Saturday, 28 March 2020

ಪಾಸ್ಕ ಕಾಲದ ಮೊದಲ ವಾರ - ಗುರುವಾರ

ಏಪ್ರಿಲ್ 16, 2020 ಗುರುವಾರ                                            [ಬಿಳಿ]
ಮೊದಲ ವಾಚನ: ಪ್ರೇಷಿತರ ಕಾರ್ಯಕಲಾಪಗಳು 3:11-26
ಕೀರ್ತನೆ 8: 2, 5-9 ಶ್ಲೋಕ.1
ಪ್ರಭೂ, ನಮ್ಮ ಪ್ರಭೂ, ಎನಿತು ಮಹಿಮಾನ್ವಿತ
ಹರಡಿವೆ ನಿನ್ನ ಸಿರಿನಾಮ ಜಗದಾದ್ಯಂತ!
[ಅಥವಾ] ಅಲ್ಲೆಲೂಯ, ಅಲ್ಲೆಲೂಯ, ಅಲ್ಲೆಲೂಯ
ಶುಭಸಂದೇಶ: ಲೂಕ 24.35-48
ಮೊದಲ ವಾಚನ: ಪ್ರೇಷಿತರ ಕಾರ್ಯಕಲಾಪಗಳು 3:11-26
11 : ‘ಸೊಲೊಮೋನನ ಮಂಟಪದಲ್ಲಿ ಪೇತ್ರ ಮತ್ತು ಯೊವಾನ್ನರ ಜೊತೆ ಭಿಕ್ಷುಕನು ಇನ್ನೂ ನಿಂತಿದ್ದನು. ಆಶ್ಚರ್ಯಭರಿತರಾದ ಜನರು ಅಲ್ಲಿಗೆ ಓಡಿಬಂದರು.
12 : ಇದನ್ನು ನೋಡಿ ಪೇತ್ರನು ಇಂತೆಂದನು: “ಇಸ್ರಯೇಲಿನ ಜನರೇ, ಘಟನೆಯಿಂದ ನೀವೇಕೆ ಆಶ್ಚರ್ಯಚಕಿತರಾಗಿದ್ದೀರಿ? ನಮ್ಮನ್ನೇಕೆ ಎವೆಯಿಕ್ಕದೆ ನೋಡುತ್ತಿದ್ದೀರಿ? ನಮ್ಮ ಸ್ವಂತ ಶಕ್ತಿಯಿಂದಾಗಲೀ ಭಕ್ತಿಯಿಂದಾಗಲೀ, ಮನುಷ್ಯನು ನಡೆಯುವಂತೆ ನಾವು ಮಾಡಿದೆವೆಂದು ಭಾವಿಸುತ್ತೀರೋ?
13 : ಪಿತಾಮಹ ಅಬ್ರಹಾಮ, ಇಸಾಕ ಮತ್ತು ಯಕೋಬರ ದೇವರು, ಅಂದರೆ ನಮ್ಮ ಪೂರ್ವಜರ ದೇವರು, ತಮ್ಮ ದಾಸ ಯೇಸುವಿನ ಮಹಿಮೆಯನ್ನು ಬೆಳಗಿಸಿದ್ದಾರೆ. ನೀವಾದರೋ ಅವರನ್ನು ಅಧಿಕಾರಿಗಳ ಕೈಗೊಪ್ಪಿಸಿದಿರಿ. ರಾಜ್ಯಪಾಲ ಪಿಲಾತನು ಅವರನ್ನು ಬಿಡುಗಡೆ ಮಾಡಲು ನಿರ್ಧರಿಸಿದಾಗ ಕೂಡ ಅವನ ಸಮ್ಮುಖದಲ್ಲೇ ಅವರನ್ನು ಧಿಕ್ಕರಿಸಿದಿರಿ.
14 : ಯೇಸು ಪುನೀತರು ಹಾಗೂ ಸತ್ಯಸ್ವರೂಪರು. ಆದರೂ ನೀವು ಅವರನ್ನು ನಿರಾಕರಿಸಿ, ಒಬ್ಬ ಕೊಲೆಗಡುಕನನ್ನೇ ನಿಮಗೆ ಬಿಟ್ಟುಕೊಡುವಂತೆ ಪಿಲಾತನನ್ನು ಬೇಡಿಕೊಂಡಿರಿ.
15 : ಜೀವದೊಡೆಯನನ್ನು ನೀವು ಕೊಂದುಹಾಕಿದಿರಿ; ದೇವರು ಅವರನ್ನು ಪುನರುತ್ಥಾನಗೊಳಿಸಿದರು. ಇದಕ್ಕೆ ನಾವೇ ಸಾಕ್ಷಿಗಳು.
16 : ನಿಮ್ಮ ಕಣ್ಣೆದುರಿಗಿರುವ ಮನುಷ್ಯನು ಯಾರೆಂದು ನಿಮಗೆ ಗೊತ್ತಿದೆ. ಯೇಸುವಿನ ನಾಮದಿಂದಲೇ, ನಾಮದ ಮೇಲಿಟ್ಟ ವಿಶ್ವಾಸದಿಂದಲೇ, ಈತನು ಶಕ್ತಿಪಡೆದಿದ್ದಾನೆ. ಯೇಸುವಿನಲ್ಲಿಟ್ಟ ವಿಶ್ವಾಸವೇ ಈತನಿಗೆ, ನೀವೇ ನೋಡುವಂತೆ, ಸಂಪೂರ್ಣ ಆರೋಗ್ಯವನ್ನು ದಯಪಾಲಿಸಿದೆ.
17 : “ಸಹೋದರರೇ, ನೀವೂ ನಿಮ್ಮ ಅಧಿಕಾರಿಗಳೂ ತಿಳಿಯದೆ ಯೇಸುವಿಗೆ ಹೀಗೆ ಮಾಡಿದಿರೆಂದು ನಾನು ಬಲ್ಲೆ.
18 : ಕ್ರಿಸ್ತಯೇಸು ಯಾತನೆಯನ್ನು ಅನುಭವಿಸಬೇಕೆಂದು ದೇವರು ಪ್ರವಾದಿಗಳೆಲ್ಲರ ಮುಖಾಂತರ ಆಗಲೇ ಮುಂತಿಳಿಸಿದ್ದರು. ಪ್ರವಾದನೆಗಳನ್ನು ಈಗ ನೆರವೇರಿಸಿದ್ದಾರೆ.
19 : ಪಶ್ಚಾತ್ತಾಪಪಟ್ಟು ದೇವರಿಗೆ ಅಭಿಮುಖರಾಗಿರಿ. ಅವರು ನಿಮ್ಮ ಪಾಪಗಳನ್ನು ಪರಿಹರಿಸುವರು.
20 : ಸರ್ವೇಶ್ವರನ ಸಾನ್ನಿಧ್ಯ ಸೌಭಾಗ್ಯವು ನಿಮ್ಮದಾಗುವುದು; ನಿಮಗೋಸ್ಕರ ನೇಮಿತರಾದ ಉದ್ಧಾರಕ ಯೇಸುವನ್ನು ಕಳುಹಿಸುವರು.
21 : ಸಮಸ್ತವನ್ನೂ ಪುನರ್ಸ್ಥಾಪನೆಗೊಳಿಸುವವರೆಗೆ ಕ್ರಿಸ್ತಯೇಸು ಸ್ವರ್ಗದಲ್ಲಿಯೇ ಇರಬೇಕಾಗಿದೆ. ಇದನ್ನು ದೇವರು ಪವಿತ್ರ ಪ್ರವಾದಿಗಳ ಮುಖಾಂತರ ಬಹುಕಾಲಕ್ಕೆ ಹಿಂದೆಯೇ ಪ್ರಕಟಿಸಿದ್ದಾರೆ.
22 : ‘ಸರ್ವೇಶ್ವರನಾದ ದೇವರು ನನ್ನನ್ನು ಕಳುಹಿಸಿದಂತೆಯೇ ನಿಮಗೊಬ್ಬ ಪ್ರವಾದಿಯನ್ನು ಕಳುಹಿಸುವರು. ಆತನು ನಿಮ್ಮ ಸ್ವಂತ ಜನಾಂಗದವನಾಗಿರುವನು. ಆತನು ಹೇಳುವುದನ್ನೆಲ್ಲಾ ನೀವು ಕೇಳಬೇಕು.
23 : ಪ್ರವಾದಿಗೆ ಕಿವಿಗೊಡದವನು ದೇವಜನರಿಂದ ದೂರವಾಗಿ ನಾಶವಾಗುತ್ತಾನೆ,’ ಎಂದು ಮೋಶೆ ಹೇಳಿದ್ದಾನೆ.
24 : ಸಮುವೇಲನೂ ಅವನ ನಂತರ ಬಂದ ಎಲ್ಲ ಪ್ರವಾದಿಗಳೂ ದಿನಗಳಲ್ಲಿ ನಡೆಯುತ್ತಿರುವುದನ್ನು ದೈವದತ್ತವಾಗಿ ಸಾರಿದ್ದಾರೆ.
25 : ದೇವರು ಪ್ರವಾದಿಗಳ ಮುಖಾಂತರ ಮಾಡಿದ ವಾಗ್ದಾನಗಳಿಗೂ ನಿಮ್ಮ ಪೂರ್ವಜರೊಂದಿಗೆ ಮಾಡಿದ ಒಡಂಬಡಿಕೆಗೂ ನೀವು ಉತ್ತರಾಧಿಕಾರಿಗಳು; ಪೂರ್ವಜ ಅಬ್ರಹಾಮನಿಗೆ, ‘ನಿನ್ನ ಸಂತತಿಯ ಮುಖಾಂತರ ವಿಶ್ವದ ಎಲ್ಲಾ ಜನಾಂಗಗಳು ಧನ್ಯರಾಗುವರುಎಂದಿದ್ದಾರೆ ದೇವರು.
26 : ಅಂತೆಯೇ, ಅವರು ತಮ್ಮ ದಾಸನನ್ನು ಎಬ್ಬಿಸಿದ್ದಾರೆ. ನಿಮ್ಮೆಲ್ಲರನ್ನು ದುರ್ಮಾರ್ಗದಿಂದ ದೂರಮಾಡಿ ಧನ್ಯರಾಗಿಸಲು ಅವರನ್ನು ಮೊತ್ತಮೊದಲು ನಿಮ್ಮಲ್ಲಿಗೆ ಕಳುಹಿಸಿದ್ದಾರೆ.”


ಕೀರ್ತನೆ 8: 2, 5-9  ಶ್ಲೋಕ.1
ಪ್ರಭೂ, ನಮ್ಮ ಪ್ರಭೂ, ಎನಿತು ಮಹಿಮಾನ್ವಿತ
ಹರಡಿವೆ ನಿನ್ನ ಸಿರಿನಾಮ ಜಗದಾದ್ಯಂತ!

2 : ವಿರೋಧಿಗಳ ಬಾಯನು ಮುಚ್ಚಿಸಿದೆ ಬಾಲ ಬಾಲೆಯರ ಬಾಯಿಂದಲೆ / ಹಗೆಗಳನು ದುರ್ಗದಂತೆ ತಡೆದೆ ಮೊಲೆಗೂಸುಗಳ ನಾಲಿಗೆಯಿಂದಲೆ / 5 : ಆದರೆ ದೇವದೂತರಿಗಿಂತ ಕಿಂಚಿತ್ತೆ ಕೀಳಾಗಿಸಿದೆ ಮನುಜನನು / ಮುಡಿಸಿದೆ ಮುಕುಟವಾಗವನಿಗೆ ಘನ ಮಾನವನು, ಸಿರಿಹಿರಿಮೆಯನು //
6 : ಒಡೆಯನಾಗಿಸಿದೆ ನಿನ್ನಯ ಕರಕೃತಿಗಳಿಗೆ / ಒಳಪಡಿಸಿದೆ ಸಕಲವನು ಅವನ ಪಾದದಡಿಗೆ //
7 : ಕುರಿಗಳನು, ಕರುಗಳನು, ಕಾಡು ಮೃಗಗಳನು / ಗರಿಗಳನು, ವಿೂನುಗಳನು, ಜಲಚರಗಳನು /
8 : ಕರಗತ ಮಾಡಿದೆ ನೀ ಅವನಿಗೆಲ್ಲವನು //
9 : ಪ್ರಭು, ಎಮ್ಮ ಪ್ರಭು, ನಿನ್ನ ನಾಮಾಮೃತ / ಬೆಳಗಿದೆ ತನ್ನ ಮಹಿಮೆಯನು ಭುವನ ಪರ್ಯಂತ //

ಶುಭಸಂದೇಶ: ಲೂಕ 24.35-48
 35 : ಆಗ ಅವರು ತಾವು ದಾರಿಯಲ್ಲಿ ಕಂಡ ವಿಷಯವನ್ನೂ ರೊಟ್ಟಿ ಮುರಿದು ಕೊಡುವಾಗ ಸ್ವಾಮಿಯನ್ನು ತಾವು ಗುರುತುಹಚ್ಚಿದ ವಿಷಯವನ್ನೂ ಅಲ್ಲಿದ್ದವರಿಗೆ ವರದಿಮಾಡಿದರು. ಶಿಷ್ಯರಿಗೆ ದಿವ್ಯದರ್ಶನ (ಮತ್ತಾ. 28.16-20; ಮಾರ್ಕ 16.14-18; ಯೊವಾ. 20.19-23; ಪ್ರೇ.ಕಾ. 1.6-8)
36 : ಅವರು ವರದಿಮಾಡುತ್ತಿದ್ದಂತೆ ಯೇಸುಸ್ವಾಮಿಯೇ ಅವರ ಮಧ್ಯೆ ಪ್ರತ್ಯಕ್ಷವಾಗಿ ನಿಂತು, ‘ನಿಮಗೆ ಶಾಂತಿ,’ ಎಂದರು.
37 : ಅವರೆಲ್ಲರೂ ಚಕಿತರಾಗಿ, ದಿಗಿಲುಗೊಂಡು, ತಾವು ಕಾಣುತ್ತಿರುವುದು ಭೂತವೆಂದು ಭಾವಿಸಿದರು.
38 : ಆಗ ಯೇಸು, “ಏಕೆ ಕಳವಳಪಡುತ್ತೀರಿ? ನಿಮ್ಮ ಮನಸ್ಸಿನಲ್ಲಿ ಸಂಶಯವೇಕೆ?
39 : ನನ್ನ ಕೈಗಳನ್ನೂ ನನ್ನ ಕಾಲುಗಳನ್ನೂ ನೋಡಿ, ನಾನೇ ಅಲ್ಲವೇ? ನನ್ನನ್ನು ಮುಟ್ಟಿ ನೋಡಿರಿ, ನೀವು ನನ್ನಲ್ಲಿ ಕಾಣುವಂತೆ, ಮಾಂಸ ಮತ್ತು ಎಲುಬು ಭೂತಕ್ಕೆ ಇರುವುದಿಲ್ಲ,” ಎಂದರು.
40 : ಇಂತೆಂದ ಮೇಲೆ ತಮ್ಮ ಕೈಗಳನ್ನೂ ಕಾಲುಗಳನ್ನೂ ಅವರಿಗೆ ತೋರಿಸಿದರು.
41 : ಶಿಷ್ಯರು ಇನ್ನೂ ನಂಬದೆ, ಆನಂದಾಶ್ಚರ್ಯಭರಿತರಾಗಿದ್ದರು. ಆಗ ಯೇಸು, “ನಿಮ್ಮಲ್ಲಿ ತಿನ್ನಲು ಏನಾದರೂ ಇದೆಯೇ?” ಎಂದು ಕೇಳಿದರು.
42 : ಹುರಿದ ವಿೂನಿನ ತುಂಡು ಒಂದನ್ನು ಶಿಷ್ಯರು ಕೊಟ್ಟರು.
43 : ಯೇಸು ಅದನ್ನು ತೆಗೆದುಕೊಂಡು ಅವರ ಎದುರಿಗೇ ತಿಂದರು. ಅಂತಿಮ ಸಂದೇಶ
44 : ತರುವಾಯ ಯೇಸುಸ್ವಾಮಿ, “ನಾನು ನಿಮ್ಮೊಡನೆ ಇದ್ದಾಗಲೇ ನಿಮಗೆ ತಿಳಿಸಿದ ವಿಷಯ ಇದು: ಮೋಶೆಯ ನಿಯಮದಲ್ಲೂ ಪ್ರವಾದಿಗಳ ಗ್ರಂಥದಲ್ಲೂ ಕೀರ್ತನೆಗಳಲ್ಲೂ ನನ್ನ ವಿಷಯವಾಗಿ ಬರೆದಿರುವುದೆಲ್ಲಾ ನೆರವೇರಲೇಬೇಕಾಗಿತ್ತು,” ಎಂದರು.
45 : ಆಮೇಲೆ, ಪವಿತ್ರ ಗ್ರಂಥವನ್ನು ಅವರು ಅರ್ಥಮಾಡಿಕೊಳ್ಳುವಂತೆ ಅವರ ಬುದ್ಧಿಯನ್ನು ವಿಕಾಸಗೊಳಿಸಿದರು.
46 : ಅನಂತರ, “ಮೊದಲೇ ಬರೆದಿರುವ ಪ್ರಕಾರ ಕ್ರಿಸ್ತನು ಯಾತನೆಯನ್ನು ಅನುಭವಿಸಿ ಸತ್ತು ಮೂರನೆಯ ದಿನ ಪುನರುತ್ಥಾನ ಹೊಂದಬೇಕಾಗಿತ್ತು;
47 : ಅಲ್ಲದೆ ಜನರು ಪಾಪಪರಿಹಾರ ಪಡೆಯಬೇಕಾದರೆ, ಪಶ್ಚಾತ್ತಾಪಪಟ್ಟು, ಪಾಪಕ್ಕೆ ವಿಮುಖರಾಗಿ, ದೈವಾಭಿಮುಖಿಗಳಾಗಬೇಕೆಂತಲೂ ಸಂದೇಶವನ್ನು ಜೆರುಸಲೇಮಿನಿಂದ ಮೊದಲ್ಗೊಂಡು ಎಲ್ಲಾ ಜನಾಂಗಗಳಿಗೂ ಆತನ ಹೆಸರಿನಲ್ಲೇ ಪ್ರಕಟಿಸಬೇಕೆಂತಲೂ ಮೊದಲೇ ಲಿಖಿತವಾಗಿತ್ತು.
48 : ಇದಕ್ಕೆಲ್ಲಾ ನೀವೇ ಸಾಕ್ಷಿಗಳು.
-----------
ಅಳುಕು ಹೃದಯಗಳನ್ನು ಧೈರ್ಯಗೊಳಿಸಲು, ಮಂಕಾದ ಮನಸ್ಸುಗಳನ್ನು ಪ್ರಜ್ವಲಗೊಳಿಸಲು, ಯೇಸು ಪ್ರತಿಯೋರ್ವರಿಗೂ ವಿಭಿನ್ನ ರೀತಿಯಲ್ಲಿ ಒಬ್ಬೊಬ್ಬರಿಗೂ ಒಂದೊಂದು ರೀತಿಯ ಸಂಕೇತಗಳ ರೂಪದಲ್ಲಿ, ತಮ್ಮನ್ನೇ ವ್ಯಕ್ತಪಡಿಸುವುದನ್ನು ನೋಡುತ್ತಿದ್ದೇವೆ. ಪುಟ್ಟ ಮಗುವಿಗೆ ತಾಯಿಯೋರ್ವಳು ಬದುಕಿನ ಮೂಲ ಪಾಠಗಳನ್ನು ತಾಳ್ಮೆಯಿಂದ ಕಲಿಸಿಕೊಡುವಂತೆ, ಪ್ರಭು ತಮ್ಮ ಶಿಷ್ಯರಿಗೆ ಯಾವುದೇ ಬೇಸರಿಕೆಯಿಲ್ಲದೆ ವಿಶ್ವಾಸದ ಪಾಠವನ್ನು ಸಂಯಮದಿಂದ ಕಲಿಸುತ್ತಿದ್ದಾರೆ. ಸುಮಾರು ಮೂರು ವರ್ಷಗಳವರೆಗೆ ಅವರೊಂದಿಗಿದ್ದು, ಅವರ ಬೋಧನೆಯನ್ನು ಕೇಳಿ, ಅದ್ಭುತಗಳನ್ನು ಕಣ್ಣಾರೆ ಕಂಡಿದ್ದರೂ ಮಂಕು ಕವಿದ ಮನಸ್ಸುಗಳಿಗೆ ತಮ್ಮ ಮುಂದೆ ಪ್ರತ್ಯಕ್ಷರಾಗಿ ನಿಂತ ಕ್ರಿಸ್ತ ಒಂದು ಭೂತದಂತೆ ಕಾಣಿಸುವುದು ವಿಪರ್ಯಾಸ. ಆದರೂ ಅವರ ಬಲಹೀನತೆಯನ್ನರಿತು ಪ್ರಭು ಪ್ರೀತಿಯಿಂದ ಅವರನ್ನು ಬಲಪಡಿಸುವರು. ದುರ್ಬಲರನ್ನು ಸಬಲರನ್ನಾಗಿಸುವುದು ಅವರ ಸದುದ್ದೇಶ. ಕ್ರಿಸ್ತರ ನೈಜ ಅನುಯಾಯಿಗಳಾಗಲು ನಾವು ಎಲ್ಲ ರೀತಿಯಲ್ಲೂ ಪರಿಪೂರ್ಣರಾಗಬೇಕಿಲ್ಲ, ಕಿಸ್ತಾನುಭವಕ್ಕೆ ಒಳಗಾಗಿ ಅವರ ಸ್ವರಕ್ಕೆ ಕಿವಿಗೊಟ್ಟು ನಡೆದರೆ ಸಾಕಷ್ಟೇ, ಕ್ರಿಸ್ತಯೇಸು ನಮ್ಮನ್ನು ತಮ್ಮ ಪ್ರಭಾವಕ್ಕೊಳಪಡಿಸಿಕೊಂಡು ಪರಿಪೂರ್ಣತೆಯೆಡೆಗೆ ನಡೆಸುವರು. 
------------------
© 'ದನಿಮಾಧ್ಯಮ ಮನೆ





ದನಿ ಮಾಧ್ಯಮ ಮನೆಯ 'ದನಿ' ಇ-ಮಾಸಿಕಕ್ಕೆ ಬೇಟಿ ನೀಡಲು ಇಲ್ಲಿ ಕ್ಲಿಕ್‌ ಮಾಡಿ

No comments:

Post a Comment