Saturday, 12 October 2019

ಸಾಧಾರಣ ಕಾಲದ ಮೂವತ್ತನೇ ವಾರ ಗುರುವಾರ

31/ಹಸಿರು/ಗುರು
1ನೇ ವಾಚನ ರೋಮ 8: 31-39
ಕೀರ್ತನೆ - 1೦9: 21-22, 26-27,  3೦-31
ಶುಭಸಂದೇಶ - ಲೂಕ 13: 31-35

1ನೇ ವಾಚನ ರೋಮ 8: 31-39
ಹೀಗಿರುವಲ್ಲಿ ನಾವು ಏನು ಹೇಳೋಣ? ದೇವರೇ ನಮ್ಮ ಪರ ಇರುವಾಗ ನಮ್ಮನ್ನು ವಿರೋಧಿಸುವವರು ಯಾರು? ದೇವರು ತಮ್ಮ ಸ್ವಂತ ಪುತ್ರನನ್ನೇ ನಮ್ಮೆಲ್ಲರಿಗಾಗಿ ಕೊಡಲು ಹಿಂಜರಿಯಲಿಲ್ಲ. ತಮ್ಮ ಪುತ್ರನನ್ನೇ ಬಲಿದಾನವಾಗಿ ಅರ್ಪಿಸಿದ ದೇವರು ಮತ್ತೇನನ್ನು ತಾನೇ ನಮಗೆ ವರದಾನವಾಗಿ ಕೊಡದಿರಲಾರರು? ದೇವರೇ ಆರಿಸಿಕೊಂಡವರ ಮೇಲೆ ಯಾರು ತಾನೇ ದೋಷಾರೋಪಣೆ ಮಾಡಬಲ್ಲರು? ದೇವರೇ ಅವರನ್ನು ನಿರ್ದೋಷಿಗಳೆಂದು ನಿರ್ಣಯಿಸಿರುವಾಗ ಅವರನ್ನು ದೋಷಿಗಳೆಂದು ನಿರ್ಣಯಿಸುವವರು ಯಾರು? ಪ್ರಾಣತ್ಯಾಗ ಮಾಡಿದ್ದಲ್ಲದೆ ಪುನರುತ್ಥಾನ ಹೊಂದಿದ ಕ್ರಿಸ್ತಯೇಸುವೇ ದೇವರ ಬಲಪಾಶ್ರ್ವದಲ್ಲಿದ್ದುಕೊಂಡು ನಮ್ಮ ಪರವಾಗಿ ಬಿನ್ನಯಿಸುತ್ತಿದ್ದಾರೆ. ಕ್ರಿಸ್ತಯೇಸುವಿನ ಪ್ರೀತಿಯಿಂದ ನಮ್ಮನ್ನು ಬೇರ್ಪಡಿಸಲು ಯಾರಿಂದ ಸಾಧ್ಯ? ಕಷ್ಟ-ಸಂಕಟ, ಇಕ್ಕಟ್ಟು-ಬಿಕ್ಕಟ್ಟು, ಹಿಂಸೆ ಬಾಧೆ ಇವುಗಳಿಂದ ಸಾಧ್ಯವೆ? ಇಲ್ಲ. ಹಸಿವು ನೀರಡಿಕೆ, ನಗ್ನಸ್ಥಿತಿ, ಆಪತ್ತು-ವಿಪತ್ತು, ಖಡ್ಗ-ಕಠಾರಿಗಳಿಂದ ಸಾಧ್ಯವೆ? ಎಂದಿಗೂ ಇಲ್ಲ. ಪವಿತ್ರಗ್ರಂಥದಲ್ಲಿ ಹೀಗೆ ಬರೆಯಲಾಗಿದೆ: “ದಿನವಿಡೀ ನಿಮಗೋಸ್ಕರವೇ ಸಾವಿಗೀಡಾಗುತಿಹೆವು ನಾವು, ಮಧ್ಯಸ್ಥಾನಕ್ಕೆ ಒಯ್ದ ಕುರಿಗಳಂತೆ ಪರಿಗಣಿತರಾಗುತಿಹೆವು ನಾವು.” ನಮ್ಮನ್ನು ಪ್ರೀತಿಸಿದ ಯೇಸುಕ್ರಿಸ್ತರ ಮುಖಾಂತರ ಇವೆಲ್ಲವುಗಳಲ್ಲಿಯೂ ನಾವು ಪೂರ್ಣ ಜಯಶಾಲಿಗಳಾಗುತ್ತೇವೆ. ಸಾವಾಗಲಿ ಜೀವವಾಗಲಿ, ದೇವದೂತರಾಗಲಿ ದುರಾತ್ಮರಾಗಲಿ, ಈಗಿನ ಸಂತತಿಗಳೇ ಆಗಲಿ, ಭವಿಷ್ಯದ ಆಗುಹೋಗುಗಳೇ ಆಗಲಿ, ಯಾವ ಶಕ್ತಿಗಳೇ ಆಗಲಿ ನಮ್ಮ ಪ್ರಭು ಯೇಸುಕ್ರಿಸ್ತರಲ್ಲಿ ತೋರಿಬಂದ ದೈವಪ್ರೀತಿಯಿಂದ ನಮ್ಮನ್ನು ಬೇರ್ಪಡಿಸಲಾರವು. ಅಂತೆಯೇ, ಮೇಲಣ ಲೋಕವಾಗಲಿ, ಕೆಳಗಣ ಲೋಕವಾಗಲಿ, ಸೃಷ್ಟಿಸಮಸ್ತಗಳಲ್ಲಿ ಯಾವುದೇ ಆಗಲಿ, ಆ ಪ್ರೀತಿಯಿಂದ ನಮ್ಮನ್ನು ಬೇರ್ಪಡಿಸಲು ಸಾಧ್ಯವಿಲ್ಲ. ಇದು ನಿಶ್ಚಯ.

ಕೀರ್ತನೆ - 1೦9: 21-22, 26-27,  3೦-31
21 : ಹೇ ಪ್ರಭು, ದೇವಾ, ನನ್ನನಾದರಿಸು ಅಕ್ಕರೆಯಿಂದ / ನನ್ನ ಪಕ್ಷವಹಿಸಿ ರಕ್ಷಿಸು ನಿನ್ನ ನಾಮದ ಪ್ರಯುಕ್ತ // 
22 : ಬಡವ ನಾನು, ನನಗಿದೆ ಕುಂದುಕೊರತೆ / ನನ್ನ ಎದೆಗೆ ಅಲಗೇ ನಾಟಿದಂತಿದೆ // 
23 : ನಾ ಗತಿಸಿಹೋಗುತ್ತಿರುವೆ ಬೈಗಿನ ನೆರಳಂತೆ / ಬಿರುಗಾಳಿ ಕೊಂಡೊಯ್ಯುವ ಮಿಡತೆಯಂತೆ // 
24 : ಬಡಕಲಾಯಿತೆನ್ನ ದೇಹ ಬರಡಿಲ್ಲದೆ / ನಡುಕಹುಟ್ಟಿತು ಕಾಲಿಗೆ ತ್ರಾಣವಿಲ್ಲದೆ //
25 : ಗುರಿಯಾಗಿರುವೆನು ನಾ ಜನರ ಅಪಹಾಸ್ಯಕ್ಕೆ / ನೋಡುವವರು ತಲೆಯಾಡಿಸಿ ಮಾಡುವ ನಿಂದೆಗೆ // 
26 : ಹೇ ಪ್ರಭೂ, ಹೇ ದೇವಾ, ನೆರವಾಗಯ್ಯಾ / ಅಚಲಪ್ರೀತಿಯಿಂದ ನನ್ನ ರಕ್ಷಿಸಯ್ಯಾ // 
27 : ನನ್ನ ರಕ್ಷಣೆ ನಿನ್ನ ಕೈಯಿಂದಾದುದೆಂದು ಅವರರಿಯಲಿ / ಅದು ನಿನ್ನಿಂದಲೇ ಹೇ ಪ್ರಭು, ಆದುದೆಂದು ಖಚಿತವಾಗಲಿ // 
28 : ಅವರೆನ್ನನು ಶಪಿಸಿದರೂ ನೀನೆನ್ನನು ಹರಸು / ನನ್ನೆದುರಾಳಿಗೆ ಅಪಮಾನವನು ಹೊರಿಸು / ನಿನ್ನ ದಾಸನೆನಗೆ ಆನಂದವನು ಪಾಲಿಸು // 
29 : ಮಾನಭಂಗವಾಗಲಿ ನನ್ನಾ ನಿಂದಕರಿಗೆ / ಬಟ್ಟೆಯಂತೆ ಅವರಿಗಂಟಿಕೊಳ್ಳಲಿ ಹೇಸಿಗೆ // 
30 : ಕೊಂಡಾಡುವೆನು ಪ್ರಭುವನು ಬಹಳವಾಗಿ / ಕೀರ್ತಿಸುವೆನು ಆತನನು ಸಾಮೂಹಿಕವಾಗಿ // 
31 : ನಿಂತಿರುವನು ಪ್ರಭು ಬಡವನ ಬಲಗಡೆ / ವಿಧಿಸುವವರಿಂದ ತಪ್ಪಿಸುವನು ಮರಣದಂಡನೆ //

ಶುಭಸಂದೇಶ - ಲೂಕ 13: 31-35
ಅದೇ ಸಮಯಕ್ಕೆ ಸರಿಯಾಗಿ ಕೆಲವು ಮಂದಿ ಫರಿಸಾಯರು ಯೇಸುಸ್ವಾಮಿಯ ಬಳಿಗೆ ಬಂದು, “ಇಲ್ಲಿಂದ ಹೊರಟು ಹೋಗಿಬಿಡಿ, ಹೆರೋದನು ನಿಮ್ಮನ್ನು ಕೊಲ್ಲಬೇಕೆಂದಿದ್ದಾನೆ,” ಎಂದರು. ಅದಕ್ಕೆ ಯೇಸು, “ನೀವು ಹೋಗಿ ಆ ನರಿಗೆ ಹೀಗೆಂದು ತಿಳಿಸಿರಿ: ಇಂದು ಮತ್ತು ನಾಳೆ ದೆವ್ವಗಳನ್ನು ಬಿಡಿಸುತ್ತೇನೆ, ರೋಗಿಗಳನ್ನು ಗುಣಪಡಿಸುತ್ತೇನೆ, ಮೂರನೆಯ ದಿನ ನನ್ನ ಕಾರ್ಯ ಸಿದ್ಧಿಗೆ ಬರುವುದು. ಹೇಗೂ ಇಂದು, ನಾಳೆ ಮತ್ತು ನಾಡಿದ್ದು ನಾನು ನನ್ನ ಮಾರ್ಗವನ್ನು ಮುಂದುವರಿಸಬೇಕು. ಪ್ರವಾದಿಯಾದವನು ಜೆರುಸಲೇಮಿನ ಹೊರಗೆ ಕೊಲೆಗೀಡಾಗುವುದು ಸಲ್ಲದು. “ಓ ಜೆರುಸಲೇಮೇ, ಜೆರುಸಲೇಮೇ, ಪ್ರವಾದಿಗಳ ಕೊಲೆಪಾತಕಿಯೇ, ದೇವರು ನಿನ್ನ ಬಳಿಗೆ ಕಳುಹಿಸಿದವರನ್ನು ಕಲ್ಲುಗಳಿಂದ ಹೊಡೆಯುವವಳೇ, ಕೋಳಿ ತನ್ನ ಮರಿಗಳನ್ನು ರೆಕ್ಕೆಗಳಡಿ ಸೇರಿಸಿಕೊಳ್ಳುವಂತೆ, ನಾನು ನಿನ್ನ ಮಕ್ಕಳನ್ನು ಒಂದಾಗಿ ಸೇರಿಸಿ ಅಪ್ಪಿಕೊಳ್ಳಲು ಎಷ್ಟೋ ಬಾರಿ ಅಪೇಕ್ಷಿಸಿದೆ. ಆದರೆ ನೀನು ಒಪ್ಪಲಿಲ್ಲ. ಇಗೋ, ನಿಮ್ಮ ದೇವಾಲಯ ಪಾಳುಬೀಳುವುದು. ‘ಸರ್ವೇಶ್ವರನ ನಾಮದಲ್ಲಿ ಬರುವವರು ಧನ್ಯರು,’ ಎಂದು ನೀವಾಗಿ ಹೇಳುವ ದಿನದವರೆಗೂ ನೀವು ನನ್ನನ್ನು ಕಾಣಲಾರಿರಿ, ಎಂಬುದು ನಿಶ್ಚಯ,” ಎಂದರು.
----
ಚಿಂತನೆ
ಹೆರೋದನನ್ನು ನರಿಯೆಂದು, ಜೆರುಸಲೇಮ್ ನಗರವನ್ನು ಕೊಲೆಪಾತಕಿಯಂದು ಯೇಸು ಖಂಡಿಸುತ್ತಾರೆ. ಯೊಹೂದ್ಯರ ಪದ್ಧತಿಯಂತೆ ಯೇಸುವು ಜೆರುಸಲೇಮನ್ನು ಇಸ್ರಾಯೇಲರ ತಾಯಿಯೆಂದು ಇಸ್ರಾಯೇಲರು ಆಕೆಯ ಮಕ್ಕಳೆಂದು ಹೇಳುತ್ತಿದ್ದರು. ಹಳೆಯ ಒಡಂಬಡಿಕೆಯಲ್ಲಿ ದೇವರು ಇಸ್ರೆಯೇಲರನ್ನು ರಕ್ಷಿಸುವ ಚಿತ್ರಣವನ್ನು ಯೇಸುವು ನೆನಪಿಸುತ್ತಾರೆ. (ಯಶಾಯ 31:5, ಧ.ಕಾಂq 32:11-12, ರೂತರಳು 2:12). ಇಸ್ರೆಯೇಲರು ದೇವರು ಕಳುಹಿಸಿದ ಅನೇಕ ಪ್ರವಾದಿಗಳನ್ನು ಹಿಂಸಿಸಿ ಕೊಲೆ ಮಾಡಿದ್ದರು. ಯೇಸುವನ್ನು ಮತ್ತು ಆತನ ಹಿಂಬಾಲಕರನ್ನು ಕೂಡ ಹಿಂಸಿಸಲಿದ್ದಾರೆ ಎಂಬುದನ್ನು ಮುಂತಿಳಿಸುತ್ತಾ ಜೆರುಸಲೇಮಿಗೆ ಬರುವ ದುರ್ಗತಿಯ ಬಗ್ಗೆ ತಿಳಿಸುತ್ತಾರೆ. ಯೇಸು ಪ್ರವಾದನೆ ಮಾಡಿದಂತೆ ಕ್ರಿ.ಶ. 70ರಲ್ಲಿ ರೋಮನ್ನರು ಜೆರುಸಲೇಮನ್ನು ಸಂಪೂರ್ಣವಾಗಿ ನಾಶಮಾಡಿದರು. 

No comments:

Post a Comment