ಜನವರಿ ೧೫, ೨೦೧೯

ಸುವಾರ್ತಾ ಪ್ರಸಾರದ ಉದ್ದೇಶ: ಯುವಜನರು, ವಿಶೇಷವಾಗಿ ಲ್ಯಾಟಿನ್ ಅಮೇರಿಕಾದ ಯುವಜನರು ಪೂಜ್ಯ ಕನ್ಯಾ ಮರಿಯಮ್ಮನವರ ಆದರ್ಶವನ್ನು ಅನುಸರಿಸುತ್ತಾ ಪ್ರಭು ಯೇಸುವಿನ ಕರೆಗೆ ಓಗೊಟ್ಟು ಸುವಾರ್ತೆಯ ಆನಂದವನ್ನು ಜಗತ್ತಿನಾದ್ಯಂತ ಪಸರಿಸುವ ಕ್ಷಮತೆಯನ್ನು ಹೊಂದುವುದು.

15 ಜನವರಿ 2019

ಮಂಗಳವಾರ/ ಹಸಿರು/ಸಾಧಾರಣ ಕಾಲದಮೊದಲನೇ ವಾರ 
1ನೇ ವಾಚನ - ಹಿಬ್ರಿ 2: 5-12 
ಕೀರ್ತನೆ - 8: 1, 4, 5-6, 7-8 
ಶುಭಸಂದೇಶ - ಮಾರ್ಕ 1: 21-28



ವಾಚನಗಳು
ಮೊದಲನೇ  ವಾಚನ

ಹಿಬ್ರಿಯರಿಗೆ ಬರೆದ ಪತ್ರದಿಂದ ವಾಚನ

5ನಾವು ಪ್ರಸ್ತಾಪಿಸುತ್ತಿರುವ ನೂತನ ಸಾಮ್ರಾಜ್ಯವನ್ನು ದೇವರು ತಮ್ಮ ದೂತರಿಗೆ ಅಧೀನ ಪಡಿಸಲಿಲ್ಲ. 6ಅದಕ್ಕೆ ಬದಲಾಗಿ, ಪವಿತ್ರ ಗ್ರಂಥದಲ್ಲಿ ಒಂದೆಡೆ ಹೀಗೆಂದು ಸ್ಪಷ್ಟವಾಗಿ ಹೇಳಲಾಗಿದೆ: “ಓ ದೇವಾ, ಹುಲುಮಾನವನೆಷ್ಟರವನು ನೀನವನ ಗಮನಿಸಲು? 7ನರಪುತ್ರನು ಎನಿತರವನು ನೀನವನ ಅರಸಿ ಬರಲು? ದೇವದೂತರಿಗಿಂತಲೂ ಆತನನು ತುಸುವೇ ತಗ್ಗಿಸಿದೆ ಘನಗೌರವವನು, ಸಿರಿಮಹಿಮೆಯನು ಮುಕುಟವಾಗಿ ಮುಡಿಸಿದೆ; 8ಆತನಿಗೆ ನೀನೆಲ್ಲವನು ಅಧೀನವಾಗಿಸಿದೆ.” ಹೀಗೆ ದೇವರು ಎಲ್ಲವನ್ನು ಆತನಿಗೆ ಅಧೀನಪಡಿಸಿರುವುದರಿಂದ ಆತನಿಗೆ ಅಧೀನವಲ್ಲದ್ದು ಏನೂ ಇಲ್ಲವೆಂದಾಯಿತು. ಆದರೂ ಸದ್ಯಕ್ಕೆ ಎಲ್ಲವೂ ಆತನಿಗೆ ಅಧೀನವಾಗಿರುವುದನ್ನು ನಾನು ಕಾಣುತ್ತಿಲ್ಲ. 9ದೇವದೂತರಿಗಿಂತ ಕೊಂಚ ಕಾಲವೇ ತುಸು ತಗ್ಗಿಸಲಾದ ಒಬ್ಬರನ್ನು, ಅಂದರೆ ಯೇಸುವನ್ನು ಮಾತ್ರ ನಾವು ಕಾಣುತ್ತೇವೆ. ಇವರು ಯಾತನಾ ಮರಣವನ್ನು ಅನುಭವಿಸಿದ್ದರಿಂದ ‘ಘನ ಗೌರವವನ್ನೂ ಸಿರಿ ಮಹಿಮೆಯನ್ನೂ ಮುಟುಕವಾಗಿ’ ಪಡೆದುದನ್ನು ನಾವು ಕಾಣುತ್ತೇವೆ. ದೈವಾನುಗ್ರಹದಿಂದ ಎಲ್ಲಾ ಮಾನವರ ಕಲ್ಯಾಣಕ್ಕಾಗಿ ಅವರು ಸಾವನ್ನು ಅನುಭವಿಸಬೇಕಾಗಿತ್ತು.

10ಸಮಸ್ತವನ್ನೂ ಸೃಷ್ಟಿಸಿ ಪರಿಪಾಲಿಸಿಕೊಂಡು ಬರುವ ದೇವರು ತಮ್ಮ ಮಹಿಮೆಯಲ್ಲಿ ಪಾಲುಗೊಳ್ಳಲು ಮಕ್ಕಳನೇಕರನ್ನು ಕರೆತರುವಂತೆ ಉದ್ಧಾರ ಪ್ರವರ್ತಕರಾದ ಯೇಸುವನ್ನು ಹಿಂಸೆಬಾಧೆಗಳ ಮೂಲಕ ಪರಿಪೂರ್ಣವಾಗಿಸಿದ್ದು ಯುಕ್ತವೇ ಸರಿ. 11ಪವಿತ್ರಗೊಳಿಸುವವನಿಗೂ ಪವಿತ್ರರಾಗುವವರಿಗೂ ಒಬ್ಬನೇ ತಂದೆ. ಈ ಕಾರಣ, ಪವಿತ್ರಗೊಳಿಸುವ ಯೇಸು, ಪವಿತ್ರರಾಗುವವರನ್ನು ‘ಸಹೋದರರು’ ಎಂದು ಕರೆಯಲು ನಾಚಿಕೆ ಪಡಲಿಲ್ಲ. 12 “ಸಾರುವೆನು ನನ್ನ ಸೋದರರಿಗೆ ನಿನ್ನ ನಾಮದ ಮಹಿಮೆಯನು ಮಾಡುವೆನು ಸಭಾಮಧ್ಯೆ ನಿನ್ನ ಗುಣಗಾನವನು,” ಎಂದೂ ಹೇಳಿದ್ದಾರೆ.


ಕೀರ್ತನೆ 
        
ಶ್ಲೋಕ: ಒಡೆಯನಾಗಿಸಿದೆ ನಿನ್ನಯ ಕರಕೃತಿಗಳಿಗೆ ಒಳಪಡಿಸಿದೆ ಸಕಲವನು ಅವನ ಪಾದದಡಿಗೆ

1 : ಪ್ರಭು, ಓ ನಮ್ಮ ಪ್ರಭು, ಎನಿತು ಮಹಿಮಾನ್ವಿತ|
     ಹರಡಿವೆ ನಿನ್ನ ಸಿರಿನಾಮ ಜಗದಾದ್ಯಂತ|
     ಬೆಳಗಿದೆ ನಿನ್ನ ವೈಭವ ಗಗನಾದ್ಯಂತ||

2 : ವಿರೋಧಿಗಳ ಬಾಯನು ಮುಚ್ಚಿಸಿದೆ ಬಾಲ ಬಾಲೆಯರ ಬಾಯಿಂದಲೆ|
      ಹಗೆಗಳನು ದುರ್ಗದಂತೆ ತಡೆದೆ ಮೊಲೆಗೂಸುಗಳ ನಾಲಿಗೆಯಿಂದಲೆ||

3 : ಆಕಾಶಮಂಡಲ ನಿನ್ನ ಕೈಕೆಲಸವಯ್ಯಾ|
     ಚಂದ್ರ ನಕ್ಷತ್ರಗಳು ನಿನ್ನ ರಚನೆಗಳಯ್ಯಾ||

4 : ಇಂತಿರಲು, ಮನುಜನು ಎಷ್ಟರವನು ನೀನವನನು ಲಕ್ಷಿಸಲು?|
     ಏತರದವನು ನರಮಾನವನು ನೀನವನನು ಪರಾಮರಿಸಲು?||

5 : ಆದರೆ ದೇವದೂತರಿಗಿಂತ ಕಿಂಚಿತ್ತೆ ಕೀಳಾಗಿಸಿದೆ ಮನುಜನನು|
     ಮುಡಿಸಿದೆ ಮುಕುಟವಾಗವನಿಗೆ ಘನ ಮಾನವನು, ಸಿರಿಹಿರಿಮೆಯನು||

6 : ಒಡೆಯನಾಗಿಸಿದೆ ನಿನ್ನಯ ಕರಕೃತಿಗಳಿಗೆ|
     ಒಳಪಡಿಸಿದೆ ಸಕಲವನು ಅವನ ಪಾದದಡಿಗೆ||

7 : ಕುರಿಗಳನು, ಕರುಗಳನು, ಕಾಡು ಮೃಗಗಳನು|
     ಗರಿಗಳನು, ವಿೂನುಗಳನು, ಜಲಚರಗಳನು||

8 : ಕರಗತ ಮಾಡಿದೆ ನೀ ಅವನಿಗೆಲ್ಲವನು||

9 : ಪ್ರಭು, ಓ ಎಮ್ಮ ಪ್ರಭು, ನಿನ್ನ ನಾಮಾಮೃತ|
    ಬೆಳಗಿದೆ ತನ್ನ ಮಹಿಮೆಯನು ಭುವನ ಪರ್ಯಂತ||



ಶುಭಸಂದೇಶ

ಸಂತ ಮಾರ್ಕನು ಬರೆದ ಶುಭಸಂದೇಶದಿಂದ ವಾಚನ

21ಬಳಿಕ ಅವರೆಲ್ಲರೂ ಕಫೆರ್ನವುಮ್ ಎಂಬ ಊರನ್ನು ಸೇರಿದರು. ಸಬ್ಬತ್‌ದಿನ ಬಂದ ಕೂಡಲೇ ಯೇಸುಸ್ವಾಮಿ ಪ್ರಾರ್ಥನಾಮಂದಿರಕ್ಕೆ ಹೋಗಿ ಬೋಧಿಸತೊಡಗಿದರು. ಅವರ ಉಪದೇಶವನ್ನು ಕೇಳಿ ಜನರು ಬೆರಗಾದರು. 22ಏಕೆಂದರೆ ಯೇಸು, ಧರ್ಮಶಾಸ್ತ್ರಿಗಳಂತೆ ಬೋಧಿಸದೆ ಅಧಿಕಾರ ವಾಣಿಯಿಂದ ಪ್ರಬೋಧಿಸುತ್ತಿದ್ದರು. ಅಲ್ಲಿ ದೆವ್ವ ಹಿಡಿದ ಒಬ್ಬನಿದ್ದನು. 

23ಅವನು, ನಜರೇತಿನ ಯೇಸುವೇ, ನಿಮಗೇಕೆ ನಮ್ಮ ಗೊಡವೆ? ನೀವು ನಮ್ಮ ವಿನಾಶಕ್ಕಾಗಿ ಬಂದವರೇನು? 24ನೀವು ಯಾರೆಂದು ನನಗೆ ಗೊತ್ತು. ದೇವರಿಂದ ಬಂದ ಪರಮಪೂಜ್ಯರು ನೀವು, ಎಂದು ಕಿರುಚಿದನು. ಆದರೆ ಯೇಸುಸ್ವಾಮಿ ಅವನನ್ನು ಗದರಿಸಿ, ಸುಮ್ಮನಿರು, ಇವನನ್ನು ಬಿಟ್ಟು ತೊಲಗು, ಎಂದು ಆ ದೆವ್ವಕ್ಕೆ ಆಜ್ಞಾಪಿಸಿದರು. 25ದೆವ್ವವು ಆ ಮನುಷ್ಯನನ್ನು ಒದ್ದಾಡಿಸಿ, ಗಟ್ಟಿಯಾಗಿ ಚೀರುತ್ತಾ ಅವನನ್ನು ಬಿಟ್ಟು ಹೋಯಿತು. 

26ಜನರೆಲ್ಲರೂ ಆಶ್ಚರ್ಯಚಕಿತರಾದರು. 27ಇದೇನು ಹೊಸ ಬೋಧನೆ!? ಈತ ದೆವ್ವಗಳಿಗೆ ಕೂಡ ಅಧಿಕಾರದಿಂದ ಆಜ್ಞಾಪಿಸುತ್ತಾನೆ; ಅವು ಈತ ಹೇಳಿದ ಹಾಗೆ ಕೇಳುತ್ತವೆಯಲ್ಲ! ಎಂದು ಪರಸ್ಪರ ಮಾತಾಡಿಕೊಂಡರು.

28ಕೂಡಲೇ ಗಲಿಲೇಯ ಪ್ರಾಂತ್ಯದ ಎಲ್ಲೆಡೆಗೂ ಯೇಸುವಿನ ಸಮಾಚಾರ ಹಬ್ಬಿ ಹರಡಿತು.  


ಚಿಂತನೆ

ದೈವತ್ವದ ಗುರುತು

ದುಷ್ಟ ಶಕ್ತಿಗಳನ್ನು ಮೆಟ್ಟಿ ನಿಲ್ಲಲು ಮನುಷ್ಯನಿಗೆ ದೈವಶಕ್ತಿಯು ಅತ್ಯಗತ್ಯ. ಮಾನವನ ದೌರ್ಬಲ್ಯ, ಅಪನಂಬಿಕೆಗಳೇ ದುಷ್ಟ ಶಕ್ತಿಗಳ ಬಂಡವಾಳ. ಕ್ರಿಸ್ತ ತಮ್ಮ ಅಧಿಕಾರವಾಣಿಯಿಂದ ದೆವ್ವಗಳ ಉಚ್ಚಾಟನೆ ಮಾಡುತ್ತಾರೆ. ಇಲ್ಲಿ ಗಮನಿಸಬೇಕಾದ ಅಂಶವೆಂದರೆ ದೆವ್ವಗಳು, ದುಷ್ಟ ಶಕ್ತಿಗಳು ಕ್ರಿಸ್ತನ ದೈವತ್ವವನ್ನು ಗುರುತಿಸುತ್ತವೆ. ಆದರೆ ಸುಮಾರು 4೦೦ ವರ್ಷಗಳಿಂದ ರಕ್ಷಕನ ಬರುವಿಕೆಯನ್ನು ಎದುರುನೋಡುತ್ತಿದ್ದ ಯೆಹೂದ್ಯರು ಕ್ರಿಸ್ತನನ್ನು ಗುರುತಿಸಲು ಶಕ್ತರಾಗದೆ ಅವರನ್ನು ಸ್ವೀಕರಿಸದೆ ತಿರಸ್ಕರಿಸುತ್ತಾರೆ. ದುಷ್ಟ ಶಕ್ತಿಗಳ ವಿರುದ್ಧ ಹೋರಾಡಲು ಹಾಗೂ ಕ್ರಿಸ್ತನನ್ನು ಪರರಲ್ಲಿ ಗುರುತಿಸಲು ಅಗತ್ಯವಾದ ದೈವಾನುಗ್ರಹಕ್ಕಾಗಿ ಪ್ರಾರ್ಥಿಸೋಣ.


© 'ದನಿ' ಮಾಧ್ಯಮ ಮನೆ

ದನಿ ಮಾಧ್ಯಮ ಮನೆಯ 'ದನಿ' ಇ-ಮಾಸಿಕಕ್ಕೆ ಬೇಟಿ ನೀಡಲು ಇಲ್ಲಿ ಕ್ಲಿಕ್‌ ಮಾಡಿ

No comments:

Post a Comment