗೆ ದಯಪಾಲಿಸಿರುವ ವಿಶೇಷ ವರದಾನದಿಂದಾಗಿ ಈ ಪ್ರಕಾರ ಬರೆದಿದ್ದೇನೆ. ಈ ವರದಿಂದಲೇ ಯೆಹೂದ್ಯರಲ್ಲದ ಜನರಿಗೆ ನಾನು ಕ್ರಿಸ್ತಯೇಸುವಿನ ದಾಸನಾದೆ. ಯೆಹೂದ್ಯರಲ್ಲದವರು ಪವಿತ್ರಾತ್ಮರ ಮೂಲಕ ಪರಿಶುದ್ಧರಾಗಿ, ದೇವರಿಗೆ ಸಮರ್ಪಕ ಕಾಣಿಕೆಯಾಗುವಂತೆ ದೇವರ ಶುಭಸಂದೇಶವನ್ನು ಸಾರುವುದೇ ನನ್ನ ಪೂಜ್ಯಸೇವೆ, ಅದುವೇ ನನ್ನ ಯಾಜಕ ಸೇವೆ. ದೇವರಿಗಾಗಿ ಸಲ್ಲಿಸುವ ಈ ಸೇವೆಯನ್ನು ಕುರಿತು ನಾನು ಕ್ರಿಸ್ತಯೇಸುವಿನಲ್ಲಿ ಹೆಮ್ಮೆಪಡಲು ಕಾರಣ ಉಂಟು. ಕ್ರಿಸ್ತಯೇಸು ನನ್ನ ಮುಖಾಂತರ ಅಂದರೆ, ನನ್ನ ಬೋಧನೆ ಹಾಗು ಸಾಧನೆಗಳ ಮೂಲಕ, ಸೂಚಕ ಹಾಗೂ ಅದ್ಭುತ ಕಾರ್ಯಗಳ ಮೂಲಕ ಮತ್ತು ಪವಿತ್ರಾತ್ಮರ ಶಕ್ತಿಯ ಮೂಲಕ ಯೆಹೂದ್ಯರಲ್ಲದವರನ್ನೂ ತಮ್ಮ ಶರಣರನ್ನಾಗಿಸಿಕೊಂಡಿದ್ದಾರೆ. ಇದೊಂದನ್ನು ಬಿಟ್ಟು ಬೇರೆ ಯಾವುದನ್ನು ಕುರಿತು ಹೊಗಳಿಕೊಳ್ಳಲು ನಾನು ಧೈರ್ಯಗೊಳ್ಳುವುದಿಲ್ಲ. ಜೆರುಸಲೇಮಿನಿಂದ ಪ್ರಾರಂಭಿಸಿ ಇಲ್ಲುರಿಕ ಪ್ರಾಂತ್ಯದವರೆಗೂ ಸುತ್ತಮುತ್ತಿನಲ್ಲೂ ನಾನು ಸಂಚಾರಮಾಡಿ, ಕ್ರಿಸ್ತಯೇಸುವಿನ ಶುಭಸಂದೇಶವನ್ನು ಪೂರ್ತಿಯಾಗಿ ಪ್ರಚಾರಮಾಡಿದ್ದೇನೆ. ಮತ್ತೊಬ್ಬನು ಹಾಕಿದ ಅಸ್ತಿವಾರದ ಮೇಲೆ ನಾನು ಕಟ್ಟುವುದು ಸರಿ ಅಲ್ಲವೆಂಬುದು ನನ್ನ ಅಭಿಪ್ರಾಯ. ಆದಕಾರಣ ಕ್ರಿಸ್ತಯೇಸುವಿನ ನಾಮವು ಪ್ರಚಾರವಾಗದಕಡೆ ಹೋಗಿ ಶುಭಸಂದೇಶವನ್ನು ಸಾರಬೇಕೆಂಬುದೇ ನನ್ನ ಆಕಾಂಕ್ಷೆ. “ಯಾರಿಗೆ ಆತನ ಸುದ್ದಿ ಮುಟ್ಟಿಲ್ಲವೋ ಅವರು ಆತನನು ನೋಡುವರು; ಯಾರು ಆತನ ವರ್ತಮಾನ ಕೇಳಿಲ್ಲವೋ ಅವರು ಆತನನು ಗ್ರಹಿಸಿಕೊಳ್ಳುವರು,” ಎಂಬುದಾಗಿ ಪವಿತ್ರಗ್ರಂಥದಲ್ಲಿ ಬರೆದಿರುವ ಪ್ರಕಾರ ನನ್ನ ಕಾರ್ಯವನ್ನು ನಡೆಸಿದ್ದೇನೆ.

ಕೀರ್ತನೆ - 98: 1-4
1 : ಹಾಡಿರಿ ಪ್ರಭುವಿಗೆ ಹೊಸಗೀತೆಯೊಂದನು / ಎಸಗಿಹನಾತನು ಪವಾಡಕಾರ್ಯಗಳನು / ಗಳಿಸಿತಾತನ ಕೈ ಪೂತಭುಜ ಗೆಲುವನು // 
2 : ಪ್ರಕಟಿಸಿಹನಾ ಪ್ರಭು ತನ್ನ ಮುಕ್ತಿವಿಧಾನವನು / ರಾಷ್ಟ್ರಗಳಿಗೆ ತೋರಿಸಿಹನು ಜೀವೋದ್ಧಾರಕಾ ಶಕ್ತಿಯನು // 
3 : ಕಂಡು ಬಂದಿತು ಜಗದ ಎಲ್ಲೆಎಲ್ಲೆಗೆ / ನಮ್ಮ ದೇವ ಸಾಧಿಸಿದ ಜಯಗಳಿಕೆ // ಸ್ಮರಿಸಿಕೊಂಡನಾ ಪ್ರಭು ತನ್ನ ಪ್ರೀತಿಯನು / ಇಸ್ರಯೇಲ್ ಕುಲದ ಬಗ್ಗೆ ತನ್ನ ಸತ್ಯತೆಯನು // 
4 : ಭೂನಿವಾಸಿಗಳೇ, ಮಾಡಿರಿ ಜಯಕಾರ ಪ್ರಭುವಿಗೆ / ಮುದದಿ ಹಾಡಿರಿ, ಮಾಡಿರಿ ಸುಮಧುರ ಭಜನೆ //
ಶುಭಸಂದೇಶ - ಲೂಕ 16: 1-8
ಯೇಸುಸ್ವಾಮಿ ತಮ್ಮ ಶಿಷ್ಯರನ್ನು ಉದ್ದೇಶಿಸಿ ಇಂತೆಂದರು: “ಒಬ್ಬ ಧನಿಕನಿದ್ದ. ಅವನ ವ್ಯವಹಾರವನ್ನು ನೋಡಿಕೊಳ್ಳಲು ಒಬ್ಬ ಮೇಸ್ತ್ರಿಯಿದ್ದ. ಇವನು ಧನಿಕನ ಆಸ್ತಿಯನ್ನು ಹಾಳುಮಾಡುತ್ತಿದ್ದಾನೆಂದು ದೂರು ಬಂದಿತು. ಧನಿಕನು ಅವನನ್ನು ಕರೆದು, ‘ಏನಿದು, ನಿನ್ನ ವಿಷಯವಾಗಿ ನಾನು ಹೀಗೆಲ್ಲ ಕೇಳುತ್ತಾ ಇದ್ದೇನೆ? ನಿನ್ನ ಕೆಲಸದ ಲೆಕ್ಕಾಚಾರವನ್ನು ಒಪ್ಪಿಸಿಬಿಡು. ಇನ್ನು ನೀನು ಮೇಸ್ತ್ರಿ ಆಗಿರಲು ಆಗದು,’ ಎಂದ. ಆಗ ಮೇಸ್ತ್ರಿ, ‘ಈಗ ಏನು ಮಾಡಲಿ? ಯಜಮಾನನು ನನ್ನನ್ನು ಕೆಲಸದಿಂದ ತೆಗೆದು ಬಿಡುತ್ತಾನಲ್ಲಾ; ಅಗೆಯಲು ಶಕ್ತಿ ಸಾಲದು; ಭಿಕ್ಷೆ ಬೇಡಲು ನನಗೆ ನಾಚಿಕೆ,’ ಎಂದು ಚಿಂತಾಕ್ರಾಂತನಾದ. ಮರುಕ್ಷಣ, ‘ಸರಿ, ಕೆಲಸದಿಂದ ನನ್ನನ್ನು ತೆಗೆದುಹಾಕಿದ ಮೇಲೆ ಜನರು ನನ್ನನ್ನು ತಮ್ಮ ಮನೆಗೆ ಸೇರಿಸಿಕೊಳ್ಳುವಂತೆ ನಾನು ಏನು ಮಾಡಬೇಕೆಂದು ಈಗ ಗೊತ್ತಾಯಿತು,’ ಎಂದುಕೊಂಡ. ಯಜಮಾನನ ಸಾಲಗಾರರನ್ನು ಒಬ್ಬೊಬ್ಬರನ್ನಾಗಿ ಬರಮಾಡಿಕೊಂಡು, ‘ನೀನು ನನ್ನ ಯಜಮಾನನಿಗೆ ತೀರಿಸಬೇಕಾದ ಸಾಲ ಎಷ್ಟು?’ ಎಂದು ಮೊದಲನೆಯವನನ್ನು ಕೇಳಿದ. ಅವನು, ‘ನೂರು ಬುದ್ದಲಿ ಎಣ್ಣೆ,’ ಎಂದ. ಅದಕ್ಕೆ ಮೇಸ್ತ್ರಿ, ‘ಇಗೋ, ನಿನ್ನ ಪತ್ರ, ಕುಳಿತುಕೊಂಡು “ಐವತ್ತು” ಎಂದು ಬೇಗನೆ ಬರೆ,’ ಎಂದ. ಬಳಿಕ ಇನ್ನೊಬ್ಬನನ್ನು ಕರೆದು, ‘ನೀನೆಷ್ಟು ಸಾಲ ತೀರಿಸಬೇಕು?’ ಎಂದು ಕೇಳಿದ. ಅವನು ‘ನೂರು ಖಂಡುಗ ಗೋದಿ’ ಎಂದಾಗ ‘ಇಗೋ ನಿನ್ನ ಪತ್ರ, “ಎಂಬತ್ತು” ಎಂದು ಬರೆ’, ಎಂದ. “ಈ ಅಪ್ರಾಮಾಣಿಕ ಮೇಸ್ತ್ರಿ ಮಾಡಿದ ಮುಂದಾಲೋಚನೆಯನ್ನು ಅವನ ಯಜಮಾನ ಪ್ರಶಂಸಿಸಿದ. ಏಕೆಂದರೆ, ತಮ್ಮ ತಮ್ಮ ವ್ಯವಹಾರಗಳಲ್ಲಿ ಲೌಕಿಕ ಜನರು ಬೆಳಕಿನ ರಾಜ್ಯದ ಜನರಿಗಿಂತ ಜಾಣರು.
ಚಿಂತನೆ
ದೇಶದ ಎಲ್ಲೆಡೆ ಭ್ರಷ್ಟಾಚಾರ ವ್ಯಾಪಕವಾಗಿ ಹರಡಿದೆ. ಬರೀ ಲೂಟಿ ಮಾಡುವುದಷ್ಟೇ ಭ್ರಷ್ಟಚಾರವಲ್ಲ, ಮಾನವ ತನ್ನ ಮನಸ್ಸಿನಲ್ಲಿ ಕೆಟ್ಟ ಆಲೋಚನೆ ಮಾಡುವುದು ಮತ್ತು ಅದರಂತೆ ನಡೆದುಕೊಳ್ಳುವುದು ಸಹ ಒಂದು ರೀತಿ ಭ್ರಷ್ಟಾಚಾರ. ಇಂದಿನ ಸಾಮತಿಯಲ್ಲಿ ಮೇಸ್ತ್ರಿಯ ಮುಂದಾಲೋಚನೆ, ಕುಯುಕ್ತಿಯನ್ನು ಆತನ ಒಡೆಯ ಪ್ರಶಂಸಿರಬಹುದು. ಆದರೆ ಕುಯುಕ್ತಿ, ದುರಾಲೋಚನೆ ತುಂಬಾ ದಿನ ಬದುಕಲಾರದು. ಈ ಸಮಾಜದಲ್ಲಿ ಕುಯುಕ್ತಿ, ದುರಾಲೋಚನೆ, ಅಪ್ರಾಮಾಣಿಕತೆ ಆ ಕ್ಷಣಕ್ಕೆ ಗೆಲ್ಲಬಹುದು. ಆದರೆ ದೇವರ ಲೋಕದಲ್ಲಿ ಪ್ರಾಮಾಣಿಕತೆ, ನೈತಿಕತೆಯೇ ಅಂತಿಮವಾಗಿ ಗೆಲ್ಲುವುದು. ಸಮಾಜದಲ್ಲಿ ಎಲ್ಲೆಲ್ಲೂ ಲಂಚಕೋರತನ, ಭ್ರಷ್ಟಾಚಾರ ತಾಂಡವವಾಡುತ್ತಿದೆ. ನೈತಿಕ ಮೌಲ್ಯಗಳು ಮಾಯವಾಗುತ್ತಿವೆ. ಹೆಚ್ಚು ಕಲಿತವರು ಕೂಡ ಸುಲಭವಾಗಿ ಭ್ರಷ್ಟರಾಗುತ್ತಿದ್ದಾರೆ. ಆದರೆ, ಜೀವನದಲ್ಲಿ ನೈತಿಕ ಮೌಲ್ಯಗಳು ಅಗತ್ಯವಾಗಿದ್ದು ಅವುಗಳನ್ನು ಮೈಗೂಡಿಸಿಕೊಂಡು ಮಾದರಿ ವ್ಯಕ್ತಿಗಳಾಗಬೇಕೆಂದು ಯೇಸು ಬಯಸುತ್ತಾರೆ.

ಸಾಧಾರಣ ಕಾಲದ ಮೂವತ್ತೊಂದನೇ ವಾರ ಗುರುವಾರ

7/ಹಸಿರು/ಗುರು
1ನೇ ವಾಚನ - ರೋಮ 14:  7-12
ಕೀರ್ತನೆ - 27: 1, 4, 13-14
ಶುಭಸಂದೇಶ - ಲೂಕ 15: 1-1೦

1ನೇ ವಾಚನ - ರೋಮ 14:  7-12
ನಮ್ಮಲ್ಲಿ ಯಾರೂ ತನಗಾಗಿಯೇ ಬದುಕುವುದಿಲ್ಲ; ತನಗಾಗಿಯೇ ಸಾಯುವುದಿಲ್ಲ. ನಾವು ಬದುಕಿದರೂ ಪ್ರಭುವಿಗಾಗಿಯೇ; ಸತ್ತರೂ ಅವರಿಗಾಗಿಯೇ. ನಾವು ಬದುಕಿದರೂ ಸತ್ತರೂ ಪ್ರಭುವಿಗೆ ಸೇರಿದವರು. ಏಕೆಂದರೆ, ಸತ್ತವರಿಗೂ ಬದುಕುವವರಿಗೂ ಪ್ರಭುವಾಗಬೇಕೆಂಬ ಉದ್ದೇಶದಿಂದಲೇ ಕ್ರಿಸ್ತಯೇಸು ಸತ್ತು ಜೀವಂತರಾದದ್ದು. ಹೀಗಿರುವಲ್ಲಿ ಸಸ್ಯಾಹಾರಿಯೇ, ನೀನು ನಿನ್ನ ಸಹೋದರನನ್ನು ದೋಷಿಯೆಂದು ತೀರ್ಪಿಡುವುದೇಕೆ? ಮಾಂಸಾಹಾರಿಯೇ, ನಿನ್ನ ಸಹೋದರನನ್ನು ಹೀನೈಸುವುದೇಕೆ? ನಾವೆಲ್ಲರೂ ದೇವರ ನ್ಯಾಯಸ್ಥಾನದ ಮುಂದೆ ನಿಲ್ಲಬೇಕಲ್ಲವೆ? ಪವಿತ್ರ ಗ್ರಂಥದಲ್ಲಿ: “ಎಲ್ಲರೂ ನನಗೆ ಸಾಷ್ಟಾಂಗವೆರಗುವರು ಎಲ್ಲರೂ ನನ್ನನ್ನು ದೇವರೆಂದು ನಿವೇದಿಸುವರು ಇದಕ್ಕೆ ಜೀವಸ್ವರೂಪನಾದ ನಾನೇ ಸಾಕ್ಷಿ,” ಎಂದು ಸರ್ವೇಶ್ವರ ಸ್ವಾಮಿ ಹೇಳಿದ್ದಾರೆ.ನಮ್ಮಲ್ಲಿ ಪ್ರತಿಯೊಬ್ಬನೂ ತನ್ನ ತನ್ನ ವಿಷಯವಾಗಿ ದೇವರಿಗೆ ಲೆಕ್ಕವನ್ನು ಒಪ್ಪಿಸಬೇಕು.

ಕೀರ್ತನೆ - 27: 1, 4, 13-14
1 : ನನಗೆ ಬೆಳಕು, ನನಗೆ ರಕ್ಷೆ, ಪ್ರಭುವೆ / ನಾನಾರಿಗೂ ಅಳುಕೆನು // ನನ್ನ ಬಾಳಿಗಾಧಾರ ಪ್ರಭುವೆ / ನಾನಾರಿಗೂ ಅಂಜೆನು // 
2 : ಕೇಡು ಮಾಡಬಂದರೆನಗೆ ಕೊಲೆಗಡುಕರು / ಎಡವಿಬಿದ್ದರು, ತಾವೇ ಅಳಿದುಹೋದರು // 
3 : ಸೇನೆ ಸಮೇತ ಶತ್ರು ಬಂದರೂ ಎದೆಗುಂದೆನು / ಸಮರಕ್ಕೆರಗಿದರೂ ನಾ ಭರವಸೆಯಿಂದಿರುವೆನು // 
4 : ನಾನೊಂದನು ಕೋರಿದೆ ಪ್ರಭುವಿನಿಂದ / ನಾನದನ್ನೇ ನಿರೀಕ್ಷಿಸಿದೆ ಆತನಿಂದ : / ವಾಸಿಸಬೇಕು ಜೀವಮಾನವೆಲ್ಲ ನಾನಾತನ ಮಂದಿರದಲಿ / ನಾ ತಲ್ಲೀನನಾಗಬೇಕು ಅಲ್ಲಾತನ- ಪ್ರಸನ್ನತೆಯಲಿ // 
5 : ಕೇಡುಕಾಲದಲ್ಲಿ ಅವಿತಿಸಿಡುವನು ನನ್ನನ್ನು ತನ್ನ ಗುಡಾರದಲಿ / ಇರಿಸುವನು ಮರೆಯಾಗಿ ಗರ್ಭಗುಡಿಯಲಿ, ಸುರಕ್ಷಿತ ಶಿಖರದಲಿ // 
6 : ಸುತ್ತಲು ನೆರೆದಿಹ ಶತ್ರುಗಳ ನಡುವೆ ತಲೆಯೆತ್ತಿ ನಡೆವೆನು / ದೇವಾಲಯದೊಳು ಜಯಜಯ ಘೋಷ ದೊಡನೆ ಬಲಿಗಳನರ್ಪಿಸುವೆನು / ಪ್ರಭುವಿಗೆ ಹಾಡುವೆನು, ವಾದ್ಯ ನುಡಿಸುತ ಕೊಂಡಾಡುವೆನು // 
7 : ಪ್ರಭೂ, ನಿನಗೆ ಮೊರೆಯಿಡುವೆನು / ಕರುಣಿಸೆನಗೆ ಸದುತ್ತರವನು // 
8 : “ಅರಸೆನ್ನ ಮುಖದರುಶನವನು”, ಎಂದೆ ನೀನು / “ಅರಸುವೆನು ಅದನೆ”, ಎಂದು ಮರುನುಡಿದೆ ನಾನು // 
9 : ವಿಮುಖನಾಗಬೇಡ ಪ್ರಭು, ಕೋಪದಿಂದೆನ್ನ ತಳ್ಳಬೇಡಯ್ಯಾ / ರಕ್ಷಕದೇವಾ, ಎನಗೆ ಸಹಾಯಕಾ, ದಾಸನ ಕೈಬಿಡಬೇಡಯ್ಯಾ // 
10 : ಹೆತ್ತವರು ತೊರೆದುಬಿಟ್ಟರೇನು / ಕರ್ತನು ಪೊರೆಯದಿರನು ನನ್ನನು // 
11 : ಬೋಧಿಸೆನಗೆ ಪ್ರಭು, ನಿನ್ನ ಮಾರ್ಗವನು / ಶತ್ರುರಹಿತ ಹಾದಿಯಲಿ ನಡೆಸು ಎನ್ನನು // 
12 : ತಳ್ಳಬೇಡೆನ್ನನು ವೈರಿಗಳ ವಶಕ್ಕೆ / ಸುಳ್ಳುಸಾಕ್ಷಿಗಳು, ಕ್ರೂರಿಗಳವರೆನಗೆ // 
13 : ಪ್ರಭುವಿನೊಳಿತನು ನಾ ಕಾಣುವೆ ಜೀವಲೋಕದೊಳು / ನಾನಿಟ್ಟಿರುವೆ ನಂಬಿಕೆ ನಿರೀಕ್ಷೆ ಅದರೊಳು // 
14 : ಪ್ರಭುವನು ಎದುರುನೋಡುತ್ತಿರು ಮನವೇ / ಧೈರ್ಯದಿಂದ ನಿರೀಕ್ಷಿಸುತ್ತಿರು ಎದೆಗುಂದದೆ //

ಶುಭಸಂದೇಶ - ಲೂಕ 15: 1-1೦
ಯೇಸುಸ್ವಾಮಿಯ ಉಪದೇಶವನ್ನು ಕೇಳಲು ಎಲ್ಲಾ ಸುಂಕದವರೂ ಪಾಪಿಗಳೂ ಬರುತ್ತಿದ್ದರು. ಇದನ್ನು ಕಂಡ ಫರಿಸಾಯರು ಮತ್ತು ಧರ್ಮಶಾಸ್ತ್ರಿಗಳು, “ಈ ಮನುಷ್ಯ ಪಾಪಿಗಳನ್ನು ಬರಮಾಡಿಕೊಳ್ಳುತ್ತಾನೆ; ಅವರೊಡನೆ ಊಟಮಾಡುತ್ತಾನೆ,” ಎಂದು ಗೊಣಗಿದರು. ಆ ಸಂದರ್ಭದಲ್ಲಿ ಯೇಸು ಈ ಸಾಮತಿಯನ್ನು ಹೇಳಿದರು: “ನಿಮ್ಮಲ್ಲಿ ಯಾರ ಬಳಿಯಾದರೂ ನೂರು ಕುರಿಗಳು ಇವೆ ಎನ್ನೋಣ. ಅವುಗಳಲ್ಲಿ ಒಂದು ಕುರಿ ಕಾಣದೆ ಹೋದಾಗ ಅವನೇನು ಮಾಡುತ್ತಾನೆ? ಇರುವ ತೊಂಭತ್ತೊಂಭತ್ತು ಕುರಿಗಳನ್ನು ಹುಲ್ಲುಗಾವಲಿನಲ್ಲೇ ಬಿಟ್ಟು ಕಾಣದೆ ಹೋದ ಆ ಒಂದು ಕುರಿ ಸಿಕ್ಕುವ ತನಕ ಹುಡುಕಿಕೊಂಡು ಹೋಗುತ್ತಾನಲ್ಲವೆ? ಅದು ಸಿಕ್ಕಿದಾಗ ಸಿಕ್ಕಿತೆಂಬ ಸಂತೋಷದಿಂದ ಅದನ್ನು ಹೆಗಲ ಮೇಲೆ ಎತ್ತಿಕೊಂಡು ಮನೆಗೆ ಬರುತ್ತಾನೆ; ಸ್ನೇಹಿತರನ್ನೂ ನೆರೆಯವರನ್ನೂ ಒಟ್ಟಿಗೆ ಕರೆಯುತ್ತಾನೆ. ‘ಕಳೆದು ಹೋಗಿದ್ದ ಕುರಿ ಸಿಕ್ಕಿತು; ನನ್ನೊಡನೆ ಸೇರಿ ಸಂತೋಷಪಡಿ,’ ಎನ್ನುತ್ತಾನೆ, ಅಲ್ಲವೆ? “ಅದೇ ರೀತಿಯಲ್ಲಿ, ಪಶ್ಚಾತ್ತಾಪದ ಅವಶ್ಯಕತೆಯಿಲ್ಲದ ತೊಂಭತ್ತೊಂಭತ್ತು ಸತ್ಪುರುಷರ ವಿಷಯವಾಗಿ ಸ್ವರ್ಗದಲ್ಲಿ ಉಂಟಾಗುವ ಸಂತೋಷಕ್ಕಿಂತ, ಪಶ್ಚಾತ್ತಾಪಪಟ್ಟು ಪಾಪಕ್ಕೆ ವಿಮುಖನಾಗಿ ದೇವರಿಗೆ ಅಭಿಮುಖನಾಗುವ ಒಬ್ಬ ಪಾಪಿಯ ವಿಷಯವಾಗಿ ಹೆಚ್ಚು ಸಂತೋಷ ಉಂಟಾಗುತ್ತದೆ ಎಂಬುದರಲ್ಲಿ ಸಂದೇಹವಿಲ್ಲ. “ಅಂತೆಯೇ, ಮನೆಯಾಕೆಯೊಬ್ಬಳು ತನ್ನ ಬಳಿಯಿದ್ದ ಹತ್ತು ನಾಣ್ಯಗಳಲ್ಲಿ ಒಂದನ್ನು ಕಳೆದುಕೊಂಡಳು ಎನ್ನೋಣ. ಆಗ ಅವಳೇನು ಮಾಡುತ್ತಾಳೆ? ದೀಪ ಹಚ್ಚಿ ಮನೆಯನ್ನು ಗುಡಿಸಿ, ಕಳೆದು ಹೋದ ನಾಣ್ಯ ಸಿಕ್ಕುವವರೆಗೂ ಚೆನ್ನಾಗಿ ಹುಡುಕಾಡುತ್ತಾಳೆ, ಅಲ್ಲವೇ? ಅದು ಸಿಕ್ಕಿದಾಗ ತನ್ನ ಗೆಳತಿಯರನ್ನೂ ನೆರೆಯವರನ್ನೂ ಒಟ್ಟಿಗೆ ಕರೆದು, ‘ಕಳೆದುಹೋದ ನಾಣ್ಯ ಸಿಕ್ಕಿಬಿಟ್ಟಿತು. ನನ್ನೊಡನೆ ಸೇರಿ ಸಂತೋಷಪಡಿ,’ ಎನ್ನುತ್ತಾಳಲ್ಲವೆ? “ಅದೇ ಮೇರೆಗೆ ಪಶ್ಚಾತ್ತಾಪಪಟ್ಟು ದೇವರಿಗೆ ಅಭಿಮುಖನಾಗುವ ಒಬ್ಬ ಪಾಪಿಯ ವಿಷಯವಾಗಿ ದೇವದೂತರಿಗೆ ಸಂತೋಷ ಉಂಟಾಗುತ್ತದೆಂಬುದು ನಿಶ್ಚಯ,” ಎಂದರು.
ಚಿಂತನೆ
ಯೆಹೂದ್ಯ ಮುಖಂಡರು ಕಟ್ಟುನಿಟ್ಟಾಗಿ ಧಾರ್ಮಿಕ ಆಚರಣೆಗಳನ್ನು ಪಾಲಿಸುತ್ತಿದ್ದರು. ಯೆಹೂದ್ಯ ಧಾರ್ಮಿಕ ಮುಖಂಡರು ದೇವಾಲಯಕ್ಕೆ ಸನಿಹವಾಗಿದ್ದರೂ ಅವರ ಹೃದಯಗಳು ಮಾತ್ರ ದೇವರಿಂದ ಬಹುದೂರವಿದ್ದವು. ಯೆಹೂದ್ಯರು, ಧಾರ್ಮಿಕ ಆಚರಣೆಗಳನ್ನು ಪಾಲಿಸದವರನ್ನು ಪಾಪಿಗಳು ಎಂದು ಪರಿಗಣಿಸಿ ಅವರನ್ನು ಬಹಿಷ್ಕೃತರಂತೆ ನೋಡುತ್ತಿದ್ದರು. ಅವರೊಂದಿಗೆ ಸಂಪರ್ಕ ಕಡಿದುಕೊಳ್ಳುತ್ತಿದ್ದರು. ಆದರೆ ಯೇಸು ಅವರೊಂದಿಗೆ ಆತ್ಮೀಯ ಒಡನಾಟ ಹೊಂದಿದ್ದರು, ಅರ್ಥಹೀನ ಆಚರಣೆಗಳಿಗಿಂತ ಕ್ಷಮೆ, ಕರುಣೆ, ಪ್ರೀತಿ ಮುಖ್ಯ ಎಂದು ತಿಳಿಸಿದರು.

ನಾವು ಪರರ ಮೇಲೆ ಕರುಣೆತೋರದ ಹೊರತು ನಾವು ದೇವರ ಕೃಪೆಗೆ, ಕರುಣೆಗೆ ಒಳಗಾಗಲಾರೆವು. ಇನ್ನೊಬ್ಬರನ್ನು ಬೊಟ್ಟು ಮಾಡಿ ತೋರಿಸಿ `ಆತ ಪಾಪಿ, ಕೆಳವರ್ಗದವನು, ಅನ್ಯಧರ್ಮೀಯ ಆತ ನರಕಕ್ಕೆ ಮೀಸಲು' ಎಂದು ಘೋಷಿಸಿ ಪರೋಕ್ಷವಾಗಿ ತಾನು ಸ್ವರ್ಗಕ್ಕೆ ಹೋಗುತ್ತೇನೆ ಅಂದುಕೊಂಡಿದ್ದ ಯೆಹೂದ್ಯ ಧಾರ್ಮಿಕ ಮುಖಂಡರಿಗೆ ಕ್ರಿಸ್ತ ಕರುಣೆಯ ಸಾಮತಿಯ ಮೂಲಕ ಪಾಠ ಕಲಿಸುತ್ತಿದ್ದಾರೆ.

ಸಾಧಾರಣ ಕಾಲದ ಮೂವತ್ತೊಂದನೇ ವಾರ ಬುಧವಾರ

6/ಹಸಿರು/ಬುಧ
1ನೇ ವಾಚನ - ರೋಮ 13: 8-1೦
ಕೀರ್ತನೆ - 112: 1-2, 4-5, 9
ಶುಭಸಂದೇಶ - ಲೂಕ 14:  25-33


1ನೇ ವಾಚನ - ರೋಮ 13: 8-1೦
ಒಬ್ಬರನ್ನೊಬ್ಬರು ಪ್ರೀತಿಸಬೇಕೆಂಬ ಋಣವೇ ಹೊರತು ಬೇರೆ ಯಾವ ವಿಧವಾದ ಋಣವೂ ನಿಮಗಿರಬಾರದು. ಏಕೆಂದರೆ ಪರರನ್ನು ಪ್ರೀತಿಸುವವನು ಧರ್ಮಶಾಸ್ತ್ರವನ್ನು ಪೂರ್ಣವಾಗಿ ನೆರವೇರಿಸಿದವನು. “ವ್ಯಭಿಚಾರ ಮಾಡಬೇಡ, ಕೊಲಬೇಡ, ಕಳಬೇಡ, ದುರಾಶೆ ಪಡಬೇಡ,” - ಈ ಮುಂತಾದ ಆಜ್ಞೆಗಳೆಲ್ಲವೂ “ನೀನು ನಿನ್ನನ್ನೇ ಪ್ರೀತಿಸಿಕೊಳ್ಳುವಂತೆ ನಿನ್ನ ನೆರೆಯವರನ್ನೂ ಪ್ರೀತಿಸು,” ಎಂಬ ಒಂದೇ ಆಜ್ಞೆಯಲ್ಲಿ ಅಡಗಿವೆ. ಪ್ರೀತಿಯು ಪರರಿಗೆ ಕೇಡು ಬಗೆಯದು. ಆದಕಾರಣ ಪ್ರೀತಿಯೇ ಧರ್ಮಶಾಸ್ತ್ರದ ಪೂರೈಕೆ.

ಕೀರ್ತನೆ - 112: 1-2, 4-5, 9
1 : ಅಲ್ಲೆಲೂಯ / ಪ್ರಭುವಿನಲಿ ಭಯಭಕ್ತಿ ಉಳ್ಳವನು ಧನ್ಯನು / ಆತನಾಜ್ಞೆಗಳಲಿ ಹಿಗ್ಗುವವನು ಭಾಗ್ಯನು // 
2 : ಬಲಿಷ್ಠವಾಗುವುದು ಜಗದೊಳು ಅವನ ಸಂತಾನ / ಸಜ್ಜನರ ಸಂತತಿ ಪಡೆವುದು ಆಶೀರ್ವಚನ // 
4 : ಸಜ್ಜನನಿಗೆ ಮೂಡುವುದು ಜ್ಯೋತಿ ಕತ್ತಲೊಳು / ನ್ಯಾಯಪ್ರಿಯನು ಆತ, ದಯಾವಂತ, ಕೃಪಾಳು // 
5 : ದಯೆತೋರಿ ಧನಸಹಾಯ ಮಾಡುವವನು ಭಾಗ್ಯವಂತ / ನ್ಯಾಯದಿಂದ ವ್ಯವಹರಿಸುವಂಥಾ ಮನುಜನು ಭಾಗ್ಯವಂತ // 
9 : ಉದಾರತೆಯಿಂದ ಕೊಡುವನು ಬಡವರಿಗೆ / ಫಲಿಸುವುದು ಅವನಾ ನೀತಿ ಸದಾಕಾಲಕೆ / ಮಹಿಮೆತರುವ ಕೋಡುಮೂಡುವುದು ಅವನಿಗೆ //

ಶುಭಸಂದೇಶ - ಲೂಕ 14:  25-33
ಜನರು ಗುಂಪುಗುಂಪಾಗಿ ಯೇಸುಸ್ವಾಮಿಯ ಸಂಗಡ ಹೋಗುತ್ತಿದ್ದರು. ಆಗ ಯೇಸು ಅವರ ಕಡೆಗೆ ತಿರುಗಿ ಹೀಗೆಂದರು: “ನನ್ನಲ್ಲಿಗೆ ಬರುವ ಯಾರೊಬ್ಬನೂ ತನ್ನ ತಂದೆ-ತಾಯಿ, ಹೆಂಡತಿ-ಮಕ್ಕಳು, ಸೋದರ-ಸೋದರಿಯರನ್ನು ಮಾತ್ರವಲ್ಲ, ತನ್ನ ಪ್ರಾಣವನ್ನು ಕೂಡ ತ್ಯಜಿಸದ ಹೊರತು, ನನ್ನ ಶಿಷ್ಯನಾಗಲಾರನು. ತನ್ನ ಶಿಲುಬೆಯನ್ನು ಹೊತ್ತು ನನ್ನ ಹಿಂದೆ ಬರದವನು ನನ್ನ ಶಿಷ್ಯನಾಗಲಾರನು. ನಿಮ್ಮಲ್ಲಿ ಒಬ್ಬನು ಒಂದು ಗೋಪುರವನ್ನು ಕಟ್ಟಲು ಇಚ್ಛಿಸಿದರೆ, ಕೆಲಸವನ್ನು ಮುಗಿಸಲು ತನ್ನಿಂದ ಸಾಧ್ಯವೇ ಎಂದು ನೋಡಲು, ಮೊದಲು ಕುಳಿತು, ಬೇಕಾಗುವ ಖರ್ಚು ವೆಚ್ಚವನ್ನು ಲೆಕ್ಕ ಹಾಕುವುದಿಲ್ಲವೇ? ಇಲ್ಲದೆ ಹೋದರೆ, ಇವನು ಅಸ್ತಿವಾರ ಹಾಕಿದ ಮೇಲೆ ಕೆಲಸ ಪೂರೈಸದೆ ಇರುವುದನ್ನು ಕಂಡು, ‘ಕಟ್ಟಲಾರಂಭಿಸಿದ; ಮುಗಿಸಲು ಇವನಿಂದಾಗಲಿಲ್ಲ!’ ಎಂದು ನೋಡುವವರೆಲ್ಲರೂ ಅವನನ್ನು ಪರಿಹಾಸ್ಯಮಾಡುವರು. ಹಾಗೆಯೇ, ಅರಸನೊಬ್ಬನು ಇನ್ನೊಬ್ಬ ಅರಸನ ವಿರುದ್ಧ ಯುದ್ಧಕ್ಕೆ ಹೋಗುವುದಕ್ಕೆ ಮುಂಚೆ ಇಪ್ಪತ್ತು ಸಾವಿರ ಸೈನ್ಯದೊಡನೆ ಬರುವ ಶತ್ರುವನ್ನು ತನ್ನ ಹತ್ತು ಸಾವಿರ ಸೈನ್ಯದಿಂದ ಎದುರಿಸಲು ಸಾಧ್ಯವೇ ಎಂದು ಮೊದಲು ಕುಳಿತು ಆಲೋಚನೆ ಮಾಡುವುದಿಲ್ಲವೇ? ಸಾಧ್ಯವಿಲ್ಲದಿದ್ದರೆ, ಶತ್ರುರಾಜನು ದೂರದಲ್ಲಿರುವಾಗಲೇ ದೂತರನ್ನು ಕಳುಹಿಸಿ, ಸಂಧಾನಕ್ಕೆ ಷರತ್ತುಗಳೇನೆಂದು ವಿಚಾರಿಸುತ್ತಾನೆ. ಅದೇ ಮೇರೆಗೆ, ನಿಮ್ಮಲ್ಲಿ ಯಾವನು ತನಗಿರುವುದನ್ನೆಲ್ಲಾ ಪರಿತ್ಯಾಗ ಮಾಡುವುದಿಲ್ಲವೋ ಅವನು ನನ್ನ ಶಿಷ್ಯನಾಗಲಾರ.
ಚಿಂತನೆ
ತಮ್ಮ ಶಿಷ್ಯರಾಗಲು ಬಯಸುವವರು ಶಿಲುಬೆಯ ಮಾರ್ಗದಲ್ಲಿ ನಡೆಯಬೇಕೆಂದು ಯೇಸು ಕರೆ ನೀಡುತ್ತಿದ್ದಾರೆ. ಯೇಸು ತನ್ನ ಹಿಂಬಾಲಕರಿಗೆ ಎಲ್ಲೂ ಹೂವಿನ ಹಾಸಿಗೆಯನ್ನಷ್ಟೇ ಹಾಸಲಿಲ್ಲ. ಅದರೊಂದಿಗೆ ಮುಳ್ಳಿನ ಶಿಲುಬೆಯನ್ನು ಕೊಟ್ಟರು. ಸಾಮಾನ್ಯವಾಗಿ ನಾವು ದೇವರಿಂದ ಬಯಸುವುದು ವರಪ್ರಸಾದಗಳನ್ನಷ್ಟೇ ಹೊರತು, ಕಷ್ಟದ ಶಿಲುಬೆಗಳನ್ನಲ್ಲ. 

ಶ್ರಮಕ್ಕೆ, ಕಷ್ಟಗಳಿಗೆ ನಾವು ಹೆದರುತ್ತೇವೆ. ಸುಲಭವಾದ ಮಾರ್ಗಗಳಿಗಾಗಿ ಹುಡುಕಾಡುತ್ತೇವೆ. ಎಲ್ಲವೂ ನಮಗೆ ಸುಲಭವಾಗಿ ಸಿಗಬೇಕು. ಆದರೆ ಬೆವರು ಸುರಿಸಲು ಸಿದ್ಧರಿಲ್ಲ. ಸುಲಭವಾಗಿ ಹಣ ಬರಬೇಕು, ಸುಲಭವಾಗಿ ಸುಖಸಿಗಬೇಕು. ನಾವು ಮಾತ್ರ ಹುಲ್ಲು ಕಡ್ಡಿಯನ್ನು ಅಲುಗಾಡಿಸಬಾರದು. ಇಂತಹ ಬದುಕು ನಮ್ಮದಾದರೆ ಖಂಡಿತವಾಗಿ ನಾವು ಯೇಸುವಿನ ಅನುಯಾಯಿಗಳಾಗಲು ಸಾಧ್ಯವಿಲ್ಲ, ಯೇಸು ನುಡಿದಂತೆ ನಮ್ಮನ್ನೇ ನಾವು ಪರಿತ್ಯಜಿಸಿ, ನಮ್ಮ ಶಿಲುಬೆಯನ್ನು ಹೊತ್ತುಕೊಂಡು ಕ್ರಿಸ್ತನನ್ನು ಹಿಂಬಾಲಿಸಿದಾಗ ಮಾತ್ರ ಆತನ ಅನುಯಾಯಿಗಳಾಗುತ್ತೇವೆ.

ಸಾಧಾರಣ ಕಾಲದ ಮೂವತ್ತೊಂದನೇ ವಾರ ಮಂಗಳವಾರ

5/ಹಸಿರು/ಮಂಗಳ 
1ನೇ ವಾಚನ - ರೋಮ 12: 5-16 
ಕೀರ್ತನೆ - 131: 1, 2, 3 
ಶುಭಸಂದೇಶ - ಲೂಕ 14: 15-24


1ನೇ ವಾಚನ - ರೋಮ 12: 5-16
ಅಂತೆಯೇ, ನಾವು ಅನೇಕ ಮಂದಿ ಇದ್ದರೂ ಕ್ರಿಸ್ತಯೇಸುವಿನಲ್ಲಿ ನಾವೆಲ್ಲರೂ ಒಂದೇ ದೇಹವಾಗಿದ್ದೇವೆ. ಒಬ್ಬರಿಗೊಬ್ಬರು ದೇಹದ ವಿವಿಧ ಅಂಗಗಳಂತೆ ಹೊಂದಿಕೊಂಡಿದ್ದೇವೆ. ದೇವರು ಅನುಗ್ರಹಿಸಿರುವ ಪ್ರಕಾರ ನಾವು ಬೇರೆ ಬೇರೆ ವರಗಳನ್ನು ಹೊಂದಿದ್ದೇವೆ. ನಾವು ಹೊಂದಿರುವ ವರವು ಪ್ರವಾದನೆಯ ವರವಾಗಿದ್ದರೆ ನಮ್ಮ ವಿಶ್ವಾಸಕ್ಕೆ ಅನುಗುಣವಾಗಿ ಅದನ್ನು ಉಪಯೋಗಿಸಬೇಕು. ಸೇವಕನು ಸೇವೆಯಲ್ಲಿಯೂ ಬೋಧಕನು ಬೋಧಿಸುವುದರಲ್ಲಿಯೂ ಉಪದೇಶಕನು ಉಪದೇಶಿಸುವುದರಲ್ಲಿಯೂ ನಿರತನಾಗಿರಲಿ. ದಾನಮಾಡುವವನು ಧಾರಾಳವಾಗಿ ದಾನ ಮಾಡಲಿ. ಅಧಿಕಾರ ನಡೆಸುವವನು ನಿಷ್ಠೆಯಿಂದ ನಡೆಸಲಿ. ಕರುಣಾಪೂರಿತ ಕಾರ್ಯಗಳನ್ನು ಕೈಗೊಳ್ಳುವವನು ಹರ್ಷಚಿತ್ತನಾಗಿರಲಿ. ನಿಮ್ಮ ಪ್ರೀತಿ ನಿಷ್ಕಪಟವಾಗಿರಲಿ. ಕೆಟ್ಟದ್ದನ್ನು ದ್ವೇಷಿಸಿರಿ. ಒಳ್ಳೆಯದನ್ನು ಕೈಬಿಡದಿರಿ. ಸಹೋದರ ಭಾವನೆಯಿಂದ ಒಬ್ಬರನ್ನೊಬ್ಬರು ಹೃತ್ಪೂರ್ವಕವಾಗಿ ಪ್ರೀತಿಸಿರಿ. ಗೌರವ ತೋರಿಸುವುದರಲ್ಲಿ ಒಬ್ಬರಿಗಿಂತ ಒಬ್ಬರು ಮುಂದಾಗಿರಿ. ಪ್ರಭುವಿನ ಸೇವೆಯಲ್ಲಿ ಆಲಸಿಗಳಾಗದೆ ಅತ್ಯಾಸಕ್ತರಾಗಿರಿ. ನಂಬಿಕೆ ನಿರೀಕ್ಷೆಯನ್ನು ಹೊಂದಿರುವ ನೀವು ಉಲ್ಲಾಸದಿಂದಿರಿ. ಸಂಕಟ ಬಂದಾಗ ಸಹನೆಯಿಂದಿರಿ. ಬೇಸರಗೊಳ್ಳದೆ ಪ್ರಾರ್ಥನೆ ಮಾಡಿರಿ. ಕೊರತೆಯಲ್ಲಿರುವ ದೇವಜನರಿಗೆ ನೆರವು ನೀಡಿರಿ. ಅತಿಥಿ ಸತ್ಕಾರದಲ್ಲಿ ತತ್ಪರರಾಗಿರಿ. ನಿಮ್ಮನ್ನು ಹಿಂಸಿಸುವವರನ್ನು ಆಶೀರ್ವದಿಸಿರಿ. ಹೌದು, ಶಪಿಸದೆ ಆಶೀರ್ವದಿಸಿರಿ. ಸಂತೋಷಪಡುವವರೊಂದಿಗೆ ಸಂತೋಷಪಡಿರಿ; ದುಃಖಿಸುವವರೊಡನೆ ದುಃಖಿಸಿರಿ. ನಿಮ್ಮ ನಿಮ್ಮಲ್ಲಿ ಸಾಮರಸ್ಯವಿರಲಿ. ದೊಡ್ಡಸ್ತಿಕೆಯಿಂದ ವರ್ತಿಸಬೇಡಿ. ದೀನದಲಿತರೊಡನೆ ಗೆಳೆತನ ಬೆಳೆಸಿರಿ. ನೀವೇ ಜಾಣರೆಂದು ಭಾವಿಸದಿರಿ.

ಕೀರ್ತನೆ - 131: 1, 2, 3 
1 : ಹಮ್ಮಿಲ್ಲ ಪ್ರಭು, ನನ್ನೆದೆಯೊಳು / ನನಗಿಲ್ಲ ಸೊಕ್ಕಿನ ಕಣ್ಣುಗಳು // ಶಕ್ತಿವಿೂರಿದ ಕಾರ್ಯಕೆ ನಾ ಕೈ ಹಾಕಿಲ್ಲ / ಅಸಾಧ್ಯವಾದುದನು ನಾ ಕೈಗೊಂಡಿಲ್ಲ
2 : ಎಂದೇ ನನ್ನಾತ್ಮ ಸಮಾಧಾನದಿಂದಿದೆ / ಮೌನದಿಂದಿದೆ ತಾಯ್ಮಡಿಲಾ ಕೂಸಂತೆ / ನೆಮ್ಮದಿಯಿಂದಿದೆ ತಾಯ್ಮಡಿಲಾ ಶಿಶುವಂತೆ
3 : ಇಸ್ರಯೇಲೆ, ಪ್ರಭುವಿನಲಿ ನಂಬಿಕೆಯಿಂದಿರು / ಇಂದಿಗೂ ಎಂದೆಂದಿಗೂ ಭರವಸೆಯಿಂದಿರು // ಸನಾತನ ರಾಜವೈಭವದ ಪುನಃಸ್ಥಾಪನೆ

ಶುಭಸಂದೇಶ - ಲೂಕ 14: 15-24
ಊಟಕ್ಕೆ ಕುಳಿತಿದ್ದವರಲ್ಲಿ ಒಬ್ಬನು ಯೇಸುಸ್ವಾಮಿ ಹೇಳಿದ್ದನ್ನು ಕೇಳಿ, “ದೇವರ ಸಾಮ್ರಾಜ್ಯದ ಔತಣದಲ್ಲಿ ಭಾಗಿಯಾಗುವವನು ಎಷ್ಟೋ ಧನ್ಯನು!” ಎಂದನು. ಯೇಸು ಅವನಿಗೆ ಈ ಸಾಮತಿ ಹೇಳಿದರು: “ಒಬ್ಬಾತ ಒಂದು ದೊಡ್ಡ ಔತಣವನ್ನೇರ್ಪಡಿಸಿ ಅನೇಕ ಜನರಿಗೆ ಆಹ್ವಾನವಿತ್ತ. ಊಟಕ್ಕೆ ವೇಳೆಯಾದಾಗ, ‘ಈಗ ಎಲ್ಲಾ ಸಿದ್ಧವಾಗಿದೆ ಬನ್ನಿ,’ ಎಂದು ಹೇಳಿ ಆಹ್ವಾನಿತರನ್ನು ಕರೆದುತರಲು ಸೇವಕನನ್ನು ಕಳಿಸಿದ. ಆದರೆ ಆಹ್ವಾನಿತರೆಲ್ಲರೂ ಒಬ್ಬರಾದ ಮೇಲೊಬ್ಬರು ‘ಕ್ಷಮಿಸಬೇಕು,’ ಎಂದು ಹೇಳಲಾರಂಭಿಸಿದರು. ಒಬ್ಬ, ‘ಕ್ಷಮಿಸಬೇಕು, ಒಂದು ಹೊಲ ಕೊಂಡು ಕೊಂಡಿದ್ದೇನೆ, ಅಲ್ಲಿಗೆ ಹೋಗಿ ನೋಡಬೇಕಾಗಿದೆ,’ ಎಂದ. ಇನ್ನೊಬ್ಬ, ‘ಐದು ಜೊತೆ ಎತ್ತುಗಳನ್ನು ಕೊಂಡುಕೊಂಡಿದ್ದೇನೆ, ಅವುಗಳನ್ನು ಪರೀಕ್ಷಿಸಲು ಹೋಗುತ್ತಿದ್ದೇನೆ. ನನ್ನನ್ನು ಕ್ಷಮಿಸಬೇಕು,’ ಎಂದ. ಮತ್ತೊಬ್ಬ, ‘ನನಗೆ ಈಗ ತಾನೆ ಮದುವೆ ಆಗಿದೆ, ಬರುವುದಕ್ಕಾಗುವುದಿಲ್ಲ,’ ಎಂದನು. “ಆ ಸೇವಕನು ಬಂದು ಯಜಮಾನನಿಗೆ ಹಾಗೆಯೇ ವರದಿ ಮಾಡಿದ. ಇದನ್ನು ಕೇಳಿ ಯಜಮಾನನಿಗೆ ರೋಷಬಂದಿತು. ಅವನು ಸೇವಕನಿಗೆ, ‘ಪಟ್ಟಣದ ಹಾದಿಬೀದಿಗಳಿಗೂ ಸಂದುಗೊಂದುಗಳಿಗೂ ಹೋಗಿ ದರಿದ್ರರು, ಅಂಗವಿಕಲರು, ಕುಂಟರು, ಕುರುಡರು ಇಂಥವರನ್ನು ಕರೆದುಕೊಂಡು ಬಾ,’ ಎಂದು ಆಜ್ಞೆಮಾಡಿದ. ಸೇವಕನು ಬಂದು, ‘ಸ್ವಾವಿೂ, ನಿಮ್ಮ ಆಜ್ಞೆಯಂತೆ ಮಾಡಿದ್ದಾಯಿತು; ಆದರೆ ಇನ್ನೂ ಸ್ಥಳವಿದೆ,’ ಎಂದು ಹೇಳಿದ. ಅದಕ್ಕೆ ಯಜಮಾನ ‘ಹಾಗಾದರೆ ಹಳ್ಳಿಹಾದಿಗಳಿಗೂ ಎಲ್ಲೆ ಬೇಲಿಗಳವರೆಗೂ ಹೋಗಿ ಕಂಡಕಂಡವರನ್ನು ಒತ್ತಾಯ ಮಾಡಿ ಕರೆದುಕೊಂಡು ಬಾ. ನನ್ನ ಮನೆ ತುಂಬಿಹೋಗಲಿ. ಆದರೆ ಮೊದಲು ಆಹ್ವಾನಿತರಾದವರಲ್ಲಿ ಒಬ್ಬನೂ ನಾನು ಮಾಡಿಸಿದ ಅಡುಗೆಯ ರುಚಿ ನೋಡಬಾರದು!’ ಎಂದು ಸ್ಪಷ್ಟಪಡಿಸಿದ.”
ಚಿಂತನೆ
ಯೆಹೂದ್ಯರಲ್ಲಿ ನಾವು `ದೇವರ ಸ್ವಂತ ಜನರು, ದೇವರಿಂದ ಆಯ್ಕೆಯಾದವರು, ಅಬ್ರಹಾಮನ ವಂಶಸ್ಥರು, ಸ್ವರ್ಗ ಸಾಮ್ರಾಜ್ಯ ನಮ್ಮ ಆಸ್ತಿ' ಎಂಬ ಧೋರಣೆಯಿತ್ತು. ಯೇಸು ಇಂದಿನ ಶುಭಸಂದೇಶದಲ್ಲಿ ಯೆಹೂದ್ಯರಿಗೆ ಮತ್ತು ಜೆರುಸಲೇಮ್ ನಗರಕ್ಕೆ ಬರುವ ದುರ್ಗತಿಯನ್ನು ಪ್ರವಾದಿಸುತ್ತಾರೆ. 

ದೇವರು ತಮ್ಮ ಪುತ್ರ ಯೇಸುವಿನ ಮುಖಾಂತರ ಸರ್ವರಿಗೂ ಸ್ವರ್ಗ ಸಾಮ್ರಾಜ್ಯದ ಔತಣಕ್ಕೆ ಆಹ್ವಾನವನ್ನು ಕೊಟ್ಟರು. ಸ್ವರ್ಗ ಸಾಮ್ರಾಜ್ಯಕ್ಕೆ ದೇವರು ಕೊಡುವ ಆಮಂತ್ರಣ ಒಂದು ವರದಾನ. ದೇವರು ತಮ್ಮ ಸಾಮ್ರಾಜ್ಯವನ್ನು ಸೇರಲು ಜಾತಿ, ಮತ, ಬಣ್ಣ, ಭಾಷೆಯನ್ನು ನೋಡದೆ ಸರ್ವರಿಗೂ ಆಹ್ವಾನವಿತ್ತಿದ್ದಾರೆ. ಆಮಂತ್ರಣವನ್ನು ಸ್ವೀಕರಿಸುವ ಅಥವಾ ತಿರಸ್ಕರಿಸುವ ಸಂಪೂರ್ಣ ಸ್ವಾತಂತ್ರ್ಯವನ್ನು ಮಾನವರಿಗೆ ಬಿಟ್ಟಿದ್ದಾರೆ. ಆಮಂತ್ರಣವನ್ನು ಸ್ವೀಕರಿಸುವವರು ಆ ಸಾಮ್ರಾಜ್ಯದ ರೀತಿನೀತಿಗೆ ವಿಧೇಯರಾಗಿ ನಡೆದು ಕೊಂಡರೆ ಮಾತ್ರ ಆ ಸಾಮ್ರಾಜ್ಯಕ್ಕೆ ಪ್ರವೇಶ.

ಸಾಧಾರಣ ಕಾಲದ ಮೂವತ್ತನೇ ವಾರ ಶುಕ್ರವಾರ

1/ಬಿಳಿ/ಶುಕ್ರ/ಸಕಲ ಸಂತರ ಮಹೋತ್ಸವ, ಕರ್ನಾಟಕ ರಾಜ್ಯೋತ್ಸವ
1ನೇ ವಾಚನ - ಪ್ರಕಟಣೆ 7: 2-4, 9-14
ಕೀರ್ತನೆ - 24: 1-6
2ನೇ ವಾಚನ - 1 ಯೋವಾನ 3:1-3
ಶುಭಸಂದೇಶ - ಮತ್ತಾಯ 5: 1-12


1ನೇ ವಾಚನ - ಪ್ರಕಟಣೆ 7: 2-4, 9-14
ಆಗ ಪೂರ್ವದಿಕ್ಕಿನಿಂದ ಮತ್ತೊಬ್ಬ ದೇವದೂತನು ಏರಿಬಂದನು. ಅವನು ಜೀವಸ್ವರೂಪಿಯಾದ ದೇವರ ಮುದ್ರೆಯನ್ನು ಕೈಯಲ್ಲಿ ಹಿಡಿದಿದ್ದನು. ಅವನು ಭೂಮಿಗೂ ಸಮುದ್ರಕ್ಕೂ ಕೇಡನ್ನು ಮಾಡುವ ಅಧಿಕಾರವನ್ನು ಪಡೆದಿದ್ದ ನಾಲ್ಕು ಮಂದಿ ದೇವದೂತರಿಗೆ: “ನಮ್ಮ ದೇವರ ದಾಸರಿಗೆ ಹಣೆಯ ಮೇಲೆ ನಾವು ಮುದ್ರೆಯೊತ್ತುವ ತನಕ ಭೂಮಿಗಾಗಲಿ, ಸಮುದ್ರಕ್ಕಾಗಲಿ, ಇಲ್ಲವೇ ಮರಗಳಿಗಾಗಲಿ ಕೇಡನ್ನು ಮಾಡಬೇಡಿ,” ಎಂದು ಗಟ್ಟಿಯಾಗಿ ಕೂಗಿ ಹೇಳಿದನು. ಮುದ್ರೆಯೊತ್ತಿಸಿಕೊಂಡವರ ಸಂಖ್ಯೆ ನನಗೆ ಕೇಳಿಬಂತು. ಇಸ್ರಯೇಲರು ಪ್ರತಿಯೊಂದು ಕುಲದಲ್ಲಿ ಮುದ್ರೆಯೊತ್ತಿಸಿಕೊಂಡವರು ಒಂದು ಲಕ್ಷದ ನಲವತ್ತ ನಾಲ್ಕು ಸಾವಿರ ಮಂದಿ. ಇದಾದ ಬಳಿಕ ನಾನು ಇನ್ನೊಂದು ದಿವ್ಯದರ್ಶನವನ್ನು ಕಂಡೆ: ಯಾರಿಂದಲೂ ಎಣಿಸಲಾಗದಷ್ಟು ಒಂದು ದೊಡ್ಡ ಜನಸಮೂಹವು ನೆರೆದಿತ್ತು. ಅವರು ಎಲ್ಲಾ ದೇಶ, ಭಾಷೆ, ಕುಲ, ಗೋತ್ರಗಳಿಂದ ಬಂದವರಾಗಿದ್ದರು. ಶ್ವೇತಾಂಬರರಾಗಿ ಸಿಂಹಾಸನದ ಮತ್ತು ಯಜ್ಞದ ಕುರಿಮರಿಯಾದಾತನ ಸಾನ್ನಿಧ್ಯದಲ್ಲಿ ನಿಂತಿದ್ದರು. ಕೈಗಳಲ್ಲಿ ಖರ್ಜೂರದ ಗರಿಗಳನ್ನು ಹಿಡಿದಿದ್ದರು. ಅವರು ಗಟ್ಟಿಯಾದ ಧ್ವನಿಯಿಂದ: “ಸಿಂಹಾಸನಾರೂಢರಾದ ದೇವರಿಂದ, ಬಲಿಯರ್ಪಿತರಾದ ಯಜ್ಞದ ಕುರಿಮರಿಯಿಂದ ಲಭಿಸುತ್ತದೆಮಗೆ ಜೀವೋದ್ಧಾರ,” ಎಂದು ಹಾಡಿದರು. ಆಗ ಸಭಾಪ್ರಮುಖರ ಮತ್ತು ನಾಲ್ಕು ಜೀವಿಗಳ ಸಮೇತ ದೇವದೂತರೆಲ್ಲರೂ ಸಿಂಹಾಸನದ ಸುತ್ತಲೂ ನಿಂತಿದ್ದರು. ಅವರೆಲ್ಲರೂ ಸಿಂಹಾಸನದ ಮುಂದೆ ಸಾಷ್ಟಾಂಗ ನಮಸ್ಕಾರ ಮಾಡಿ, “ಆಮೆನ್, ಸ್ತುತಿಸ್ತೋತ್ರವೂ ಘನಮಾನವೂ ಜ್ಞಾನವೂ ಧನ್ಯವಾದವೂ ಶಕ್ತಿಯೂ ಪರಾಕ್ರಮವೂ ಸಲ್ಲಲಿ ಯುಗಯುಗಾಂತರಕ್ಕೂ ಆಮೆನ್,” ಎಂದು ಹಾಡುತ್ತಾ ದೇವರನ್ನು ಆರಾಧಿಸಿದರು. ಸಭಾಪ್ರಮುಖರಲ್ಲಿ ಒಬ್ಬನು, “ಶ್ವೇತಾಂಬರರಾದ ಇವರೆಲ್ಲರೂ ಯಾರು? ಎಲ್ಲಿಂದ ಬಂದರು?” ಎಂದು ನನ್ನನ್ನು ಪ್ರಶ್ನಿಸಿದನು. ಅದಕ್ಕೆ ನಾನು, “ಸ್ವಾವಿೂ ನೀವೇ ಬಲ್ಲಿರಿ”, ಎಂದು ಉತ್ತರಕೊಟ್ಟೆ. ಆಗ ಆತನು ನನಗೆ ಹೀಗೆಂದನು: “ಇವರು ಆ ಭೀಕರ ಹಿಂಸೆ ಬಾಧೆಯನ್ನು ಅನುಭವಿಸಿ ಬಂದವರು. ತಮ್ಮ ನಿಲುವಂಗಿಗಳನ್ನು ಯಜ್ಞದ ಕುರಿಮರಿಯ ರಕ್ತದಿಂದ ತೊಳೆದು ಬಿಳುಪಾಗಿಸಿಕೊಂಡಿದ್ದಾರೆ.

ಕೀರ್ತನೆ - 24:1-6
1 : ಪೊಡವಿಯೂ ಅದರಲ್ಲಿರುವುದೆಲ್ಲವೂ ಪ್ರಭುವಿನದೇ / ಜಗವೂ ಅದರ ಜೀವಜಂತುಗಳೆಲ್ಲವೂ ಆತನದೇ // 
2 : ಕಡಲನು ತಳಪಾಯವನಾಗಿಸಿದವನು ಆತನೆ / ಜಲರಾಶಿ ನಡುವೆ ಅದನು ಸ್ಥಿರಗೊಳಿಸಿದವನಾತನೆ // 
3 : ಪ್ರಭುವಿನ ಶಿಖರವನು ಏರಬಲ್ಲವನಾರು? / ಆ ನಿವಾಸದಲಿ ನಿಲ್ಲಲು ಯೋಗ್ಯನಾರು? // 
4 : ಅಂಥವನಿರಬೇಕು ಶುದ್ಧ ಹಸ್ತನು, ಸುಮನಸ್ಕನು / ಅನಾಚಾರಕೆ, ಅಪಮಾಣಿಕತೆಗೆ ಒಲಿಯನವನು // 
5 : ಲಭಿಸುವುದಾತನಿಗೆ ಶುಭ ಪ್ರಭುವಿನಿಂದ / ನೀತಿಯ ಸತ್ಫಲ ರಕ್ಷಕ ದೇವನಿಂದ // 
6 : ಇಂಥವರೆ ದೇವರ ದರ್ಶನಾಭ್ಯರ್ಥಿಗಳು / ಇಂಥವರೆ ಯಕೋಬ ದೇವನ ಭಕ್ತಾದಿಗಳು //

2ನೇ ವಾಚನ -1 ಯೋವಾನ 3:1-3
ನಾವು ದೇವರ ಮಕ್ಕಳು ಎನಿಸಿಕೊಂಡಿರಬೇಕಾದರೆ ಪಿತನು ನಮ್ಮನ್ನು ಎಷ್ಟಾಗಿ ಪ್ರೀತಿಸುತ್ತಾರೆಂಬುದನ್ನು ಗಮನಿಸಿರಿ. ನಿಜಕ್ಕೂ ನಾವು ದೇವರ ಮಕ್ಕಳೇ. ಲೋಕವು ಅವರನ್ನು ಅರಿತುಕೊಳ್ಳಲಿಲ್ಲವಾದ ಕಾರಣ ನಾವು ಎಂಥವರೆಂದು ಅದು ಅರಿತಿಲ್ಲ. ಪ್ರಿಯರೇ, ನಾವೀಗ ದೇವರ ಮಕ್ಕಳು. ಮುಂದೆ ನಾವು ಎಂಥವರಾಗುತ್ತೇವೆ ಎಂಬುದು ಇನ್ನೂ ವಿಷದವಾಗಿಲ್ಲ. ಆದರೆ ಕ್ರಿಸ್ತಯೇಸು ಪ್ರತ್ಯಕ್ಷವಾಗುವಾಗ ನಾವೂ ಅವರಂತೆಯೇ ಇರುತ್ತೇವೆಂದು ಬಲ್ಲೆವು. ಏಕೆಂದರೆ, ಅವರನ್ನು ನಾವು ಅವರ ಯಥಾರ್ಥ ರೂಪದಲ್ಲೇ ಕಾಣುತ್ತೇವೆ. ಕ್ರಿಸ್ತಯೇಸುವಿನಲ್ಲಿ ನಂಬಿಕೆ ನಿರೀಕ್ಷೆಯನ್ನಿಟ್ಟಿರುವ ಪ್ರತಿಯೊಬ್ಬನೂ ಅವರು ಶುದ್ಧರಾಗಿರುವಂತೆಯೇ ತನ್ನನ್ನು ಶುದ್ಧವಾಗಿಟ್ಟುಕೊಳ್ಳುತ್ತಾನೆ.
ಶುಭಸಂದೇಶ - ಮತ್ತಾಯ 5: 1-12
ಜನರ ದೊಡ್ಡ ಗುಂಪನ್ನು ಕಂಡು ಯೇಸುಸ್ವಾಮಿ ಒಂದು ಬೆಟ್ಟವನ್ನು ಹತ್ತಿ ಕುಳಿತುಕೊಂಡರು. ಅವರ ಶಿಷ್ಯರು ಸುತ್ತಲೂ ನೆರೆದರು. ಆಗ ಯೇಸು ಇಂತೆಂದು ಪ್ರಬೋಧಿಸಿದರು "ಪಾರಮಾರ್ಥಿಕವಾಗಿ ಬಡವರು ಭಾಗ್ಯವಂತರು; ಸ್ವರ್ಗಸಾಮ್ರಾಜ್ಯ ಅವರದು. ದುಃಖಿಗಳು ಭಾಗ್ಯವಂತರು; ದೇವರು ಅವರನ್ನು ಸಂತೈಸುವರು. ವಿನಯಶೀಲರು ಭಾಗ್ಯವಂತರು; ದೇವರ ವಾಗ್ದತ್ತ ನಾಡಿಗೆ ಬಾಧ್ಯಸ್ಥರು ಅವರು. ನ್ಯಾಯನೀತಿಗಾಗಿ ಹಸಿದು ಹಾತೊರೆಯು ವವರು ಭಾಗ್ಯವಂತರು; ದೇವರು ಅವರಿಗೆ ತೃಪ್ತಿಯನ್ನೀಯುವರು. ದಯಾವಂತರು ಭಾಗ್ಯವಂತರು; ದೇವರ ದಯೆ ಅವರಿಗೆ ದೊರಕುವುದು. ನಿರ್ಮಲ ಹೃದಯಿಗಳು ಭಾಗ್ಯವಂತರು; ಅವರು ದೇವರನ್ನು ಕಾಣುವರು. ಶಾಂತಿಗಾಗಿ ಶ್ರಮಿಸುವವರು ಭಾಗ್ಯವಂತರು; ಅವರು ದೇವರ ಮಕ್ಕಳೆನಿಸಿಕೊಳ್ಳುವರು. ನ್ಯಾಯನೀತಿಯ ನಿಮಿತ್ತ ಹಿಂಸೆಯನ್ನು ತಾಳುವವರು ಭಾಗ್ಯವಂತರು; ಸ್ವರ್ಗಸಾಮ್ರಾಜ್ಯ ಅವರದು." "ನನ್ನ ಶಿಷ್ಯರು ನೀವಾದ್ದರಿಂದ ಜನರು ನಿಮ್ಮನ್ನು ಧಿಕ್ಕರಿಸುವರು, ಹಿಂಸಿಸುವರು, ಅನ್ಯಾಯವಾಗಿ ಇಲ್ಲಸಲ್ಲದ್ದನ್ನು ನಿಮ್ಮ ಮೇಲೆ ಹೊರಿಸುವರು; ಆಗ ನೀವು ಭಾಗ್ಯವಂತರು. ಅದಕ್ಕಾಗಿ ಹರ್ಷಿಸಿ ಆನಂದಪಡಿ; ಏಕೆಂದರೆ ಸ್ವರ್ಗದಲ್ಲಿ ನಿಮಗೆ ಸಿಗುವ ಪ್ರತಿಫಲ ಹಿರಿದು. ನಿಮಗಿಂತ ಮೊದಲಿದ್ದ ಪ್ರವಾದಿಗಳನ್ನೂ ಜನರು ಹೀಗೆಯೇ ಚಿತ್ರಹಿಂಸೆಗೆ ಒಳಪಡಿಸಿದರು."
ಚಿಂತನೆ
ಇಂದು ಧರ್ಮಸಭೆ ಸಕಲ ಸಂತರ ಹಬ್ಬವನ್ನು ಆಚರಿಸುತ್ತಿದೆ. ಸಾಮಾನ್ಯ ಮನುಷ್ಯರಾಗಿ ಜನಿಸಿ, ಅಸಾಧಾರಣ ಬದುಕಿನ ಮೂಲಕ ಕ್ರಿಸ್ತನ ಪ್ರೀತಿಗೆ ಪಾತ್ರರಾದವರು ಈ ಸಂತರು. ಧರ್ಮಸಭೆ ಅಧಿಕೃತವಾಗಿ ಸುಮಾರು ೧೦೦೦೦ ಸಂತ ಭಕ್ತರನ್ನು ಗುರುತಿಸಿ ಗೌರವಿಸುತ್ತದೆ. ಆದರೆ ಗುರುತಿಸದ ಅನಾಮಧೇಯ ಸಂತ ಭಕ್ತರು ಅಸಂಖ್ಯಾತರಿದ್ದಾರೆ. ಅವರೆಲ್ಲರನ್ನೂ ಸ್ಮರಿಸಿ ಗೌರವಿಸುವ ದಿನವೇ ಸಕಲ ಸಂತರ ಹಬ್ಬ. ಈ ಅನಾಮಧೇಯ ಸಂತರ ಪಟ್ಟಿಯಲ್ಲಿ ಮೃತಹೊಂದಿದ ನಮ್ಮ ಅಜ್ಜ-ಅಜ್ಜಿಯರು, ಸಂಬಂಧಿಕರು, ಸ್ನೇಹಿತರೂ ಇರಬಹುದೆಂಬ ವಿಷಯ ಸಂತೋಷಕರ ಸಂತರ ಬಾಳು ನಮಗೆ ಮಾದರಿ ಮತ್ತು ಆದರ್ಶವಾಗಬೇಕಿದೆ. ನಾವು ಕೂಡ ಆ ಸೌಭಾಗ್ಯಕ್ಕೆ ಪಾತ್ರರಾಗಬಹುದು ಎಂದು ಈ ಹಬ್ಬ ನಮ್ಮನ್ನು ನೆನಪಿಸುತ್ತದೆ. ನವೆಂಬರ್ ತಿಂಗಳು ಕರ್ನಾಟಕದ ಪಾಲಿಗೆ ನಾಡಹಬ್ಬದ ಸಂಭ್ರಮವನ್ನು ತಂದುಕೊಡುತ್ತದೆ. ಕರ್ನಾಟಕದಲ್ಲಿ ವಾಸಿಸುವ ಎಲ್ಲರೂ ನಾಡು, ನುಡಿ, ಸಂಸ್ಕೃತಿಯ ಉಳಿವಿಗೆ, ಏಳಿಗೆಗೆ ಶ್ರಮಿಸಬೇಕಿದೆ. ಇಲ್ಲಿರುವ ಎಲ್ಲರೂ ಕನ್ನಡಿಗರೇ ಎಂಬ ಮನೋಭಾವ ಮೂಡುವಂತಾಗಲಿ.

Saturday, 12 October 2019

ಸಾಧಾರಣ ಕಾಲದ ಮೂವತ್ತನೇ ವಾರ ಗುರುವಾರ

31/ಹಸಿರು/ಗುರು
1ನೇ ವಾಚನ ರೋಮ 8: 31-39
ಕೀರ್ತನೆ - 1೦9: 21-22, 26-27,  3೦-31
ಶುಭಸಂದೇಶ - ಲೂಕ 13: 31-35

1ನೇ ವಾಚನ ರೋಮ 8: 31-39
ಹೀಗಿರುವಲ್ಲಿ ನಾವು ಏನು ಹೇಳೋಣ? ದೇವರೇ ನಮ್ಮ ಪರ ಇರುವಾಗ ನಮ್ಮನ್ನು ವಿರೋಧಿಸುವವರು ಯಾರು? ದೇವರು ತಮ್ಮ ಸ್ವಂತ ಪುತ್ರನನ್ನೇ ನಮ್ಮೆಲ್ಲರಿಗಾಗಿ ಕೊಡಲು ಹಿಂಜರಿಯಲಿಲ್ಲ. ತಮ್ಮ ಪುತ್ರನನ್ನೇ ಬಲಿದಾನವಾಗಿ ಅರ್ಪಿಸಿದ ದೇವರು ಮತ್ತೇನನ್ನು ತಾನೇ ನಮಗೆ ವರದಾನವಾಗಿ ಕೊಡದಿರಲಾರರು? ದೇವರೇ ಆರಿಸಿಕೊಂಡವರ ಮೇಲೆ ಯಾರು ತಾನೇ ದೋಷಾರೋಪಣೆ ಮಾಡಬಲ್ಲರು? ದೇವರೇ ಅವರನ್ನು ನಿರ್ದೋಷಿಗಳೆಂದು ನಿರ್ಣಯಿಸಿರುವಾಗ ಅವರನ್ನು ದೋಷಿಗಳೆಂದು ನಿರ್ಣಯಿಸುವವರು ಯಾರು? ಪ್ರಾಣತ್ಯಾಗ ಮಾಡಿದ್ದಲ್ಲದೆ ಪುನರುತ್ಥಾನ ಹೊಂದಿದ ಕ್ರಿಸ್ತಯೇಸುವೇ ದೇವರ ಬಲಪಾಶ್ರ್ವದಲ್ಲಿದ್ದುಕೊಂಡು ನಮ್ಮ ಪರವಾಗಿ ಬಿನ್ನಯಿಸುತ್ತಿದ್ದಾರೆ. ಕ್ರಿಸ್ತಯೇಸುವಿನ ಪ್ರೀತಿಯಿಂದ ನಮ್ಮನ್ನು ಬೇರ್ಪಡಿಸಲು ಯಾರಿಂದ ಸಾಧ್ಯ? ಕಷ್ಟ-ಸಂಕಟ, ಇಕ್ಕಟ್ಟು-ಬಿಕ್ಕಟ್ಟು, ಹಿಂಸೆ ಬಾಧೆ ಇವುಗಳಿಂದ ಸಾಧ್ಯವೆ? ಇಲ್ಲ. ಹಸಿವು ನೀರಡಿಕೆ, ನಗ್ನಸ್ಥಿತಿ, ಆಪತ್ತು-ವಿಪತ್ತು, ಖಡ್ಗ-ಕಠಾರಿಗಳಿಂದ ಸಾಧ್ಯವೆ? ಎಂದಿಗೂ ಇಲ್ಲ. ಪವಿತ್ರಗ್ರಂಥದಲ್ಲಿ ಹೀಗೆ ಬರೆಯಲಾಗಿದೆ: “ದಿನವಿಡೀ ನಿಮಗೋಸ್ಕರವೇ ಸಾವಿಗೀಡಾಗುತಿಹೆವು ನಾವು, ಮಧ್ಯಸ್ಥಾನಕ್ಕೆ ಒಯ್ದ ಕುರಿಗಳಂತೆ ಪರಿಗಣಿತರಾಗುತಿಹೆವು ನಾವು.” ನಮ್ಮನ್ನು ಪ್ರೀತಿಸಿದ ಯೇಸುಕ್ರಿಸ್ತರ ಮುಖಾಂತರ ಇವೆಲ್ಲವುಗಳಲ್ಲಿಯೂ ನಾವು ಪೂರ್ಣ ಜಯಶಾಲಿಗಳಾಗುತ್ತೇವೆ. ಸಾವಾಗಲಿ ಜೀವವಾಗಲಿ, ದೇವದೂತರಾಗಲಿ ದುರಾತ್ಮರಾಗಲಿ, ಈಗಿನ ಸಂತತಿಗಳೇ ಆಗಲಿ, ಭವಿಷ್ಯದ ಆಗುಹೋಗುಗಳೇ ಆಗಲಿ, ಯಾವ ಶಕ್ತಿಗಳೇ ಆಗಲಿ ನಮ್ಮ ಪ್ರಭು ಯೇಸುಕ್ರಿಸ್ತರಲ್ಲಿ ತೋರಿಬಂದ ದೈವಪ್ರೀತಿಯಿಂದ ನಮ್ಮನ್ನು ಬೇರ್ಪಡಿಸಲಾರವು. ಅಂತೆಯೇ, ಮೇಲಣ ಲೋಕವಾಗಲಿ, ಕೆಳಗಣ ಲೋಕವಾಗಲಿ, ಸೃಷ್ಟಿಸಮಸ್ತಗಳಲ್ಲಿ ಯಾವುದೇ ಆಗಲಿ, ಆ ಪ್ರೀತಿಯಿಂದ ನಮ್ಮನ್ನು ಬೇರ್ಪಡಿಸಲು ಸಾಧ್ಯವಿಲ್ಲ. ಇದು ನಿಶ್ಚಯ.

ಕೀರ್ತನೆ - 1೦9: 21-22, 26-27,  3೦-31
21 : ಹೇ ಪ್ರಭು, ದೇವಾ, ನನ್ನನಾದರಿಸು ಅಕ್ಕರೆಯಿಂದ / ನನ್ನ ಪಕ್ಷವಹಿಸಿ ರಕ್ಷಿಸು ನಿನ್ನ ನಾಮದ ಪ್ರಯುಕ್ತ // 
22 : ಬಡವ ನಾನು, ನನಗಿದೆ ಕುಂದುಕೊರತೆ / ನನ್ನ ಎದೆಗೆ ಅಲಗೇ ನಾಟಿದಂತಿದೆ // 
23 : ನಾ ಗತಿಸಿಹೋಗುತ್ತಿರುವೆ ಬೈಗಿನ ನೆರಳಂತೆ / ಬಿರುಗಾಳಿ ಕೊಂಡೊಯ್ಯುವ ಮಿಡತೆಯಂತೆ // 
24 : ಬಡಕಲಾಯಿತೆನ್ನ ದೇಹ ಬರಡಿಲ್ಲದೆ / ನಡುಕಹುಟ್ಟಿತು ಕಾಲಿಗೆ ತ್ರಾಣವಿಲ್ಲದೆ //
25 : ಗುರಿಯಾಗಿರುವೆನು ನಾ ಜನರ ಅಪಹಾಸ್ಯಕ್ಕೆ / ನೋಡುವವರು ತಲೆಯಾಡಿಸಿ ಮಾಡುವ ನಿಂದೆಗೆ // 
26 : ಹೇ ಪ್ರಭೂ, ಹೇ ದೇವಾ, ನೆರವಾಗಯ್ಯಾ / ಅಚಲಪ್ರೀತಿಯಿಂದ ನನ್ನ ರಕ್ಷಿಸಯ್ಯಾ // 
27 : ನನ್ನ ರಕ್ಷಣೆ ನಿನ್ನ ಕೈಯಿಂದಾದುದೆಂದು ಅವರರಿಯಲಿ / ಅದು ನಿನ್ನಿಂದಲೇ ಹೇ ಪ್ರಭು, ಆದುದೆಂದು ಖಚಿತವಾಗಲಿ // 
28 : ಅವರೆನ್ನನು ಶಪಿಸಿದರೂ ನೀನೆನ್ನನು ಹರಸು / ನನ್ನೆದುರಾಳಿಗೆ ಅಪಮಾನವನು ಹೊರಿಸು / ನಿನ್ನ ದಾಸನೆನಗೆ ಆನಂದವನು ಪಾಲಿಸು // 
29 : ಮಾನಭಂಗವಾಗಲಿ ನನ್ನಾ ನಿಂದಕರಿಗೆ / ಬಟ್ಟೆಯಂತೆ ಅವರಿಗಂಟಿಕೊಳ್ಳಲಿ ಹೇಸಿಗೆ // 
30 : ಕೊಂಡಾಡುವೆನು ಪ್ರಭುವನು ಬಹಳವಾಗಿ / ಕೀರ್ತಿಸುವೆನು ಆತನನು ಸಾಮೂಹಿಕವಾಗಿ // 
31 : ನಿಂತಿರುವನು ಪ್ರಭು ಬಡವನ ಬಲಗಡೆ / ವಿಧಿಸುವವರಿಂದ ತಪ್ಪಿಸುವನು ಮರಣದಂಡನೆ //

ಶುಭಸಂದೇಶ - ಲೂಕ 13: 31-35
ಅದೇ ಸಮಯಕ್ಕೆ ಸರಿಯಾಗಿ ಕೆಲವು ಮಂದಿ ಫರಿಸಾಯರು ಯೇಸುಸ್ವಾಮಿಯ ಬಳಿಗೆ ಬಂದು, “ಇಲ್ಲಿಂದ ಹೊರಟು ಹೋಗಿಬಿಡಿ, ಹೆರೋದನು ನಿಮ್ಮನ್ನು ಕೊಲ್ಲಬೇಕೆಂದಿದ್ದಾನೆ,” ಎಂದರು. ಅದಕ್ಕೆ ಯೇಸು, “ನೀವು ಹೋಗಿ ಆ ನರಿಗೆ ಹೀಗೆಂದು ತಿಳಿಸಿರಿ: ಇಂದು ಮತ್ತು ನಾಳೆ ದೆವ್ವಗಳನ್ನು ಬಿಡಿಸುತ್ತೇನೆ, ರೋಗಿಗಳನ್ನು ಗುಣಪಡಿಸುತ್ತೇನೆ, ಮೂರನೆಯ ದಿನ ನನ್ನ ಕಾರ್ಯ ಸಿದ್ಧಿಗೆ ಬರುವುದು. ಹೇಗೂ ಇಂದು, ನಾಳೆ ಮತ್ತು ನಾಡಿದ್ದು ನಾನು ನನ್ನ ಮಾರ್ಗವನ್ನು ಮುಂದುವರಿಸಬೇಕು. ಪ್ರವಾದಿಯಾದವನು ಜೆರುಸಲೇಮಿನ ಹೊರಗೆ ಕೊಲೆಗೀಡಾಗುವುದು ಸಲ್ಲದು. “ಓ ಜೆರುಸಲೇಮೇ, ಜೆರುಸಲೇಮೇ, ಪ್ರವಾದಿಗಳ ಕೊಲೆಪಾತಕಿಯೇ, ದೇವರು ನಿನ್ನ ಬಳಿಗೆ ಕಳುಹಿಸಿದವರನ್ನು ಕಲ್ಲುಗಳಿಂದ ಹೊಡೆಯುವವಳೇ, ಕೋಳಿ ತನ್ನ ಮರಿಗಳನ್ನು ರೆಕ್ಕೆಗಳಡಿ ಸೇರಿಸಿಕೊಳ್ಳುವಂತೆ, ನಾನು ನಿನ್ನ ಮಕ್ಕಳನ್ನು ಒಂದಾಗಿ ಸೇರಿಸಿ ಅಪ್ಪಿಕೊಳ್ಳಲು ಎಷ್ಟೋ ಬಾರಿ ಅಪೇಕ್ಷಿಸಿದೆ. ಆದರೆ ನೀನು ಒಪ್ಪಲಿಲ್ಲ. ಇಗೋ, ನಿಮ್ಮ ದೇವಾಲಯ ಪಾಳುಬೀಳುವುದು. ‘ಸರ್ವೇಶ್ವರನ ನಾಮದಲ್ಲಿ ಬರುವವರು ಧನ್ಯರು,’ ಎಂದು ನೀವಾಗಿ ಹೇಳುವ ದಿನದವರೆಗೂ ನೀವು ನನ್ನನ್ನು ಕಾಣಲಾರಿರಿ, ಎಂಬುದು ನಿಶ್ಚಯ,” ಎಂದರು.
----
ಚಿಂತನೆ
ಹೆರೋದನನ್ನು ನರಿಯೆಂದು, ಜೆರುಸಲೇಮ್ ನಗರವನ್ನು ಕೊಲೆಪಾತಕಿಯಂದು ಯೇಸು ಖಂಡಿಸುತ್ತಾರೆ. ಯೊಹೂದ್ಯರ ಪದ್ಧತಿಯಂತೆ ಯೇಸುವು ಜೆರುಸಲೇಮನ್ನು ಇಸ್ರಾಯೇಲರ ತಾಯಿಯೆಂದು ಇಸ್ರಾಯೇಲರು ಆಕೆಯ ಮಕ್ಕಳೆಂದು ಹೇಳುತ್ತಿದ್ದರು. ಹಳೆಯ ಒಡಂಬಡಿಕೆಯಲ್ಲಿ ದೇವರು ಇಸ್ರೆಯೇಲರನ್ನು ರಕ್ಷಿಸುವ ಚಿತ್ರಣವನ್ನು ಯೇಸುವು ನೆನಪಿಸುತ್ತಾರೆ. (ಯಶಾಯ 31:5, ಧ.ಕಾಂq 32:11-12, ರೂತರಳು 2:12). ಇಸ್ರೆಯೇಲರು ದೇವರು ಕಳುಹಿಸಿದ ಅನೇಕ ಪ್ರವಾದಿಗಳನ್ನು ಹಿಂಸಿಸಿ ಕೊಲೆ ಮಾಡಿದ್ದರು. ಯೇಸುವನ್ನು ಮತ್ತು ಆತನ ಹಿಂಬಾಲಕರನ್ನು ಕೂಡ ಹಿಂಸಿಸಲಿದ್ದಾರೆ ಎಂಬುದನ್ನು ಮುಂತಿಳಿಸುತ್ತಾ ಜೆರುಸಲೇಮಿಗೆ ಬರುವ ದುರ್ಗತಿಯ ಬಗ್ಗೆ ತಿಳಿಸುತ್ತಾರೆ. ಯೇಸು ಪ್ರವಾದನೆ ಮಾಡಿದಂತೆ ಕ್ರಿ.ಶ. 70ರಲ್ಲಿ ರೋಮನ್ನರು ಜೆರುಸಲೇಮನ್ನು ಸಂಪೂರ್ಣವಾಗಿ ನಾಶಮಾಡಿದರು. 

ಸಾಧಾರಣ ಕಾಲದ ಮೂವತ್ತನೇ ವಾರ ಬುಧವಾರ

3೦/ಹಸಿರು/ಬುಧ
1ನೇ ವಾಚನ - ರೋಮ 8:26-3೦
ಕೀರ್ತನೆ - 13;3-6
ಶುಭಸಂದೇಶ - ಲೂಕ 13: 22-3೦

1ನೇ ವಾಚನ - ರೋಮ 8:26-3೦
ಅಂತೆಯೇ ಪವಿತ್ರಾತ್ಮರು ಸಹ ನಮ್ಮ ದೌರ್ಬಲ್ಯದಲ್ಲಿ ನೆರವು ನೀಡುತ್ತಾರೆ. ಹೇಗೆ ಪ್ರಾರ್ಥಿಸಬೇಕು, ಯಾವುದಕ್ಕಾಗಿ ಪ್ರಾರ್ಥಿಸಬೇಕು ಎಂಬುದನ್ನು ನಾವು ತಿಳಿಯದವರು. ಪವಿತ್ರಾತ್ಮರೇ ಮಾತಿಗೆಟುಕದ ರೀತಿಯಲ್ಲಿ ಆತ್ಮಧ್ವನಿಯಿಂದ ನಮ್ಮ ಪರವಾಗಿ ದೇವರಲ್ಲಿ ವಿಜ್ಞಾಪಿಸುತ್ತಾರೆ. ಅಂತರಂಗಗಳನ್ನು ಈಕ್ಷಿಸುವ ದೇವರು ಪವಿತ್ರಾತ್ಮರ ಇಂಗಿತವೇನೆಂದು ಬಲ್ಲರು. ಏಕೆಂದರೆ, ದೇವರ ಚಿತ್ತದ ಪ್ರಕಾರವೇ ಪವಿತ್ರಾತ್ಮರು ದೇವಜನರಿಗಾಗಿ ಬಿನ್ನವಿಸುತ್ತಾರೆ. ದೇವರನ್ನು ಪ್ರೀತಿಸುವವರಿಗೂ ದೇವರ ಸಂಕಲ್ಪದ ಮೇರೆಗೆ ಕರೆಹೊಂದಿದವರಿಗೂ ಸಕಲವೂ ಹಿತಕರವಾಗಿ ಪರಿಣಮಿಸುವುದು. ಇದನ್ನು ನಾವು ಚೆನ್ನಾಗಿ ಅರಿತಿದ್ದೇವೆ. ದೇವರು ಯಾರನ್ನು ತಮ್ಮವರೆಂದು ಮೊದಲೇ ಆರಿಸಿಕೊಂಡರೋ ಅವರನ್ನು ತಮ್ಮ ಪುತ್ರನ ಅನುರೂಪಿಗಳಾಗುವಂತೆ ಆಗಲೇ ನೇಮಿಸಿದರು. ಹೀಗೆ ಅನೇಕ ಸಹೋದರರಲ್ಲಿ ತಮ್ಮ ಪುತ್ರನೇ ಜೇಷ್ಠನಾಗಿರಬೇಕೆಂಬುದು ದೇವರ ನಿರ್ಧಾರವಾಗಿದೆ. ಹೀಗೆ ಯಾರನ್ನು ಮೊದಲೇ ನೇಮಿಸಿದ್ದರೋ ಅವರನ್ನು ಕರೆದಿದ್ದಾರೆ. ಯಾರನ್ನು ಕರೆದಿದ್ದಾರೋ ಅವರನ್ನು ತಮ್ಮೊಡನೆ ಸತ್ಸಂಬಂಧದಲ್ಲಿ ಇರಿಸಿಕೊಂಡಿದ್ದಾರೆ. ಯಾರನ್ನು ತಮ್ಮೊಡನೆ ಸತ್ಸಂಬಂಧದಲ್ಲಿ ಇರಿಸಿಕೊಂಡಿದ್ದಾರೋ ಅವರನ್ನು ಮಹಿಮಾಪದವಿಗೆ ಸೇರಿಸಿಕೊಂಡಿದ್ದಾರೆ.

ಕೀರ್ತನೆ - 13;3-6
3 : ಹೇ ಪ್ರಭು, ಹೇ ದೇವ, ಎನ್ನ ವೀಕ್ಷಿಸಿ ಸದುತ್ತರ ಪಾಲಿಸು / ಮರಣನಿದ್ರೆ ಬಾರದಂತೆ ನನ್ನ ನೇತ್ರಗಳನು ಬೆಳಗಿಸು // 
4 : ತಾನು ಜಯಗಳಿಸಿದೆನೆಂದು ಶತ್ರು ಹೇಳಿ ಕೊಳ್ಳದಿರಲಿ / ನಾನು ಜಾರಿ ಬಿದ್ದೆನೆಂದು ವೈರಿ ಹಿರಿಹಿಗ್ಗದಿರಲಿ // 
5 : ನಿನ್ನಚಲ ಪ್ರೀತಿಯಲ್ಲಿದೆ ನನಗಿದೆ ವಿಶ್ವಾಸ / ನಿನ್ನ ರಕ್ಷಣೆ ತಂದಿದೆ ನನ್ನ ಮನಕೆ ಹರುಷ / 
6 : ಪ್ರಭು ಮಾಡಿದ ಮಹೋಪಕಾರಗಳಿಗಾಗಿ / ಹಾಡುವೆ ಗೀತವನು ಮನಃಪೂರ್ವಕವಾಗಿ //

ಶುಭಸಂದೇಶ - ಲೂಕ 13: 22-3೦
ಯೇಸುಸ್ವಾಮಿ ಊರೂರುಗಳಲ್ಲೂ ಹಳ್ಳಿಹಳ್ಳಿಗಳಲ್ಲೂ ಉಪದೇಶಮಾಡಿಕೊಂಡು ಜೆರುಸಲೇಮಿನತ್ತ ಪ್ರಯಾಣಮಾಡುತ್ತಿದ್ದರು. ಆಗ ಒಬ್ಬನು, “ಸ್ವಾವಿೂ, ಜೀವೋದ್ಧಾರ ಹೊಂದುವವರು ಕೆಲವರು ಮಾತ್ರವೊ?” ಎಂದು ವಿಚಾರಿಸಿದನು. ಆಗ ಯೇಸು ಜನರಿಗೆ, “ಇಕ್ಕಟ್ಟಾದ ಬಾಗಿಲಿನಿಂದಲೇ ಒಳಹೋಗಲು ಸರ್ವಪ್ರಯತ್ನಮಾಡಿ. ಏಕೆಂದರೆ, ಅನೇಕರು ಒಳಕ್ಕೆ ಹೋಗಲು ಖಂಡಿತವಾಗಿ ಪ್ರಯತ್ನಿಸುವರು; ಆದರೆ ಅದು ಅವರಿಂದಾಗದು. ಮನೆಯ ಯಜಮಾನನು ಎದ್ದು ಬಾಗಿಲನ್ನು ಮುಚ್ಚಿದ ಮೇಲೆ ನೀವು ಹೊರಗಡೆ ನಿಲ್ಲಬೇಕಾಗುವುದು. ಬಾಗಿಲನ್ನು ತಟ್ಟುತ್ತಾ, ‘ಸ್ವಾವಿೂ, ನಮಗೆ ಬಾಗಿಲು ತೆರೆಯಿರಿ,’ ಎಂದು ನೀವು ಕೇಳುವಿರಿ. ಅದಕ್ಕೆ ಅವನು, ‘ನೀವು ಎಲ್ಲಿಯವರೋ ನಾನು ಅರಿಯೆ’ ಎನ್ನುವನು. ಆಗ ನೀವು, ‘ನಿಮ್ಮೊಂದಿಗೆ ನಾವು ಊಟಮಾಡಿದ್ದೇವೆ, ಪಾನಮಾಡಿದ್ದೇವೆ; ನೀವು ನಮ್ಮ ಬೀದಿಗಳಲ್ಲಿ ಉಪದೇಶಮಾಡಿದ್ದೀರಿ,’ ಎಂದು ಹೇಳಲಾರಂಭಿಸುವಿರಿ. ಆದರೆ ಅವನು ಪುನಃ, ‘ನೀವು ಎಲ್ಲಿಯವರೋ ನಾನರಿಯೆ. ಅಕ್ರಮಿಗಳೇ, ಎಲ್ಲರೂ ನನ್ನಿಂದ ತೊಲಗಿರಿ,’ ಎಂದು ಸ್ಪಷ್ಟವಾಗಿ ನುಡಿಯುವನು. ಅಬ್ರಹಾಮ, ಇಸಾಕ, ಯಕೋಬ ಮತ್ತು ಎಲ್ಲಾ ಪ್ರವಾದಿಗಳು ದೇವರ ಸಾಮ್ರಾಜ್ಯದಲ್ಲಿ ಇರುವುದನ್ನೂ ನಿಮ್ಮನ್ನು ಮಾತ್ರ ಹೊರಗೆ ಹಾಕಿರುವುದನ್ನೂ ನೋಡುವಾಗ ನಿಮಗಾಗುವ ಗೋಳಾಟವೇನು! ಹಲ್ಲುಕಡಿತವೇನು!! ಚತುರ್ದಿಕ್ಕುಗಳಿಂದಲೂ ಜನರು ಬಂದು, ದೇವರ ಸಾಮ್ರಾಜ್ಯದ ಹಬ್ಬದೂಟದಲ್ಲಿ ಭಾಗಿಗಳಾಗುವರು. “ಇಗೋ, ಕಡೆಯವರಲ್ಲಿ ಕೆಲವರು ಮೊದಲಿಗರಾಗುವರು. ಮೊದಲಿಗರಲ್ಲಿ ಕೆಲವರು ಕಡೆಯವರಾಗುವರು,” ಎಂದರು.
----
ಚಿಂತನೆ
ಜೀವನವು ಒಂದು ನಿರಂತರ ಹೋರಾಟವಾಗಿದೆ. ಒಳ್ಳೆಯ ಜೀವನವನ್ನು ಬದುಕ ಬೇಕಾದರೆ ಪ್ರಯತ್ನ ಮತ್ತು ಪರಿಶ್ರಮ ಬೇಕು. ನಮ್ಮ ಆಧ್ಯಾತ್ಮಿಕ ಪಯಣದಲ್ಲಿ ಎಲ್ಲಿದ್ದೇವೆ? ಯಾವ ದಿಕ್ಕಿನಲ್ಲಿ ಬದುಕು ಸಾಗಿದೆ ಎಂಬುದು ಮುಖ್ಯ. ಇಲ್ಲಿ ಯಾರು ಪೂರ್ಣಗೊಂಡಿಲ್ಲ, ಪರಿಪೂರ್ಣಗೊಳ್ಳುದರಲ್ಲಿ ಇದೆ ಜೀವನ. ಪರಿಪೂರ್ಣರಾಗಬೇಕಾದರೆ, ಜೀವೋದ್ದಾರ ಹೊಂದಬೇಕಾದರೆ ಇಕ್ಕಟ್ಟಾದ ಬಾಗಿಲಿನಿಂದ ಪ್ರವೇಶಿಸಲು ಕರೆನೀಡುತ್ತಾರೆ. ಸಾಧಿಸುವ ಇಚ್ಛೆ ಮತ್ತು ಶ್ರಮವಿದ್ದರೆ ಏನು ಬೇಕಾದರೂ ಸಾಧಿಸಬಹುದು. ತ್ಯಾಗ, ಪರಿಶ್ರಮದಿಂದ ಮೇಲೆ ಬಂದವರು ಅನೇಕರಿದ್ದಾರೆ. ಅದೇ ರೀತಿಯಲ್ಲಿ ಸ್ವರ್ಗ ಸಾಮ್ರಾಜ್ಯ ಬೇಕಾದರೆ ಸೋಮಾರಿತನದಿಂದ ಮೇಲೆದ್ದು ಯೇಸುವಿನ ಆದರ್ಶಗಳನ್ನು ಮೈಗೂಡಿಕೊಂಡರೆ ಮಾತ್ರ ಸಾಧ್ಯ. ಯೇಸುವಿನ ಆದರ್ಶ ಮತ್ತು ತತ್ವಗಳು ಕಿರಿದಾದ ದಾರಿಯಂತೆ ಅಲ್ಲಿ ಕಷ್ಟ, ತ್ಯಾಗ, ಶ್ರಮ ಇದೆ. ಕೇವಲ ದೀಕ್ಷಾಸ್ನಾನದಿಂದ, ಕ್ರೈಸ್ತ ಹೆಸರಿನಿಂದ ಸ್ವರ್ಗಕ್ಕೆ ಪ್ರವೇಶಸಾಧ್ಯವಿಲ್ಲ. ಯೇಸುವನ್ನು ಹಿಂಬಾಲಿಸುವ, ಅವರ ಚಿತ್ತದ ಪ್ರಕಾರ ಜೀವಿಸುವ ಎಲ್ಲರೂ ಸ್ವರ್ಗದ ಆನಂದ ಪಡೆಯುವರು.

ಸಾಧಾರಣ ಕಾಲದ ಮೂವತ್ತನೇ ವಾರ ಮಂಗಳವಾರ

29/ಹಸಿರು/ಮಂಗಳ 
1ನೇ ವಾಚನ - ರೋಮ 8: 18-25 
ಕೀರ್ತನೆ - 126: 1-3, 5-6 
ಶುಭಸಂದೇಶ - ಲೂಕ 13: 18-21

1ನೇ ವಾಚನ - ರೋಮ 8: 18-25 
ಇಂದಿನ ಕಾಲದಲ್ಲಿ ನಾವು ಅನುಭವಿಸುತ್ತಿರುವ ಕಷ್ಟಸಂಕಟಗಳು ಮುಂದೆ ನಮಗೆ ಪ್ರತ್ಯಕ್ಷವಾಗಲಿರುವ ಮಹಿಮೆಯೊಂದಿಗೆ ಹೋಲಿಸುವುದಕ್ಕೂ ಬಾರದವುಗಳೆಂದು ನಾನು ಎಣಿಸುತ್ತೇನೆ. ದೇವರ ಮಕ್ಕಳ ಮಹಿಮೆಯು ಯಾವಾಗ ಪ್ರತ್ಯಕ್ಷವಾದೀತೋ ಎಂದು ಸೃಷ್ಟಿ ಸಮಸ್ತವು ಬಹು ಉತ್ಸುಕತೆಯಿಂದ ಎದುರು ನೋಡುತ್ತಿದೆ. ಸರ್ವಸೃಷ್ಟಿಯು ನಿರರ್ಥಕತೆಗೆ ಒಳಗಾಯಿತು. ಇದು ಅದರ ಸ್ವಂತ ಇಚ್ಛೆಯಿಂದಲ್ಲ, ದೇವರ ಇಚ್ಛೆಯಿಂದಲೇ ಆಯಿತು. ಆದರೂ ಸೃಷ್ಟಿಗೆ ನಿರೀಕ್ಷೆಯೊಂದಿದೆ. ಅದೇನೆಂದರೆ, ಸೃಷ್ಟಿಯು ಸಹ ವಿನಾಶವಿಧಿಯಿಂದ ಬಿಡುಗಡೆಯಾಗಿ ದೇವರ ಮಕ್ಕಳ ಮಹಿಮಾಯುತ ಸ್ವಾತಂತ್ರ್ಯದಲ್ಲಿ ಪಾಲುಗೊಳ್ಳುತ್ತದೆ, ಎಂಬುದೇ. ಸೃಷ್ಟಿಸಮಸ್ತವು ಇಂದಿನವರೆಗೆ ನರಳುತ್ತಾ ಪ್ರಸವವೇದನೆಪಡುತ್ತಾ ಇದೆ ಎಂಬುದು ನಮಗೆ ತಿಳಿದಿದೆ. ಸೃಷ್ಟಿಮಾತ್ರವಲ್ಲ, ದೇವರ ವರದಾನಗಳಲ್ಲಿ ಪ್ರಥಮಫಲವಾಗಿ ಪವಿತ್ರಾತ್ಮ ಅವರನ್ನೇ ಪಡೆದಿರುವ ನಾವು ಸಹ ನಮ್ಮೊಳಗೇ ನರಳುತ್ತಿದ್ದೇವೆ. ದೇವರ ಮಕ್ಕಳಿಗೆ ದೊರೆಯುವ ಸೌಭಾಗ್ಯವನ್ನೂ ನಮ್ಮ ಸಂಪೂರ್ಣ ವಿಮೋಚನೆಯನ್ನೂ ನಿರೀಕ್ಷಿಸುತ್ತಿದ್ದೇವೆ. ನಾವು ಜೀವೋದ್ಧಾರ ಹೊಂದಿದ್ದರೂ ಇನ್ನೂ ನಿರೀಕ್ಷಿಸುವವರಾಗಿದ್ದೇವೆ. ನಾವು ನಿರೀಕ್ಷಿಸುವುದು ಪ್ರತ್ಯಕ್ಷವಾಗಿದ್ದರೆ ಅದನ್ನು ನಿರೀಕ್ಷೆ ಎನ್ನುವುದಿಲ್ಲ; ಪ್ರತ್ಯಕ್ಷವಾಗಿರುವುದನ್ನು ಯಾರಾದರೂ ನಿರೀಕ್ಷಿಸುವುದುಂಟೇ? ಪ್ರತ್ಯಕ್ಷವಾಗದೆ ಇರುವುದನ್ನು ನಾವು ನಿರೀಕ್ಷಿಸುವವರಾಗಿದ್ದರೆ, ಅದಕ್ಕಾಗಿ ತಾಳ್ಮೆಯಿಂದ ಕಾದುಕೊಂಡಿರುತ್ತೇವೆ.

ಕೀರ್ತನೆ - 126: 1-3, 5-6
1 : ಸೆರೆಯಿಂದೆಮ್ಮನು ಪ್ರಭು ಸಿಯೋನಿಗೆ ಮರಳಿಸಿದಾಗ / ಅದೊಂದು ಕನಸು ಕಂಡಂತಿತ್ತು ನಮಗೆ ಆವಾಗ
2 : ಉಕ್ಕಿತಾಗ ಮುಖತುಂಬ ನಗು, ಬಾಯ್ತುಂಬ ಹರ್ಷಗೀತೆ / “ಎಂಥ ಮಹತ್ಕಾರ್ಯವೆಸಗಿದನಾ ಪ್ರಭು ಇವರ ಪರತೆ” / ಇಂತೆಂದು ಆಡಿಕೊಂಡರು ತಂತಮ್ಮೊಳಗೆ ಅನ್ಯಜನತೆ
3 : ಪ್ರಭು ನಮಗೆ ಮಹತ್ಕಾರ್ಯ ಮಾಡಿದುದು ಖಚಿತ / ಎಂತಲೆ ನಾವಾನಂದಭರಿತರಾಗುವುದು ಉಚಿತ
4 : ಬತ್ತಿದ ನದಿಯಲಿ ನೀರು ಮರಳಿ ಉಕ್ಕಿ ಹರಿವಂತೆ / ನೀಡು ಸಿರಿ ಸೌಭಾಗ್ಯ, ಹೇ ಪ್ರಭೂ, ನಮಗೆ ಮತ್ತೆ
5 : ಅಳುತಳುತಾ ಬಿತ್ತುವವರು / ನಲಿನಲಿಯುತ್ತಾ ಕೊಯ್ಯುವರು
6 : ದುಃಖಿಸುತ್ತಾ ಬೀಜಬಿತ್ತಲು ಹೋದವನು | ಹರ್ಷಿಸುತ್ತಾ ಕೊಯ್ದು ತರುವನು ತೆನೆಗಳನು ||

ಶುಭಸಂದೇಶ - ಲೂಕ 13: 18-21
ಆಗ ಯೇಸುಸ್ವಾಮಿ, “ದೇವರ ಸಾಮ್ರಾಜ್ಯವು ಏನನ್ನು ಹೋಲುತ್ತದೆ? ಅದನ್ನು ಯಾವುದಕ್ಕೆ ಹೋಲಿಸಲಿ? ಅದು ಒಂದು ಸಾಸಿವೆ ಕಾಳಿನಂತೆ ಇದೆ. ಒಬ್ಬನು ಅದನ್ನು ತೆಗೆದುಕೊಂಡು ಹೋಗಿ ತನ್ನ ತೋಟದಲ್ಲಿ ಬಿತ್ತಿದನು. ಅದು ಬೆಳೆದು ಮರವಾಯಿತು. ಆಕಾಶದಲ್ಲಿ ಹಾರಾಡುವ ಪಕ್ಷಿಗಳು ಅದರ ರೆಂಬೆಗಳಲ್ಲಿ ಗೂಡುಕಟ್ಟಿ ವಾಸಮಾಡತೊಡಗಿದವು,” ಎಂದರು.  ಪುನಃ ಯೇಸುಸ್ವಾಮಿ, “ದೇವರ ಸಾಮ್ರಾಜ್ಯವನ್ನು ಯಾವುದಕ್ಕೆ ಹೋಲಿಸಲಿ, ಅದು ಹುಳಿಹಿಟ್ಟಿನಂತೆ ಇದೆ. ಅದನ್ನು ಒಬ್ಬಾಕೆ ತೆಗೆದುಕೊಂಡು ಮೂರು ಸೇರು ಹಿಟ್ಟಿನಲ್ಲಿ ಕಲಸಿದಳು. ಆ ಹಿಟ್ಟೆಲ್ಲಾ ಹುಳಿಯಾಯಿತು,” ಎಂದರು.
----
ಚಿಂತನೆ
ಯೇಸು ಸ್ವರ್ಗಸಾಮ್ರಾಜ್ಯದ ಆರಂಭದ ಕುರಿತು ಈ ಸಾಮತಿಯ ಮೂಲಕ ತಿಳಿಸುತ್ತಾರೆ. ಗಲಿಲೇಯ ಸರೋವರದ ಸುತ್ತಮುತ್ತ ಬೋಧನೆ, ಆತ್ಮೋದ್ದಾರದ ಕೆಲಸ ಪ್ರಾರಂಭಿಸಿದ ಯೇಸುವಿನ ಕಾರ್ಯಗಳು ಪ್ರಾರಂಭದಲ್ಲಿ ಚಿಕ್ಕದಾಗಿ ಕಂಡರೂ ಮುಂದಿನ ದಿನಗಳಲ್ಲಿ ಅದರ ವ್ಯಾಪ್ತಿ, ಗಾತ್ರ ಹೆಮ್ಮರವಾಗಿ ಬೆಳೆಯಲಿದೆ ಎನ್ನುತ್ತಾರೆ. ಸಾಸಿವೆ ಗಿಡವನ್ನು ನಾವುಕಂಡಿಲ್ಲ. ಆದರೆ ಪ್ಯಾಲೆಸ್ತೀನಿನ ಸಾಸಿವೆಗಿಡವು ಸುಮಾರು ಹತ್ತು ಹನ್ನೆರಡು ಅಡಿಗಳ ಎತ್ತರಕ್ಕೆ ಬೆಳೆಯುತ್ತಿತ್ತ. ಸಾಸಿವೆಕಾಳನ್ನು ತಿನ್ನಲೂ ನಾನಾ ರೀತಿಯ ಪಕ್ಷಿಗಳು ಬರುತ್ತಿದ್ದವು. ಈ ಸಾಮತಿಯ ಮೂಲಕ ಯೇಸು ಸ್ಥಾಪಿಸಲಿದ್ದ ಸ್ವರ್ಗ ಸಾಮ್ರಾಜ್ಯವು ಕೇವಲ ಒಂದು ವರ್ಗದ, ಜಾತಿಯವರಿಗೆ ಮೀಸಲಿಲ್ಲ. ನಾನಾ ರೀತಿಯ ಪಕ್ಷಿಗಳು ಒಂದೇ ಮರದಲ್ಲಿ ವಾಸಿಸುವಂತೆ ಎಲ್ಲಾ ವರ್ಗದವರಿಗೂ, ಧರ್ಮದವರಿಗೂ ಸೇರಿದ್ದು ಎಂದು ತಿಳಿಸಲಿಚ್ಚಿಸುತ್ತಾರೆ. ದೊಡ್ಡ ವಿಷಯಗಳು ಪ್ರಾರಂಭವಾಗುವುದು ಸಣ್ಣ ವಿಷಯಗಳಿಂದಲೇ ಪ್ಯಾಲಿಸ್ತೀನ್ ನಾಡಿನಲ್ಲಿ ಸ್ಥಾಪಿಸಿದ ಸಾಮ್ರಾಜ್ಯದ ಇಂದು ಜಗತ್ತಿನಾದ್ಯಾಂತ ಹಬ್ಬಿಕೊಂಡಿರುವುದನ್ನು ನೋಡಿದಾಗ ಈ ಸಾಮತಿಯ ಸತ್ಯ ಅರಿವಾಗುತ್ತದೆ.

ಸಾಧಾರಣ ಕಾಲದ ಮೂವತ್ತನೇ ವಾರ ಸೋಮವಾರ

28/ಕೆಂಪು/ಸೋಮ/ಸಂತ ಸಿಮೋನ ಮತ್ತು ಯೂದ (ಪ್ರೇಷಿತರು), ಹಬ್ಬ
1ನೇ ವಾಚನ - ಎಫೆ 2: 19-22
ಕೀರ್ತನೆ - 19: 2-5
ಶುಭಸಂದೇಶ - ಲೂಕ 6: 12-19

1ನೇ ವಾಚನ - ಎಫೆ 2: 19-22
ಹೀಗಿರಲಾಗಿ, ನೀವು ಇನ್ನು ಮೇಲೆ ಪರಕೀಯರೂ ಪರದೇಶಿಗಳೂ ಆಗಿರದೆ, ದೇವಜನರೊಂದಿಗೆ ಸಹಜೀವಿಗಳು ಮತ್ತು ದೇವರ ಮನೆತನದವರು ಆಗಿದ್ದೀರಿ. ಪ್ರೇಷಿತರು ಹಾಗೂ ಪ್ರವಾದಿಗಳೂ ಹಾಕಿದ ತಳಹದಿಯ ಮೇಲೆ ನಿಮ್ಮನ್ನು ನಿರ್ಮಿಸಲಾಗಿದೆ. ಯೇಸುಕ್ರಿಸ್ತರೇ ಈ ತಳಹದಿಯ ಮುಖ್ಯ ಮೂಲೆಗಲ್ಲು. ಇಡೀ ಕಟ್ಟಡವು ಅವರನ್ನೇ ಆಧರಿಸಿ, ಎಲ್ಲಾ ಭಾಗಗಳು ಒಂದಕ್ಕೊಂದು ಹೊಂದಿಕೆಯಾಗಿ ನಿಂತು, ಪ್ರಭುವಿಗೆ ಅರ್ಪಿತವಾದ ದೇವಮಂದಿರ ಆಗುತ್ತದೆ. ಯೇಸುಕ್ರಿಸ್ತರ ಅನ್ಯೋನ್ಯತೆಯಲ್ಲಿ ನೀವು ಸಹ ಇತರರೆಲ್ಲರೊಡನೆ ದೇವರ ನಿವಾಸಕ್ಕೆ ತಕ್ಕ ಮಂದಿರವಾಗಿ ಪವಿತ್ರಾತ್ಮ ಅವರಿಂದ ಕಟ್ಟಲ್ಪಡುತ್ತಿದ್ದೀರಿ.

ಕೀರ್ತನೆ - 19: 2-5
1 : ಆಕಾಶಮಂಡಲ ಸಾರುತಿದೆ ದೇವರ ಮಹಿಮೆಯನು / ತಾರಾಮಂಡಲ ತೋರುತಿದೆ ದೇವರ ಕೈಕೃತಿಗಳನು // 
2 : ದಿನವು ಮರುದಿನಕೆ ಮಾಡುತಿದೆ ಈ ಪ್ರಕಟಣೆಯನು | ರಾತ್ರಿ ಮರುರಾತ್ರಿಗೆ ನೀಡುತಿದೆ ಈ ಪ್ರಚಾರವನು || 
3 : ಅವುಗಳಿಗೆ ಮಾತಿಲ್ಲ; ಅವುಗಳಿಗೆ ಶಬ್ದವಿಲ್ಲ / ಅವುಗಳ ಸ್ವರವಂತೂ ಕೇಳಿ ಬರುವುದಿಲ್ಲ // 
4 : ಆದರೂ ಅವುಗಳ ಧ್ವನಿರೇಖೆ ಹರಡಿದೆ ಬುವಿಯಾದ್ಯಂತ / ಅವುಗಳ ನುಡಿಮಾತು ವ್ಯಾಪಿಸಿದೆ ಜಗದಾದ್ಯಂತ // 
5 : ನಿರ್ಮಿಸಿಹನಲ್ಲಿ ದೇವನು ಗುಡಾರವೊಂದನು ಸೂರ್ಯನಿಗೆ / ಬರುತಿಹನಾ ರವಿ ವರನಂತೆ ಧಾರಾಗೃಹದಿಂದ ಹೊರಗೆ / ಶೂರನಂತೆ, ಓಟದ ಪಥದಲ್ಲೋಡಲು ಹರುಷದೊಂದಿಗೆ //
ಶುಭಸಂದೇಶ - ಲೂಕ 6: 12-19
ಒಮ್ಮೆ ಯೇಸುಸ್ವಾಮಿ ಪ್ರಾರ್ಥನೆ ಮಾಡಲು ಬೆಟ್ಟವನ್ನೇರಿದರು. ರಾತ್ರಿಯೆಲ್ಲಾ ದೇವರ ಪ್ರಾರ್ಥನೆಯಲ್ಲಿ ಕಳೆದರು. ಬೆಳಗಾದಾಗ ತಮ್ಮ ಶಿಷ್ಯರನ್ನು ಕರೆದು, ಅವರಲ್ಲಿ ಹನ್ನೆರಡು ಮಂದಿಯನ್ನು ಆರಿಸಿಕೊಂಡು, ಅವರಿಗೆ ‘ಪ್ರೇಷಿತರು’ ಎಂದು ಹೆಸರಿಟ್ಟರು. ಹೀಗೆ ಆಯ್ಕೆ ಆದವರು: ಪೇತ್ರನೆಂದು ಹೆಸರು ಪಡೆದ ಸಿಮೋನ ಮತ್ತು ಅವನ ಸಹೋದರ ಅಂದ್ರೆಯ, ಯಕೋಬ ಮತ್ತು ಯೊವಾನ್ನ, ಫಿಲಿಪ್ಪ ಮತ್ತು ಬಾರ್ತೊಲೊಮಾಯ, ಮತ್ತಾಯ ಮತ್ತು ತೋಮ, ಅಲ್ಫಾಯನ ಮಗ ಯಕೋಬ ಮತ್ತು ದೇಶಾಭಿಮಾನಿ ಎನಿಸಿಕೊಂಡಿದ್ದ ಸಿಮೋನ, ಯಕೋಬನ ಮಗ ಯೂದ ಮತ್ತು ಗುರುದ್ರೋಹಿಯಾಗಲಿದ್ದ ಯೂದ ಇಸ್ಕರಿಯೋತ. ಅನಂತರ ಯೇಸುಸ್ವಾಮಿ ಅವರೊಂದಿಗೆ ಬೆಟ್ಟದಿಂದ ಇಳಿದು, ಸಮತಟ್ಟಾದ ಸ್ಥಳಕ್ಕೆ ಬಂದರು. ಶಿಷ್ಯರ ದೊಡ್ಡ ಗುಂಪು ಅಲ್ಲಿ ನೆರೆದಿತ್ತು. ಜುದೇಯ ಪ್ರಾಂತ್ಯದಿಂದಲೂ ಜೆರುಸಲೇಮ್ ಪಟ್ಟಣದಿಂದಲೂ ಸಮುದ್ರ ತೀರದ ಟೈರ್ ಹಾಗೂ ಸಿದೋನ್ ಪಟ್ಟಣಗಳಿಂದಲೂ ಜನಸಮೂಹ ಅಲ್ಲಿಗೆ ಬಂದಿತ್ತು. ಯೇಸುವಿನ ಬೋಧನೆಯನ್ನು ಕೇಳುವುದಕ್ಕೂ ತಮ್ಮ ರೋಗರುಜಿನಗಳಿಂದ ವಿಮುಕ್ತರಾಗುವುದಕ್ಕೂ ಜನರು ಅಲ್ಲಿಗೆ ಬಂದು ಸೇರಿದ್ದರು. ದೆವ್ವಪೀಡಿತರು ಕೂಡ ಬಂದು ಸ್ವಸ್ಥರಾಗುತ್ತಿದ್ದರು. ಯೇಸುವಿನಿನಿಂದ ದಿವ್ಯಶಕ್ತಿ ಹರಿದು ಎಲ್ಲರನ್ನೂ ಗುಣಪಡಿಸುತ್ತಿತ್ತು. ಆದುದರಿಂದ ಅಲ್ಲಿದ್ದ ಜನರೆಲ್ಲರು ಯೇಸುವನ್ನು ಮುಟ್ಟಲು ತವಕಪಡುತ್ತಿದ್ದರು.
----
ಚಿಂತನೆ
ಸಂತ ಸಿಮೋನ ಮತ್ತು ಯೂದರ ಬಗ್ಗೆ ನಮಗೆ ದೊರೆತಿರುವ ಮಾಹಿತಿ ಕಡಿಮೆ. ಇಬ್ಬರ ಹೆಸರುಗಳು ಪ್ರೇಷಿತರ ಪಟ್ಟಿಯಲ್ಲಿವೆ. ಸಿಮೋನ `ಜಲಟ'(Zealot)ನಾಗಿದ್ದ. ಯೂದ ಪ್ರೇಷಿತ ಪತ್ರವೊಂದನ್ನು ಬರೆದಿದ್ದಾನೆ. ಸಿಮೋನ ಒಬ್ಬ ರಾಷ್ಟ್ರ ಪ್ರೇಮಿಯಾಗಿದ್ದ. ಜಲಟರು ರೋಮನ್ನರ ವಿರುದ್ದ ಹೋರಾಡುತ್ತಿದ್ದರು. ರೋಮನ್ನರ ಆಳ್ವಿಕೆಯನ್ನು ಉಗ್ರವಾಗಿ ಖಂಡಿಸಿದರು. ತಮ್ಮ ಯೆಹೂದಿ ಧರ್ಮ, ಸಂಪ್ರದಾಯ, ದೇವಾಲಯ ಮುಖ್ಯವಾಗಿತ್ತು. ಸರ್ವೇಶ್ವರ ಸ್ವಾಮಿ ಒಬ್ಬರೇ ಅರಸ ಎಂದು ನಂಬಿದ್ದರು. ಸಿಮೋನ್ ಎಲ್ಲಿ ಪ್ರಬೋಧನೆ ಮಾಡಿದರು, ರಕ್ತಸಾಕ್ಷಿಯಾದರು ಎಂಬ ಮಾಹಿತಿ ಇಲ್ಲ. ಕೆಲವು ಸಂಪ್ರದಾಯದ ಪ್ರಕಾರ ಕಾನಾ ಊರಿನ ಮದುವೆಯ ವರ ಈ ಸಿಮೋನ. 

ಯೂದ: ತದ್ದೇಯುಸ್ ಮತ್ತೊಂದು ಹೆಸರು. ಯೂದನೇ ತನ್ನ ಪತ್ರದಲ್ಲಿ ``ಯೇಸುಕ್ರಿಸ್ತರ ದಾಸನೂ ಯಕೋಬನ ಸಹೋದರನೂ ಆದ ಯೂದನು ಬರೆಯುವ ಪತ್ರ'' ಎಂದು ತನ್ನನ್ನು ಪರಿಚಯಿಸಿಕೊಳ್ಳುತ್ತಾನೆ. ಕೊನೆಯ ಭೋಜನದ ಸಂದರ್ಭದಲ್ಲಿ ಪ್ರಭು ನೀವು ಈ ಲೋಕಕ್ಕೆ ನಿಮ್ಮನ್ನು ಸಾಕ್ಷಾತ್ಕರಿಸಿಕೊಳ್ಳದೆ ನಮಗೆ ಮಾತ್ರ ಸಾಕ್ಷಾತ್ಕರಿಸಿಕೊಳ್ಳುತ್ತೀರಲ್ಲಾ ಏಕೆ? ಎಂದು ಕೇಳಿದವನು ಈ ಯೂದನೇ. ಹತಾಶೆಗೊಂಡ ಪ್ರಕರಣಗಳ ಪಾಲಕ ಎಂದು ಯೂದ ಪ್ರಸಿದ್ದಿ ಹೊಂದಿದ್ದಾರೆ.

ಸಾಧಾರಣ ಕಾಲದ ಮೂವತ್ತನೇ ಭಾನುವಾರ

27/ ಹಸಿರು/ಭಾನು
1ನೇ ವಾಚನ - ಸಿರಾ 35: 12-14, 16-19
ಕೀರ್ತನೆ - 34: 1-2, 16-19
2ನೇ ವಾಚನ - 2 ತಿಮೋ 4:6-9,16-18
ಶುಭಸಂದೇಶ - ಲೂಕ 18: 9-14

1ನೇ ವಾಚನ - ಸಿರಾ 35: 12-14, 16-19
ದೈವನೀತಿ ಲಂಚದೋಪಾದಿ ಕಾಣಿಕೆ ತರಬೇಡ, ಆತನು ಅವುಗಳನ್ನು ಅಂಗೀಕರಿಸುವುದಿಲ್ಲ ಅಕ್ರಮವಾದ ಬಲಿಯ ಮೇಲೆ ಮನಸ್ಸಿಡಬೇಡ, ಆತ ನ್ಯಾಯಾಧೀಶ, ಆತನಲ್ಲಿ ಮುಖದಾಕ್ಷಿಣ್ಯವಿಲ್ಲ. ಬಡವನ ವಿರೋಧವಾಗಿ ಯಾರನ್ನೂ ಅಂಗೀಕರಿಸನಾತ ಅನ್ಯಾಯಕ್ಕೀಡಾದವನ ಮೊರೆಯನು ಆಲಿಸುವನಾತ. ತಿರಸ್ಕರಿಸನಾತ ಯಾವ ದಿಕ್ಕುದೆಸೆಯಿಲ್ಲದವರ ವಿನಂತಿಯನು ತನ್ನ ಸ್ಥಿತಿಯನು ತೋಡಿಕೊಳ್ಳುವ ವಿಧವೆಯನು. ದೇವರ ಸುಚಿತ್ತದಂತೆ ಸೇವೆ ಮಾಡುವವನು ಅಂಗೀಕೃತನಾಗುವನು ಇಂಥವನ ಪ್ರಾರ್ಥನೆ ಮುಟ್ಟುವುದು ಗಗನಮಂಡಲವನು. ಮೇಘಮಂಡಲವನು ದಾಟುವುದು ದೀನನ ಪ್ರಾರ್ಥನೆ ಅವನಿಗೆ ಉಪಶಮನವೇ ಇರದು ಅದು ದೇವರ ಸನ್ನಿಧೀ ಸೇರುವವರೆಗೆ. ಅವನು ಅಲ್ಲಿಂದ ಏಳುವುದಿಲ್ಲ ಮಹೋನ್ನತನು ಸದುತ್ತರ ಕೊಡುವವರೆಗೆ ಆತ ಉತ್ತರ ಕೊಡುವುದು ನ್ಯಾಯತೀರಿಸಿದ ನಂತರವೆ.

ಕೀರ್ತನೆ - 34: 1-2, 16-19
1 : ಪ್ರಭುವನು ನಾ ಕೊಂಡಾಡುವೆ ಎಲ್ಲ ಕಾಲದೊಳು / ಆತನ ಸ್ತುತಿ ಸದಾ ಇಹುದು ನನ್ನ ಬಾಯೊಳು //
2 : ಪ್ರಭುವಿನಲ್ಲಿದೆ ನನ್ನ ಮನದಭಿಮಾನ / ದೀನರಿದನು ಕೇಳಿ, ಪಡೆಯಲಿ ಸುಮ್ಮಾನ //
16 : ದುರ್ಜನರಿಗಾದರೋ ಪ್ರಭು ವಿಮುಖನು / ಅವರ ಹೆಸರನು ಧರೆಯಿಂದ ಅಳಿಸುವನು //
17 : ಕಿವಿಗೊಡುವನು ಪ್ರಭು ಸಜ್ಜನರ ಮೊರೆಗೆ / ನೆರವೀವನವರ ಕಷ್ಟನಿವಾರಣೆಗೆ //
18 : ಸನಿಹದಲ್ಲಿಹನು ಪ್ರಭು ಭಗ್ನ ಹೃದಯಿಗಳಿಗೆ / ಉದ್ಧಾರಕನಾತನು ಮನಸ್ಸು ಕುಗ್ಗಿದವರಿಗೆ //
19 : ಸಜ್ಜನನಿಗೊದಗುವ ಸಂಕಟಗಳು ವಿಪರೀತ / ಪ್ರಭುವೆಲ್ಲವನು ನಿವಾರಿಸುವುದು ನಿಶ್ಚಿತ //

2ನೇ ವಾಚನ - 2 ತಿಮೋ 4:6-9,16-18
ನಾನು ಯಜ್ಞಪಶುವಾಗಿ ಅರ್ಪಿತನಾಗುವ ಸಮಯವು ಬಂದಿದೆ. ಈ ಲೋಕದಿಂದ ತೆರಳಬೇಕಾದ ಕಾಲವೂ ಕೂಡಿಬಂದಿದೆ ಬಾಳಿನ ಸ್ಪರ್ಧೆಯಲ್ಲಿ ಭಾಗವಹಿಸಿದ್ದೇನೆ. ನನ್ನ ಓಟವನ್ನು ಮುಗಿಸಿದ್ದೇನೆ. ವಿಶ್ವಾಸವನ್ನು ಕಾಪಾಡಿಕೊಂಡಿದ್ದೇನೆ. ಇನ್ನು ನನಗೆ ಉಳಿದಿರುವುದು ಒಂದೇ: ಸಜ್ಜನರಿಗೆ ಸಲ್ಲುವಂಥ ಜಯಮಾಲೆ ನನಗೀಗ ಸಿದ್ಧವಾಗಿದೆ. ಅದನ್ನು ನೀತಿವಂತ ನ್ಯಾಯಾಧಿಪತಿಯಾದ ಪ್ರಭು ಆ ದಿನದಂದು ನನಗೆ ಕೊಡುವರು; ನನಗೆ ಮಾತ್ರವಲ್ಲ, ಅವರ ಪ್ರತ್ಯಕ್ಷತೆಯನ್ನು ಪ್ರೀತಿಯಿಂದ ನಿರೀಕ್ಷಿಸುತ್ತಿರುವ ಎಲ್ಲರಿಗೂ ಕೊಡುವರು. ನನ್ನ ಬಳಿಗೆ ಸಾಧ್ಯವಾದಷ್ಟು ಬೇಗನೆ ಬರುವುದಕ್ಕೆ ಪ್ರಯತ್ನಿಸು. ನಾನು ಮೊದಲನೆಯ ಸಾರಿ ವಿಚಾರಣೆಗೆ ಒಳಗಾಗಿ ಪ್ರತಿವಾದಿಸುತ್ತಿದ್ದಾಗ ಯಾರೂ ನನ್ನ ಪರವಾಗಿ ನಿಲ್ಲಲಿಲ್ಲ. ಎಲ್ಲರೂ ನನ್ನನ್ನು ಕೈಬಿಟ್ಟರು. ದೇವರು ಅವರನ್ನು ಕ್ಷಮಿಸಲಿ ಆದರೆ ಪ್ರಭು ನನಗೆ ಬೆಂಬಲವಾಗಿ ನಿಂತರು. ನಾನು ಶುಭಸಂದೇಶವನ್ನು ಸಂಪೂರ್ಣವಾಗಿ ಸಾರುವಂತೆಯೂ ಅನ್ಯಧರ್ಮಿಯರೆಲ್ಲರು ಅದನ್ನು ಕೇಳುವಂತೆಯೂ ಮಾಡಿದರು. ಅಲ್ಲದೆ, ಸಿಂಹದ ಬಾಯಿಂದಲೂ ನನ್ನನ್ನು ಸಂರಕ್ಷಿಸಿದರು. ಪ್ರಭು ನನ್ನನ್ನು ಸಕಲ ಕೇಡುಗಳಿಂದ ರಕ್ಷಿಸಿ, ತಮ್ಮ ಸ್ವರ್ಗಸಾಮ್ರಾಜ್ಯಕ್ಕೆ ನನ್ನನ್ನು ಸುರಕ್ಷಿತವಾಗಿ ಸೇರಿಸುವರು. ಯುಗಯುಗಾಂತರಕ್ಕೂ ಅವರಿಗೆ ಮಹಿಮೆ ಸಲ್ಲಲಿ. ಆಮೆನ್.

ಶುಭಸಂದೇಶ - ಲೂಕ 18: 9-14
ಕೆಲವರು ತಾವೇ ಸತ್ಪುರುಷರು ಎಂದುಕೊಂಡು ಇತರರನ್ನು ತುಚ್ಛವಾಗಿ ಕಾಣುತ್ತಿದ್ದರು. ಅಂಥವರನ್ನು ಉದ್ದೇಶಿಸಿ ಯೇಸುಸ್ವಾಮಿ ಈ ಸಾಮತಿಯನ್ನು ಹೇಳಿದರು: “ಒಮ್ಮೆ, ಇಬ್ಬರು ಪ್ರಾರ್ಥನೆಮಾಡಲು ದೇವಾಲಯಕ್ಕೆ ಹೋದರು. ಇವರಲ್ಲಿ ಒಬ್ಬನು ಫರಿಸಾಯನು, ಇನ್ನೊಬ್ಬನು ಸುಂಕವಸೂಲಿಯವನು. ಫರಿಸಾಯನು ಮುಂದೆ ನಿಂತು ತನ್ನಷ್ಟಕ್ಕೆ ಹೀಗೆ ಪ್ರಾರ್ಥನೆಮಾಡಿದ: ‘ಓ ದೇವರೇ, ನಾನು ಇತರರ ಹಾಗೆ ಅಲ್ಲ. ಅವರೋ ಕೊಳ್ಳೆಗಾರರು, ಅನ್ಯಾಯಗಾರರು, ವ್ಯಭಿಚಾರಿಗಳು. ನಾನು ಈ ಸುಂಕದವನಂತೆಯೂ ಅಲ್ಲ. ಇದಕ್ಕಾಗಿ ನಿಮಗೆ ಧನ್ಯವಾದವನ್ನು ಸಲ್ಲಿಸುತ್ತೇನೆ. ನಾನಾದರೋ ವಾರಕ್ಕೆ ಎರಡು ದಿನ ಉಪವಾಸವ್ರತವನ್ನು ಕೈಗೊಳ್ಳುತ್ತೇನೆ; ನನ್ನ ಆದಾಯದಲ್ಲಿ ಹತ್ತನೆಯ ಒಂದು ಪಾಲನ್ನು ನಿಮಗೆ ಸಲ್ಲಿಸುತ್ತೇನೆ. “ಸುಂಕವಸೂಲಿಯವನಾದರೋ ದೂರದಲ್ಲೇ ನಿಂತು, ತಲೆಯನ್ನೂ ಮೇಲಕ್ಕೆ ಎತ್ತದೆ, ‘ಓ ದೇವರೇ, ನಾನು ಪಾಪಿ; ನನಗೆ ದಯೆತೋರಿ,’ ಎನ್ನುತ್ತಾ ಎದೆಬಡಿದುಕೊಂಡ. “ದೇವರ ದೃಷ್ಟಿಯಲ್ಲಿ ಪಾಪಮುಕ್ತನಾಗಿ ಮನೆಗೆ ತೆರಳಿದವನು ಈ ಸುಂಕ ವಸೂಲಿಯವನು, ಆ ಫರಿಸಾಯನಲ್ಲ, ಎಂದು ನಿಮಗೆ ನಿಶ್ಚಯವಾಗಿ ಹೇಳುತ್ತೇನೆ. 
-----
ಚಿಂತನೆ
ಆತ್ಮಸ್ತುತಿ ಹಾಗೂ ಪರನಿಂದೆಗಳಂಥ ಅನಿಷ್ಟಗಳು ಬೇರೆ ಯಾವುವೂ ಇಲ್ಲ. ತನ್ನನ್ನೇ ತಾನು ಪ್ರೀತಿಸುವ ಮನುಷ್ಯನು ಯಾರ ವೈರಿಯೂ ಅಲ್ಲ, ಅವನು ತನ್ನ ವೈರಿಯೇ ಆಗಿರುತ್ತಾನೆ. ತನ್ನದೆಲ್ಲವೂ ಸರಿಯೆನ್ನುವ ಮನುಷ್ಯನು ತನ್ನ ತಪ್ಪುಗಳಿಗೇ ಅಂಟಿಕೊಂಡಿರುತ್ತಾನೆ. ಅವರಿಗೆ ತನ್ನ ಡೊಂಕುಗಳೆಲ್ಲವೂ ನೇರವೆಂಬಂತೆ ಕಾಣುತ್ತವೆ. ಅವನು ತನ್ನ ತಪ್ಪು ವಿಚಾರಗಳೇ ಸರಿಯೆಂದು ಸಾಧಿಸುತ್ತ ಪರಿಹಾಸ್ಯದ ವಸ್ತುವಾಗುತ್ತಾನೆ. ಪ್ರತಿಯೊಬ್ಬರಲ್ಲು ಆತ್ಮಸ್ತುತಿ ಇರಬೇಕು. ಆದರೆ, ಅದು ಒಂದು ಪರಿಮಿತಿಯೊಳಗೆ ಇರಬೇಕು, ಅದು ಅತಿಯಾಗಬಾರದು. ಅತಿಯಾದರೆ ಅಮೃತಕೂಡ ವಿಷವೆನಿಸುತ್ತದೆ. 

ದೇವಾಲಯಕ್ಕೆ ಹೋದ ಫರಿಸಾಯನು ಪ್ರಾರ್ಥಿಸಲು ಮರೆತ ಹಾಗೂ ತನ್ನ ಬಗ್ಗೆ ದೇವರಿಗೆ ವರದಿ ಒಪ್ಪಿಸಲು ಪ್ರಾರಂಭಿಸಿದ. ತನ್ನ ಆತ್ಮಸ್ತುತಿ ಮಾಡುತ್ತಾ ಸುಂಕವಸೂಲಿಯವನನ್ನು ಖಂಡಿಸಿದ. ಈ ಪರಿಸಾಯ ಒಬ್ಬ ಸ್ವಾರ್ಥಿ, ಕಪಟಿಯಾಗಿದ್ದ. ಕಾನೂನು ಪರಿಪಾಲನೆಯೇ ಧರ್ಮವೆಂದುಕೊಂಡಿದ್ದ. ಆದರೆ ದೇವರು ಆತನ ಪ್ರಾರ್ಥನೆಯನ್ನು ಸ್ವೀಕರಿಸಲಿಲ್ಲ. ಬದಲಾಗಿ ದೇವರ ಸನ್ನಿಧಿಯಲ್ಲಿ ತನ್ನ ಪಾಪಗಳನ್ನು ಒಪ್ಪಿಕೊಂಡು ದೀನತೆಯನ್ನು ಮೆರೆದ ಸುಂಕದವನ ಪ್ರಾರ್ಥನೆ ದೇವರಿಗೆ ಮೆಚ್ಚುಗೆಯಾಯಿತು. ದೇವಾಲಯಕ್ಕೆ ಹೋಗುವ ಉದ್ದೇಶ ಮತ್ತು ನಮ್ಮ ಪ್ರಾರ್ಥನೆಯ ವಿಷಯ, ಹೂರಣದ ಬಗ್ಗೆ ಆತ್ಮಾವಲೋಕನ ಮಾಡಿಕೊಳ್ಳಬೇಕಿದೆ.

ಸಾಧಾರಣ ಕಾಲದ ಇಪ್ಪತ್ತೊಂಬತ್ತನೇ ವಾರ ಶನಿವಾರ

26/ಹಸಿರು/ಶನಿ
1ನೇ ವಾಚನ - ರೋಮ 8: 1-11
ಕೀರ್ತನೆ - 24: 1-6
ಶುಭಸಂದೇಶ - ಲೂಕ 13: 1-9

1ನೇ ವಾಚನ - ರೋಮ 8: 1-11
ಆದುದರಿಂದ ಈಗ ಕ್ರಿಸ್ತಯೇಸುವಿನಲ್ಲಿ ಇರುವವರಿಗೆ ದಂಡನಾತೀರ್ಪು ಇರುವುದಿಲ್ಲ. ಏಕೆಂದರೆ ಕ್ರಿಸ್ತಯೇಸುವಿನಲ್ಲಿ ಇರುವವರಿಗೆ ಜೀವವನ್ನು ತರುವ ಪವಿತ್ರಾತ್ಮ ನಿಯಮವು ಪಾಪ-ಮರಣಗಳ ನಿಯಮದಿಂದ ನಿನ್ನನ್ನು ಬಿಡುಗಡೆ ಮಾಡಿದೆ. ಶರೀರ ಸ್ವಭಾವದ ಬಲಹೀನತೆಯ ನಿಮಿತ್ತ ಧರ್ಮಶಾಸ್ತ್ರಕ್ಕೆ ಯಾವುದು ಸಾಧ್ಯವಾಗದೆ ಹೋಯಿತೋ, ಅದು ದೇವರಿಗೆ ಸಾಧ್ಯವಾಯಿತು. ಪಾಪ ಪರಿಹಾರಕ್ಕಾಗಿ ತಮ್ಮ ಸ್ವಂತ ಪುತ್ರನನ್ನು ಪಾಪಾಧೀನವಾದ ನಮ್ಮ ಸ್ವಭಾವದಂಥ ಶರೀರ ಸ್ವಭಾವದಲ್ಲಿ ಕಳುಹಿಸಿಕೊಟ್ಟರು. ಆ ಸ್ವಭಾವದಲ್ಲೇ ಪಾಪಕ್ಕೆ ಮರಣ ದಂಡನೆಯನ್ನು ವಿಧಿಸಿದರು. ಶರೀರ ಸ್ವಭಾವಕ್ಕೆ ಅನುಸಾರವಾಗಿ ನಡೆಯದೆ ಪವಿತ್ರಾತ್ಮ ಅವರ ಚಿತ್ತಕ್ಕನುಸಾರವಾಗಿ ನಡೆಯುವ ನಮ್ಮಲ್ಲಿ ಧರ್ಮಶಾಸ್ತ್ರದ ನೀತಿನಿಯಮಗಳು ನೆರವೇರುವಂತೆ ದೇವರು ಹೀಗೆ ಮಾಡಿದರು. ಶರೀರ ಸ್ವಭಾವಕ್ಕೆ ಅನುಸಾರವಾಗಿ ನಡೆಯುವವರು ಶರೀರಕ್ಕೆ ಸಂಬಂಧಪಟ್ಟ ವಿಷಯಗಳಲ್ಲಿ ಮಗ್ನರಾಗಿರುತ್ತಾರೆ. ಪವಿತ್ರಾತ್ಮ ಅವರಿಗೆ ಅನುಸಾರವಾಗಿ ನಡೆಯುವವರಾದರೋ ಆತ್ಮಕ್ಕೆ ಸಂಬಂಧಪಟ್ಟ ವಿಷಯಗಳಲ್ಲಿ ಮಗ್ನರಾಗಿರುತ್ತಾರೆ. ಶರೀರ ಸ್ವಭಾವದಲ್ಲೆ ಮಗ್ನರಾಗಿರುವುದರ ಪರಿಣಾಮ ಮರಣ; ಪವಿತ್ರಾತ್ಮ ಅವರಲ್ಲೇ ಮಗ್ನರಾಗಿರುವುದರ ಪರಿಣಾಮ ಸಜ್ಜೀವ ಮತ್ತು ಶಾಂತಿಸಮಾಧಾನ. ಶರೀರ ಸ್ವಭಾವದಲ್ಲೇ ಮಗ್ನವಾಗಿರುವ ಮನಸ್ಸು ದೇವರಿಗೆ ಶತ್ರು. ಅಂಥ ಮನಸ್ಸು ದೇವರ ನಿಯಮಕ್ಕೆ ಮಣಿಯುವುದಿಲ್ಲ. ಮಣಿಯಲು ಸಾಧ್ಯವೂ ಇಲ್ಲ. ಶರೀರ ಸ್ವಭಾವಕ್ಕೆ ಅನುಸಾರವಾಗಿ ನಡೆಯುವವರು ದೇವರನ್ನು ಮೆಚ್ಚಿಸಲು ಸಾಧ್ಯವೇ ಇಲ್ಲ. ನಿಮ್ಮಲ್ಲಿ ನಿಜವಾಗಿಯೂ ದೇವರ ಆತ್ಮವು ನೆಲಸಿದ್ದರೆ ನೀವು ಶರೀರ ಸ್ವಭಾವಕ್ಕೆ ಅನುಸಾರವಾಗಿ ಜೀವಿಸದೆ ಪವಿತ್ರಾತ್ಮ ಅವರ ಚಿತ್ತಕ್ಕೆ ಅನುಸಾರವಾಗಿ ಜೀವಿಸುತ್ತೀರಿ. ಯಾರಲ್ಲಿ ಕ್ರಿಸ್ತಯೇಸುವಿನ ಆತ್ಮ ಇಲ್ಲವೋ ಅಂಥವನು ಕ್ರಿಸ್ತಯೇಸುವಿಗೆ ಸೇರಿದವನಲ್ಲ. ಆದರೆ ಕ್ರಿಸ್ತಯೇಸು ನಿಮ್ಮಲ್ಲಿ ವಾಸಿಸಿದರೆ, ಪಾಪದ ನಿಮಿತ್ತ ನಿಮ್ಮ ಶರೀರ ಮರಣಕ್ಕೆ ಗುರಿಯಾಗಿದ್ದರೂ ನೀವು ದೇವರೊಡನೆ ಸತ್ಸಂಬಂಧವನ್ನು ಪಡೆದಿರುವುದರಿಂದ ಪವಿತ್ರಾತ್ಮ ನಿಮಗೆ ಜೀವಾಳವಾಗಿರುತ್ತಾರೆ. ಯೇಸುವನ್ನು ಮರಣದಿಂದ ಎಬ್ಬಿಸಿದ ದೇವರ ಆತ್ಮ ನಿಮ್ಮಲ್ಲಿ ನೆಲೆಗೊಂಡಿರಲಿ. ಆಗ ಕ್ರಿಸ್ತಯೇಸುವನ್ನು ಮರಣದಿಂದ ಎಬ್ಬಿಸಿದ ದೇವರು ನಿಮ್ಮಲ್ಲಿ ನೆಲೆಗೊಂಡಿರುವ ಆತ್ಮನ ಮುಖಾಂತರ ನಿಮ್ಮ ನಶ್ವರ ದೇಹಗಳಿಗೂ ಜೀವವನ್ನೀಯುವರು.

ಕೀರ್ತನೆ - 24: 1-6
1 : ಪೊಡವಿಯೂ ಅದರಲ್ಲಿರುವುದೆಲ್ಲವೂ ಪ್ರಭುವಿನದೇ / ಜಗವೂ ಅದರ ಜೀವಜಂತುಗಳೆಲ್ಲವೂ ಆತನದೇ // 
2 : ಕಡಲನು ತಳಪಾಯವನಾಗಿಸಿದವನು ಆತನೆ / ಜಲರಾಶಿ ನಡುವೆ ಅದನು ಸ್ಥಿರಗೊಳಿಸಿದವನಾತನೆ // 
3 : ಪ್ರಭುವಿನ ಶಿಖರವನು ಏರಬಲ್ಲವನಾರು? / ಆ ನಿವಾಸದಲಿ ನಿಲ್ಲಲು ಯೋಗ್ಯನಾರು? // 
4 : ಅಂಥವನಿರಬೇಕು ಶುದ್ಧ ಹಸ್ತನು, ಸುಮನಸ್ಕನು / ಅನಾಚಾರಕೆ, ಅಪಮಾಣಿಕತೆಗೆ ಒಲಿಯನವನು // 
5 : ಲಭಿಸುವುದಾತನಿಗೆ ಶುಭ ಪ್ರಭುವಿನಿಂದ / ನೀತಿಯ ಸತ್ಫಲ ರಕ್ಷಕ ದೇವನಿಂದ // 
6 : ಇಂಥವರೆ ದೇವರ ದರ್ಶನಾಭ್ಯರ್ಥಿಗಳು / ಇಂಥವರೆ ಯಕೋಬ ದೇವನ ಭಕ್ತಾದಿಗಳು //

ಶುಭಸಂದೇಶ - ಲೂಕ 13: 1-9
ಅದೇ ಸಮಯಕ್ಕೆ ಅಲ್ಲಿದ್ದವರಲ್ಲಿ ಕೆಲವರು ಯೇಸುಸ್ವಾಮಿಯ ಬಳಿಗೆ ಬಂದು, ಬಲಿಯರ್ಪಿಸುತ್ತಾ ಇದ್ದ ಗಲಿಲೇಯದವರನ್ನು ಪಿಲಾತನು ಕೊಲ್ಲಿಸಿದನೆಂಬ ವಿಷಯವನ್ನು ತಿಳಿಸಿದರು. ಅದಕ್ಕೆ ಯೇಸು, “ಇಂಥಾ ಕೊಲೆಗೆ ಈಡಾದವರು ಇತರ ಎಲ್ಲ ಗಲಿಲೇಯದವರಿಗಿಂತ ಹೆಚ್ಚು ಪಾಪಿಗಳೆಂದು ಭಾವಿಸುತ್ತೀರೋ? ಹಾಗೆ ಭಾವಿಸಕೂಡದು. ನೀವು ಪಶ್ಚಾತ್ತಾಪಪಟ್ಟು ಪಾಪಕ್ಕೆ ವಿಮುಖರಾಗಿ ದೇವರಿಗೆ ಅಭಿಮುಖರಾಗದೆ ಹೋದರೆ, ಅವರ ಹಾಗೆಯೇ ನೀವೂ ನಾಶವಾಗುವಿರಿ. ಶಿಲೊವಾ ಎಂಬಲ್ಲಿ ಗೋಪುರ ಕುಸಿದು ಬಿದ್ದಾಗ ಹದಿನೆಂಟು ಜನ ಸತ್ತರಲ್ಲವೆ? ಅವರು ಜೆರುಸಲೇಮಿನಲ್ಲಿ ವಾಸವಾಗಿರುವ ಇತರ ಎಲ್ಲಾ ಜನರಿಗಿಂತ ಹೆಚ್ಚು ದೋಷಿಗಳಾಗಿದ್ದರೆಂದು ಭಾವಿಸುತ್ತೀರೋ? ಹಾಗಲ್ಲ, ನೀವು ಪಶ್ಚಾತ್ತಾಪಪಟ್ಟು ಪಾಪಕ್ಕೆ ವಿಮುಖರಾಗಿ ದೇವರಿಗೆ ಅಭಿಮುಖರಾಗದಿದ್ದರೆ, ಅವರ ಹಾಗೆಯೇ ನೀವೂ ನಾಶವಾಗುವಿರಿ,” ಎಂದರು. ಅನಂತರ ಯೇಸುಸ್ವಾಮಿ ಈ ಸಾಮತಿಯನ್ನು ಹೇಳಿದರು: “ಒಬ್ಬನು ತನ್ನ ದ್ರಾಕ್ಷಿ ತೋಟದಲ್ಲಿ ಒಂದು ಅಂಜೂರದ ಮರವನ್ನು ನೆಡಿಸಿದ್ದ. ಒಮ್ಮೆ ಅವನು ಬಂದು ಅದರಲ್ಲಿ ಹಣ್ಣನ್ನು ಹುಡುಕಲು ಒಂದೂ ಕಾಣಿಸಲಿಲ್ಲ. ತೋಟಗಾರನನ್ನು ಕರೆದು, ‘ನೋಡು, ಮೂರು ವರ್ಷಗಳಿಂದ ಈ ಮರದಲ್ಲಿ ಹಣ್ಣನ್ನು ಹುಡುಕುತ್ತಾ ಇದ್ದೇನೆ. ಒಂದಾದರೂ ಕಂಡುಬರಲಿಲ್ಲ. ಇನ್ನು ಇದನ್ನು ಕಡಿದು ಹಾಕು. ಭೂಮಿಗೆ ಭಾರವಾಗಿ ಅದರ ಸಾರವನ್ನು ಇದೇಕೆ ವ್ಯರ್ಥ ಮಾಡಬೇಕು?’ ಎಂದು ಹೇಳಿದ. ಅದಕ್ಕೆ ತೋಟಗಾರನು, ‘ಸ್ವಾವಿೂ, ಈ ಒಂದು ವರ್ಷ ಇದು ಹಾಗೆಯೇ ಇರಲಿ ಬಿಡಿ. ಅಷ್ಟರಲ್ಲಿ ಸುತ್ತಲೂ ಪಾತಿತೆಗೆದು ಗೊಬ್ಬರ ಹಾಕುತ್ತೇನೆ. ಮುಂದಿನ ವರ್ಷ ಹಣ್ಣು ಬಿಟ್ಟರೆ ಸರಿ; ಇಲ್ಲದಿದ್ದರೆ ಕಡಿದುಹಾಕೋಣ,’ ಎಂದನು.”
-------

ಚಿಂತನೆ

ಯೆಹೂದ್ಯರಲ್ಲಿ ಒಂದು ತಪ್ಪು ಗ್ರಹಿಕೆ ಇತ್ತು. ಬಡತನ, ಕಾಯಿಲೆ, ಅಪಘಾತಗಳು ಮಾಡಿದ ಪಾಪಕ್ಕೆ ದೇವರ ಶಿಕ್ಷೆ ಎಂದು ಭಾವಿಸಿದ್ದರು. ಗಲೀಲೆಯ ಮತ್ತು ಜೆರುಸಲೇಮಿನ ನಿವಾಸಿಗಳು ತಮ್ಮನ್ನು ಉತ್ತಮರೆಂದು ಪರಿಗಣಿಸಿ ಶಿಲೊವಾದಲ್ಲಿ ಮೃತಹೊಂದಿದವರು ಪಾಪಿಗಳು ಎಂದು ಪರಿಗಣಿಸಿದ್ದರು. ಹಾಗಾಗಿ ಯೇಸು ಅಂಜೂರದ ಮರದ ಉದಾಹರಣೆಯ ಮೂಲಕ ಅವರ ಸಹನೆಗೂ ಮಿತಿಯಿದೆ ಎಂದು ತಿಳಿಸುತ್ತಾರೆ. ಫಲವನ್ನು ಕಾಣದೇ ಹೋದ ತೋಟಗಾರ ಮರವನ್ನು ಕಡಿಯಲು ಮುಂದಾಗುವಂತೆ ನಮ್ಮಲ್ಲಿ ಒಳ್ಳೆಯ ಫಲಗಳನ್ನು ಬಯಸುವ ದೇವರು ಸಹನೆಯಿಂದ ಕಾದಿದ್ದಾರೆ. ಪಾಪವನ್ನು ತೊರೆದು, ದೇವರ ತತ್ವಗಳ ಪ್ರಕಾರ ಜೀವಿಸದೆ ಹೋದರೆ ನ್ಯಾಯ ತೀರ್ಪಿನ ದಿನ ದಂಡನೆಗೆ ಗುರಿಯಾಗುವುದಾಗಿ ಎಚ್ಚರಿಸುವುದರ ಜೊತೆಗೆ ದೇವರ ನಿರೀಕ್ಷೆಯಂತೆ ಜೀವಿಸಲು ಕರೆನೀಡುತ್ತಿದ್ದಾರೆ.

ಸಾಧಾರಣ ಕಾಲದ ಇಪ್ಪತ್ತೊಂಬತ್ತನೇ ವಾರ ಶುಕ್ರವಾರ

25/ಹಸಿರು/ಶುಕ್ರ
1ನೇ  ವಾಚನ - ರೋಮ 7:18-25
ಕೀರ್ತನೆ - 119: 66, 68, 76-77, 93-94
ಶುಭಸಂದೇಶ - ಲೂಕ 12: 54-59

1ನೇ  ವಾಚನ - ರೋಮ 7:18-25
ನನ್ನಲ್ಲಿ, ಅಂದರೆ ನನ್ನ ಶಾರೀರಕ ಸ್ವಭಾವದಲ್ಲಿ ಒಳ್ಳೆಯತನವೆಂಬುದೇನೂ ನೆಲೆಗೊಂಡಿಲ್ಲ. ಇದು ನನಗೆ ಗೊತ್ತು. ಏಕೆಂದರೆ, ಒಳಿತನ್ನು ಮಾಡಬೇಕೆಂಬ ಮನಸ್ಸು ನನಗಿದ್ದರೂ ಅದನ್ನು ಮಾಡಲು ನನ್ನಿಂದ ಆಗುತ್ತಿಲ್ಲ. ನಾನು ಬಯಸುವ ಒಳ್ಳೆಯದನ್ನು ಮಾಡದೆ, ನಾನು ಬಯಸದ ಕೆಟ್ಟದ್ದನ್ನೇ ಮಾಡುವವನಾಗಿದ್ದೇನೆ. ನಾನು ಬಯಸದೆ ಇರುವುದನ್ನೇ ಮಾಡಿದರೆ ಅದನ್ನು ಮಾಡಿದವನು ನಾನಲ್ಲ, ನನ್ನಲ್ಲಿ ನೆಲೆಗೊಂಡಿರುವ ಪಾಪವೇ ಅದನ್ನು ಮಾಡಿತು. ನಾನು ಒಳಿತನ್ನು ಮಾಡಬಯಸಿದರೂ ಕೇಡು ನನ್ನ ಕೈಬಿಡುತ್ತಿಲ್ಲ. ಇದೇ ಒಂದು ನಿಯಮವಾಗಿ ನನ್ನಲ್ಲಿ ಕಂಡುಬರುತ್ತದೆ. ನನ್ನ ಅಂತರಂಗದಲ್ಲಿ ದೈವನಿಯಮವನ್ನು ಕುರಿತು ಆನಂದಿಸುತ್ತೇನೆ. ನನ್ನ ಇಂದ್ರಿಯಗಳಲ್ಲಿಯಾದರೋ ಬೇರೊಂದು ನಿಯಮವನ್ನು ಕಾಣುತ್ತೇನೆ. ಇದು ನನ್ನ ಅಂತರಂಗ ನಿಯಮಕ್ಕೆ ತದ್ವಿರುದ್ಧವಾಗಿ ಕಾದಾಡುತ್ತದೆ; ನನ್ನ ಇಂದ್ರಿಯಗಳಲ್ಲಿ ನೆಲೆಗೊಂಡಿರುವ ಪಾಪನಿಯಮಕ್ಕೆ ನನ್ನನ್ನು ಕೈದಿಯನ್ನಾಗಿಸುತ್ತದೆ. ಅಯ್ಯೋ, ನಾನೆಂಥ ನಿರ್ಭಾಗ್ಯನು! ಸಾವಿನ ದವಡೆಗೆ ಸಿಕ್ಕಿರುವ ಈ ಶರೀರದಿಂದ ನನ್ನನ್ನು ಬಿಡಿಸುವವರು ಯಾರು? ದೇವರೇ; ನಮ್ಮ ಪ್ರಭು ಯೇಸುಕ್ರಿಸ್ತರ ಮುಖಾಂತರ ಅವರಿಗೆ ಕೃತಜ್ಞತೆ ಸಲ್ಲಲಿ ! ನನ್ನಷ್ಟಕ್ಕೆ ನಾನೇ ದೇವರ ನಿಯಮವನ್ನು ಮನಃಪೂರ್ವಕವಾಗಿ ಪಾಲಿಸಲು ಬಯಸುತ್ತೇನೆ. ನನ್ನ ಈ ದೇಹದಲ್ಲಾದರೋ ಪಾಪದ ನಿಯಮಕ್ಕೆ ಬದ್ಧನಾಗಿದ್ದೇನೆ.

ಕೀರ್ತನೆ - 119: 66, 68, 76-77, 93-94
66 : ಸುಜ್ಞಾನ ವಿವೇಕಗಳನು ಕಲಿಸೆನಗೆ / ನಿನ್ನಾಜ್ಞೆಗಳಲಿ ನನಗಿದೆ ನಂಬಿಕೆ //
68 : ಒಳ್ಳೆಯವ, ಒಳ್ಳೆಯದ ಗೈಕೊಳ್ಳುವ ನೀನು | ಬೋಧಿಸೆನಗೆ ನಿನ್ನಾ ನಿಬಂಧನೆಗಳನು ||
76 : ನಿನ್ನ ದಾಸನಿಗೆ ನೀನು ನುಡಿದ ಪ್ರಕಾರ / ಸಾಂತ್ವನ ನೀಡಲಿ ಎನಗೆ ನಿನ್ನಚಲ ಒಲವರ 
77 : ನಾ ಬದುಕುವಂತೆ ತೋರೆನಗೆ ನಿನ್ನ ದಯ / ನಿನ್ನ ಧರ್ಮಶಾಸ್ತ್ರ ನನಗೆ ಪರಮಪ್ರಿಯ
93 : ಮರೆಯೆ ನಾನೆಂದಿಗೂ ನಿನ್ನ ನಿಯಮಗಳನು / ಅವುಗಳಿಂದಲೇ ನನಗಿತ್ತೆ ನವಜೀವನವನು 
94 : ಉದ್ಧರಿಸೆನ್ನನು, ನಾನು ನಿನ್ನವನು / ನಿನ್ನ ನಿಯಮಗಳಲೇ ಆಸಕ್ತನು

ಶುಭಸಂದೇಶ - ಲೂಕ 12: 54-59
ಇದೂ ಅಲ್ಲದೆ ಯೇಸುಸ್ವಾಮಿ ಜನ ಸಮೂಹವನ್ನು ನೋಡಿ, “ಪಶ್ಚಿಮ ದಿಕ್ಕಿನಲ್ಲಿ ಮೋಡ ಏಳುವುದನ್ನು ನೀವು ನೋಡಿದ ಕೂಡಲೇ, ‘ಭಾರಿ ಮಳೆ ಬರುತ್ತದೆ’ ಎನ್ನುತ್ತೀರಿ; ಹಾಗೆಯೇ ಆಗುತ್ತದೆ. ದಕ್ಷಿಣ ದಿಕ್ಕಿನ ಗಾಳಿ ಬೀಸಿದಾಗ ಉರಿಬಿಸಿಲು ಎನ್ನುತ್ತೀರಿ; ಅಂತೆಯೇ ಇರುತ್ತದೆ. ಆಷಾಡಭೂತಿಗಳೇ, ಭೂಮ್ಯಾಕಾಶಗಳ ಲಕ್ಷಣಗಳನ್ನು ನೀವು ಸರಿಯಾಗಿ ಅರಿತುಕೊಳ್ಳಬಲ್ಲಿರಿ; ಆದರೆ ಪ್ರಸ್ತುತ ಕಾಲವನ್ನು ಅರ್ಥಮಾಡಿಕೊಳ್ಳಲಾರಿರಾ?  “ನ್ಯಾಯನಿರ್ಣಯವನ್ನು ನಿಮ್ಮಲ್ಲಿಯೇ ನೀವು ಏಕೆ ಮಾಡಿಕೊಳ್ಳಬಾರದು? ನೀನು ನ್ಯಾಯಾಧಿಪತಿಯ ಬಳಿಗೆ ಹೋಗಬೇಕಾಗಿ ಬಂದಲ್ಲಿ, ದಾರಿಯಲ್ಲೇ ನಿನ್ನ ವಿರೋಧಿಯೊಡನೆ ವ್ಯಾಜ್ಯ ತೀರಿಸಿಕೊಳ್ಳಲು ಪ್ರಯತ್ನಿಸು. ಇಲ್ಲದಿದ್ದರೆ ಅವನು ನಿನ್ನನ್ನು ನ್ಯಾಯಾಧಿಪತಿಯ ಮುಂದೆ ಎಳೆದೊಯ್ಯಬಹುದು; ನ್ಯಾಯಾಧಿಪತಿ ನಿನ್ನನ್ನು ಸೆರೆಯ ಅಧಿಕಾರಿಯ ಕೈಗೊಪ್ಪಿಸಬಹುದು. ಸೆರೆ ಅಧಿಕಾರಿ ನಿನ್ನನ್ನು ಸೆರೆಮನೆಯಲ್ಲಿ ಹಾಕಬಹುದು. ಅಲ್ಲಿಂದ ನೀನು ಹೊರಗೆ ಬರಬೇಕಾದರೆ ಕಡೇ ಕಾಸನ್ನೂ ಬಿಡದೆ ಎಲ್ಲವನ್ನೂ ಸಲ್ಲಿಸಬೇಕಾಗುವುದೆಂಬುದು ನಿಶ್ಚಯ,” ಎಂದರು. 
-----
ಚಿಂತನೆ
ಈ ಆಧುನಿಕ ಜಗತಿನಲ್ಲಿ ಮಾನವ ಅನೇಕ ಕ್ಷೇತ್ರಗಳಲ್ಲಿ ಅಭಿವೃದ್ದಿ ಹೊಂದಿದ್ದಾನೆ. ತನ್ನ ಬುದ್ದಿ ಶಕ್ತಿಯಿಂದ ಜಗತ್ತಿನ ಯಾವುದೇ ಮೂಲೆಯಲ್ಲಿ ನಡೆಯುವ ಘಟನೆಗಳನ್ನು ತಾನು ಕೂತಲ್ಲಿಯೇ ಮೊಬೈಲ್, ಟಿ.ವಿ, ಅಂರ್ತಜಾಲದ ಮೂಲಕ ತಿಳಿದುಕೊಳ್ಳಬಲ್ಲ. ಪ್ರಾಪಂಚಿಕ ವಿಷಯಗಳಲ್ಲಿರುವಷ್ಟು ಜ್ಞಾನ ಆಧ್ಯಾತ್ಮಿಕತೆಯಲಿಲ್ಲ. ಯೇಸುವಿನ ಕಾಲದಲ್ಲೂ ಜನರು ಲೌಕಿಕ ವಿಷಯಗಳಲ್ಲಿ ತುಂಬಾ ಪ್ರಾವೀಣ್ಯತೆಯಿಂದ ಇದ್ದರು. ಮೋಡದ ಚಲನೆಯಿಂದ, ಗಾಳಿಯ ವೇಗದಿಂದ ಮಳೆಯಾಗುತ್ತದೋ ಇಲ್ಲವೋ ಎಂದು ಭವಿಷ್ಯ ನುಡಿಯುತ್ತಿದ್ದರು. ಆದರೆ ಯೇಸುವನ್ನು ರಕ್ಷಕನೆಂದು ಗುರುತಿಸಲು ವಿಫಲರಾದರು. ಹಳೇಯ ಒಡಂಬಡಿಕೆಯು `ರಕ್ಷಕ'ನ ಬಗ್ಗೆ ಸಾಕಷ್ಟು ಮಾಹಿತಿಯನ್ನು ನೀಡಿದ್ದರೂ ಅವರು ಗುರತಿಸಲಿಲ್ಲ. 400 ವರ್ಷಗಳಿಂದ ರಕ್ಷಕನ ನಿರೀಕ್ಷೆಯಲ್ಲಿದ್ದರೂ ರಕ್ಷಕನು ತಮ್ಮ ಮಧ್ಯೆ ನಡೆದಾಡುವಾಗ ಆತನನ್ನು ಗುರುತಿಸಲು ವಿಫಲರಾದರು. ಎಲ್ಲರೂ ದೇವರ ಸೃಷ್ಟಿಗಳು, ಸಹೋದರ ಸಹೋದರಿಯರಲ್ಲಿ ದೇವರನ್ನು ಗುರುತಿಸಬೇಕಿದೆ.

ಸಾಧಾರಣ ಕಾಲದ ಇಪ್ಪತ್ತೊಂಬತ್ತನೇ ವಾರ ಗುರುವಾರ

24/ಹಸಿರು/ಗುರು
1ನೇ ವಾಚನ - ರೋಮ 6: 19-23 
ಕೀರ್ತನೆ - 1: 1-4, 6
ಶುಭಸಂದೇಶ - ಲೂಕ 12: 49-53

1ನೇ ವಾಚನ - ರೋಮ 6: 19-23 
ಇದನ್ನು ಅರ್ಥಮಾಡಿಕೊಳ್ಳಲು ನೀವು ಅಶಕ್ತರಾಗಿರುವುದರಿಂದ ನಾನು ಹೀಗೆ ಸಾಮಾನ್ಯ ರೀತಿಯಲ್ಲಿ ಮಾತನಾಡುತ್ತಿದ್ದೇನೆ. ಹಿಂದೊಮ್ಮೆ ನೀವು ನಿಮ್ಮ ಇಂದ್ರಿಯಗಳನ್ನು ಹೆಚ್ಚುಹೆಚ್ಚಾಗಿ ಅಶ್ಲೀಲತೆಗೂ ಅಕ್ರಮಕ್ಕೂ ಗುಲಾಮರನ್ನಾಗಿಸಿದಿರಿ; ಈಗಲಾದರೋ ಪರಿಶುದ್ಧತೆಗೂ ಸತ್ಸಂಬಂಧಕ್ಕೂ ನಿಮ್ಮ ಇಂದ್ರಿಯಗಳನ್ನು ಅಧೀನರಾಗಿಸಿರಿ. ನೀವು ಪಾಪಕ್ಕೆ ಗುಲಾಮರಾಗಿದ್ದಾಗ ದೇವಸಂಬಂಧಕ್ಕೆ ಒಳಗಾಗಿರಲಿಲ್ಲ. ಯಾವ ಕೃತ್ಯಗಳ ವಿಷಯದಲ್ಲಿ ಈಗ ನೀವು ನಾಚಿಕೆಪಡುತ್ತೀರೋ ಅವುಗಳನ್ನು ನೀವು ಹಿಂದೆ ಮಾಡುತ್ತಾ ಬಂದಿರಿ. ಅವುಗಳಿಂದ ನಿಮಗೆ ದೊರೆತ ಪ್ರತಿಫಲವಾದರೂ ಏನು? ಮೃತ್ಯುವೇ ಅವುಗಳ ಅಂತ್ಯ ಫಲ. ಆದರೆ ನೀವು ಪಾಪದಿಂದ ಬಿಡುಗಡೆ ಹೊಂದಿರುವಿರಿ. ದೇವರಿಗೆ ದಾಸರಾಗಿರುವಿರಿ. ಇದರಿಂದ ನಿಮಗೆ ಸಿಕ್ಕಿರುವ ಪ್ರತಿಫಲ ಪರಿಶುದ್ಧ ಜೀವನ; ಅಂತಿಮವಾಗಿ ಅಮರ ಜೀವನ. ಮರಣವೇ ಪಾಪದ ವೇತನ; ನಮ್ಮ ಪ್ರಭು ಯೇಸುಕ್ರಿಸ್ತರಲ್ಲಿ ಇರುವ ನಿತ್ಯಜೀವವೇ ದೇವರ ಉಚಿತ ವರದಾನ.

ಕೀರ್ತನೆ - 1: 1-4, 6
1 : ದುರ್ಜನರ ಆಲೋಚನೆಯಂತೆ ನಡೆಯದೆ / ಪಾಪಾತ್ಮರ ಪಥದಲಿ ಕಾಲೂರದೆ / ಧರ್ಮನಿಂದಕರ ಕೂಟದಲಿ ಕೂರದೆ //
2 : ಪ್ರಭುವಿನ ಧರ್ಮಶಾಸ್ತ್ರದಲಿ ಹರ್ಷಗೊಳ್ಳುವವನಾರೋ - ಅವನೇ ಧನ್ಯನು/ ಹಗಲಿರುಳೆನ್ನದೆ ಅದನೆ ಧ್ಯಾನಿಸು ತಿರುವವನಾರೋ - ಅವನೇ ಧನ್ಯನು //
3 : ನದಿಯ ಬದಿಯಲೇ ಬೆಳೆದಿಹ ಮರದಂತೆ / ಸಕಾಲಕೆ ಫಲವೀವ ವೃಕ್ಷದಂತೆ / ಎಲೆಬಾಡದೆ ಪಸಿರಿರುವ ತರುವಂತೆ / ಸಿಗುವುದು ಅವನ ಕಾರ್ಯಗಳಿಗೆ ಸಫಲತೆ //
4 : ದುರುಳರಾದರೊ ತೂರಿ ಹೋಗುವರು / ಬಿರುಗಾಳಿಗೆ ತರಗೆಲೆಯಾಗುವರು //
5 : ಎಂದೇ ನಿಲ್ಲಲಾರರು ದುರುಳರು ನ್ಯಾಯಸ್ಥಾನದಲಿ / ಸದಸ್ಯರಾಗರು ಪಾಪಿಗಳು ಸಜ್ಜನರ ಸಂಘದಲಿ //
6 : ಸಜ್ಜನರ ಮಾರ್ಗಕ್ಕಿದೆ ಪ್ರಭುವಿನ ಪಾಲನ / ದುರ್ಜನರ ಮಾರ್ಗಕ್ಕಿದೆ ಸಂಪೂರ್ಣ ವಿನಾಶನ //

ಶುಭಸಂದೇಶ - ಲೂಕ 12: 49-53
“ನಾನು ಬಂದಿರುವುದು ಜಗತ್ತಿನಲ್ಲಿ ಬೆಂಕಿಯನ್ನು ಹೊತ್ತಿಸಲು. ಅದು ಈಗಾಗಲೇ ಉರಿಯುತ್ತಿರಬೇಕೆಂಬುದೇ ನನ್ನ ಬಯಕೆ. ಆದರೆ ನಾನು ಪಡೆಯಬೇಕಾದ ಶ್ರಮಾಸ್ನಾನ ಒಂದುಂಟು. ಅದು ಈಡೇರುವ ತನಕ ನನಗೆ ನೆಮ್ಮದಿಯಿಲ್ಲ. ನಾನು ಲೋಕಕ್ಕೆ ಸಮಾಧಾನವನ್ನು ತರಲು ಬಂದೆ ಎಂದು ಭಾವಿಸುತ್ತೀರೋ? ಇಲ್ಲ. ಭಿನ್ನಭೇದಗಳನ್ನು ಉಂಟುಮಾಡಲು ಬಂದೆನೆಂದು ನಿಮಗೆ ಒತ್ತಿ ಹೇಳುತ್ತೇನೆ. ಹೇಗೆಂದರೆ, ಒಂದೇ ಮನೆಯಲ್ಲಿರುವ ಐವರಲ್ಲಿ, ಇಂದಿನಿಂದ ಇಬ್ಬರಿಗೆ ವಿರುದ್ಧ ಮೂವರು, ಮೂವರಿಗೆ ವಿರುದ್ಧ ಇಬ್ಬರು ವಿಭಾಗವಾಗುವರು. ಮಗನಿಗೆ ವಿರುದ್ದವಾಗಿ ತಂದೆ, ಮಗಳಿಗೆ ವಿರುದ್ಧವಾಗಿ ತಾಯಿ, ಸೊಸೆಗೆ ವಿರುದ್ಧವಾಗಿ ಅತ್ತೆ, ಪರಸ್ಪರ ವಿರೋಧವಾಗಿ ವಿಂಗಡಿಸಿ ಹೋಗುವರು,” ಎಂದರು. 
------
ಚಿಂತನೆ
ಪ್ರೀತಿ, ಶಾಂತಿ, ಕ್ಷಮೆ, ಕರುಣೆಯ ಪ್ರತೀಕ ಯೇಸು. `ಶಾಂತಿ ನಿಮ್ಮೊಡನೆ ಇರಲಿ' ಪ್ರಭು ಕ್ರಿಸ್ತರು ಪುನರುತ್ಥಾನದ ನಂತರ ನೀಡಿದ ಸಂದೇಶ. ತಮ್ಮ ಜೀವನದಲ್ಲಿ ಶಾಂತಿಯನ್ನು ಪ್ರತಿಪಾದಿಸಿ ಹಿಂಸೆಯನ್ನು ವಿರೋಧಿಸಿದ ಕ್ರಿಸ್ತ, ಇಂದಿನ ಶುಭಸಂದೇಶದಲ್ಲಿ ತಾನು ಬಂದಿರುವುದು ಜಗತ್ತಿನಲ್ಲಿ ಬೆಂಕಿಯನ್ನು ಹೊತ್ತಿಸಲು, ಭಿನ್ನಬೇಧಗಳನ್ನು ಉಂಟುಮಾಡಲು ಎನ್ನುತ್ತಾರೆ. ಕ್ರಿಸ್ತನ ತತ್ವಗಳು, ಆದರ್ಶಗಳು, ಬೋಧನೆಯು ಯೆಹೂದ್ಯ ಸಮಾಜವನ್ನು ಗೊಂದಲಕ್ಕೀಡುಮಾಡಿತ್ತು. ಧಾರ್ಮಿಕ ನಾಯಕರ ಮತ್ತು ಜನಸಾಮಾನ್ಯರ ನಡುವೆ ಭಿನ್ನಭಿಪ್ರಾಯ ಮೂಡಿಸಿತು. ಯಾವುದೇ ಬದಲಾವಣೆಯನ್ನು ಶಾಂತಿಯಿಂದ ತರಲು ಕಷ್ಟ. ಶಾಂತಿಗೆ ಪ್ರಯತ್ನಪಟ್ಟಷ್ಟು ಯುದ್ಧ-ಹಿಂಸೆ ನಡೆಯುತ್ತಲೇ ಇವೆ. ಅಂತರಂಗದ ಬದಲಾವಣೆ, ಕ್ಷಮೆ ಮತ್ತು ಪ್ರೀತಿಯಿಂದ ಮಾತ್ರ ಶಾಂತಿಯ ಸ್ಥಾಪನೆ ಸಾಧ್ಯ.

ಸಾಧಾರಣ ಕಾಲದ ಇಪ್ಪತ್ತೊಂಬತ್ತನೇ ವಾರ ಬುಧವಾರ

ಸಾಧಾರಣ ಕಾಲದ ಇಪ್ಪತ್ತೊಂಬತ್ತನೇ ವಾರ ಬುಧವಾರ



23/ಹಸಿರು/ಬುಧ

1ನೇ ವಾಚನ - ರೋಮ 6: 12-18 
ಕೀರ್ತನೆ - 123: 1-8
ಶುಭಸಂದೇಶ - ಲೂಕ 12: 39-48

1ನೇ ವಾಚನ - ರೋಮ 6: 12-18 
ಆದ್ದರಿಂದ ದೈಹಿಕ ದುರಿಚ್ಛೆಗಳಿಗೆ ದಾಸರಾಗಿ ನೀವು ನಡೆಯದಂತೆ, ನಿಮ್ಮ ನಶ್ವರ ಶರೀರಗಳ ಮೇಲೆ ಪಾಪವು ತನ್ನ ದಬ್ಬಾಳಿಕೆಯನ್ನು ಇನ್ನೆಂದಿಗೂ ನಡೆಸದಿರಲಿ. ನಿಮ್ಮ ದೇಹದ ಯಾವುದೇ ಅಂಗವು ದುಷ್ಕøತ್ಯವನ್ನೆಸಗುವ ಸಾಧನವಾಗುವಂತೆ ಪಾಪದ ಕಾರ್ಯಕ್ಕೆ ಅದನ್ನು ಒಪ್ಪಿಸದಿರಿ. ಬದಲಾಗಿ ಸತ್ತು ಜೀವಕ್ಕೆ ಬಂದವರಂತೆ ದೇವರಿಗೆ ನಿಮ್ಮನ್ನೇ ಸಮರ್ಪಿಸಿಕೊಳ್ಳಿರಿ; ನಿಮ್ಮ ಅಂಗಗಳನ್ನು ಸತ್ಕಾರ್ಯ ಸಾಧನೆಗಳನ್ನಾಗಿ ದೇವರಿಗೆ ಒಪ್ಪಿಸಿಕೊಡಿರಿ. ಏಕೆಂದರೆ ಪಾಪವು ಇನ್ನೆಂದಿಗೂ ನಿಮ್ಮ ಮೇಲೆ ದಬ್ಬಾಳಿಕೆ ನಡೆಸಲಾಗದು; ನೀವಿನ್ನು ಧರ್ಮಶಾಸ್ತ್ರಕ್ಕೆ ಅಧೀನರಲ್ಲ. ದೈವಾನುಗ್ರಹಕ್ಕೆ ಮಾತ್ರ ಅಧೀನರು. ಹಾಗಾದರೆ ಏನು ಹೇಳೋಣ? ಧರ್ಮಶಾಸ್ತ್ರಕ್ಕೆ ಅಧೀನರಾಗಿರದೆ ದೈವಾನುಗ್ರಹಕ್ಕೆ ಅಧೀನರಾಗಿರುವ ನಾವು ಪಾಪಮಾಡುತ್ತಲೇ ಜೀವಿಸೋಣವೆ? ಸರ್ವಥಾ ಇಲ್ಲ. ಯಾರ ಕೈ ಕೆಳಗೆ ಗುಲಾಮರಾಗಿರಲು ನಿಮ್ಮನ್ನೇ ಒಪ್ಪಿಸಿಕೊಳ್ಳುತ್ತೀರೋ ಅವರಿಗೆ ನೀವು ಶರಣಾಗುತ್ತೀರಿ. ನೀವು ಪಾಪಕ್ಕೆ ಗುಲಾಮರಾದರೆ ಮರಣವೇ ನಿಮಗೆ ಗತಿ; ದೇವರಿಗೆ ಶರಣಾದರೆ ಸತ್ಸಂಬಂಧವೇ ಅದರ ಸತ್ಪರಿಣಾಮ. ದೇವರಿಗೆ ಸ್ತುತಿಸ್ತೋತ್ರ ಸಲ್ಲಲಿ. ಏಕೆಂದರೆ, ಹಿಂದೊಮ್ಮೆ ನೀವು ಪಾಪಕ್ಕೆ ಗುಲಾಮರಾಗಿದ್ದರೂ ನಿಮಗೆ ಕಲಿಸಿದ ಬೋಧನೆಯನ್ನು ನೀವು ಮನಃಪೂರ್ವಕವಾಗಿ ಅಂಗೀಕರಿಸಿ ವಿಧೇಯರಾದಿರಿ; ಪಾಪಬಂಧನದಿಂದ ಬಿಡುಗಡೆ ಹೊಂದಿ ದೇವ ಸಂಬಂಧಕ್ಕೆ ಒಳಗಾದಿರಿ.

ಕೀರ್ತನೆ - 123: 1-8
1 : ಪ್ರಭು ನಮ್ಮ ಪರ ಇಲ್ಲದಿದ್ದರೆ ಏನಾಗುತ್ತಿತ್ತು?/ ಇಸ್ರಯೇಲರೇ ಹೇಳಲಿ ಆ ದುರ್ಗತಿಯನ್ನು ಕುರಿತು
2 : ಪ್ರಭು ನಮ್ಮ ಪರ ಇಲ್ಲದಿದ್ದರೆ ಏನಾಗುತ್ತಿತ್ತು?/ ಜನರೆಮಗೆ ವಿರುದ್ಧ ಎದ್ದಾಗ ಏನಾಗುತ್ತಿತ್ತು?
3 : ಉರಿಗೊಳ್ಳುತಿದ್ದರು ಕಡುಗೋಪದಿಂದ ಖಂಡಿತ / ನುಂಗಿಬಿಡುತ್ತಿದ್ದರು ನಮ್ಮನ್ನು ಜೀವಸಹಿತ
4 : ಕೊಚ್ಚಿಬಿಡುತ್ತಿತ್ತು ನಮ್ಮನ್ನು ಹುಚ್ಚು ಪ್ರವಾಹ / ಬಡಿದುಬಿಡುತ್ತಿತ್ತು ನಮ್ಮನ್ನು ರಭಸದಿಂದ ಪೂರ /
5 : ಮುಳುಗಿಸಿಬಿಡುತ್ತಿತ್ತು ನಮ್ಮನ್ನು ಮಹಾಪ್ರಳಯ
6 : ತುತ್ತಾಗಿಸಲಿಲ್ಲ ನಮ್ಮನ್ನು ಶತ್ರುಗಳ ಬಾಯಿಗೆ / ಕೃತಜ್ಞತಾಪೂರ್ವಕ ಸ್ತೋತ್ರ ಇಗೋ ಪ್ರಭುವಿಗೆ
7 : ಬೇಟೆಬಲೆಯಿಂದ ಪಾರಾದ ಪಕ್ಷಿಯಂತಾದೆವು / ಹರಿದುಹೋಯಿತಿದೊ ಬಲೆಯು, ಹಾರಿಹೋದೆವು ನಾವು
8 : ನಮಗುದ್ಧಾರ ಪ್ರಭುವಿನ ನಾಮದಲಿ / ಭೂಮ್ಯಾಕಾಶವನು ಸೃಜಿಸಿದಾತನಲಿ //

ಶುಭಸಂದೇಶ - ಲೂಕ 12: 39-48
ಕಳ್ಳನು ಬರುವ ಗಳಿಗೆಯು ಮನೆಯ ಯಜಮಾನನಿಗೆ ತಿಳಿದರೆ, ಅವನು ತನ್ನ ಮನೆಗೆ ಕನ್ನಹಾಕಲು ಬಿಡುವನೇ? ಇಲ್ಲ. ಇದನ್ನು ಚೆನ್ನಾಗಿ ತಿಳಿದುಕೊಂಡು ನೀವು ಸಹ ಸಿದ್ಧರಾಗಿರಿ. ಏಕೆಂದರೆ, ನರಪುತ್ರನು ನೀವು ನಿರೀಕ್ಷಿಸದ ಗಳಿಗೆಯಲ್ಲಿ ಬರುವನು,” ಎಂದರು. ಆಗ ಪೇತ್ರನು, “ಪ್ರಭೂ, ನೀವು ಹೇಳಿದ ಈ ಸಾಮತಿ ನಮಗೆ ಮಾತ್ರ ಅನ್ವಯಿಸುತ್ತದೋ ಅಥವಾ ಎಲ್ಲರಿಗೋ?” ಎಂದು ಕೇಳಿದನು. ಅದಕ್ಕೆ ಪ್ರಭು ಹೀಗೆಂದರು: “ಪ್ರಾಮಾಣಿಕನೂ ವಿವೇಕಿಯೂ ಆದ ಮೇಸ್ತ್ರಿ ಯಾರು? ಕಾಲಕಾಲಕ್ಕೆ ಸರಿಯಾಗಿ ಕೂಲಿಯಾಳುಗಳಿಗೆ ದವಸಧಾನ್ಯವನ್ನು ಅಳೆದುಕೊಟ್ಟು, ಮನೆಯ ಮೇಲ್ವಿಚಾರಣೆಯನ್ನು ನೋಡಿಕೊಳ್ಳಲು ಯಜಮಾನನು ನೇಮಿಸಿದ್ದ ಮೇಸ್ತ್ರಿಯೇ. ಯಜಮಾನನು ಮನೆಗೆ ಹಿಂದಿರುಗಿ ಬಂದಾಗ ಆ ಸೇವಕನು ತನ್ನ ಕರ್ತವ್ಯವನ್ನು ನಿಷ್ಠೆಯಿಂದ ನೆರವೇರಿಸುತ್ತಿದ್ದರೆ ಅವನು ಧನ್ಯನು. ಅಂಥವನನ್ನು ಯಜಮಾನನು ತನ್ನ ಎಲ್ಲ ಆಸ್ತಿಪಾಸ್ತಿಗೆ ಆಡಳಿತಗಾರನನ್ನಾಗಿ ನೇಮಿಸುವನೆಂದು ನಿಮಗೆ ನಿಜವಾಗಿ ಹೇಳುತ್ತೇನೆ. “ಆದರೆ ಆ ಸೇವಕನು ತನ್ನಲ್ಲೇ, ‘ನನ್ನ ಯಜಮಾನ ಬಹಳ ತಡಮಾಡಿ ಬರುತ್ತಾನೆ’, ಎಂದುಕೊಂಡು ಗಂಡಾಳು ಹೆಣ್ಣಾಳು ಎನ್ನದೆ ಹೊಡೆಯುವುದಕ್ಕೂ ಅಮಲೇರುವಷ್ಟು ತಿಂದು ಕುಡಿಯುವುದಕ್ಕೂ ತೊಡಗಿದರೆ. ಅವನು ನಿರೀಕ್ಷಿಸದ ದಿನದಲ್ಲಿ, ತಿಳಿಯದ ಗಳಿಗೆಯಲ್ಲಿ ಯಜಮಾನನು ಬಂದು ಅವನನ್ನು ಚಿತ್ರಹಿಂಸೆಗೂ ವಿಶ್ವಾಸವಿಹೀನರ ದುರ್ಗತಿಗೂ ಗುರಿಮಾಡುವನು. “ಸೇವಕನು ಯಜಮಾನನ ಇಷ್ಟಾರ್ಥವನ್ನು ಅರಿತುಕೊಂಡಿದ್ದರೂ ಅಜಾಗರೂಕನಾಗಿ ಇದ್ದರೆ ಕಠಿಣ ಶಿಕ್ಷೆಗೆ ಗುರಿಯಾಗುತ್ತಾನೆ. ಅರಿಯದೆ ಅಜಾಗರೂಕನಾಗಿದ್ದರೆ ಕಡಿಮೆ ಶಿಕ್ಷೆಗೆ ಗುರಿಯಾಗುತ್ತಾನೆ. ಹೆಚ್ಚು ಪಡೆದವನಿಂದ ಹೆಚ್ಚು ನಿರೀಕ್ಷಿಸಲಾಗುವುದು. ಇನ್ನೂ ಹೆಚ್ಚು ವಹಿಸಿಕೊಂಡವನಿಂದ ಇನ್ನೂ ಹೆಚ್ಚಾಗಿ ಕೇಳಲಾಗುವುದು.
-----
ಚಿಂತನೆ
ಸ್ವರ್ಗ ಸಾಮ್ರಾಜ್ಯದ ಆಗಮನದ ಬಗ್ಗೆ ಯೇಸು ಮಾತನಾಡುವಾಗಲೆಲ್ಲಾ ಅದಕ್ಕೆ ಯಾವ ರೀತಿಯ ಬದ್ಧತೆ ಬೇಕು ಎಂದು ಹೇಳುತ್ತಲೇ, `ನಿರಂತರವಾಗಿ ಎಚ್ಚರವಾಗಿರಿ' ಎಂಬ ಮಾತನ್ನು ಮತ್ತೆ ಮತ್ತೆ ಹೇಳುತ್ತಲೇ ಇರುತ್ತಾರೆ. ಈ ಸ್ವರ್ಗ ಸಾಮ್ರಾಜ್ಯಕ್ಕೆ ಯೋಗ್ಯರಾಗಬೇಕಾದರೆ ಲೌಕಿಕತೆಯ ನಶ್ವರತೆ ಅರಿಯಬೇಕು. ಲೌಕಿಕ ಜಗತ್ತಿನೊಂದಿಗೆ ನಂಟನ್ನು ಕಳೆದುಕೊಳ್ಳುವುದಷ್ಟೇ ಮುಖ್ಯವಲ್ಲ, ದೇವರ ಸಾಮ್ರಾಜ್ಯಕ್ಕೆ ಹತ್ತಿರವಾಗುವುದೂ ಮುಖ್ಯ. ಜನನ ಮತ್ತು ಮರಣದ ನಡುವಿರುವ ಈ ಜೀನವದಲ್ಲಿ ನಿರಂತರ ಎಚ್ಚರಿಕೆಯಿಂದ, ಜವಾಬ್ದಾರಿಯುತವಾಗಿ ಬದುಕಬೇಕು. ದೇವರ ಕರೆ ಯಾವಾಗ ಬರಬಹುದೋ ತಿಳಿದಿಲ್ಲ. ಆದ್ದರಿಂದ ನಿರಂತರ ಎಚ್ಚರಿಕೆ ಅಗತ್ಯ.

ಸಾಧಾರಣ ಕಾಲದ ಇಪ್ಪತ್ತೊಂಬತ್ತನೇ ವಾರ ಮಂಗಳವಾರ

ಸಾಧಾರಣ ಕಾಲದ ಇಪ್ಪತ್ತೊಂಬತ್ತನೇ ವಾರ ಮಂಗಳವಾರ



22/ಹಸಿರು/ಮಂಗಳ/ಐಚ್ಛಿಕ ಸ್ಮರಣೆ-ಸಂತ ಎರಡನೆ ಜಾನ್ ಪೌಲ್ (ಜಗ) 

1ನೇ ವಾಚನ - ರೋಮ 5: 12, 15, 17-21
ಕೀರ್ತನೆ - 4೦: 6-7, 9, 16
ಶುಭಸಂದೇಶ - ಲೂಕ 12: 35-38

1ನೇ ವಾಚನ - ರೋಮ 5: 12, 15, 17-21
ಒಬ್ಬ ಮನುಷ್ಯನಿಂದಲೇ ಪಾಪ, ಪಾಪದಿಂದ ಮರಣ, ಈ ಲೋಕವನ್ನು ಪ್ರವೇಶಿಸಿದವು. ಎಲ್ಲರೂ ಪಾಪ ಮಾಡಿದ್ದರಿಂದ ಮರಣವು ಎಲ್ಲರಿಗೂ ಪ್ರಾಪ್ತಿಯಾಯಿತು. ಆದರೆ ಆದಾಮನ ಪಾಪಕ್ಕೂ ದೇವರ ಅನುಗ್ರಹಕ್ಕೂ ವ್ಯತ್ಯಾಸವಿದೆ. ಒಬ್ಬ ಮನುಷ್ಯನ ಅಪರಾಧದಿಂದ ಎಲ್ಲರೂ ಮರಣಕ್ಕೊಳಗಾದರು ಎಂಬುದೇನೋ ನಿಜ. ಆದರೆ ದೇವರ ಅನುಗ್ರಹವು ಅದಕ್ಕಿಂತಲೂ ಅತ್ಯಧಿಕವಾದುದು. ಅಂತೆಯೇ, ಯೇಸುಕ್ರಿಸ್ತ ಎಂಬ ಒಬ್ಬ ಮಹಾತ್ಮನ ಅನುಗ್ರಹದಿಂದ ಲಭಿಸುವ ಉಚಿತಾರ್ಥ ವರಗಳು ಇನ್ನೂ ಅಧಿಕಾಧಿಕವಾದುವು ಎಂಬುದೂ ನಿಜ. ಒಬ್ಬ ಮನುಷ್ಯನ ಅಪರಾಧದ ಕಾರಣ, ಒಬ್ಬ ವ್ಯಕ್ತಿಯ ಮುಖಾಂತರ ಮರಣವು ಎಲ್ಲಾ ಮಾನವರ ಮೇಲೆ ದಬ್ಬಾಳಿಕೆ ನಡೆಸಿತು. ಆದರೆ, ಹೇರಳವಾದ ದೈವಾನುಗ್ರಹವನ್ನೂ ದೇವರೊಡನೆ ಸತ್ಸಂಬಂಧವೆಂಬ ಉಚಿತಾರ್ಥ ವರವನ್ನೂ ಪಡೆದವರಾದರೋ ಯೇಸುಕ್ರಿಸ್ತ ಎಂಬ ಮಹಾತ್ಮನ ಮುಖಾಂತರ ಮತ್ತಷ್ಟು ವಿಪುಲವಾಗಿ ಸಜ್ಜೀವವನ್ನು ಪಡೆದು ರಾಜ್ಯವಾಳುತ್ತಾರೆ. ಒಬ್ಬನ ಅಪರಾಧದಿಂದ ಎಲ್ಲಾ ಮಾನವರು ದಂಡನೆಯ ತೀರ್ಪಿಗೆ ಗುರಿಯಾಗುತ್ತಾರೆ. ಹಾಗೆಯೇ ಒಬ್ಬನ ಸತ್ಕಾರ್ಯದಿಂದ ಎಲ್ಲಾ ಮಾನವರು ವಿಮೋಚನೆಯನ್ನೂ ಸಜ್ಜೀವವನ್ನೂ ಪಡೆಯುತ್ತಾರೆ. ಹೇಗೆ ಒಬ್ಬ ಮನುಷ್ಯನ ಅವಿಧೇಯತೆಯಿಂದ ಎಲ್ಲರೂ ಪಾಪಿಗಳಾದರೋ, ಹಾಗೆಯೇ ಒಬ್ಬ ಮನುಷ್ಯನ ವಿಧೇಯತೆಯಿಂದ ಎಲ್ಲರೂ ದೇವರೊಡನೆ ಸತ್ಸಂಬಂಧವನ್ನು ಹೊಂದುತ್ತಾರೆ. ಧರ್ಮಶಾಸ್ತ್ರದ ಪ್ರವೇಶ ಆದಂತೆ, ಅಪರಾಧಗಳು ಹೆಚ್ಚಿದವು. ಅಪರಾಧಗಳು ಹೆಚ್ಚಿದಂತೆ ದೇವರ ಅನುಗ್ರಹವು ಹೆಚ್ಚುಹೆಚ್ಚು ಆಯಿತು. ಹೀಗೆ ಪಾಪವು ಮರಣದ ಮೂಲಕ ಆಳ್ವಿಕೆ ನಡೆಸಿದಂತೆ, ದೈವಾನುಗ್ರಹವು ನಮ್ಮ ಪ್ರಭು ಯೇಸುಕ್ರಿಸ್ತರ ಮುಖಾಂತರ ನಮ್ಮನ್ನು ದೇವರೊಡನೆ ಸತ್ಸಂಬಂಧದಲ್ಲಿರಿಸಿ, ಅಮರಜೀವದತ್ತ ಒಯ್ದು, ಆಳ್ವಿಕೆ ನಡೆಸುತ್ತದೆ.

ಕೀರ್ತನೆ - 4೦: 6-7, 9, 16
6 : ಬೇಡವಾದವು ನಿನಗೆ ಯಜ್ಞಾರ್ಪಣೆ, ಬಲಿಕಾಣಿಕೆ | ಬಯಸಿಲ್ಲ ನೀ ಹೋಮವನೆ, ಪರಿಹಾರಕ ಬಲಿಯನೆ | ಶ್ರವಣಶಕ್ತಿಯನು ಅನುಗ್ರಹಿಸಿದೆ ನೀನು ನನಗೆ ||
7 : ನಾನೋಗೊಡುತ ಇಂತೆಂದೆ: “ಇಗೋ ನಾನೇ ಬರುತ್ತಿರುವೆ | ಗ್ರಂಥ ಸುರುಳಿಯಲಿ ನನ್ನ ಕುರಿತು ಲಿಖಿತವಾಗಿದೆಯಲ್ಲವೇ? ||
9 : ಜೀವೋದ್ಧಾರದ ಶುಭಸಂದೇಶವನು ಸಾರಿದೆ ಮಹಾಸಭೆಗೆ || ನಾ ಸಾರಿದೆ ಅದನು ಮೌನವಿರದೆ, ಇದು ಗೊತ್ತಿದೆ ಪ್ರಭು ನಿನಗೆ ||
16 : ನಿನ್ನನು ಅರಸುವವರೆಲ್ಲರು ಹರ್ಷಾನಂದಗೊಳ್ಳಲಿ / ನಿನ್ನ ರಕ್ಷಣಾಪ್ರಿಯರು ಸತತ “ಪ್ರಭು ಪರಾಕ್ರಮಿ” ಎನ್ನಲಿ //

ಶುಭಸಂದೇಶ - ಲೂಕ 12: 35-38
“ನಿಮ್ಮ ನಡು ಕಟ್ಟಿರಲಿ; ನಿಮ್ಮ ದೀಪ ಉರಿಯುತ್ತಿರಲಿ. ತಟ್ಟಿದ ತಕ್ಷಣ ಯಜಮಾನನಿಗೆ ಬಾಗಿಲು ತೆರೆಯಲು ಸಿದ್ಧರಿರುವ ಸೇವಕರಂತೆ ಇರಿ. ತಮ್ಮ ಯಜಮಾನನು ಮದುವೆ ಔತಣ ಮುಗಿಸಿಕೊಂಡು ಯಾವಾಗ ಹಿಂದಿರುಗುತ್ತಾನೋ, ಎಂದು ಅವರು ಎದುರು ನೋಡುತ್ತಾ ಇರುತ್ತಾರೆ. ಯಜಮಾನನು ಬಂದು ಯಾವ ಯಾವ ಸೇವಕ ಎಚ್ಚರವಾಗಿದ್ದಾನೆಂದು ಕಂಡುಕೊಳ್ಳುತ್ತಾನೋ, ಅಂಥವರು ಭಾಗ್ಯವಂತರು. ಏಕೆಂದರೆ, ಯಜಮಾನನೇ ನಡುಕಟ್ಟಿನಿಂತು, ಅವರನ್ನು ಊಟಕ್ಕೆ ಕೂರಿಸಿ, ಒಬ್ಬೊಬ್ಬನಿಗೂ ತಾನೇ ಉಪಚಾರ ಮಾಡುವನೆಂದು ನಿಮಗೆ ನಿಶ್ಚಯವಾಗಿ ಹೇಳುತ್ತೇನೆ. “ಯಜಮಾನನು ಬರುವಾಗ ನಡು ರಾತ್ರಿ ಆಗಿರಲಿ, ಮುಂಜಾವವಾಗಿರಲಿ, ಎಚ್ಚರದಿಂದ ಇರುವ ಸೇವಕರನ್ನು ಆತನು ಕಂಡರೆ ಅವರು ಭಾಗ್ಯವಂತರು.
-----
ಚಿಂತನೆ

ಪ್ರತಿಯೊಬ್ಬರೂ ಒಂದಲ್ಲ ಒಂದು ದಿನ ದೇವರ ಮುಂದೆ ನಿಲ್ಲಲೇಬೇಕು. ಆದರೆ ಆ ಸಮಯ ಯಾವಾಗ, ಯಾವ ರೀತಿ, ಬರುವುದೆಂದು ತಿಳಿಯರು. ಹಾಗಾಗಿ ಸದಾ ಜಾಗೃತರಾಗಿರಬೇಕು. ದೇವರು ಬರುವ ಸಮಯ ತಿಳಿಯದು ಎಂದು ನಾವು ಅದನ್ನು ಕಡೆಗಣಿಸುವಂತಿಲ್ಲ, ನಿರ್ಲಕ್ಷಿಸುವಂತಿಲ್ಲ. ದೇವರು ಬಂದಾಗ ಎಚ್ಚರವಾಗಿರುವವನು ಧನ್ಯ. ದೇವರು ಬರುವ ಗಳಿಗೆ ದೂತರಿಗಾಗಲಿ, ಪುತ್ರನೀಗಾಗಲಿ ತಿಳಿಯದು ಅದು ತಂದೆ ದೇವರಿಗೆ ಮಾತ್ರ ತಿಳಿದಿದೆ. ಹಾಗಾಗಿ ಜವಾಬ್ದಾರಿಯುತ ಜೀವನವನ್ನು ನಡೆಸಬೇಕಿದೆ. ಪ್ರಭುವಿನ ನಿರೀಕ್ಷೆಯಲ್ಲಿ ಮೂಡಬೇಕಾದ ಕೆಲಸಗಳನ್ನು ತೊರೆದು ಸೋಮಾರಿಗಳಾಗಿ ಕೂರುವಂತಿಲ್ಲ. ಪ್ರಭುವಿನ ನಿರೀಕ್ಷಿಸುವುದರ ಜೊತೆಗೆ ಒಳ್ಳೆಯ ಬದುಕನ್ನು ಜೀವಿಸುತ್ತಾ, ಮುನ್ನೆಚ್ಚರಿಕೆಯ ಅಗತ್ಯದ ಬಗ್ಗೆ ಶುಭಸಂದೇಶ ತಿಳಿಸುತ್ತದೆ.

ಸಾಧಾರಣ ಕಾಲದ ಇಪ್ಪತ್ತೊಂಬತ್ತನೇ ವಾರ ಸೋಮವಾರ

ಸಾಧಾರಣ ಕಾಲದ ಇಪ್ಪತ್ತೊಂಬತ್ತನೇ ವಾರ ಸೋಮವಾರ

21/ಹಸಿರು/ಸೋಮ 
1ನೇ ವಾಚನ - ರೋಮ 4: 2೦-25 
ಕೀರ್ತನೆ - ಲೂಕ 1: 69-75 
ಶುಭಸಂದೇಶ - ಲೂಕ 12: 13-21

1ನೇ ವಾಚನ - ರೋಮ 4: 2೦-25
ದೇವರ ವಾಗ್ದಾನದಲ್ಲಿ ಆತನು ಸಂಶಯಪಡಲಿಲ್ಲ. ಅಪನಂಬಿಕೆಯಿಂದ ಚಂಚಲಚಿತ್ತನಾಗಲೂ ಇಲ್ಲ. ಬದಲಾಗಿ ಆತನ ವಿಶ್ವಾಸ ವೃದ್ಧಿಯಾಯಿತು. ಆತನು ದೇವರನ್ನು ಹೊಗಳಿ ಕೊಂಡಾಡಿದನು. ದೇವರು ತಾವು ವಾಗ್ದಾನ ಮಾಡಿದ್ದನ್ನು ಖಂಡಿತವಾಗಿಯೂ ನೆರವೇರಿಸಬಲ್ಲರೆಂದು ದೃಢವಾಗಿ ನಂಬಿದನು. ಆದ್ದರಿಂದಲೇ, “ದೇವರು ಆತನನ್ನು ತಮ್ಮೊಂದಿಗೆ ಸತ್ಸಂಬಂಧದಲ್ಲಿ ಇರುವುದಾಗಿ ಪರಿಗಣಿಸಿದರು,” ಎಂದು ಲಿಖಿತವಾಗಿದೆ. ‘ಸತ್ಸಂಬಂಧದಲ್ಲಿ ಇರುವುದಾಗಿ ಪರಿಗಣಿಸಿದರು’ ಎಂಬ ಮಾತು ಆತನಿಗೆ ಮಾತ್ರವಲ್ಲ, ನಮಗೂ ಅನ್ವಯಿಸುತ್ತದೆ. ನಮ್ಮ ಪ್ರಭುವಾದ ಯೇಸುವನ್ನು ಮರಣದಿಂದ ಎಬ್ಬಿಸಿದ ದೇವರನ್ನು ವಿಶ್ವಾಸಿಸುವ ನಾವು ಸಹ ಅವರೊಂದಿಗೆ ಸತ್ಸಂಬಂಧದಲ್ಲಿ ಇರುವುದಾಗಿ ಪರಿಗಣಿತರಾಗುತ್ತೇವೆ. ನಮ್ಮ ಪಾಪಗಳ ನಿಮಿತ್ತ ಯೇಸುವನ್ನು ಮರಣಕ್ಕೆ ಗುರಿಪಡಿಸಲಾಯಿತು. ನಮ್ಮನ್ನು ದೇವರೊಡನೆ ಸತ್ಸಂಬಂಧದಲ್ಲಿ ಇರಿಸುವುದಕ್ಕಾಗಿ ಅವರು ಪುನರುತ್ಥಾನ ಹೊಂದಿದರು.

ಕೀರ್ತನೆ - ಲೂಕ 1: 69-75
69 : ಉದಯಗೊಳಿಸಿರುವನಾತ ತನ್ನ ದಾಸ ದಾವೀದನ ವಂಶದೊಳು ! ನಮಗೊಬ್ಬ ಶಕ್ತಿಯುತ ಮುಕ್ತಿದಾತನನು !!
70 : ಪುರಾತನ ಕಾಲದಿಂದಲೆ, ಪೂಜ್ಯ ಪ್ರವಾದಿಗಳ ಬಾಯಿಂದಲೆ ! ಅರುಹಿಸಿರುವನು ಇಂತೆಂದು ನಮಗೆ:!!
71 : ‘ಹಗೆಗಳಿಂದ, ದ್ವೇಷಿಗಳೆಲ್ಲರ ಹಿಡಿತದಿಂದ ನಿಮಗೆ ಅನುಗ್ರಹಿಸುವೆನು ಸಂರಕ್ಷಣೆ’ !!
72 : ವ್ಯಕ್ತಪಡಿಸಿರುವನು ಪೂರ್ವಜರಿಗೆ ಪ್ರಮಾಣಿಸಿದ ಪ್ರೀತಿಯನು ! ಸ್ಮರಿಸಿಕೊಂಡಿರುವನು ತನ್ನ ಪವಿತ್ರ ಒಡಂಬಡಿಕೆಯನು !!
73 : ಪಿತಾಮಹ ಅಬ್ರಹಾಮನಿಗಿತ್ತ ಮಾತಿಗನುಸಾರ !
74 : ನಮಗಿತ್ತಿರುವನು ಶತ್ರುಗಳಿಂದ ರಕ್ಷಿಸುವನೆಂಬ ಅಭಯ !!
75 : ಹೀಗೆ ಜೀವಮಾನವೆಲ್ಲ ನಾವು ಆತನ ಸೇವೆ ಮಾಡುವಂತಾಯಿತು ನಿರ್ಭೀತರಾಗಿ ! ಆತನ ಸನ್ನಿಧಿಯಲಿ ಬಾಳುವಂತಾಯಿತು ಪುನೀತರಾಗಿ, ಸದ್ಭಕ್ತರಾಗಿ !!

ಶುಭಸಂದೇಶ - ಲೂಕ 12: 13-21
ಜನಸಮೂಹದಿಂದ ಒಬ್ಬನು, “ಬೋಧಕರೇ, ನಮ್ಮ ಪಿತ್ರಾರ್ಜಿತ ಸೊತ್ತನ್ನು ನನಗೆ ಭಾಗಮಾಡಿ ಕೊಡುವಂತೆ ನನ್ನ ಸೋದರನಿಗೆ ಹೇಳಿ,” ಎಂದು ಕೇಳಿಕೊಂಡನು. ಅದಕ್ಕೆ ಯೇಸು, “ಏನಯ್ಯಾ, ನಿಮ್ಮಿಬ್ಬರ ನ್ಯಾಯತೀರಿಸುವುದಕ್ಕೂ ನಿಮ್ಮ ಸ್ವತ್ತನ್ನು ಭಾಗಮಾಡಿಕೊಡುವುದಕ್ಕೂ ನನ್ನನ್ನು ನೇಮಿಸಿದವರು ಯಾರು?” ಎಂದು ಮರುಪ್ರಶ್ನೆ ಹಾಕಿದರು. ಅನಂತರ ಜನರನ್ನುದ್ದೇಶಿಸಿ, “ಎಚ್ಚರಿಕೆ, ಯಾವ ವಿಧವಾದ ಲೋಭಕ್ಕೂ ಒಳಗಾಗದಂತೆ ಜಾಗರೂಕರಾಗಿರಿ. ಏಕೆಂದರೆ, ಒಬ್ಬನಿಗೆ ಎಷ್ಟೇ ಸಿರಿಸಂಪತ್ತಿರಲಿ, ಅವನ ನಿಜವಾದ ಜೀವನ ಅದನ್ನು ಅವಲಂಬಿಸಿಲ್ಲ,” ಎಂದು ಹೇಳಿದರು. ಅನಂತರ ಅವರಿಗೆ ಈ ಸಾಮತಿಯನ್ನು ಹೇಳಿದರು: “ಒಬ್ಬ ಧನಿಕನಿದ್ದ. ಅವನ ಭೂಮಿ ಒಮ್ಮೆ ಸಮೃದ್ಧಿಯಾದ ಬೆಳೆಕೊಟ್ಟಿತು. ಆಗ ಅವನು, ‘ನನ್ನ ಬೆಳೆಯನ್ನೆಲ್ಲಾ ತುಂಬಿಡಲು ಸ್ಥಳವಿಲ್ಲವಲ್ಲಾ, ಏನು ಮಾಡಲಿ?’ ಎಂದು ತನ್ನಲ್ಲೇ ಆಲೋಚಿಸುತ್ತಾ, ಹೌದು, ಹೀಗೆ ಮಾಡುತ್ತೇನೆ: ಇರುವ ಕಣಜಗಳನ್ನು ಕಿತ್ತುಹಾಕಿಸಿ, ಇನ್ನೂ ದೊಡ್ಡವುಗಳನ್ನು ಕಟ್ಟಿಸುತ್ತೇನೆ. ಅಲ್ಲಿ ನನ್ನ ಎಲ್ಲಾ ದವಸ ಧಾನ್ಯಗಳನ್ನೂ ಸರಕು ಸಾಮಗ್ರಿಗಳನ್ನೂ ತುಂಬಿಸಿಡುತ್ತೇನೆ. ಅಲ್ಲದೆ, “ಎಲೈ ಮನವೇ, ಅನೇಕ ವರ್ಷಗಳಿಗೆ ಬೇಕಾದಷ್ಟು ಸರಕು ಬಿದ್ದಿದೆ; ಆರಾಮವಾಗಿರು. ತಿನ್ನು, ಕುಡಿ, ಸುಖಪಡು ಎಂದು ಹೇಳಿಕೊಳ್ಳುತ್ತೇನೆ”, ಎಂದುಕೊಂಡ. ಆಗ ದೇವರು, ‘ಎಲವೋ ಮೂರ್ಖ, ಇದೇ ರಾತ್ರಿ ನೀನು ಸಾಯಬೇಕಾಗಿದೆ, ನಿನಗಾಗಿ ಸಿದ್ಧ ಮಾಡಿಟ್ಟಿರುವುದೆಲ್ಲ ಯಾರ ಪಾಲಾಗುವುದು?’ ಎಂದರು. 
“ತನಗೋಸ್ಕರ ಸಂಪತ್ತನ್ನು ಶೇಖರಿಸಿಟ್ಟುಕೊಂಡು ದೇವರ ದೃಷ್ಟಿಯಲ್ಲಿ ಧನಿಕನಲ್ಲದವನು ಇವನಿಗೆ ಸಮಾನನು,” ಎಂದರು ಯೇಸು.
----
ಚಿಂತನೆ
ಯಾವ ಆಸ್ತಿ ಶಾಶ್ವತವಾದದ್ದು, ಯಾವುದು ನಶ್ವರ? ಭೂಮಿಯ ಮೇಲೆ ಸಂಪಾದಿಸಿದ ಆಸ್ತಿಯೇ ಅಥವಾ ಸ್ವರ್ಗದಲ್ಲೇ ? ಪ್ರತಿಯೊಬ್ಬರೂ ತಮ್ಮನ್ನು ಕೇಳಿಕೊಳ್ಳಬೇಕಾದ ಪ್ರಶ್ನೆಯಿದು. ಆದರೂ, ಅಳಿದು ಹೋಗುವ, ನಶಿಸಿಹೋಗುವ ಆಸ್ತಿಗಾಗಿಯೇ ಎಲ್ಲರೂ ಹೋರಾಡುತ್ತಿರುವುದು, ಅನೇಕ ಬಾರಿ ಈ ಹೋರಾಟದಲ್ಲಿ ವಂಚನೆ, ಮೋಸ, ಅನ್ಯಾಯ ಇರಬಹುದು. ಈ ಮೋಸ, ವಂಚನೆ ಸ್ವರ್ಗದಲ್ಲಿ ಗೆಲ್ಲಲಾರದು ಎಂಬುದನ್ನು ಅರಿಯಲು ಮರೆಯುತ್ತೇವೆ. ದೇವರು ಕೊಟ್ಟಿದ್ದು ಬಚ್ಚಿಡುವುದಕ್ಕಲ್ಲ, ಪರರ ಸಹಾಯಕ್ಕೆ ಧನಿಕ ಸ್ವಾರ್ಥಿಯಾಗಿದ್ದ, ಲೌಕಿಕತೆಯಲ್ಲಿ ಮುಳುಗಿದ್ದ. `ತಿನ್ನು, ಕುಡಿ, ಸುಖಪಡು' ಎಂದುಕೊಂಡ, ಸುಖಪಡಲು ಸಂಪತ್ತು, ಆಸ್ತಿಯಿದೆ ಆದರೇ ಅವನೇ ಇಲ್ಲವಾದ.