ಅಕ್ಟೋಬರ್ 5, 2020 ಸೋಮವಾರ [ಹಸಿರು]
ಮೊದಲ ವಾಚನ: ಗಲಾತ್ಯರಿಗೆ 1.6-12
ಕೀರ್ತನೆ 111: 1-2, 7-8, 9-10. ಶ್ಲೋಕ.5
ತನ್ನೊಡಂಬಡಿಕೆಯ ಚಿರ ನೆನಪಿರುವುದು ಪ್ರಭುವಿಗೆ
ಶುಭಸಂದೇಶ: ಲೂಕ 10.25-37
==================
ಮೊದಲನೇ ವಾಚನ
ಗಲಾತ್ಯರಿಗೆ 1.6-12
6 : ಕ್ರಿಸ್ತಯೇಸುವಿನ ಅನುಗ್ರಹದಿಂದ ನಿಮ್ಮನ್ನು ಕರೆದ ದೇವರನ್ನು ನೀವಿಷ್ಟು ಬೇಗನೆ ತ್ಯಜಿಸಿ, ಬೇರೊಂದು ‘ಶುಭಸಂದೇಶ’ವನ್ನು ಅಂಗೀಕರಿಸುತ್ತಿರುವಿರೆಂದು ಕೇಳಿ ನನಗೆ ಆಶ್ಚರ್ಯವಾಗುತ್ತಿದೆ.
7 : ವಾಸ್ತವವಾಗಿ, ಬೇರೆ ಯಾವ ಶುಭಸಂದೇಶವೂ ಇಲ್ಲ. ಆದರೆ ಕೆಲವರು ನಿಮ್ಮಲ್ಲಿ ಗೊಂದಲವೆಬ್ಬಿಸಿ, ಕ್ರಿಸ್ತಯೇಸುವಿನ ಶುಭಸಂದೇಶವನ್ನು ಮಾರ್ಪಡಿಸಲು ಯತ್ನಿಸುತ್ತಾ ಇದ್ದಾರೆ.
8 : ನಾವು ನಿಮಗೆ ಬೋಧಿಸಿದ ಶುಭಸಂದೇಶಕ್ಕೆ ವಿರುದ್ಧವಾದ ಸಂದೇಶವನ್ನು ನಾವೇ ಆಗಲಿ, ಸ್ವರ್ಗದಿಂದ ಇಳಿದ ದೇವದೂತನೇ ಆಗಲಿ, ಯಾರೇ ಆಗಲಿ ಬೋಧಿಸಿದರೆ ಅವನು ಶಾಪಗ್ರಸ್ತನಾಗಲಿ!
9 : ನೀವು ಅಂಗೀಕರಿಸಿದ ಶುಭಸಂದೇಶಕ್ಕೆ ವಿರುದ್ಧವಾದ ಸಂದೇಶವನ್ನು ಸಾರುವವನು ಶಾಪಗ್ರಸ್ತನಾಗಲಿ ಎಂದು ನಾನು ಮೊದಲೇ ಹೇಳಿದಂತೆ, ಮತ್ತೊಮ್ಮೆ ಒತ್ತಿ ಹೇಳುತ್ತೇನೆ.
10 : ಇದರಿಂದ ನಾನು ಯಾರನ್ನು ಒಲಿಸಿಕೊಳ್ಳಲು ಯತ್ನಿಸುತ್ತಿದ್ದೇನೆ? ಮಾನವರನ್ನೋ? ದೇವರನ್ನೋ? ನಾನು ಮಾನವರ ಮೆಚ್ಚುಗೆಯನ್ನು ಗಳಿಸಿಕೊಳ್ಳಲು ಯತ್ನಿಸುತ್ತಿಲ್ಲ; ನಾನಿನ್ನೂ ಜನರ ಮೆಚ್ಚುಗೆಯನ್ನು ಗಳಿಸುವವನೇ ಆಗಿದ್ದರೆ ಕ್ರಿಸ್ತಯೇಸುವಿನ ದಾಸನಾಗಿರಲು ಸಾಧ್ಯವೇ ಇಲ್ಲ.
11 : ಪ್ರಿಯ ಸಹೋದರರೇ, ನಾನು ಬೋಧಿಸಿದ ಶುಭಸಂದೇಶವು ಮಾನವ ಕಲ್ಪಿತ ಸಂದೇಶ ಅಲ್ಲವೆಂದು ನಿಮಗೆ ಮನದಟ್ಟು ಮಾಡಲು ಬಯಸುತ್ತೇನೆ.
12 : ಈ ಶುಭಸಂದೇಶವನ್ನು ನಾನು ಮನುಷ್ಯರಿಂದ ಪಡೆಯಲಿಲ್ಲ; ಅದನ್ನು ಯಾರಿಂದಲೂ ಕಲಿತುಕೊಳ್ಳಲಿಲ್ಲ; ಯೇಸುಕ್ರಿಸ್ತರೇ ನನಗದನ್ನು ಶ್ರುತಪಡಿಸಿದರು.
===================
ಕೀರ್ತನೆ
ಕೀರ್ತನೆ 111: 1-2, 7-8, 9-10. ಶ್ಲೋಕ.5
ತನ್ನೊಡಂಬಡಿಕೆಯ ಚಿರ ನೆನಪಿರುವುದು ಪ್ರಭುವಿಗೆ
1 : ಸಜ್ಜನರ ಸಂಘದೊಳು, ಸಭಾಸದಸ್ಯರೊಳು ಕೂಡಿ /
ಹೊಗಳುವೆ ಪ್ರಭುವನು ಮನಃ ಪೂರ್ವಕವಾಗಿ ಹಾಡಿ //
2 : ಮಹತ್ತಾದವು ಪ್ರಭುವಿನಾ ಕಾರ್ಯಗಳು /
ಕೊಂಡಾಡುವರು ಅವುಗಳನು ಭಕ್ತಾದಿಗಳು //
7 : ನೀತಿ ಸತ್ಯತೆಯುಳ್ಳವು ಆತನ ಸತ್ಕಾರ್ಯಗಳು /
ಸುಸ್ಥಿರವಾದವು ಆತನ ನಿಯಮ ನಿಬಂಧನೆಗಳು //
8 : ಯುಗಯುಗಾಂತರಕು ದೃಢವಾಗಿರುವುವು /
ಸತ್ಯನೀತಿಗಳು ಅವುಗಳಿಗೆ ಅಡಿಪಾಯವು //
9 : ವಿಮೋಚನೆಯನಿತ್ತಿಹನು ಪ್ರಭು ತನ್ನ ಪ್ರಜೆಗೆ /
ಸ್ಥಿರಸ್ಥಾಪಿತವಾಗಿಹುದು ಆತನ ಒಡಂಬಡಿಕೆ /
ಪರಿಶುದ್ಧ, ಪರಮ ಪೂಜ್ಯ ಆತನ ನಾಮಾಂಕೆ //
10 : ಸುಜ್ಞಾನಕ್ಕೆ ಮೂಲವು ದೈವಭಯವು /
ಅದರ ಪಾಲನೆಯು ವಿವೇಕತನವು /
ಪ್ರಭುವಿಗೆ ಸ್ತೋತ್ರ ಸದಾಕಾಲವು //
===================
ಲೂಕ 10.25-37
25 : ಒಬ್ಬ ಶಾಸ್ತ್ರಜ್ಞನು ಎದ್ದು ಯೇಸುಸ್ವಾಮಿಯನ್ನು ಪರೀಕ್ಷಿಸುವ ಉದ್ದೇಶದಿಂದ “ಬೋಧಕರೇ, ಅಮರಜೀವ ನನಗೆ ಪ್ರಾಪ್ತಿ ಆಗಬೇಕಾದರೆ ನಾನು ಮಾಡಬೇಕಾದುದು ಏನು?” ಎಂದು ಕೇಳಿದನು.
26 : ಅದಕ್ಕೆ ಯೇಸು, “ಧರ್ಮಶಾಸ್ತ್ರದಲ್ಲಿ ಏನು ಬರೆದಿದೆ? ಹೇಗೆ ಪಠಿಸುತ್ತೀಯೆ?” ಎಂದು ಮರುಪ್ರಶ್ನೆ ಹಾಕಿದರು.
27 : ಅವನು, “ ‘ನಿನ್ನ ಸರ್ವೇಶ್ವರನಾದ ದೇವರನ್ನು ನಿನ್ನ ಪೂರ್ಣ ಹೃದಯದಿಂದಲೂ ನಿನ್ನ ಪೂರ್ಣ ಆತ್ಮದಿಂದಲೂ ನಿನ್ನ ಪೂರ್ಣ ಶಕ್ತಿಯಿಂದಲೂ ನಿನ್ನ ಪೂರ್ಣ ಮನಸ್ಸಿನಿಂದಲೂ ಪ್ರೀತಿಸು ಮತ್ತು ನಿನ್ನನ್ನು ನೀನೇ ಪ್ರೀತಿಸಿಕೊಳ್ಳುವಂತೆ ನಿನ್ನ ನೆರೆಯವನನ್ನೂ ಪ್ರೀತಿಸು’ ಎಂದಿದೆ,” ಎಂದು ಉತ್ತರಕೊಟ್ಟನು.
28 : ಯೇಸು, “ಸರಿಯಾಗಿ ಉತ್ತರಕೊಟ್ಟೆ. ಅದರಂತೆ ಮಾಡು. ನಿನಗೆ ಅಮರಜೀವ ಲಭಿಸುವುದು,” ಎಂದನು.
29 : ಆದರೆ ಆ ಶಾಸ್ತ್ರಜ್ಞನು ತನ್ನನ್ನು ತಾನೇ ಸಮರ್ಥಿಸಿಕೊಳ್ಳಲು, “ನನ್ನ ನೆರೆಯವನು ಯಾರು?” ಎಂದು ಯೇಸುವನ್ನು ಮತ್ತೆ ಪ್ರಶ್ನಿಸಿದನು.
30 : ಯೇಸು ಅವನಿಗೆ ಹೀಗೆಂದು ವಿವರಿಸಿದರು: “ಒಬ್ಬನು ಜೆರುಸಲೇಮಿನಿಂದ ಇಳಿದು ಜೆರಿಕೋವಿಗೆ ಪ್ರಯಾಣ ಮಾಡುತ್ತಿದ್ದಾಗ, ದರೋಡೆಗಾರರ ಕೈಗೆ ಸಿಕ್ಕಿಬಿದ್ದ. ದರೋಡೆಗಾರರು ಅವನನ್ನು ಸುಲಿಗೆ ಮಾಡಿ, ಹೊಡೆದು ಬಡಿದು, ಅರೆಜೀವ ಮಾಡಿ, ಅಲ್ಲೇ ಬಿಟ್ಟುಹೋದರು.
31 : ಅದೇ ಮಾರ್ಗವಾಗಿ ಒಬ್ಬ ಯಾಜಕನು ಹಾದು ಹೋಗಬೇಕಾಗಿ ಬಂದಿತು. ಈತನು, ಅವನನ್ನು ಕಂಡದ್ದೇ ಆಚೆ ಬಳಸಿಕೊಂಡು ಹೋದ.
32 : ಹಾಗೆಯೇ ಲೇವಿಯೊಬ್ಬನು ಆ ಸ್ಥಳಕ್ಕೆ ಬಂದು ಅವನನ್ನು ನೋಡಿ, ಹಾಗೆಯೇ ಬಳಸಿಕೊಂಡು ಹೋದ.
33 : ಆದರೆ ಆ ಮಾರ್ಗವಾಗಿ ಪ್ರಯಾಣ ಮಾಡುತ್ತಿದ್ದ ಒಬ್ಬ ಸಮಾರಿಯದವನು ಅಲ್ಲಿಗೆ ಬಂದಾಗ, ಅವನನ್ನು ಕಂಡು ಕನಿಕರಪಟ್ಟ.
34 : ಹತ್ತಿರಕ್ಕೆ ಹೋಗಿ ಅವನ ಗಾಯಗಳಿಗೆ ಎಣ್ಣೆಯನ್ನೂ ದ್ರಾಕ್ಷಾರಸವನ್ನೂ ಹಚ್ಚಿ ಅವುಗಳಿಗೆ ಬಟ್ಟೆ ಕಟ್ಟಿದ. ಬಳಿಕ ಅವನನ್ನು ತನ್ನ ಸ್ವಂತ ವಾಹಕಪಶುವಿನ ಮೇಲೆ ಹತ್ತಿಸಿಕೊಂಡು ಒಂದು ಛತ್ರಕ್ಕೆ ಕರೆದುಕೊಂಡು ಹೋಗಿ, ಆರೈಕೆ ಮಾಡಿದ.
35 : ಮಾರನೆಯ ದಿನ ಎರಡು ದಿನಾರಿ ನಾಣ್ಯಗಳನ್ನು ಛತ್ರದವನಿಗೆ ಕೊಟ್ಟು, ‘ಇವನನ್ನು ಚೆನ್ನಾಗಿ ನೋಡಿಕೊ, ಇದಕ್ಕಿಂತ ಹೆಚ್ಚು ವೆಚ್ಚ ಆದರೆ ನಾನು ಹಿಂದಿರುಗಿ ಬರುವಾಗ ಸಲ್ಲಿಸುತ್ತೇನೆ,’ ಎಂದ.
36 : “ದರೋಡೆಗಾರರ ಕೈಗೆ ಸಿಕ್ಕಿದವನಿಗೆ ಈ ಮೂವರಲ್ಲಿ ಯಾರು ನೆರೆಯವನೆಂದು ನಿನಗೆ ತೋರುತ್ತದೆ?” ಎಂದು ಯೇಸು ಆ ಶಾಸ್ತ್ರಜ್ಞನನ್ನು ಕೇಳಿದರು.
37 : ದಕ್ಕೆ ಅವನು, “ದಯೆ ತೋರಿದವನೇ ನೆರೆಯವನು,” ಎಂದನು. ಆಗ ಯೇಸು, “ಹೋಗು, ನೀನೂ ಹಾಗೆಯೇ ಮಾಡು,” ಎಂದು ಹೇಳಿದರು.
===================
ಚಿಂತನೆ
ಮರಿಯ ಫೌಸ್ತೀನ ಹುಟ್ಟಿದ್ದು ಆಗಸ್ಟ್ 25, 1905ರಲ್ಲಿ, ಪೋಲೆಂಡ್ ಆಕೆಯ ತವರೂರು. ಬಡಕುಟುಂಬದಲ್ಲಿ ಜನಿಸಿದ ಮರಿಯ ಫೌಸ್ತೀನ (ಮೂಲ ಹೆಸರು ಹೆಲೆನಾ) ತಂದೆ ತಾಯಿಯರಾದ ಸ್ಟಾನಿಸ್ಲಾಸ್ ಮತ್ತು ಮರಿಯಾನ್ನರಿಗೆ ಸಹಾಯ ಮಾಡುವ ಉದ್ದೇಶದಿಂದ ಮನೆ ಕೆಲಸಕ್ಕೆ ಸೇರಿಕೊಳ್ಳುತ್ತಾಳೆ. ಅಡುಗೆ ಕೆಲಸ, ಮನೆಕೆಲಸ, ತೋಟದ ಕೆಲಸದ ಮೂಲಕ ತಂದೆ ತಾಯಿಗಳಿಗೆ ನೆರವಾಗುತ್ತಾಳೆ. ಹಲವು ವರ್ಷ ಈ ಕೆಲಸಗಳನ್ನು ಮಾಡಿದ ಫೌಸ್ತೀನ 1925, ಆಗಸ್ಟ್ 1 ರಂದು ವಾರ್ಸಾದಲ್ಲಿದ್ದ ಧರ್ಮಭಗಿನಿಯರ ಮಠವನ್ನು ಸೇರುತ್ತಾರೆ. 1993 ಮೇ 1 ರಂದು ತನ್ನ ಅಂತಿಮ ಕನ್ಯಾವ್ರತವನ್ನು ಸ್ವೀಕರಿಸುತ್ತಾರೆ.
ಅನೇಕ ಬಾರಿ ಯೇಸುವಿನ ದರ್ಶನವನ್ನು ಆಕೆ ಪಡೆದಿದ್ದರು. ದೇವರು ಕಠಿಣ ನ್ಯಾಯಾಧಿಪತಿ ಎಂಬ ಕಲ್ಪನೆ ಬಹಳ ಜನರಿಗಿದ್ದ ಆ ಕಾಲದಲ್ಲಿ ಆತ ಕರುಣಾಮಯಿ ದೇವರು ಎಂಬುದು ಪೌಸ್ತೀನ ಜಗತ್ತಿಗೆ ಸಾರುತ್ತಾರೆ. ಇತ್ತೀಚಿನ ದಿನಗಳಲ್ಲಿ ಬಹು ಪ್ರಖ್ಯಾತವಾಗಿರುವ `ದಯಾ ಪ್ರಾರ್ಥನೆ’ಗೆ ಮೂಲ ಕಾರಣ ಸಂತ ಫೌಸ್ತೀನ. ಪ್ರತಿದಿನ ಮಧ್ಯಾಹ್ನ 3:00 ಗಂಟೆಗೆ ಹೇಳುವ ಈ ಪ್ರಾರ್ಥನೆ ಮತ್ತು ಡಿವೈನ್ ಮರ್ಸಿಯ ಯೇಸುವಿನ ಭಾವ ಚಿತ್ರ ಬಂದದ್ದು ಸಂತ ಫೌಸ್ತೀನರಿಂದ.
==================="
No comments:
Post a Comment