8/ಹಸಿರು/ಶುಕ್ರ
1ನೇ ವಾಚನ - ರೋಮ 15: 14-21
ಕೀರ್ತನೆ - 98: 1-4
ಶುಭಸಂದೇಶ - ಲೂಕ 16: 1-8
1ನೇ ವಾಚನ - ರೋಮ 15: 14-21
ಕೀರ್ತನೆ - 98: 1-4
ಶುಭಸಂದೇಶ - ಲೂಕ 16: 1-8
1ನೇ ವಾಚನ - ರೋಮ 15: 14-21
ಸಹೋದರರೇ, ನೀವು ಗುಣಸಂಪನ್ನರೂ ಜ್ಞಾನಸಂಪನ್ನರೂ ಒಬ್ಬರಿಗೊಬ್ಬರು ಬುದ್ಧಿ ಹೇಳಿಕೊಳ್ಳಲು ಸಮರ್ಥರೂ ಆಗಿದ್ದೀರಿ ಎಂದು ನಾನು ಚೆನ್ನಾಗಿ ಬಲ್ಲೆ. ಆದರೂ ಕೆಲವು ವಿಷಯಗಳತ್ತ ನಿಮ್ಮ ಗಮನ ಸೆಳೆಯುವ ಉದ್ದೇಶದಿಂದ ಅಲ್ಲಲ್ಲಿ ಹೆಚ್ಚಿನ ಧೈರ್ಯವಹಿಸಿ ಬರೆದಿದ್ದೇನೆ. ದೇವರು ನನಗೆ ದಯಪಾಲಿಸಿರುವ ವಿಶೇಷ ವರದಾನದಿಂದಾಗಿ ಈ ಪ್ರಕಾರ ಬರೆದಿದ್ದೇನೆ. ಈ ವರದಿಂದಲೇ ಯೆಹೂದ್ಯರಲ್ಲದ ಜನರಿಗೆ ನಾನು ಕ್ರಿಸ್ತಯೇಸುವಿನ ದಾಸನಾದೆ. ಯೆಹೂದ್ಯರಲ್ಲದವರು ಪವಿತ್ರಾತ್ಮರ ಮೂಲಕ ಪರಿಶುದ್ಧರಾಗಿ, ದೇವರಿಗೆ ಸಮರ್ಪಕ ಕಾಣಿಕೆಯಾಗುವಂತೆ ದೇವರ ಶುಭಸಂದೇಶವನ್ನು ಸಾರುವುದೇ ನನ್ನ ಪೂಜ್ಯಸೇವೆ, ಅದುವೇ ನನ್ನ ಯಾಜಕ ಸೇವೆ. ದೇವರಿಗಾಗಿ ಸಲ್ಲಿಸುವ ಈ ಸೇವೆಯನ್ನು ಕುರಿತು ನಾನು ಕ್ರಿಸ್ತಯೇಸುವಿನಲ್ಲಿ ಹೆಮ್ಮೆಪಡಲು ಕಾರಣ ಉಂಟು. ಕ್ರಿಸ್ತಯೇಸು ನನ್ನ ಮುಖಾಂತರ ಅಂದರೆ, ನನ್ನ ಬೋಧನೆ ಹಾಗು ಸಾಧನೆಗಳ ಮೂಲಕ, ಸೂಚಕ ಹಾಗೂ ಅದ್ಭುತ ಕಾರ್ಯಗಳ ಮೂಲಕ ಮತ್ತು ಪವಿತ್ರಾತ್ಮರ ಶಕ್ತಿಯ ಮೂಲಕ ಯೆಹೂದ್ಯರಲ್ಲದವರನ್ನೂ ತಮ್ಮ ಶರಣರನ್ನಾಗಿಸಿಕೊಂಡಿದ್ದಾರೆ. ಇದೊಂದನ್ನು ಬಿಟ್ಟು ಬೇರೆ ಯಾವುದನ್ನು ಕುರಿತು ಹೊಗಳಿಕೊಳ್ಳಲು ನಾನು ಧೈರ್ಯಗೊಳ್ಳುವುದಿಲ್ಲ. ಜೆರುಸಲೇಮಿನಿಂದ ಪ್ರಾರಂಭಿಸಿ ಇಲ್ಲುರಿಕ ಪ್ರಾಂತ್ಯದವರೆಗೂ ಸುತ್ತಮುತ್ತಿನಲ್ಲೂ ನಾನು ಸಂಚಾರಮಾಡಿ, ಕ್ರಿಸ್ತಯೇಸುವಿನ ಶುಭಸಂದೇಶವನ್ನು ಪೂರ್ತಿಯಾಗಿ ಪ್ರಚಾರಮಾಡಿದ್ದೇನೆ. ಮತ್ತೊಬ್ಬನು ಹಾಕಿದ ಅಸ್ತಿವಾರದ ಮೇಲೆ ನಾನು ಕಟ್ಟುವುದು ಸರಿ ಅಲ್ಲವೆಂಬುದು ನನ್ನ ಅಭಿಪ್ರಾಯ. ಆದಕಾರಣ ಕ್ರಿಸ್ತಯೇಸುವಿನ ನಾಮವು ಪ್ರಚಾರವಾಗದಕಡೆ ಹೋಗಿ ಶುಭಸಂದೇಶವನ್ನು ಸಾರಬೇಕೆಂಬುದೇ ನನ್ನ ಆಕಾಂಕ್ಷೆ. “ಯಾರಿಗೆ ಆತನ ಸುದ್ದಿ ಮುಟ್ಟಿಲ್ಲವೋ ಅವರು ಆತನನು ನೋಡುವರು; ಯಾರು ಆತನ ವರ್ತಮಾನ ಕೇಳಿಲ್ಲವೋ ಅವರು ಆತನನು ಗ್ರಹಿಸಿಕೊಳ್ಳುವರು,” ಎಂಬುದಾಗಿ ಪವಿತ್ರಗ್ರಂಥದಲ್ಲಿ ಬರೆದಿರುವ ಪ್ರಕಾರ ನನ್ನ ಕಾರ್ಯವನ್ನು ನಡೆಸಿದ್ದೇನೆ.
ಕೀರ್ತನೆ - 98: 1-4
1 : ಹಾಡಿರಿ ಪ್ರಭುವಿಗೆ ಹೊಸಗೀತೆಯೊಂದನು / ಎಸಗಿಹನಾತನು ಪವಾಡಕಾರ್ಯಗಳನು / ಗಳಿಸಿತಾತನ ಕೈ ಪೂತಭುಜ ಗೆಲುವನು //
2 : ಪ್ರಕಟಿಸಿಹನಾ ಪ್ರಭು ತನ್ನ ಮುಕ್ತಿವಿಧಾನವನು / ರಾಷ್ಟ್ರಗಳಿಗೆ ತೋರಿಸಿಹನು ಜೀವೋದ್ಧಾರಕಾ ಶಕ್ತಿಯನು //
3 : ಕಂಡು ಬಂದಿತು ಜಗದ ಎಲ್ಲೆಎಲ್ಲೆಗೆ / ನಮ್ಮ ದೇವ ಸಾಧಿಸಿದ ಜಯಗಳಿಕೆ // ಸ್ಮರಿಸಿಕೊಂಡನಾ ಪ್ರಭು ತನ್ನ ಪ್ರೀತಿಯನು / ಇಸ್ರಯೇಲ್ ಕುಲದ ಬಗ್ಗೆ ತನ್ನ ಸತ್ಯತೆಯನು //
4 : ಭೂನಿವಾಸಿಗಳೇ, ಮಾಡಿರಿ ಜಯಕಾರ ಪ್ರಭುವಿಗೆ / ಮುದದಿ ಹಾಡಿರಿ, ಮಾಡಿರಿ ಸುಮಧುರ ಭಜನೆ //
ಶುಭಸಂದೇಶ - ಲೂಕ 16: 1-8
ಯೇಸುಸ್ವಾಮಿ ತಮ್ಮ ಶಿಷ್ಯರನ್ನು ಉದ್ದೇಶಿಸಿ ಇಂತೆಂದರು: “ಒಬ್ಬ ಧನಿಕನಿದ್ದ. ಅವನ ವ್ಯವಹಾರವನ್ನು ನೋಡಿಕೊಳ್ಳಲು ಒಬ್ಬ ಮೇಸ್ತ್ರಿಯಿದ್ದ. ಇವನು ಧನಿಕನ ಆಸ್ತಿಯನ್ನು ಹಾಳುಮಾಡುತ್ತಿದ್ದಾನೆಂದು ದೂರು ಬಂದಿತು. ಧನಿಕನು ಅವನನ್ನು ಕರೆದು, ‘ಏನಿದು, ನಿನ್ನ ವಿಷಯವಾಗಿ ನಾನು ಹೀಗೆಲ್ಲ ಕೇಳುತ್ತಾ ಇದ್ದೇನೆ? ನಿನ್ನ ಕೆಲಸದ ಲೆಕ್ಕಾಚಾರವನ್ನು ಒಪ್ಪಿಸಿಬಿಡು. ಇನ್ನು ನೀನು ಮೇಸ್ತ್ರಿ ಆಗಿರಲು ಆಗದು,’ ಎಂದ. ಆಗ ಮೇಸ್ತ್ರಿ, ‘ಈಗ ಏನು ಮಾಡಲಿ? ಯಜಮಾನನು ನನ್ನನ್ನು ಕೆಲಸದಿಂದ ತೆಗೆದು ಬಿಡುತ್ತಾನಲ್ಲಾ; ಅಗೆಯಲು ಶಕ್ತಿ ಸಾಲದು; ಭಿಕ್ಷೆ ಬೇಡಲು ನನಗೆ ನಾಚಿಕೆ,’ ಎಂದು ಚಿಂತಾಕ್ರಾಂತನಾದ. ಮರುಕ್ಷಣ, ‘ಸರಿ, ಕೆಲಸದಿಂದ ನನ್ನನ್ನು ತೆಗೆದುಹಾಕಿದ ಮೇಲೆ ಜನರು ನನ್ನನ್ನು ತಮ್ಮ ಮನೆಗೆ ಸೇರಿಸಿಕೊಳ್ಳುವಂತೆ ನಾನು ಏನು ಮಾಡಬೇಕೆಂದು ಈಗ ಗೊತ್ತಾಯಿತು,’ ಎಂದುಕೊಂಡ. ಯಜಮಾನನ ಸಾಲಗಾರರನ್ನು ಒಬ್ಬೊಬ್ಬರನ್ನಾಗಿ ಬರಮಾಡಿಕೊಂಡು, ‘ನೀನು ನನ್ನ ಯಜಮಾನನಿಗೆ ತೀರಿಸಬೇಕಾದ ಸಾಲ ಎಷ್ಟು?’ ಎಂದು ಮೊದಲನೆಯವನನ್ನು ಕೇಳಿದ. ಅವನು, ‘ನೂರು ಬುದ್ದಲಿ ಎಣ್ಣೆ,’ ಎಂದ. ಅದಕ್ಕೆ ಮೇಸ್ತ್ರಿ, ‘ಇಗೋ, ನಿನ್ನ ಪತ್ರ, ಕುಳಿತುಕೊಂಡು “ಐವತ್ತು” ಎಂದು ಬೇಗನೆ ಬರೆ,’ ಎಂದ. ಬಳಿಕ ಇನ್ನೊಬ್ಬನನ್ನು ಕರೆದು, ‘ನೀನೆಷ್ಟು ಸಾಲ ತೀರಿಸಬೇಕು?’ ಎಂದು ಕೇಳಿದ. ಅವನು ‘ನೂರು ಖಂಡುಗ ಗೋದಿ’ ಎಂದಾಗ ‘ಇಗೋ ನಿನ್ನ ಪತ್ರ, “ಎಂಬತ್ತು” ಎಂದು ಬರೆ’, ಎಂದ. “ಈ ಅಪ್ರಾಮಾಣಿಕ ಮೇಸ್ತ್ರಿ ಮಾಡಿದ ಮುಂದಾಲೋಚನೆಯನ್ನು ಅವನ ಯಜಮಾನ ಪ್ರಶಂಸಿಸಿದ. ಏಕೆಂದರೆ, ತಮ್ಮ ತಮ್ಮ ವ್ಯವಹಾರಗಳಲ್ಲಿ ಲೌಕಿಕ ಜನರು ಬೆಳಕಿನ ರಾಜ್ಯದ ಜನರಿಗಿಂತ ಜಾಣರು.
ಚಿಂತನೆ
ಚಿಂತನೆ
ದೇಶದ ಎಲ್ಲೆಡೆ ಭ್ರಷ್ಟಾಚಾರ ವ್ಯಾಪಕವಾಗಿ ಹರಡಿದೆ. ಬರೀ ಲೂಟಿ ಮಾಡುವುದಷ್ಟೇ ಭ್ರಷ್ಟಚಾರವಲ್ಲ, ಮಾನವ ತನ್ನ ಮನಸ್ಸಿನಲ್ಲಿ ಕೆಟ್ಟ ಆಲೋಚನೆ ಮಾಡುವುದು ಮತ್ತು ಅದರಂತೆ ನಡೆದುಕೊಳ್ಳುವುದು ಸಹ ಒಂದು ರೀತಿ ಭ್ರಷ್ಟಾಚಾರ. ಇಂದಿನ ಸಾಮತಿಯಲ್ಲಿ ಮೇಸ್ತ್ರಿಯ ಮುಂದಾಲೋಚನೆ, ಕುಯುಕ್ತಿಯನ್ನು ಆತನ ಒಡೆಯ ಪ್ರಶಂಸಿರಬಹುದು. ಆದರೆ ಕುಯುಕ್ತಿ, ದುರಾಲೋಚನೆ ತುಂಬಾ ದಿನ ಬದುಕಲಾರದು. ಈ ಸಮಾಜದಲ್ಲಿ ಕುಯುಕ್ತಿ, ದುರಾಲೋಚನೆ, ಅಪ್ರಾಮಾಣಿಕತೆ ಆ ಕ್ಷಣಕ್ಕೆ ಗೆಲ್ಲಬಹುದು. ಆದರೆ ದೇವರ ಲೋಕದಲ್ಲಿ ಪ್ರಾಮಾಣಿಕತೆ, ನೈತಿಕತೆಯೇ ಅಂತಿಮವಾಗಿ ಗೆಲ್ಲುವುದು. ಸಮಾಜದಲ್ಲಿ ಎಲ್ಲೆಲ್ಲೂ ಲಂಚಕೋರತನ, ಭ್ರಷ್ಟಾಚಾರ ತಾಂಡವವಾಡುತ್ತಿದೆ. ನೈತಿಕ ಮೌಲ್ಯಗಳು ಮಾಯವಾಗುತ್ತಿವೆ. ಹೆಚ್ಚು ಕಲಿತವರು ಕೂಡ ಸುಲಭವಾಗಿ ಭ್ರಷ್ಟರಾಗುತ್ತಿದ್ದಾರೆ. ಆದರೆ, ಜೀವನದಲ್ಲಿ ನೈತಿಕ ಮೌಲ್ಯಗಳು ಅಗತ್ಯವಾಗಿದ್ದು ಅವುಗಳನ್ನು ಮೈಗೂಡಿಸಿಕೊಂಡು ಮಾದರಿ ವ್ಯಕ್ತಿಗಳಾಗಬೇಕೆಂದು ಯೇಸು ಬಯಸುತ್ತಾರೆ.
No comments:
Post a Comment